ಮುಂಗಾರು ಹಂಗಾಮಿನಲ್ಲಿ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಒಕ್ಕಣೆ ಮತ್ತು ಸಂಸ್ಕರಣೆ ಮಾಡಿಕೊಳ್ಳಲು 8*6 ಮೀ. ಅಳತೆಯ ಟಾರ್ಪಲಿನ್ಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫಲಾನುಭವಿಗಳನ್ನು ಜನಪ್ರತಿನಿಧಿಗಳ ಹಾಗೂ ಕೃಷಿಕ ಸಮಾಜದ ನಿರ್ದೇಶಕರ ಸಮ್ಮುಖದಲ್ಲಿ ಲಾಟರಿ ಮುಖಾಂತರ ಆಯ್ಕೆ ಮಾಡಲಾಗುವುದು ಆದ್ದರಿಂದ ರೈತರು ಆಯಾ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳಲ್ಲಿ ನವೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಿ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ ಮಂಜುನಾಥ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪಹಣಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪ.ಜಾತಿ, ಪ.ಪಂ), ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಲಗತ್ತಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ವಯೋನಿವೃತ್ತಿಯನ್ನು ಹೊಂದಿದ ನಾಲ್ವರು ಮುಖ್ಯಶಿಕ್ಷಕರನ್ನು ಸನ್ಮಾನಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿದರು.
ನಿವೃತ್ತರಾದ ಮುಖ್ಯಶಿಕ್ಷಕರು ವೃತ್ತಿನಿರತ ಶಿಕ್ಷಕರಿಗೆ ಮಾರ್ಗದರ್ಶನ ನೀಡಿ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ಕೊಡಿ ಎಂದು ಅವರು ತಿಳಿಸಿದರು.
ನಿವೃತ್ತರು ಮನಸ್ಸನ್ನು ಚಟುವಟಿಕೆಯಿಂದ ಇಟ್ಟುಕೊಳ್ಳುವುದರ ಜೊತೆಗೆ ಆರೋಗ್ಯದ ಬಗ್ಗೆ ಕೂಡ ಕಾಳಜಿ ವಹಿಸಬೇಕು ಎಂದು ಹೇಳಿದರು.
ಪ್ರಾಥಮಿಕ ಶಾಲಾ ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮನ್ನಾರ್ ಸ್ವಾಮಿ ಮಾತನಾಡಿ, ನಿವೃತ್ತರಾದ ಮುಖ್ಯಶಿಕ್ಷಕರ ಅನುಭವ ಬಹಳ ಅಮೂಲ್ಯ ಮತ್ತು ಅಸಾಧಾರಣ. ಇದರ ಉಪಯೋಗ ಶಿಕ್ಷಣ ಇಲಾಖೆಗೆ ಅತ್ಯಗತ್ಯ ಎಂದು ನುಡಿದರು.
ವಯೋನಿವೃತ್ತಿಯನ್ನು ಹೊಂದಿದ ಮುಖ್ಯಶಿಕ್ಷಕರಾದ ವಿ.ಎನ್.ಗೋಪಾಲಕೃಷ್ಣ, ಕೃಷ್ಣಮೂರ್ತಿ, ಮೇರಿ ಅನ್ನಪೂರ್ಣ ಮತ್ತು ನಾಗವೇಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಸನ್ಮಾನಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಶಿಕ್ಷಕರಾದ ರಮೇಶ್, ಲಕ್ಷ್ಮಿನರಸಪ್ಪ, ಗಜೇಂದ್ರ, ಗೀತಮ್ಮ, ಶ್ರೀನಿವಾಸ್, ದೇವರಾಜ್, ಶಕುಂತಲಮ್ಮ, ಎಲ್.ನಾಗಭೂಷಣ್, ಎಂ.ಎ.ರಾಮಕೃಷ್ಣಪ್ಪ, ಗಂಗಶಿವಪ್ಪ, ಮಂಜುನಾಥರೆಡ್ಡಿ ಹಾಜರಿದ್ದರು.
ಶಿಟೋ ರಿಯೋ ಕರಾಟೆ ಡೊ ಇಂಡಿಯಾ ಅಕಾಡೆಮಿ ಆಯೋಜಿಸಿದ್ದ ಮೊಟ್ಟಮೊದಲ ಆನ್ ಲೈನ್ ಕತಾ, ಟೀಮ್ ಕತಾ ಮತ್ತು ಕುಬುಡೊ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶಿಡ್ಲಘಟ್ಟದ ದಿವ್ಯಭಾರತ್ ಕರಾಟೆ ಡೋ ವಿದ್ಯಾರ್ಥಿಗಳು ಹಲವಾರು ಪದಕಗಳನ್ನು ಗೆದ್ದಿದ್ದಾರೆ ಎಂದು ಕರಾಟೆ ಶಿಕ್ಷಕ ಅರುಣ್ ಕುಮಾರ್ ತಿಳಿಸಿದ್ದಾರೆ.
ತಾಲ್ಲೂಕಿನ ಶಿಲೇಮಾಕಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿ ಉದ್ಘಾಟಿಸಿ ಜಿಲ್ಲಾ ಕಸಾಪ ಅಧ್ಯಕ್ಷ ಕೈವಾರ ಶ್ರೀನಿವಾಸ್ ಮಾತನಾಡಿದರು.
ಕ್ರಿಯಾಶೀಲವಾಗಿ ಕನ್ನಡ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದ ಶಿಡ್ಲಘಟ್ಟ ತಾಲ್ಲೂಕು ಕಸಾಪ ಇದೀಗ ತನ್ನದೇ ಆದ ಕಚೇರಿಯನ್ನು ಶಿಕ್ಷಣ ಇಲಾಖೆಯ ನೆರವಿನೊಂದಿಗೆ ಪ್ರಾರಂಭಿಸುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಲು ಇದರಿಂದ ಅನುವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಸಾಪ ಕಾರ್ಯಕ್ರಮಗಳು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನಡೆದಿವೆ. ತಾಲ್ಲೂಕಿನ ಪ್ರತಿಯೊಂದು ಭಾಗವನ್ನೂ ಕಸಾಪ ತಲುಪಿದೆ ಎಂದರು.
ತಾಲ್ಲೂಕು ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿ, ತಾಲ್ಲೂಕು ಕಸಾಪ ವತಿಯಿಂದ ನೆರೆಯ ರಾಜ್ಯ ಆಂಧ್ರದಲ್ಲಿ, ಬಿಜಾಪುರದಲ್ಲಿ, ಸಿದ್ಧಗಂಗಾ ಮಠದಲ್ಲಿ, ಸಾಲು ಮರದ ತಿಮ್ಮಕ್ಕನವರ ಮನೆಯಲ್ಲಿ, ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಹಾಗೂ ರೈಲಿನಲ್ಲಿ ಸಹ ಕನ್ನಡ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಒಟ್ಟು 130 ಕಾರ್ಯಕ್ರಮಗಳನ್ನು ಎರಡು ವರ್ಷದ ಅವಧಿಯಲ್ಲಿ ನಡೆಸಿದ್ದೇವೆ. ಕೊರೊನಾ ಸಂದರ್ಭದಲ್ಲೂ ಕೊರೊನಾ ವಾರಿಯರ್ಸ್ ಗಳಿಗೆ ಕಸಾಪ ವತಿಯಿಂದ ನೆರವಾಗಿದ್ದೇವೆ. ಕೊಡಗು ಪ್ರವಾಹ ಪೀಡಿತರಿಗೆ ನಾವು 30 ಸಾವಿರ ದೇಣಿಗೆ ಸಂಗ್ರಹಿಸಿ ನೀಡಿರುವುದಾಗಿ ವಿವರಿಸಿದರು.
ಶಿಡ್ಲಘಟ್ಟ ತಾಲ್ಲೂಕು ಕಸಾಪ ಇದೀಗ ತನ್ನದೇ ಆದ ಕಚೇರಿ ಹೊಂದಿರುವುದರಿಂದ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಪಸರಿಸಲು, ಜನರನ್ನು ತಲುಪಲು ಪ್ರೇರೇಪಿಸಲು ಅನುಕೂಲವಾಗಲಿದೆ ಎಂದರು.
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಜಯರಾಮ್ ಮಾತನಾಡಿ, ತಾಲ್ಲೂಕು ಕಸಾಪ ಕಚೇರಿಗೆ ಪೀಠೋಪಕರಣಗಳನ್ನು ಕೊಡಿಸುವುದಾಗಿ ಹಾಗೂ ಗ್ರಾಮೀಣ ಭಾಗದಲ್ಲಿ ಕನ್ನಡ ಕಾರ್ಯಕ್ರಮಗಳನ್ನು ನಡೆಸಲು ನೆರವು ನೀಡುವುದಾಗಿ ಹೇಳಿದರು.
ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ, ಗೋವಿಂದರಾಜು, ಗ್ರಂಥಪಾಲಕ ಮುನಿರಾಜು, ಕಸಾಪ ತಾಲ್ಲೂಕು ಮಹಿಳಾ ಪ್ರತಿನಿಧಿ ದಾಕ್ಷಾಯಿಣಿ, ಪ್ರತಿನಿಧಿ ಮುನಿಯಪ್ಪ, ಮಾಜಿ ತಾಲ್ಲೂಕು ಅಧ್ಯಕ್ಷರಾದ ವೈ.ಎನ್.ದಾಶರಥಿ, ಶ್ರೀನಿವಾಸ್, ಕೆಂಪಣ್ಣ, ಮುಖ್ಯಶಿಕ್ಷಕಿ ಶೋಭಾ, ಶಂಕರ್, ಶ್ರೀನಿವಾಸ್, ಗೌರಿಬಿದನೂರು ಕಸಾಪ ಅಧ್ಯಕ್ಷ ರವೀಂದ್ರ, ಕಾರ್ಯದರ್ಶಿ ನಂಜುಂಡಪ್ಪ ಹಾಜರಿದ್ದರು.
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ. ಕನ್ನಡ ನಾಡು ಜಗತ್ತಿನ ಪ್ರಜಾತಂತ್ರ ವ್ಯವಸ್ಥೆಗೆ ಬಹುದೊಡ್ಡ ಕೊಡುಗೆ ನೀಡಿದೆ ಎಂಬುದು ಸಹ ಗಮನಾರ್ಹ. ಪ್ರಜಾಪ್ರಭುತ್ವ ವ್ಯವಸ್ಥೆ ಮೊದಲು ಸ್ಥಾಪಿತಗೊಂಡಿದ್ದೇ ಕರ್ನಾಟಕದಲ್ಲಿ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಸವಣ್ಣನರ ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂರ್ತ ರೂಪ ದೊರೆಯಿತು. ಬಸವಣ್ಣನ ಕಾಲದ ಚಿಂತಕರ ಚಾವಡಿ ಮೂಲಕ ಪ್ರಜಾತಂತ್ರ ವ್ಯವಸ್ಥೆಯ ಬೀಜ ಬಿತ್ತಲಾಯಿತು. ಯಾವುದೇ ಸಮಸ್ಯೆಗೆ ಚರ್ಚೆ, ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎನ್ನುವುದಕ್ಕೆ ಆಗಲೇ ಸ್ಪಷ್ಟ ರೂಪ ದೊರೆಯಿತು. ಬಳಿಕ ಮೈಸೂರಿನ ಅರಸರ ಕಾಲದ ಪ್ರಜಾಪ್ರತಿನಿಧಿ ಸಭೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪುಷ್ಠಿ ನೀಡಿತು. ಇಂತಹ ಭವ್ಯ ನಾಡು ಕನ್ನಡ ನಾಡು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿ, ಭಾಷೆ ಕೇವಲ ಸಂವಹನ ಮಾಧ್ಯಮ ಮಾತ್ರವಲ್ಲ. ಅದು ನಮ್ಮ ನೆಲದ ಹಾಗೂ ಅನೇಕ ತಲೆಮಾರುಗಳ ಸಂಸ್ಕೃತಿಯನ್ನು ಜತನದಿಂದ ಕಾಪಿಟ್ಟುಕೊಂಡು ಬಂದ ಮಾಧ್ಯಮ. ಆದ್ದರಿಂದಲೇ ಭಾಷೆಗೂ ನೆಲದ ಸಂಸ್ಕೃತಿಗೂ ಅವಿನಾಭಾವ ಸಂಬಂಧವಿದೆ. ಇಂತಹದೊಂದು ಅನನ್ಯ ಬಂಧವಿಲ್ಲದೇ ಹೋದಲ್ಲಿ ಭಾಷೆ ಮಾತನಾಡುವ ಸಂಕೇತವಾಗಿ ಮಾತ್ರ ಉಳಿದು ಜನಮಾನಸದಿಂದ ಬಹುಬೇಗ ಮರೆಯಾಗುವ ಅಪಾಯ ಇರುತ್ತದೆ. ಕನ್ನಡ ಶಾಲೆಗಳಲ್ಲಿ ಮಕ್ಕಳನ್ನು ಓದಿಸಿ, ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿ ಎಂದು ಹೇಳಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿ, ನವೆಂಬರ್ ತಿಂಗಳಿಗೆ ಕನ್ನಡಿಗರ ಭಾವಕೋಶದಲ್ಲಿ ವಿಶಿಷ್ಠ ಸ್ಥಾನವಿದೆ. ನಾಡಾಭಿಮಾನಿಗಳಿಗೆ ನವೆಂಬರ್ ಎಂದರೆ ಕನ್ನಡ ಮಾಸ. ಕನ್ನಡಾಭಿಮಾನ ಬಹಿರಂಗವಾಗಿ ಪ್ರಕಟವಾಗುವ ತಿಂಗಳಿದು. ಎಲ್ಲೆಲ್ಲೂ ಕನ್ನಡ ಬಾವುಟಗಳು ಹಾರಾಡುತ್ತವೆ. ಕನ್ನಡ ಕಾಣುತ್ತದೆ ಆದರೆ ಬಹಿರಂಗದ ಬದಲು ಅಂತರಂಗವಾಗಿ ಕನ್ನಡ ಡಿಂಡಿಮ ಮೊಳಗಬೇಕಾಗಿದೆ. ರಾಜ್ಯೋತ್ಸವ ಘೋಷಣೆ-ಭಾಷಣಗಳಿಗೇ ಸೀಮಿತವಾಗದೇ ಕನ್ನಡ ಜಾಗೃತಿಗೆ ವೇದಿಕೆ ಆಗಬೇಕಾಗಿದೆ ಎಂದರು.
ಕಾರ್ಯಕ್ರಮಕ್ಕೆ ಮುನ್ನ ಸಲ್ಲಾಪುರಮ್ಮ ದೇವಾಲಯದ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನಾಡು ನುಡಿಗೆ ಸೇವೆ ಸಲ್ಲಿಸಿದ ಸಾಧಕರಾದ ನಾಡೋಜ ಮುನಿವೆಂಕಟಪ್ಪ (ಕಲಾ ಮಾಧ್ಯಮ), ಡಿ.ಜಿ.ಮಲ್ಲಿಕಾರ್ಜುನ (ಸಾಹಿತ್ಯ) ಮತ್ತು ಬಿ.ಆರ್.ಅನಂತಕೃಷ್ಣ (ಕನ್ನಡ ಸೇವೆ) ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯಲ್ಲಿಯೇ ಅತಿಹೆಚ್ಚು ಕಾರ್ಯಕ್ರಮಗಳನ್ನು ನಡೆಸಿರುವ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಅವರಿಗೆ ತಾಲ್ಲೂಕು ಆಡಳಿತದಿಮ್ದ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ತಾಲ್ಲೂಕು ವೈದ್ಯಾಧಿಕಾರಿ ವೆಂಕಟೇಶಮೂರ್ತಿ, ಶಿಕ್ಷಕ ಕೆಂಪಣ್ಣ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ಪ್ರತೀಶ್, ಮುನಿಕೆಂಪಣ್ಣ, ರೈತ ಮುಖಂಡರು, ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಕಸಾಪ ಪದಾಧಿಕಾರಿಗಳು ಹಾಜರಿದ್ದರು.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಐಪಿಬಿಎಸ್ ಮೂಲಕ ನಡೆಸುವ ಪರೀಕ್ಷೆ ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ನಡೆಸುವುದರಿಂದ ಪ್ರದೇಶಿಕ ಭಾಷಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ತಿಳಿಸಿದರು.
ರಾಷ್ಟ್ರೀಕೃತ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳೊಂದಿಗೆ ತಹಶೀಲ್ದಾರ್ ಕೆ.ಅರುಂಧತಿ ಅವರನ್ನು ಶನಿವಾರ ಭೇಟಿ ಮಾಡಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ 2019 ರಲ್ಲಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತಾದರೂ 2020-21 ನೇ ಸಾಲಿನ ಪರೀಕ್ಷೆಗಳನ್ನು ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ನಡೆಸಲು ಸಿದ್ದವಾಗುವ ಮೂಲಕ ಕೇಂದ್ರ ಸರ್ಕಾರ ತಮ್ಮದೇ ನಿಲುವಿಗೆ ತದ್ವಿರುದ್ದವಾಗಿ ವರ್ತಿಸುತ್ತಿದೆ.
ಇದರಿಂದ ಸಂವಿಧಾನದಲ್ಲಿ ಸಮಾನ ಸ್ಥಾನಮಾನ ಹೊಂದಿರುವ ಕನ್ನಡ ಭಾಷೆ ಸೇರಿದಂತೆ ಪ್ರಾದೇಶಿಕ ಭಾಷಿಗರಿಗೆ ಅನ್ಯಾಯವಾಗಲಿದೆ. ಕೇವಲ ಹಿಂದಿ ಹಾಗೂ ಆಂಗ್ಲ ಭಾಷೆ ಬರುವವರು ಮಾತ್ರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನೇಮಕವಾಗುತ್ತಿದ್ದು ಉಳಿದ ಭಾಷಿಕರಿಗೆ ಅನ್ಯಾಯವಾಗುತ್ತಿದೆ.
ಕೂಡಲೇ ಕರ್ನಾಟಕದ ಮುಖ್ಯಮಂತ್ರಿಗಳು ಈ ವಿಷಯವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕೆ.ಅರುಂಧತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಎಸ್.ಸತೀಶ್, ಪದಾಧಿಕಾರಿಗಳಾದ ಎಸ್.ಎಸ್.ಶಂಕರ್, ಎಂ.ಮುನಿಯಪ್ಪ, ದ್ರಾಕ್ಷಾಯಿಣಿ, ನರಸಿಂಹರಾಜು, ನಾರಾಯಣಸ್ವಾಮಿ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿಯ ತಿಪ್ಪಣ್ಣ ಹಾಗೂ ಪಿಳ್ಳಮ್ಮ ಎಂಬುವವರ ಮಗನಾದ ಟಿ.ನಾರಾಯಣಸ್ವಾಮಿ ನಗರದ ಶ್ರೀ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾಗಿದ್ದಾರೆ. ಸ್ಕೌಟ್ಸ್ ಅಂಡ್ ಗೈಡ್ಸ್ ನ ಶಿಕ್ಷಕರಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಇವರ ಸಾಧನೆ ಗುರುತಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದು, ಇದೀಗ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.