ನಗರದಾದ್ಯಂತ ಸ್ವಚ್ಚತೆ ಹಾಗೂ ಅಗತ್ಯ ಮೂಲಭೂತ ಸವಲತ್ತುಗಳನ್ನು ಕಲ್ಪಿಸುವಲ್ಲಿ ನಗರಸಭೆ ಅಧಿಕಾರಿಗಳು ವಿಫಲವಾಗಿದ್ದು ಕೂಡಲೇ ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ (ಪುಟ್ಟಣ್ಣಯ್ಯ ಬಣ) ಪದಾಧಿಕಾರಿಗಳು ಪೌರಾಯುಕ್ತ ಚಲಪತಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ನಗರಸಭೆ ವ್ಯಾಪ್ತಿಯಲ್ಲಿರುವ ಕೆಲವು ವಾರ್ಡುಗಳಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಾಗಿಲ್ಲ. ಸ್ವಚ್ಚತೆ ಮರೀಚಿಕೆಯಾಗಿದೆ. ಮೂಲಭೂತ ಸೌಕರ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ನಗರದ ಮುಖ್ಯರಸ್ತೆಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಮಾಂಸದ ಅಂಗಡಿಗಳ ತೆರವು ಹಾಗೂ ರೇಷ್ಮೆ ಹುಳು ಸಂಸ್ಕರಣೆಯಿಂದ ಬರುತ್ತಿರುವ ದುರ್ವಾಸನೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದಿಂದ ನಗರದ ಅಭಿವೃದ್ಧಿಗೆ ಬಿಡುಗಡೆಯಾಗಿರುವ ೨೫ ಕೋಟಿ ಅನುದಾನ ಸಮರ್ಪಕವಾಗಿ ಬಳಕೆಯಾಗದೇ ಅನುದಾನ ದುರುಪಯೋಗವಾಗುತ್ತಿದೆ. ಈ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ಬದ್ದತೆ ತೋರುತ್ತಿಲ್ಲ. ನಗರಸಭೆಗೆ ಕಂದಾಯ ಕಟ್ಟದೆ ಇರುವ ವಾರ್ಡುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನಗಳನ್ನು ನೀಡಲಾಗುತ್ತಿದೆ. ನಗರಸಭೆಗೆ ಕಂದಾಯ ಪಾವತಿ ಮಾಡದಿರುವ ವಾರ್ಡುಗಳಿಗೆ ಯಾವುದೇ ಸೌಲಭ್ಯ ನೀಡದೆ ಸ್ಥಗಿತಗೊಳಿಸಬೇಕು. ನಗರದಲ್ಲಿ ವಾತಾವರಣ ಕಲುಷಿತವಾಗಿದ್ದು ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವಂತಾಗಿದೆ. ಹಾಗಾಗಿ ಕೂಡಲೇ ನಗರದಾದ್ಯಂತ ಸ್ವಚ್ಚತೆ ಕಾಪಾಡುವುದು ಮತ್ತು ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಪ್ರತೀಶ್, ಪುರುಶೋತ್ತಮ್ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -