ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಓದಿಸುವ ಮೂಲಕ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ಮಕ್ಕಳ ಪೋಷಕರು ಬಿಡಬೇಕು ಎಂದು ಸಾಹಿತಿ ಕೆ.ಜೆ.ಹಳ್ಳಿ ಸುರೇಶ್ ಹೇಳಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಹಾಗು ಮಕ್ಕಳ ಪೋಷಕರಿಗೆ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಖಾಸಗಿ ಶಾಲೆಗಳ ಮೇಲಿನ ಪೋಷಕರ ವ್ಯಾಮೋಹದಿಂದ ಬಹುತೇಕ ಕನ್ನಡ ಹಾಗು ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಡಾ.ಅಬ್ದುಲ್ಕಲಾಂ, ಸರ್ ಎಂ.ವಿಶ್ವೇಶ್ವರಯ್ಯ ಸೇರಿದಂತೆ ಬಹುತೇಕರು ದೇಶದ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಖಾಸಗಿ ಶಾಲೆಗಳಲ್ಲಿ ಓದಿದ ಇಂದಿನಬಹುತೇಕ ಯುವಕರು ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಬುದ್ದಿವಂತರಾಗುತ್ತಾರೆ ಎನ್ನುವ ಭಾವನೆ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಲು ಮುಂದಾಗಬೇಕು.
ಸರ್ಕಾರಿ ಶಾಲೆಗಳಲ್ಲಿ ಗಣಿತ ಹಾಗು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ತೀರಾ ಹಿಂದುಳಿದಿರುವುದಕ್ಕೆ ಸರಿಯಾದ ವ್ಯವಸ್ಥೆಯಿಲ್ಲದಿರುವುದು ಕಾರಣವಿರಬಹುದು. ಹಾಗಾಗಿ ಸರ್ಕಾರಗಳು ಖಾಸಗಿ ಶಾಲೆಯಲ್ಲಿರುವಂತೆ ಸರ್ಕಾರಿ ಶಾಲೆಗಳಲ್ಲಿಯೂ ಸಮರ್ಪಕ ವ್ಯವಸ್ಥೆ ಕಲ್ಪಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಹಕಾರಿಯಾಗುತ್ತದೆಎಂದರು.
ಶಾಲಾ ಮಕ್ಕಳು ತಯಾರಿಸಿ ಪ್ರದರ್ಶಿಸಿದ್ದ ವಸ್ತು ಪ್ರದರ್ಶನ ವೀಕ್ಷಿಸಿ ಮಕ್ಕಳಿಂದ ವಿವರಣೆ ಪಡೆದುಕೊಂಡರು. ಮಕ್ಕಳು ತಯಾರಿಸಿದ್ದ ಸೌರವ್ಯೂಹ, ಪವನ ವಿದ್ಯುತ್ ತಯಾರಿಕೆ, ಜ್ವಾಲಾಮುಖಿ ಪರ್ವತ, ಅಧುನಿಕ ಸೋಲಾರ್ ಮನೆ, ಏತನೀರಾವರಿ ತಯಾರಿಸಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗು ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ಪುಸ್ತಕ, ಪೆನ್ನು ಹಾಗು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಮಕ್ಕಳ ಪೋಷಕರಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಕಸಾಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಗ್ರಾ.ಪಂ ಸದಸ್ಯರಾದ ಎ.ಎಂ.ತ್ಯಾಗರಾಜ್, ಉಮಾಚನ್ನೇಗೌಡ, ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಾರಾಮಚಂದ್ರ, ಎಂಪಿಸಿಎಸ್ ಅಧ್ಯಕ್ಷ ರವಿಪ್ರಕಾಶ್, ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ, ಶಿಕ್ಷಕರಾದ ಚಾಂದ್ಪಾಷ, ಈಶ್ವರಮ್ಮ, ಎಂ.ಸೀನಪ್ಪ, ಕೆ.ಮುನಿಯಪ್ಪ, ಸಿಆರ್ಪಿ ನಾಗರಾಜ್, ಅಂಗನವಾಡಿ ಶಿಕ್ಷಕಿ ಮಂಜುಳಮ್ಮ, ನಳಿನ ಹಾಜರಿದ್ದರು.
- Advertisement -
- Advertisement -
- Advertisement -
- Advertisement -