Sidlaghatta : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆಪ್ಟೆಂಬರ್ 13ರಂದು (ಶನಿವಾರ) ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ.
ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟುಂಬ ವ್ಯಾಜ್ಯಗಳು, ಸಿವಿಲ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು, ಬ್ಯಾಂಕ್ ಸಾಲ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಲೋಕ ಅದಾಲತ್ನಲ್ಲಿ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
“ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡರೆ ಮಾನವ ಸಂಬಂಧಗಳು ಉಳಿದುಕೊಳ್ಳುತ್ತವೆ, ಶಾಂತಿ-ನೆಮ್ಮದಿ ಕಾಪಾಡಲ್ಪಡುತ್ತದೆ. ಜೊತೆಗೆ ಕಕ್ಷಿದಾರರ ಅಮೂಲ್ಯವಾದ ಸಮಯ ಹಾಗೂ ಹಣ ಉಳಿಯುತ್ತದೆ,” ಎಂದು ಅವರು ತಿಳಿಸಿದರು.
ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಲು ಬಯಸುವ ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ಸ್ವತಃ ಹಾಜರಾಗಿ ಭಾಗವಹಿಸುವಂತೆ ಅವರು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಸ್. ರಂಜಿತ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಹಾಗೂ ಹಲವರು ಉಪಸ್ಥಿತರಿದ್ದರು.
Sidlaghatta : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಡ್ಲಘಟ್ಟ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿ-ಯುವ ಕ್ರೀಡಾಪಟುಗಳು ಅಥ್ಲೆಟಿಕ್ಸ್, ಆಟೋಟ ಹಾಗೂ ಹಲವು ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಗೆಲುವು ಸಾಧಿಸಿದವರು ಬಹುಮಾನ ಪಡೆದುಕೊಂಡರು.
ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೇವೇಂದ್ರಪ್ಪ ಮಾತನಾಡಿ, ಈ ಬಾರಿ ನಮ್ಮ ಶಿಡ್ಲಘಟ್ಟದಲ್ಲಿ ಕ್ರೀಡಾಕೂಟ ಆಯೋಜನೆಯಾಗಿರುವುದು ಸಂತಸದ ಸಂಗತಿ. ಎಲ್ಲರೂ ಸಂಪೂರ್ಣವಾಗಿ ಕ್ರೀಡಾಸ್ಫೂರ್ತಿಯಿಂದ ತೊಡಗಿಸಿಕೊಂಡು ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ರಾಷ್ಟ್ರೀಯ ಕ್ರೀಡಾಪಟು ಜಯಂತಿ ಗ್ರಾಮ ನಾರಾಯಣಸ್ವಾಮಿ ಮಾತನಾಡಿ, ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಮೊದಲ ಬಾರಿಗೆ ಆನ್ ಲೈನ್ ನೋಂದಣಿ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ. ಇದರಿಂದ ಕ್ರೀಡಾಪಟುಗಳಿಗೆ ನೇರ ಸೌಲಭ್ಯಗಳು ತಲುಪುವ ವ್ಯವಸ್ಥೆ ಮಾಡಲಾಗಿದೆ. ಓದಿನೊಂದಿಗೆ ಕ್ರೀಡೆಯೂ ಸಮಾನ ಮಹತ್ವದ್ದಾಗಿದೆ. ಶಿಡ್ಲಘಟ್ಟದ ಕ್ರೀಡಾಪಟುಗಳು ತಾಲ್ಲೂಕು ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲೂ ಕೀರ್ತಿ ತರಲಿ. ಹಿಂದಿನ ವರ್ಷ ಕ್ರೀಡಾ ಇಲಾಖೆಯಿಂದ ಟಿಎ-ಡಿಎ ಮತ್ತು ಸಾರಿಗೆ ಸೌಲಭ್ಯ ಸಿಗದ ಬಗ್ಗೆ ಕ್ರೀಡಾಪಟುಗಳು ಎದುರಿಸಿದ ಸಮಸ್ಯೆಯನ್ನು ವಿವರಿಸಿ, ಈ ಬಾರಿ ಅಧಿಕಾರಿಗಳು ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆಯೂ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ರವಿ, ಹಿರಿಯ ಕ್ರೀಡಾಪಟು ಗಂಗಾಧರ್, ದೈಹಿಕ ಶಿಕ್ಷಕರು , ಕ್ರೀಡಾಪಟುಗಳು, ಪೋಷಕರು ಹಾಗೂ ಕ್ರೀಡಾಭಿಮಾನಿಗಳು ಹಾಜರಿದ್ದರು.
Sidlaghatta : ಶಿಡ್ಲಘಟ್ಟದ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋಲಾರ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಜಿ.ಎಸ್.ಟಿ ಸ್ಲ್ಯಾಬ್ಗಳನ್ನು ರದ್ದು ಮಾಡಿ ಕೇವಲ 5% ಮತ್ತು 18% ಸ್ಲ್ಯಾಬ್ಗಳನ್ನು ಮಾತ್ರ ಉಳಿಸುವ ನಿರ್ಧಾರ ಜನಸಾಮಾನ್ಯರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲಕರ ಎಂದು ಹೇಳಿದರು.
ಈ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ, ಹಣಕಾಸು ಮಂತ್ರಿಗಳು ಹಾಗೂ ಆರ್ಥಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕೈಗೊಂಡಿದ್ದಾರೆ. ಇದರಿಂದ ದಿನನಿತ್ಯದ ಆಹಾರ ಪದಾರ್ಥಗಳು, ಗಂಭೀರ ರೋಗಗಳ ಔಷಧಿಗಳು ಹಾಗೂ ಜೀವ ವಿಮೆ ಮೇಲಿನ ತೆರಿಗೆ ಇಳಿಯುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಪರಿಹಾರ ಸಿಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.
ಕೋಲಾರ-ಚಿಕ್ಕಬಳ್ಳಾಪುರ ಉದ್ಯೋಗಾವಕಾಶಗಳಿಗೆ ಭರವಸೆ ಬಿಜಿಎಂಎಲ್ನ 5 ಸಾವಿರ ಎಕರೆಯನ್ನು ಲ್ಯಾಂಡ್ ಬ್ಯಾಂಕ್ ಮಾಡಿ, ಕಾರ್ಖಾನೆಗಳನ್ನು ಆರಂಭಿಸಲು ಆಸಕ್ತರಿಗೆ ಕಡಿಮೆ ದರದಲ್ಲಿ ಜಮೀನು ಮತ್ತು ಮೂಲಸೌಕರ್ಯ ಒದಗಿಸಲಾಗುವುದು. ಜೊತೆಗೆ 200-300 ಎಕರೆಯಲ್ಲಿ ಟೌನ್ಶಿಪ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸಂಸದರು ತಿಳಿಸಿದರು. ಎನ್.ಎಂ.ಡಿ.ಸಿ.ಎಲ್ ಮತ್ತು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಧೀನಕ್ಕೆ ಬರುವುದರಿಂದ, ಕೈಗಾರಿಕಾ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ ಎಂದರು.
ಕೃಷ್ಣಾ ನದಿ ನೀರಾವರಿ ಯೋಜನೆಗೆ ತುರ್ತು ಕ್ರಮಗಳು
ಕೃಷ್ಣಾ ನದಿ ನೀರನ್ನು ಮದನಪಳ್ಳಿಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು, ಜೆಜೆಎಂ ಹಾಗೂ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ಗಳ ತಂಡ ಸ್ಥಳ ಪರಿಶೀಲನೆ ನಡೆಸಲಿದೆ ಎಂದು ಹೇಳಿದರು.
ರಾಜ್ಯಸಭೆ ಸದಸ್ಯ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಜಲ ಸಂಪನ್ಮೂಲ ಸಚಿವರೂ ಸಹಕಾರದ ಭರವಸೆ ನೀಡಿದ್ದಾರೆ. ಈಗಾಗಲೇ ಮದನಪಳ್ಳಿಗೆ ಕೃಷ್ಣಾ ನದಿ ನೀರು ಹರಿದು ಬಂದಿರುವುದರಿಂದ, ಮಳೆಗಾಲದಲ್ಲಿ ಹೆಚ್ಚುವರಿ ನೀರನ್ನು ಪಂಪ್ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದರು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ತಾದೂರು ರಘು, ಮೇಲೂರು ಉಮೇಶ್ ಹಾಗೂ ಹಲವರು ಹಾಜರಿದ್ದರು.
Sidlaghatta : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ನಗರದ ಡಾಲ್ಫಿನ್ಸ್ ಸಂಸ್ಥೆಗೆ ಜಿಲ್ಲಾ ಖಾಸಗಿ ಶಾಲೆ ಮತ್ತು ಕಾಲೇಜುಗಳ ಒಕ್ಕೂಟದಿಂದ ಅತ್ಯುತ್ತಮ ಆಡಳಿತ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಯನ್ನು ಸಂಸ್ಥೆಯ ಅಧ್ಯಕ್ಷ ಎ. ನಾಗರಾಜ್ ಅವರಿಗೆ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪಕಾರ್ಯದರ್ಶಿ ಅತಿಕ್ ಪಾಷಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ. ರಮೇಶ್, ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಬಿ.ವಿ. ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Sidlaghatta : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ಕೊಡಮಾಡುವ ಪ್ರಸಕ್ತ ಸಾಲಿನ “ಮಕ್ಕಳ ಸ್ನೇಹಿ ಶಿಕ್ಷಕ” ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಡ್ಲಘಟ್ಟದ ಎಸ್. ಕಲಾಧರ್ ಆಯ್ಕೆಯಾಗಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಪ್ರತಿಷ್ಠಾನದ ಅಧ್ಯಕ್ಷ ಡಾ. ನಿಂಗು ಸೊಲಗಿ, ಪ್ರಶಸ್ತಿ ₹5000 ನಗದು, ಫಲಕ, ಫಲ-ಪುಷ್ಪ ಹೊಂದಿದೆ. ಸೆ. 7 ರಂದು ಮುಂಡರಗಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಇರುವ ಪರಿಚಿತ ಸಮುದಾಯ, ಆಯಾ ಭಾಗದ ಅಧಿಕಾರಿಗಳು, ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಮಕ್ಕಳ ಸ್ನೇಹಿಯಾಗಿ ನಾವಿನ್ಯಯುತ ಸೃಜನಾತ್ಮಕ ಪ್ರಯೋಗ, ಚಟುವಟಿಕೆಗಳೊಂದಿಗೆ ಕಾರ್ಯ ಮಾಡುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಶಿಡ್ಲಘಟ್ಟದವರಾದ ಎಸ್. ಕಲಾಧರ್ ಅವರು ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರೆಗಿನ 23 ವರ್ಷಗಳ ತಮ್ಮ ಸೇವಾ ಅವಧಿಯಲ್ಲಿ ಶಾಲೆಯಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಿದ್ದಾರೆ. ಶಾಲೆಯಾಚೆಗೂ, ಮಕ್ಕಳ ಶಿಕ್ಷಣ ಮತ್ತು ಸಾಹಿತ್ಯದ ಕೆಲಸಗಳಲ್ಲಿ ನಿರತವಾಗಿರುವ ಇವರು “ನವಿಲಗರಿ” ಎಂಬ ಮಕ್ಕಳ ಮಾಸಿಕ ಪ್ರಾರಂಭಿಸಿ ಎರಡು ವರ್ಷ ನಿರ್ವಹಿಸಿದ್ದಾರೆ. ಮಕ್ಕಳ ಗೋಡೆ ಪತ್ರಿಕೆ “ಬೇಲಿಹೂ”ನ ಪ್ರಕಟಣೆ ನಿರ್ವಹಿಸಿದ್ದಾರೆ. ಕನ್ನಮಂಗಲ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮಕ್ಕಳಿಂದ ಚಿತ್ರ, ಕಥೆ, ಕವನ ಬರೆಸಿ ಮಕ್ಕಳ ಜೀವನಾನುಭವವನ್ನು ಕ್ರೂಡೀಕರಿಸಿ ಎಂಟು ವರ್ಷಗಳ ಕಾಲ ಶಾಮಂತಿ ಎಂಬ ಪುಸ್ತಕದ ಮಾಲೆಯನ್ನು ಹೊರತಂದಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ “ಗೋಡೆತೇರು” ಗೋಡೆ ಪತ್ರಿಕೆಯ ವಿನ್ಯಾಸ ಹಾಗೂ ಸಂಪಾದಕೀಯ ಸಮಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ “ಬಾಲನಂದಿ” ಮಕ್ಕಳ ಪತ್ರಿಕೆಯ ಸಂಪಾದಕರಾಗಿ ಕೆಲಸ ಮಾಡಿದ್ದಾರೆ.
