ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮದ್ಯ ಮಾರಾಟದಿಂದ ಹಾಗೂ ಮದ್ಯ ಸೇವನೆಯಿಂದಾಗಿ ಯುವಕರು ಹಾಳಾಗುತ್ತಿದ್ದಾರೆ ಎಂದು ರೈತ ಸಂಘದ ಅಧ್ಯಕ್ಷ ರವಿಕುಮಾರ್ ಆರೋಪಿಸಿದರು.
ನಗರದ ಬಸ್ ನಿಲ್ದಾಣದ ಬಳಿ ಇರುವ ಅಬಕಾರಿ ಇಲಾಖೆ ಮುಂದೆ ಸೋಮವಾರ ಭಕ್ತರಹಳ್ಳಿ ಗ್ರಾಮದ ಮಹಿಳೆಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಾನವ ಹಕ್ಕುಗಳು ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ರೈತ ಸಂಘ ಜೊತೆಗೂಡಿ ಹಮ್ಮಿಕೊಂಡಿದ್ದ ಮುತ್ತಿಗೆ ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಭಕ್ತರಹಳ್ಳಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಮನೆಗಳಲ್ಲಿ ಹಾಗೂ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಭಕ್ತರಹಳ್ಳಿ ಗ್ರಾಮದಲ್ಲಿ ಸುಮಾರು 300 ರಿಂದ 400 ದಲಿತ ಕುಟುಂಬಗಳು ಜೀವನ ಸಾಗಿಸುತ್ತಿದ್ದು ಅಕ್ರಮ ಮದ್ಯ ಮಾರಾಟದಿಂದ ಮದ್ಯಪಾನ ಸೇವಿಸಿ ಗಂಡಸರು, ಮಕ್ಕಳು ಹಾಗೂ ಮಹಿಳೆಯರಿಗೆ ಮನೆಗಳಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಮ್ಮ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗದಾಗಿದೆ. ನಾವೆಲ್ಲಾ ನರಕಯಾತನೆ ಅನುಭವಿಸುತ್ತಿದ್ದೇವೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ತಹಶೀಲ್ದಾರರಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರೂ ಕೂಡ ಯಾವುದೇ ಕ್ರಮ ತೆಗೆದುಕೊಳ್ಳಲ್ಲಿಲ್ಲ. ಅದಕ್ಕಾಗಿ ಈ ದಿನ ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿರುವುದಾಗಿ ಹೇಳಿದರು.
ತಾಲ್ಲೂಕು ಅಬಕಾರಿ ನಿರೀಕ್ಷಕ ಎಸ್.ಆರ್. ವಿಶ್ವನಾಥ ಬಾಬು ಮಾತನಾಡಿ ಶೀಘ್ರದಲ್ಲಿ ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರೈತ ಸಂಘದ ಮುಖಂಡರಾದ ಭಕ್ತರಹಳ್ಳಿ ಪ್ರತೀಶ್, ವೆಂಕಟರೋಣಪ್ಪ, ಸುಲೋಚನಮ್ಮ, ಶಾರದಮ್ಮ, ಸಿಐಟಿಯು ಭಾಗ್ಯಲಕ್ಷ್ಮಿ, ಗ್ರಾಮದ ಮಹಿಳೆಯರಾದ ನಾಗರತ್ನಮ್ಮ, ಓಬಮ್ಮ, ಮಾನವ ಹಕ್ಕುಗಳು ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾರಾಯಣಸ್ವಾಮಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಮಾಂಜಿನಪ್ಪ, ನರಸಿಂಹಪ್ಪ, ನರಸಿಂಹ, ಪ್ರಭಾಕರ, ವಿಶ್ವನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Advertisement -
- Advertisement -
- Advertisement -
- Advertisement -