ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸುವಂತೆ ವಿಷಯಾವಾರು ನುರಿತ ಶಿಕ್ಷಕರು ‘ಪರೀಕ್ಷಾ ಸಂಜೀವಿನಿ’ ಎಂಬ ಪುಸ್ತಿಕೆಗಳನ್ನು ಹೊರತರುತ್ತಿರುವುದು ಸ್ವಾಗತಾರ್ಹ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರ ಬಾಬು ತಿಳಿಸಿದರು.
ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ವಿಷಯಾವಾರು ಶಿಕ್ಷಕರ ಕಾರ್ಯಾಗಾರದಲ್ಲಿ ಗಣಿತ, ವಿಜ್ಞಾನ, ಸಮಾಜ ವಿಷಯಗಳ ‘ಪರೀಕ್ಷಾ ಸಂಜೀವಿನಿ’ ಎಂಬ ಪುಸ್ತಿಕೆಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ವಿಷಯಾವಾರು ಶಿಕ್ಷಕರು ಚರ್ಚಿಸಿ, ಸರಳೀಕರಿಸಿದ ನಂತರ ಕಲಿಕೆಯಲ್ಲಿ ಹಿಂದುಳಿದ ಮತ್ತು ಸಾಧಾರಣ ಮಕ್ಕಳಿಗೆ ಬೋಧಿಸಿದರೆ ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ಸಿಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಫಲಿತಾಂಶ ಪಡೆಯ ಬಹುದಾಗಿದೆ. ‘ಪರೀಕ್ಷಾ ಸಂಜೀವಿನಿ’ ಎಂಬ ಪುಸ್ತಿಕೆಗಳನ್ನು ವಿಷಯಾವಾರು ತಜ್ಞರು ಸಿದ್ಧಪಡಿಸಿದ್ದಾರೆ. ಇದನ್ನು ಎಲ್ಲಾ ಪ್ರೌಢಶಾಲೆಗಳ ಶಿಕ್ಷಕರು ಪಡೆದು ಮಕ್ಕಳಿಗೆ ತಲುಪಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಎಲ್ಲಾ ವಿಷಯಗಳಲ್ಲಿ ಸಮಾಲೋಚನೆ ನಡೆಸಿ ತಾಲ್ಲೂಕಿನಾದ್ಯಂತ ಮಕ್ಕಳಿಗೆ ಅನುಕೂಲವಾಗುವಂತೆ ಹಾಗೂ ಶಿಕ್ಷಕರಿಗೆ ಹೊರೆಯಾಗದಂತೆ ಕ್ರಮ ವಹಿಸುವ ದೃಷ್ಟಿಯಿಂದ ಈ ಕಾರ್ಯಾಗಾರ ಉಪಯುಕ್ತವಾಗಿದೆ ಎಂದರು.
ಅನುದಾನಿತ ಶಾಲೆಗಳ ರಾಜ್ಯ ಘಟಕದ ಅಧ್ಯಕ್ಷ ಡಿ.ಸಿ.ಗೋಪಿನಾಥ್, ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಿನಾಥ್, ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಕಾರ್ಯದರ್ಶಿ ಎಲ್.ವಿ.ವೆಂಕಟರೆಡ್ಡಿ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಮಾಂಜಿನಪ್ಪ, ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಶಿಕ್ಷಣ ಸಂಯೋಜಕ ಲಕ್ಷ್ಮೀನರಸಿಂಹಗೌಡ ಹಾಜರಿದ್ದರು.
- Advertisement -
- Advertisement -
- Advertisement -
- Advertisement -