Sidlaghatta : SSLC ಪರೀಕ್ಷೆಯಲ್ಲಿ ಯಾವ ಸರ್ಕಾರಿ ಶಾಲೆಯ ವಿದ್ಯಾರ್ಥಿ ತಾಲ್ಲೂಕಿಗೆ ಹೆಚ್ಚು ಅಂಕ ಗಳಿಸುವರೋ ಆ ಶಾಲೆಯ ಶಿಕ್ಷಕರನ್ನು ಮುಂದಿನ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಸೂಕ್ತ ಬಹುಮಾನದೊಂದಿಗೆ ಸನ್ಮಾನಿಸುವುದಾಗಿ ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ಹೊರವಲಯದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಡೆದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ 17 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ ಒಂದು ಲಕ್ಷ ರೂ, ಎರಡನೇ ಸ್ಥಾನ ಪಡೆದ ವಿದ್ಯಾರ್ಥಿಗೆ 50 ಸಾವಿರ ರೂ ಮತ್ತು ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಗೆ 25 ಸಾವಿರ ರೂ ಬಹುಮಾನವಾಗಿ ನೀಡಲಾಗುವುದು. ಈ ಪ್ರೋತ್ಸಾಹದ ಹಿಂದಿನ ಉದ್ದೇಶ ನಮ್ಮ ಕ್ಷೇತ್ರ ಶೈಕ್ಷಣಿಕವಾಗಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪ್ರಥಮಸ್ಥಾನ ಪಡೆಯಬೇಕೆಂಬುದಾಗಿದೆ ಎಂದು ಹೇಳಿದರು.
ಸಂಸದ ಮಲ್ಲೇಶ್ ಬಾಬು ಮಾತನಾಡಿ, ತಮ್ಮ ಸಂಸದರ ನಿಧಿಯಿಂದ ನೌಕರರ ಭವನ ಮತ್ತು ಗುರುಭವನಕ್ಕೆ ತಲಾ 25 ಲಕ್ಷ ರೂ ನೀಡುವುದಾಗಿ ಪ್ರಕಟಿಸಿ, ಶಿಕ್ಷಕರ ವೃತ್ತಿ ಕಠಿಣವಾದದ್ದು, ತಾಳ್ಮೆ, ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯದಿಂದ ಕರ್ತವ್ಯವನ್ನು ನಿರ್ವಹಿಸಬೇಕೆಂದರು.
ತುಮಕೂರು ಜಿಲ್ಲೆಯ ಜ್ಞಾನಜ್ಯೋತಿ ರಾಷ್ಟ್ರೀಯ ವಿದ್ಯಾಲಯದ ಪ್ರಾಂಶುಪಾಲ ಸಿ.ವಿ.ಎನ್.ಮೂರ್ತಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಪ್ರತಿಯೊಂದು ಮಗುವಿಗೂ ಹತ್ತನೇ ತರಗತಿಯವರೆಗೂ ಉಚಿತ ಮತ್ತು ಸಮಾನ ಶಿಕ್ಷಣ ಸಿಗದಿದ್ದಲ್ಲಿ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ದ್ರೋಹವಾಗುತ್ತದೆ. ಶಿಕ್ಷಣವೆಂದರೆ ಅಂಕಗಳಿಕೆಯ ಕಾರ್ಖಾನೆಯಲ್ಲ, ಸಂಸ್ಕಾರ ಸಿಗುವ ದೇಗುಲ. ಶ್ರೇಷ್ಠ ಶಿಕ್ಷಕರಿಂದ ಶ್ರೇಷ್ಠ ಸಮಾಜ ನಿರ್ಮಾಣ ಸಾಧ್ಯ. ಶಿಕ್ಷಕರ ದಿನಾಚರಣೆಯು ಚಿಂತನ, ಮಂಥನ, ಆತ್ಮಾವಲೋಕಿತ ಸಂಕಲ್ಪ ಕಾರ್ಯಕ್ರಮ ಎಂದು ಹೇಳಿದರು.
ನಿವೃತ್ತ ಶಿಕ್ಷಕರು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ, ಹಂಡಿಗನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ತಹಶೀಲ್ದಾರ್ ಎನ್.ಗಗನಸಿಂಧು, ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತೆ ಜಿ.ಅಮೃತ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಲಕ್ಷ್ಮಣರಾಜು ಹಾಜರಿದ್ದರು.
ಶಿಡ್ಲಘಟ್ಟದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಈಗ ಚೇಳೂರು ತಹಶೀಲ್ದಾರ್
ಕೆ.ಶ್ವೇತಾ ಅವರು ಶಿಡ್ಲಘಟ್ಟ ತಾಲ್ಲೂಕಿನ ಬಸವಾಪಟ್ಟಣದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಭಕ್ತರಹಳ್ಳಿಯ ಬಿ.ಎಂ.ವಿ.ಶಾಲೆಯಲ್ಲಿ ಪ್ರೌಢಶಿಕ್ಷಣ, ವಿಜಯಪುರ ನಂದಿನಿ ಕಾಲೇಜಿನಲ್ಲಿ ಪಿಯುಸಿ, ಚಿಕ್ಕಬಳ್ಳಾಪುರದ ಕೆ.ವಿ.ಕಾಲೇಜಿನಲ್ಲಿ ಬಿ.ಫಾರಮ್, ಎಂ.ಫಾರಮ್, 2017-18 ರಲ್ಲಿ ಕೆ.ಎ.ಎಸ್ ನಲ್ಲಿ ರಾಜ್ಯಕ್ಕೆ ಐದನೇ ರ್ಯಾಂಕ್ ಪಡೆದಿರುವರು.
Appegowdanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಡ್ಲಘಟ್ಟ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಣ್ಣಿನ ತಪಾಸಣೆ ನಡೆಸಿದರು.
ಲಯನ್ಸ್ ಕ್ಲಬ್ ನ ಜಿಲ್ಲಾ ಕ್ಯಾಬಿನೆಟ್ ಅಧಿಕಾರಿ 317 ಎಫ್ ಅಜಯ್ ಕೀರ್ತಿ ಮಾತನಾಡಿ, ಲಯನ್ಸ್ ಸಂಸ್ಥೆಯು ಸಮಾಜಮುಖಿಯಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಶಿಕ್ಷಣ ಸಂಸ್ಥೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ, ನೇತ್ರ ತಪಾಸಣೆಯಂತಹ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಇಂತಹ ಉತ್ತಮ ಅವಕಾಶಗಳನ್ನು ಮಕ್ಕಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ.ಎಸ್.ವಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಸಮಯದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಬೇಕಾಗಿರುವುದರಿಂದ ನಿಮ್ಮಲ್ಲಿ ಏಕಾಗ್ರತೆಯನ್ನು ಉಂಟು ಮಾಡುವಂತಹ ಕಣ್ಣುಗಳ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳುವುದು ಉತ್ತಮ. ಕೆಲವು ಮಕ್ಕಳಲ್ಲಿ ದೃಷ್ಟಿಯಲ್ಲಿ ಕಂಡು ಬರುತ್ತಿರುವ ಸಣ್ಣ ಸಣ್ಣ ದೋಷಗಳನ್ನು ಪ್ರಾಥಮಿಕ ಹಂತದಲ್ಲೆ ಗುರುತಿಸಿ, ಆರಂಭದಲ್ಲೆ ಸರಿಪಡಿಸಿಕೊಳ್ಳಲು ಉಚಿತ ನೇತ್ರ ತಪಾಸಣಾ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತವೆ. ಇಂತಹ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕ್ಲಬ್ ನ ಅಧ್ಯಕ್ಷ ಮೊಹಮದ್ ಅಮಾನುಲ್ಲಾ, ಅರುಣ್, ಮಧುಸೂದನ್, ಶಾಲೆಯ ಉಪಪ್ರಾಂಶುಪಾಲ ಮುರಳಿಧರ.ಡಿ.ಪಿ, ಶಿಕ್ಷಕರು ಪ್ರಸಾದ್.ಎಸ್.ಎ, ದಿವಾಕರರೆಡ್ಡಿ.ಸಿ.ಜಿ, ಶಶಿದೀಪಿಕಾ.ಜಿ, ನರೇಶ್.ಜಿ.ಎನ್, ಲಕ್ಷ್ಮೀನಾರಾಯಣ ನಾಯಕ್, ರಾಮಪ್ಪ ಸಿದ್ಧಪ್ಪ ಶಿವಾಯಿ, ತ್ರಿವೇಣಿ.ಕೆ.ಪಿ, ಸಂಧ್ಯಾ, ಯಲ್ಲಪ್ಪ ಗಡ್ಡನಕೇರಿ, ಸಿದ್ದುಹುಣಸಿಕಟ್ಟಿ ಹಾಜರಿದ್ದರು.