ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಶುಕ್ರವಾರ ಗ್ರಾಮಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಎಂ.ಎನ್.ಶ್ರೀನಿವಾಸಮೂರ್ತಿ(ಪುಲಿ) ಅವರಿಗೆ ಸನ್ಮಾನ ಮಾಡಲಾಯಿತು.
ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿಜಥಾ
ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸುರಕ್ಷತಾ ಸಪ್ತಾಹದ ಅಂಗವಾಗಿ ಶುಕ್ರವಾರ ಜಾಗೃತಿಜಥಾಗೆ ಗ್ರಾಮಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ ಚಾಲನೆ ನೀಡಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ಆರತಿ, ಸದಸ್ಯ ಎನ್.ಪಿ.ನಾಗರಾಜಪ್ಪ ಹಾಜರಿದ್ದರು.
ಸುಗಟೂರು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ನಗರಪ್ರದೇಶಗಳಲ್ಲಿ ವಲಸಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನ್ಯಭಾಷಿಕರ ಆಗಮನದಿಂದಾಗಿ ಭಾಷಾ ಸಮಸ್ಯೆಯೂ ಹೆಚ್ಚುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಕನ್ನಡತನ, ಭಾಷೆ ಉಳಿದಿದೆ ಎಂದು ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.
ತಾಲ್ಲೂಕಿನ ಸುಗಟೂರು ಗ್ರಾಮದ ಮುಖ್ಯ ವೃತ್ತದಲ್ಲಿ ಕಾಲೋನಿ ಅಭಿವೃದ್ಧಿ ಸಮಿತಿ ಮತ್ತು ಅಂಬೇಡ್ಕರ್ ಯುವಕಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿಯೇ ಆದರೆ ಮಾತ್ರ ಮಕ್ಕಳಲ್ಲಿ ಭಾವನೆಗಳ ಅಭಿವ್ಯಕ್ತಿ ಸುಲಭವಾಗುತ್ತದೆ. ಸೃಜನಶೀಲತೆ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಗ್ರಾಮದಲ್ಲಿ ಪ್ರಭಾತ್ಭೇರಿ, ಮೆರವಣಿಗೆ ನಡೆಯಿತು.
ಗುತ್ತಿಗೆದಾರ ಶಿವಶಂಕರಪ್ಪ, ಎಂ.ದೇವರಾಜು, ಪಿಳ್ಳಣ್ಣ, ಬಾಬು, ಯುವಕಸಂಘದ ಪ್ರಸಾದ್, ರವಿಕುಮಾರ್. ಎಸ್.ಆರ್.ಮಂಜುನಾಥ್, ನರಸಿಂಹಮೂರ್ತಿ, ಸುರೇಶ್, ರವಿಕುಮಾರ್, ನರಾಜು, ಸತೀಶ್, ಪ್ರಸನ್ನಕುಮಾರ್, ಮುನಿರಾಜು, ಮತ್ತಿತರರು ಇದ್ದರು.
ತಾಲ್ಲೂಕು ಕಚೇರಿ ಆವರಣದಲ್ಲಿ ನೂತನ ನಂದಿನಿ ಹಾಲಿನ ಉತ್ಪನ್ನ ಮಳಿಗೆ
ಜನರ ಆರೋಗ್ಯದ ಬಗ್ಗೆ ಗಮಹರಿಸುವುದರೊಂದಿಗೆ ಕಡಿಮೆ ಬೆಲೆಗೂ ಜನ ಸಾಮಾನ್ಯರಿಗೂ ಸಿಗುವಂತೆ ತಯಾರಿಸಿರುವ ನಂದಿನಿ ಹಾಲಿನ ಉತ್ಪನ್ನಗಳನ್ನು ಖರೀದಿಸುವುದರಿಂದ ಈ ಭಾಗದ ಹೈನುಗಾರಿಕೆ ಕ್ಷೇತ್ರ ಮತ್ತು ರೈತರನ್ನು ಸಹ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ನೂತನವಾಗಿ ನಿರ್ಮಿಸಲಾಗಿರುವ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ದಿಂದ ನಂದಿನಿ ಹಾಲಿನ ಉತ್ಪನ್ನಗಳನ್ನು ಎಲ್ಲಾ ವಯೋಮಾನದ ಜನರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಲಾಗುತ್ತಿದೆಯೆ ಹೊರತು ಲಾಭದ ದೃಷ್ಟಿಯಿಂದಲ್ಲ. ಆದರೆ ಇತರೆ ಕಂಪೆನಿಗಳಿಗೆ ಲಾಭವೇ ಮುಖ್ಯ ಹೊರತು ಜನರ ಆರೋಗ್ಯವಲ್ಲ. ಹಾಗಾಗಿ ಅಂತಹ ಕಂಪೆನಿಗಳು ಬಗೆ ಬಗೆಯ ವಸ್ತುಗಳನ್ನು ತಯಾರಿಸಿ ಬಣ್ಣ ಬಣ್ಣದ ಪಾಕೇಟ್ಗಳಲ್ಲಿ ಮಾರಾಟ ಮಾಡುತ್ತಾರೆ. ಅದಕ್ಕೆ ಜನ ಬಹಳ ಬೇಗ ಮರುಳಾಗುತ್ತಾರೆ. ನಂದಿನಿ ಹಾಲಿನ ಉತ್ಪನ್ನಗಳು ಅಂತರಾಷ್ಟ್ರೀಯ ಮಟ್ಟದ ಗುಣಮಟ್ಟ ಹೊಂದಿದ್ದು ರುಚಿ, ಶುಚಿಯಾಗಿಯೂ ಇರುತ್ತದೆಯಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ ನಂದಿನಿ ಉತ್ಪನ್ನಗಳ ಸೇವನೆ ಬಹಳ ಮುಖ್ಯ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ ಹಾಲು, ಮಜ್ಜಿಗೆ, ಮೊಸರು, ಪೇಡ, ಅಲ್ವಾ ಇನ್ನಿತರೆ ಉತ್ಪನ್ನಗಳು ಬಹಳ ಕಡಿಮೆ ಬೆಲೆಗೆ ಇಲ್ಲಿ ಸಿಗಲಿವೆ. ಇವುಗಳನ್ನು ಖರೀದಿಸುವುದರಿಂದ ನಾವು ಹೈನುಗಾರಿಕೆಯನ್ನು ಜತೆಗೆ ರೈತರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಬೇರೆ ಬೇರೆ ಬ್ರಾಂಡ್ಗಳ ವಸ್ತುಗಳಿಗಿಂತಲೂ ನಂದಿನಿ ಬ್ರಾಂಡ್ನ ಉತ್ಪನ್ನಗಳು ಆರೋಗ್ಯ ಹಾಗೂ ಬೆಲೆ ದೃಷ್ಟಿಯಿಂದಲೂ ಉತ್ತಮವಾಗಿದ್ದು ನಂದಿನಿ ಉತ್ಪನ್ನಗಳನ್ನು ಖರೀದಿಸಿ ಸಹಕಾರ ಕ್ಷೇತ್ರ, ಹಾಗು ಈ ಭಾಗದ ರೈತರ ಆರ್ಥಿಕ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಕೆಎಂಎಫ್ನ ಅಧ್ಯಕ್ಷ ಪಿ.ನಾಗರಾಜ್, ವ್ಯವಸ್ಥಾಪಕ ನಿರ್ದೆಶಕ ಎ.ಎಸ್.ಪ್ರೇಮನಾಥ್, ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಜೆ.ಕಾಂತರಾಜ್, ಕೋಚಿಮುಲ್ ನಿರ್ದೇಶಕರಾದ ಬಂಕ್ಮುನಿಯಪ್ಪ, ಆರ್.ಎ.ಉಮೇಶ್, ವೈ.ಬಿ.ಅಶ್ವತ್ಥನಾರಾಯಣ, ಕೆ.ವಿ.ನಾಗರಾಜ್, ಕೆ.ಅಶ್ವತ್ಥರೆಡ್ಡಿ. ಮಹಿಳಾ ನಿರ್ದೇಶಕಿ ಸುನಂದಮ್ಮ ಕೋಲಾರ ಜಿಲ್ಲಾ ಕೇಂದ್ರ ಬ್ಯಾಂಕ್ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಕೋಚಿಮುಲ್ ನಿರ್ವಾಹಕ ನಿರ್ದೇಶಕ ಡಾ.ಡಿ.ಟಿ.ಗೋಪಾಲ್, ಮಾರುಕಟ್ಟೆ ವಿಭಾಗದ ಪ್ರಧಾನ ವ್ಯವಸ್ಥಾಪಕ ಎಂ.ರಘುನಂದನ್, ಸ್ಥಳೀಯ ಶಿಬಿರದ ವ್ಯವಸ್ಥಾಪಕ ಡಾ.ಕೆ.ಜಿ.ಈಶ್ವರಯ್ಯ, ನಂದಿನಿ ಮಾರಾಟ ಮಳಿಗೆಯ ಮಾಲೀಕ ಎ.ಶಶಿಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಕನ್ನಡಿಗರ ಜಾಗೃತಿ ಸಮಾವೇಶ ಮತ್ತು ಸದಸ್ಯತ್ವ ಆಂದೋಲನ
ಚಿಕ್ಕಬಳ್ಳಾಪುರದಲ್ಲಿ ನಡೆಯುವ ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ ಮತ್ತು ಸದಸ್ಯತ್ವ ಆಂದೋಲನಕ್ಕೆ ತಾಲ್ಲೂಕಿನಿಂದ ಶುಕ್ರವಾರ ನೂರಾರು ಮಂದಿ ತೆರಳಿದರು.
ಜಿಲ್ಲೆಯಲ್ಲಿ ಕನ್ನಡಿಗರನ್ನು ಜಾಗೃತಿಗೊಳಿಸುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಕನ್ನಡ ರಕ್ಷಣಾ ವೇದಿಕೆಯನ್ನು ಪ್ರಭಲವಾಗಿ ಸಂಘಟಿಸಲು ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎಂ.ನಾರಾಯಣಗೌಡರ ನಾಯಕತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದೇವೆ. ಜಿಲ್ಲೆಯ ಜನರ ಸಮಸ್ಯೆಯನ್ನು ನೀಗಿಸಲು ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯ ಸೇರಿದಂತೆ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಕ.ರ.ವೇ ಮೂಲಕ ಶ್ರಮಿಸಲಿದ್ದೇವೆ ಎಂದು ಕ.ರ.ವೇ ತಾಲ್ಲೂಕು ಅಧ್ಯಕ್ಷ ಎಂ.ವೆಂಕಟರಮಣಪ್ಪ ಈ ಸಂದರ್ಭದಲ್ಲಿ ತಿಳಿಸಿದರು.
ಕ.ರ.ವೇ ತಾಲ್ಲೂಕು ಗೌರವಾಧ್ಯಕ್ಷ ರಾಮಣ್ಣ, ರವಿಕುಮಾರ್, ಮುನಿರಾಜ್, ದೇವರಾಜ್, ಶಿವಣ್ಣ, ವಿಜಯ್, ನಾರಾಯಣಸ್ವಾಮಿ, ಚಂದ್ರು, ನೂರುಲ್ಲಾ ಮತ್ತಿತರರು ಈ ಸಂದರಭದಲ್ಲಿ ಹಾಜರಿದ್ದರು.
ಆದಿಚುಂಚನಗಿರಿ ನಿರ್ಮಲಾನಂದ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮವನ್ನು ತಾಲ್ಲೂಕಿನ ಅಬ್ಲೂಡು ಗ್ರಾಮದಲ್ಲಿ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.
ತಾಲ್ಲೂಕು ಒಕ್ಕಲಿಗರ ಯುವಸೇನೆ ಮತ್ತು ಅಬ್ಲೂಡು ಗ್ರಾಮ ಪಂಚಾಯತಿ ಒಕ್ಕಲಿಗರ ಯುವಸೇನೆ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿಡ್ಲಘಟ್ಟದ ಬಸ್ ನಿಲ್ದಾಣದಿಂದ ಅಬ್ಲೂಡು ವೇದಿಕೆಯವರೆಗೆ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ವಿಶೇಷವಾಗಿ ಹೂಗಳಿಂದ ಅಲಂಕೃತಗೊಂಡ ಪಲ್ಲಕ್ಕಿಯಿರುವ ವಾಹನದಲ್ಲಿ ನಿರ್ಮಲಾನಂದ ಮಹಾಸ್ವಾಮಿಗಳ ಮೆರವಣಿಗೆಯನ್ನು ನಡೆಸಲಾಯಿತು. ಡೊಳ್ಳು, ಕಂಸಾಲೆ, ಗಾರುಡಿ ಬೊಂಬೆ, ವೇಷಭೂಷಣಗಳೊಂದಿಗೆ ವಿವಿಧ ಕಲಾ ತಂಡಗಳು, ವಾದ್ಯ ವೃಂದಗಳು ಮೆರವಣಿಗೆಯ ಕಳೆಯನ್ನು ಹೆಚ್ಚಿಸಿದ್ದವು. ಒಕ್ಕಲಿಗರ ಯುವಸೇನೆ ವತಿಯಿಂದ ಬೈಕ್ ರ್ಯಾಲಿಯನ್ನು ಆಯೋಜಿಸಿದ್ದು ನೂರಾರು ಬೈಕುಗಳಲ್ಲಿ ಯುವಕರು ಕೆಂಪೇಗೌಡನ ಚಿತ್ರವುಳ್ಳ ಧ್ವಜವನ್ನು ಹಿಡಿದು ಮೆರವಣಿಯ ಮುಂದೆ ಸಾಗಿದರು. ವಿವಿಧ ಗ್ರಾಮಗಳಿಂದ ಟ್ರಾಕ್ಟರ್ಗಳನ್ನು ಅಲಂಕರಿಸಿಕೊಂಡು ಸ್ವಾಮೀಜಿ ಹಾಗೂ ಕೆಂಪೇಗೌಡ ಚಿತ್ರಗಳೊಂದಿಗೆ ಆಗಮಿಸಿದ್ದರು.
ಕೋಟೆ ವೃತ್ತದ ಮದೀನಾ ಮಸೀದಿಯ ಬಳಿ ಮೆರವಣಿಗೆ ಆಗಮಿಸುತ್ತಿದ್ದಂತೆಯೇ ಮಸೀದಿಯ ವತಿಯಿಂದ ಮುಸ್ಲೀಮರು ನಿರ್ಮಲಾನಂದ ಸ್ವಾಮಿಗಳಿಗೆ ಗಂಧ ಪುಷ್ಪಗಳನ್ನು ನೀಡಿ ಆಶೀರ್ವಾದ ಪಡೆದರು.
ಅಬ್ಲೂಡು ಗ್ರಾಮದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ನಿರ್ಮಲಾನಂದ ಸ್ವಾಮಿಗಳು, ‘ಈ ಭಾಗದ ಜಿಲ್ಲೆಗಳಿಗೆ ಶಾಶ್ವತವಾದ ನೀರು ತರಲು ರಾಜಕೀಯವನ್ನು ಬದಿಗಿಟ್ಟು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಶ್ರಮಿಸಬೇಕು. ಅಗತ್ಯಬಿದ್ದಲ್ಲಿ ಜನರೆಲ್ಲಾ ಒಗ್ಗೂಡಿ ನೀರಿಗಾಗಿ ಹೋರಾಟ ನಡೆಸಲು ಮುಂದಾಗಬೇಕು. ಒಕ್ಕಲುತನವು ಅನ್ನವನ್ನು ಉತ್ಪಾದಿಸುವ ಉತೃಷ್ಟ ಕೆಲಸ. ವ್ಯವಸಾಯವನ್ನು ಬಿಡದೆ, ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ಆದಿಚುಂಚನಗಿರಿ ಮಠವು ಜನಾಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದವರೂ ಮಠದ ಸೇವಾ ಕಾರ್ಯಗಳಾದ ಶಿಕ್ಷಣ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಪ್ರಯೋಜನ ಪಡೆಯುತ್ತಿದ್ದಾರೆ’ ಎಂದು ಹೇಳಿದರು.
ಗುಡಿಯಪ್ಪ, ಆನೂರು ಜಿ.ಬಚ್ಚಪ್ಪ, ತಿಪ್ಪೇನಹಳ್ಳಿ ರಾಘವೇಂದ್ರ, ಭಕ್ತರಹಳ್ಳಿ ಬೈರೇಗೌಡ, ವೆಂಕಟರಾಮರೆಡ್ಡಿ, ಮಳ್ಳೂರು ಹರೀಶ್, ಜಗನ್ನಾಥ್ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು. ಹೆಚ್ಚು ಅಂಕ ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ನಿರ್ಮಲಾನಂದ ಸ್ವಾಮಿಗಳಿಗೆ ಬೆಳ್ಳಿ ಕಿರೀಟವನ್ನಿಟ್ಟು, ಫಲಪುಷ್ಪಗಳನ್ನು ನೀಡಿ ಗುರುವಂದನೆಯನ್ನು ಸಲ್ಲಿಸಲಾಯಿತು.
ಶಾಸಕರಾದ ಎಂ.ರಾಜಣ್ಣ, ಡಾ.ಸುಧಾಕರ್, ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಾಥನಂದ ಸ್ವಾಮೀಜಿ, ಪ್ರೊ.ಶಿವರಾಮರೆಡ್ಡಿ, ಡಾ.ರಮೇಶ್, ಸತೀಶ್, ರಾಮಚಂದ್ರ, ಪ್ರತಾಪ್, ಎಸ್.ಎಂ.ನಾರಾಯಣಸ್ವಾಮಿ, ಗೋಪಾಲ್, ಬೈರೇಗೌಡ, ಆಂಜನೇಯರೆಡ್ಡಿ, ಮುನಿಕೃಷ್ಣಪ್ಪ, ಮುನೇಗೌಡ, ಆರ್.ಎ.ಉಮೇಶ್, ಸುರೇಂದ್ರಗೌಡ, ಅಜಿತ್, ಬಿ.ನಾರಾಯಣಸ್ವಾಮಿ, ಜೆ.ಎಸ್.ವೆಂಕಟಸ್ವಾಮಿ, ಪುರುಷೋತ್ತಮ್, ಪ್ರಾಂಶುಪಾಲ ಮಹದೇವಯ್ಯ, ಚಿಕ್ಕೇಗೌಡ, ಮಂಜುನಾಥ್, ಸುಧಾಕರ್, ಆಂಜನೇಯರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಅಂಗವಿಕಲರಿಗೆ ಅನುಕಂಪದ ಬದಲಿಗೆ ಅವಕಾಶಗಳನ್ನು ಕಲ್ಪಿಸಿ
ಅಂಗವಿಕಲರಿಗೆ ಅನುಕಂಪದ ಬದಲಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟಾಗ ಸಮಾಜದಲ್ಲಿ ಉತ್ತಮವಾದ ವ್ಯಕ್ತಿಗಳಾಗಿ ರೂಪುಗೊಳ್ಳುವುದರಲ್ಲಿ ಅನುಮಾನವಿಲ್ಲವೆಂದು ಸಿವಿಲ್ ನ್ಯಾಯಾಧೀಶರಾದ ವಿಜಯದೇವರಾಜ ಅರಸ್ ಹೇಳಿದರು.
ಪಟ್ಟಣದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಆಯೋಜನೆ ಮಾಡಿದ್ದ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಅಂಗವೈಕಲ್ಯವೆಂಬುದು ಶಾಪವಲ್ಲ, ಜೀವನದಲ್ಲಿ ಆಕಸ್ಮಿಕವಾಗಿ ಸಂಭವಿಸುವಂತಹ ಕೆಲವು ಘಟನೆಗಳಿಂದ ಅಂಗವೈಕಲ್ಯ ಉಂಟಾಗುತ್ತದೆ, ಇದು ಯಾವುದೇ ಶಾಪವಲ್ಲ. ಸಮಾಜದಲ್ಲಿ ಎಲ್ಲರಂತೆ ಬದುಕು ಕಟ್ಟಿಕೊಳ್ಳುವಂತಹ ಸಾಮರ್ಥ್ಯ ಅಂಗವಿಕಲರಲ್ಲಿದೆ. ಕೈಕಾಲುಗಳಿಲ್ಲದಿದ್ದರೂ ಮೀನಿನಂತೆ ಈಜಬಲ್ಲರು, ವಿಮಾನವನ್ನು ಚಾಲನೆ ಮಾಡಬಲ್ಲರು, ಅಂಗವೈಕಲ್ಯದಿಂದ ಕುಗ್ಗಿ ಹೋಗದೆ ಎಲ್ಲರಂತೆ ಪರೀಕ್ಷೆಗಳಲ್ಲಿ ಉತ್ತಮವಾದ ಫಲಿತಾಂಶವನ್ನು ತರಬಲ್ಲರು. ಇಂತಹ ಮಕ್ಕಳಿಗೆ ಉತ್ತಮವಾದ ಅವಕಾಶಗಳನ್ನು ನೀಡಿದಾಗ ಅವರು ಸಮಾಜದಲ್ಲಿ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸುತ್ತಾರೆ ಎಂದರು.
ನ್ಯಾಯಾಧೀಶರಾದ ಶ್ರೀಕಂಠ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಗುಣಮಟ್ಟದ ಹಾಲಿನಿಂದಲೇ ಒಕ್ಕೂಟಗಳು ಉಳಿಯಲು ಸಾಧ್ಯವಾಗುತ್ತದೆ
ಹಾಲು ಉತ್ಪಾದಕರು ಪೂರೈಕೆ ಮಾಡುತ್ತಿರುವ ಗುಣಮಟ್ಟದ ಹಾಲಿನಿಂದಲೇ ಒಕ್ಕೂಟಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ಕೆ.ಎಂ.ಎಫ್.ಅಧ್ಯಕ್ಷ ಪಿ.ನಾಗರಾಜು ಹೇಳಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ ಕೋಚಿಮುಲ್ ಹಾಗೂ ತುಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಿ.ಟಿ.ಎಸ್.ಯೋಜನೆಯ ಎಲ್ಲಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದ ಪಿ.ಡಿ.ಎಸ್.ಯೋಜನೆಯಲ್ಲಿ ಜನಿಸಿರುವ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಬರಗಾಲ ಪೀಡಿತ ಪ್ರದೇಶವಾಗಿದ್ದರೂ ಕೂಡಾ ಬಹಳಷ್ಟು ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡುವಂತಹ ತಳಿಯ ಹಸುಗಳನ್ನು ಹೊಂದಿರುವ ಈ ಭಾಗದ ರೈತರುಗಳು, ಹಣಕಾಸಿನ ತೊಂದರೆಯಿಂದಾಗಿ ಉತ್ತಮ ತಳಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ರಾಸುಗಳಿಗೆ ನೀಡುವಂತಹ ಮೇವುಗಳು ಬಹಳ ಮುಖ್ಯವಾಗುತ್ತದೆ, ಈ ಭಾಗದಲ್ಲಿ ನೀರಿನ ಅಭಾವದಿಂದಾಗಿ ಮೇವುಗಳ ಕೊರತೆ ತೀವ್ರವಾಗಿ ಕಾಡುತ್ತಿರುವುದರಿಂದ ಹಾಲಿನ ಪ್ರಮಾಣವು ಕಡಿಮೆಯಾಗುವ ಸ್ಥಿತಿ ಬರಬಹುದಾಗಿದೆ ಈ ನಿಟ್ಟಿನಲ್ಲಿ ನಮ್ಮ ಒಕ್ಕೂಟದಲ್ಲಿ ರಾಸುಗಳಿಗೆ ಅವಶ್ಯವಾಗಿರುವ ಪೌಷ್ಟಿಕಾಂಶಯುಕ್ತವಾದ ಪಶುಆಹಾರವನ್ನು ಸಿದ್ದಪಡಿಸುತ್ತಿದ್ದು, ರೈತರು ಖರೀದಿ ಮಾಡಿ ರಾಸುಗಳಿಗೆ ನೀಡಿ ಉತ್ತಮಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಬೇಕು ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ತೀವ್ರ ನೀರಿನ ಕೊರತೆಯಿಂದಾಗಿ ಈ ಭಾಗದ ರೈತರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡಲು ಪರದಾಡುವಂತಾಗಿದೆ, ಹಸುವಿನ ಹಾಲಿನಲ್ಲಿ ಪ್ಲೋರೈಡ್ನ ಅಂಶ ಕಂಡು ಬರುತ್ತಿದೆ ಎಂಬ ಆತಂಕಗಳು ರೈತರನ್ನು ಕಾಡತೊಡಗಿವೆ. ೧೪೦೦ ಅಡಿಗಳು ಕೊರೆದರೂ ನೀರಿನ ಮೂಲಗಳು ಕಾಣಿಸದೆ ಇರುವುದರಿಂದ ನೀರಿಗೆ ಹಾಹಾಕಾರ ಉಂಟಾಗುತ್ತಿರುವುದರಿಂದ ಮೇವುಗಳಿಗೂ ಸಮಸ್ಯೆಯಾಗುತ್ತಿದೆ, ಈ ನಿಟ್ಟಿನಲ್ಲಿ ಕೆ.ಎಂ.ಎಫ್.ಒಕ್ಕೂಟ ಈ ಭಾಗದ ರೈತರ ನೆರವಿಗೆ ಧಾವಿಸಬೇಕಾಗಿದೆ, ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ಈ ಭಾಗದ ರೈತರನ್ನು ಉಳಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಡಿ.ಸಿ.ಸಿ.ಬ್ಯಾಂಕಿನಿಂದ ತುಮ್ಮನಹಳ್ಳಿ, ಎ.ಹುಣಸೇನಹಳ್ಳಿ, ಮಲ್ಲಿಶೆಟ್ಟಿಪುರ ಹಾಗೂ ಮುಗಲಡಪಿ ಸಹಕಾರ ಸಂಘಗಳಿಗೆ ೩೭ ಲಕ್ಷ ರೂಪಾಯಿಗಳ ಸಾಲವನ್ನು ವಿತರಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸಹಕಾರ ಸಂಘಗಳಿಗೆ ಸಾಲವನ್ನು ವಿತರಣೆ ಮಾಡಲಾಗುತ್ತದೆ, ಸಹಕಾರ ಸಂಘಗಳು ಡಿ.ಸಿ.ಸಿ.ಬ್ಯಾಂಕುಗಳಲ್ಲಿ ವ್ಯವಹರಿಸಬೇಕು ಎಂದು ಜಿಲ್ಲಾ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಹೇಳಿದರು.
ಹಾಲು ಉತ್ಪಾದಕಕ ಸಹಕಾರ ಸಂಘಗಳಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡಿದ್ದ ಸಂಘಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಕೋಚಿಮುಲ್ ಅಧ್ಯಕ್ಷ ಜೆ.ಕಾಂತರಾಜ್, ನಿರ್ದೇಶಕ ಬಂಕ್ ಮುನಿಯಪ್ಪ, ಕೆ.ಎಂ.ಎಫ್.ನ ಸಿ.ಇ.ಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎ.ಎಸ್.ಪ್ರೇಮ್ನಾಥ್, ನಿರ್ದೇಶಕ ಕೆ.ವಿ.ನಾಗರಾಜ್, ಕೆ. ಅಶ್ವಥ್ಥರೆಡ್ಡಿ, ಆರ್.ರಾಮಕೃಷ್ಣೇಗೌಡ, ವೈ.ಬಿ. ಅಶ್ವಥ್ಥನಾರಾಯಣ, ಸುನಂದಮ್ಮ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾ ಪಿ.ಶಿವಾರೆಡ್ಡಿ, ಪಿ.ವಿ.ನಾಗರಾಜ್, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಡಿ.ಸಿ.ಸಿ.ಬ್ಯಾಂಕ್ ವ್ಯವಸ್ಥಾಪಕ ಲಿಂಗರಾಜು, ಕೋಚಿಮುಲ್ ಉಪವ್ಯವಸ್ಥಾಪಕರಾದ ಕೆ.ಜಿ.ಈಶ್ವರಯ್ಯ, ಗೋಪಾಲರಾವ್, ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಹಾಯ ಸೌಲಭ್ಯ ಕಡಿತ – ರೇಷ್ಮೆ ಕೃಷಿಕರ ತೀವ್ರ ಆಕ್ರೋಶ
ಬೆಳಗಾವಿ ಅಧಿವೇಶನದಲ್ಲಿ ರೇಷ್ಮೆ ಕೃಷಿಕರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ವತಿಯಿಂದ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಕುಂದು ಕೊರತೆಗಳ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸರ್ಕಾರವು ರೇಷ್ಮೆ ಕೃಷಿಕರ ಸಹಾಯ ಧನ ಸೌಲಭ್ಯವನ್ನು ಕಡಿತಗೊಳಿಸಿರುವ ರೈತ ವಿರೋಧಿ ನೀತಿಗೆ ಒಕ್ಕೊರಲಿನಿಂದ ಆಕ್ರೋಶ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ಈ ಜಿಲ್ಲೆಗಳಲ್ಲಿ ರೇಷ್ಮೆ ಕೃಷಿಯು ಕೃಷಿಕರ ಪಾಲಿಗೆ ಕಲ್ಪವೃಕ್ಷದಂತಿದೆ. ಇತ್ತೀಚಿಗೆ ಸರ್ಕಾರವು ರೇಷ್ಮೆ ಕೃಷಿ ಇಲಾಖೆಯಿಂದ ಕೊಡುತ್ತಿದ್ದ ಸಹಾಯಧನ ಸೌಲಭ್ಯವನ್ನು ಶೇಕಡಾ ೫೦ ರಷ್ಟು ಕಡಿತಗೊಳಿಸಿ, ಈ ಸೌಲಭ್ಯವನ್ನು ಪಡೆಯಲು ದ್ವಿತಳಿ ರೇಷ್ಮೆ ಗೂಡನ್ನು ಬೆಳೆಯಬೇಕೆಂಬ ನಿಯಮ ರೂಪಿಸಿರುವುದರಿಂದ ರೈತರು ಸಹಾಯಧನ ಸೌಲಭ್ಯ ಪಡೆಯುವಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ದ್ವಿತಳಿ ರೇಷ್ಮೆ ಬೆಳೆಯು ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು, ಇದರಲ್ಲಿ ರೋಗವನ್ನು ತಡೆದುಕೊಳ್ಳುವ ಶಕ್ತಿ ಕಡಿಮೆ ಇರುವುದರಿಂದ ಪದೇ ಪದೇ ಬೆಳೆಗಳು ವಿಫಲವಾಗುತ್ತಿದ್ದು, ರೈತನಿಗೆ ನಷ್ಟವಾಗುತ್ತಿದೆ. ಇಲಾಖೆಯು ದ್ವಿತಳಿ ರೇಷ್ಮೆ ಗೂಡನ್ನು ಬೆಳೆಯಬೇಕೆಂಬ ಕಡ್ಡಾಯ ನಿಯಮವನ್ನು ಸಡಿಲಿಸಿ ಪ್ರೋತ್ಸಾಹ ಧನ ಮತ್ತು ಸಹಾಯಧನವನ್ನು ಎಲ್ಲಾ ರೈತರಿಗೂ ತಲುಪುವಂತೆ ಮಾಡುವುದರಿಂದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಮಾತನಾಡಿ, ಬರಗಾಲದ ಜಿಲ್ಲೆಗಳಾದ ನಮ್ಮ ಜಿಲ್ಲೆಗಳಲ್ಲಿ ಹನಿನೀರಾವರಿ ಅಳವಡಿಸಿಕೊಂಡ ಎಲ್ಲಾ ರೈತರಿಗೆ ಯಾವುದೇ ಮಿತಿ ನಿಗಧಿಪಡಿಸದೇ ಸೌಲಭ್ಯವನ್ನು ಈ ಹಿಂದಿನಂತೆ ನೀಡಬೇಕಾಗಿದೆ. ಅದೇ ರೀತಿಯಾಗಿ ಸಲಕರಣೆಗಳಿಗೆ ಕೊಡುತ್ತಿದ್ದ ಸಹಾಯಧನ ಸೌಲಭ್ಯವನ್ನು ಈ ಹಿಂದಿನಂತೆ ನೀಡಲು ಕ್ರಮ ಕೈಗೊಂಡು ಕೂಲಿಗಾರರ ಸಮಸ್ಯೆಯನ್ನು ಹೋಗಲಾಡಿಸಲು ಮಿನಿ ಟ್ರ್ಯಾಕ್ಟರ್, ಸೊಪ್ಪು ಕಟಾವು ಯಂತ್ರ, ಕಳೆ ತೆಗೆಯುವ ಸಾಧನ, ಸ್ಪ್ರೇಯರ್, ಜನರೇಟರ್, ಪ್ಲಾಸ್ಟಿಕ್ ತಟ್ಟೆಗಳು ಇತರೆ ಸಾಮಾಗ್ರಿಗಳನ್ನು ಈ ಹಿಂದಿನಂತೆ ಸಹಾಯಧನ ಸೌಲಭ್ಯ ಕಲ್ಪಿಸಿ ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕಿದೆ ಎಂದರು.
ನೂಲು ಬಿಚ್ಚಾಣಿಕೆದಾರರಾದ ಮಹಮದ್ ಅನ್ವರ್ರವರು ಮಾತನಾಡಿ ಕೆ.ಎಸ್.ಎಂ.ಬಿ.ಯಲ್ಲಿ ಬಿಡುಗಡೆಯಾದ ಹಣವನ್ನು ಪ್ರತ್ಯೇಕವಾಗಿ ಮೀಸಲಿರಿಸಿ ಕಚ್ಚಾ ರೇಷ್ಮೆ ಕುಸಿತ ಕಂಡಾಗ ಬೆಂಬಲ ಬೆಲೆಯಾಗಿ ಮತ್ತು ಒತ್ತೆ ಸಾಲದ ರೂಪದಲ್ಲಿ ಬಳಸಿಕೊಳ್ಳಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಪಹಣಿಗಳನ್ನು ಪರಿಗಣಿಸಿ ಬಂಗಾರದ ಮೇಲೆ ಕೊಡುವ ಕಡಿಮೆ ಬಡ್ಡಿ ಸಾಲದ ವಿಧಾನದಂತೆ ನೂಲು ಬಿಚ್ಚಾಣಿಕೆದಾರರಿಗೆ ಅವರ ಪರವಾನಗಿಯನ್ನು ಪಹಣಿಯಂತೆ ಪರಿಗಣಿಸಿ ಬಂಗಾರದ ಮೇಲೆ ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುವ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಹುತೇಕ ರೈತರು ಅಸಮಾಧಾನ ವ್ಯಕ್ತಪಡಿಸಿ ಮಿಶ್ರತಳಿ ಗೂಡಿಗೆ ಕೊಡುತ್ತಿರುವ ಒಂದು ಕೆ.ಜಿ.ಗೆ ೩೦ ರೂ. ದ್ವಿತಳಿ ಗೂಡಿಗೆ ೫೦ ರೂ. ಸಹಾಯ ಧನವನ್ನು ಆಗಸ್ಟ್ ನಂತರ ಘೋಷಿಸಲಾಗಿದ್ದು, ಸರ್ಕಾರವು ಈವರೆಗೂ ಹಣ ಬಿಡುಗಡೆ ಮಾಡದೇ ಇರುವುದರಿಂದ ಅನವಶ್ಯಕವಾಗಿ ರೈತರು ಇಲಾಖೆಯ ಬಾಗಿಲಿಗೆ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಅಲೆದಾಡಬೇಕಿದೆ. ಇಂತಹ ಯೋಜನೆಗಳನ್ನು ಜಾರಿಗೆ ತರುವುದನ್ನು ವಿರೋಧಿಸಿ ಈ ಯೋಜನೆಯನ್ನು ಸಂಪೂರ್ಣ ನಿಲ್ಲಿಸುವಂತೆ ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಮಳ್ಳೂರು ಹರೀಶ್, ಸೊಣ್ಣೇನಹಳ್ಳಿ ನಾರಾಯಣಸ್ವಾಮಿ, ತಾದೂರು ಮಂಜುನಾಥ್, ಭಾಸ್ಕರ್ ರೆಡ್ಡಿ, ಮಳಮಾಚನಹಳ್ಳಿ ದೇವರಾಜ್, ಸೊಣ್ಣೇನಹಳ್ಳಿ ನಿರಂಜನ್, ಅಬ್ಲೂಡು ದೇವರಾಜ್, ಮಳ್ಳೂರು ನಾರಾಯಣಸ್ವಾಮಿ, ಮುತ್ತೂರು ಭೈರೇಗೌಡ, ರೀಲರುಗಳಾದ ಅಹಮದ್ ಅಜೀಜ್, ಸಮೀವುಲ್ಲಾ, ಜಗದೀಶ್, ಪದ್ಮನಾಭ್ ಮುಂತಾದವರು ಹಾಜರಿದ್ದರು.
ಮಕ್ಕಳ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿ ಜಾಥಾ
ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಗುರುವಾರ ಮಕ್ಕಳ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಸುರಕ್ಷತಾ ಗೀತೆಗಳನ್ನು ಹಾಡುವುದರ ಮೂಲಕ ಮಕ್ಕಳ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಅರಿವು ಮೂಡಿಸುವ ಜಾಥಾ ನಡೆಸಿದರು.
ಗುಡಿಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿ ಗ್ರಾಮದಲ್ಲಿ ಈಚೆಗೆ ಹಿರಿಯ ಕನ್ನಡಪರ ಹೋರಾಟಗಾರ ಖಂಡೇರಾವ್ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡ ಕಂಪೆನಿಯ ಉದ್ಯೋಗಿಗಳು
ಸಂಸದರು ಮತ್ತು ಕೆಲ ಪೀಠಾಧಿಪತಿಗಳು ಗ್ರಾಮಗಳನ್ನು ಅಭಿವೃದ್ಧಿಪಡಿಸಲು ದತ್ತು ತೆಗೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಗಳಾಗಿರುವ ಕೆಲ ಸ್ನೇಹಿತರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ತಾಲ್ಲೂಕಿನ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿರುವ ಸಂಗತಿ ಈಚೆಗೆ ನಡೆದಿದೆ.
ತಾಲ್ಲೂಕಿನ ಕದಿರಿನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದಿ ಇಂಡಿಯನ್ ಡಿಸೈನ್ಸ್ ಎಕ್ಸ್ಪೋರ್ಟ್ಸ್ ಪ್ರೈ.ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಾದ ಜಿ.ಎನ್.ನಂದಕುಮಾರ್, ದೇವರಾಜ್, ಸತೀಶ್, ಸುಹಾಲ್ ಮತ್ತು ಇಮ್ರಾನ್ ದತ್ತು ತೆಗೆದುಕೊಂಡಿದ್ದಾರೆ.
ಈಚೆಗೆ ನಡೆದ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ‘ಶಾಲೆಗೆ ಬೇಕಾಗಿರುವ ಅನುಕೂಲತೆಗಳನ್ನು ದತ್ತು ತೆಗೆದುಕೊಂಡವರು ನೀಡುವುದು ಒಂದು ಅಂಶವಾದರೆ, ಅದನ್ನು ಸದುಪಯೋಗ ಪಡಿಸಿಕೊಳ್ಳುವ ಕಾರ್ಯಬದ್ಧತೆ ಶಾಲಾ ಸಿಬ್ಬಂದಿಯಲ್ಲಿ ಅತಿಮುಖ್ಯವಾಗಿರಬೇಕು. ಇದರ ಒಟ್ಟು ಉದ್ದೇಶ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವುದು ಹಾಗೂ ಕಲಿಕೆಯ ಪ್ರಗತಿ ಹೆಚ್ಚಿಸುವುದಾಗಿದೆ’ ಎಂದು ತಿಳಿಸಿದರು.
ಶಾಲೆಯ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ದತ್ತು ತೆಗೆದುಕೊಳ್ಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಎನ್.ನಂದಕುಮಾರ್ ಮಾತನಾಡಿ, ‘ಶಾಲೆಯು ಒಂದು ದೇಗುಲ. ಶಾಲೆಯನ್ನು ಪ್ರವೇಶಿಸುವಾಗ ಶಾರದೆಯ ಗುಡಿಯನ್ನು ಪ್ರವೇಶಿಸುವ ಭಾವನೆ ಇರಬೇಕು. ಈ ಅವಿಭಾಜ್ಯ ಜಿಲ್ಲೆಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ, ಸಿ.ಎನ್.ಆರ್.ರಾವ್ ಅವರಂಥ ಎಂಜಿನಿಯರ್, ವಿಜ್ಞಾನಿಗಳು, ಮಾಸ್ತಿಯವರಂಥ ಕನ್ನಡದ ಆಸ್ತಿಯನ್ನು ಕಂಡಿದ್ದೇವೆ. ನಮ್ಮ ಮಣ್ಣಿನಲ್ಲಿ ಅಂಥಹ ಎಷ್ಟೋ ಪ್ರತಿಭಾವಂತರಿದ್ದು ಅವರಿಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ನಿಮ್ಮ ಶಾಲೆಯನ್ನು ದತ್ತು ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಶಾಲೆಗೆ ಅಗತ್ಯವಿರುವ ಎಲ್ಲಾ ಪೂರಕಾಂಶಗಳನ್ನೂ ಪೂರೈಸುತ್ತೇವೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಎನ್.ನಂದಕುಮಾರ್ ಮತ್ತು ಸ್ನೇಹಿತರು ಶಾಲೆಗೆ ನೂರು ತಟ್ಟೆ ಲೋಟಗಳು, ಮಕ್ಕಳಿಗೆ ಜಾಮಿಟ್ರಿ ಬಾಕ್ಸ್ ಮತ್ತು ಲೇಖನ ಸಾಮಗ್ರಿಗಳನ್ನು ನೀಡಿದರು. ಶಿಕ್ಷಣ ಸಂಯೋಜಕ ಆರ್.ಕೆ.ಶ್ರೀನಾಥ್ ಅವರಿಗೆ ವಿವಿಧ ಶಾಲೆಗಳಲ್ಲಿ ನೀಡಲು 50 ಚಾಪೆಗಳನ್ನು ನೀಡಿದರು.
ಮುಖ್ಯಶಿಕ್ಷಕಿ ಹಂಸವೇಣಿ, ಜಿ.ಎನ್.ಶ್ಯಾಮಸುಂದರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಚೌಡಸಂದ್ರ ಗ್ರಾಮದಲ್ಲಿ ಹನುಮಜಯಂತಿ ಆಚರಣೆ
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಗುರುವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು.
ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ನೂತನ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ 26 ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಬುಧವಾರ ರಾತ್ರಿ ಗ್ರಾಮದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಮಾಡಲಾಯಿತು. ಹೂವಿನ ಪಲ್ಲಕ್ಕಿಯ ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ದೇವಾಲಯವನ್ನು ಹಾಗೂ ಗ್ರಾಮದ ಪ್ರಮುಖ ರಸ್ತೆಗಳನ್ನೆಲ್ಲಾ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಸಾವಿರಾರು ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ತಿಂಡಿ ತಿನಿಸುಗಳು, ಆಟಿಕೆಗಳು, ಮುಂತಾದ ವಿವಿಧ ರೀತಿಯ ಅಂಗಡಿಗಳು ತರೆಯಲಾಗಿತ್ತು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.
ವಕೀಲರ ಮೇಲೆ ಕಕ್ಷಿದಾರರಿಗೆ ನ್ಯಾಯದಾನ ಒದಗಿಸುವ ನಂಬಿಕೆ ಇರಬೇಕು
ವಕೀಲರ ವೃತ್ತಿಗೆ ಗರಿಷ್ಠ ವಯೋಮಿತಿಯನ್ನು ಕಡ್ಡಾಯಗೊಳಿಸಿ ಕಾನೂನ್ನು ಜಾರಿಗೆ ತರಬೇಕಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವಕೀಲರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲ ಬದಲಾದಂತೆ ಜನ ಜೀವನ ಬದುಕಿನ ಶೈಲಿ ಬದಲಾಗಿದ್ದು ಅಪರಾಧ ಪ್ರಕರಣಗಳೂ ಕೂಡ ವಿಭಿನ್ನವಾಗಿವೆ. ಸಣ್ಣ ಪುಟ್ಟದಕ್ಕೂ ನ್ಯಾಯಾಲಯದ ಮೆಟ್ಟಿಲು ಹತ್ತುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಇಂತಹ ಬಿಕ್ಕಟಿನ ಸಮಯದಲ್ಲಿ ಯುವ ವಕೀಲ ಸಮುದಾಯ ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸಬೇಕಿದೆ. ಹಿರಿಯ ವಯಸ್ಸಿನ ವಕೀಲರು ತಮ್ಮ ವಾದವನ್ನು ಸಮರ್ಥವಾಗಿ ಮಂಡಿಸಲು ಅವರ ವಯಸ್ಸು ಅಡ್ಡಿಬರಲಿದೆ. ಇದರಿಂದ ಕಕ್ಷಿದಾರರಿಗೆ ನ್ಯಾಯದಾನ ಒದಗಿಸಲು ಕೂಡ ಅವರಿಂದ ಸಾಧ್ಯವಾಗದಿರಬಹುದು. ಹಾಗಾಗಿ ವಕೀಲಿ ವೃತ್ತಿ ಮಾಡುವವರಿಗೆ ಗರಿಷ್ಠ ೬೫ ವರ್ಷದ ವಯೋಮಿತಿಯನ್ನು ನಿಗದಿಗೊಳಿಸಿ ಕಾನೂನಿಗೆ ತಿದ್ದುಪಡಿತರುವಂತೆ ಆಗ್ರಹಿಸಿದರು.
ಇತ್ತೀಚೆಗೆ ರಾಜ್ಯ ವಕೀಲರ ಪರಿಷತ್ನಲ್ಲಿ ನಕಲಿ ದಾಖಲೆಗಳನ್ನು ಹಾಜರುಪಡಿಸಿ ವಕೀಲರು ತಮ್ಮ ಹೆಸರನ್ನು ನೋಂದಾಯಿಸಿರುವ ಪ್ರಕರಣ ಬಯಲಾಗಿದ್ದು ಈಗಾಗಲೇ ಅವರ ವಿರುದ್ದ ವಂಚನೆ, ಸುಳ್ಳು ದಾಖಲೆಗಳನ್ನು ಸಲ್ಲಿಕೆ ಮಾಡಿದ ಪ್ರಕರಣ ದಾಖಲಿಸಲಾಗಿದೆ. ಇತರೆ ಇನ್ನೂ ಹಲವು ಮಂದಿ ಇದೆ ರೀತಿ ನಕಲಿ ದಾಖಲೆಗಳನ್ನು ಸಲ್ಲಿಸಿರುವ ಬಗ್ಗೆ ಅನುಮಾನಗಳಿದ್ದು ಪರಿಷತ್ನ ಅಧ್ಯಕ್ಷರು ಈಗಾಗಲೆ ಅಂತಹವರ ಪತ್ತೆಗಾಗಿ ತನಿಖೆಗೆ ಆದೇಶಿಸಿದ್ದಾರೆ ಎಂದರು.
ವಕೀಲರ ಮೇಲೆ ಕಕ್ಷಿದಾರರಿಗೆ ನ್ಯಾಯದಾನ ಒದಗಿಸುವ ನಂಬಿಕೆ ಇರಬೇಕು. ಆ ರೀತಿ ವಕೀಲರ ಕಾರ್ಯಚಟುವಟಿಕೆಗಳು ಇರಬೇಕು. ದೇಶದಲ್ಲಿ ೧೯ ವಕೀಲರ ಪರಿಷತ್ಗಳಿದ್ದು ರಾಜ್ಯದಲ್ಲಿ ೭೦ ಸಾವಿರಕ್ಕೂ ಹೆಚ್ಚು ವಕೀಲರು ನೋಂದಾಯಿಸಿಕೊಂಡಿದ್ದಾರೆ. ವಕೀಲರ ಸನ್ನದ್ದನ್ನು ಜಾರಿಗೊಳಿಸಿ ೫೩ ವರ್ಷಗಳಾಗಿದ್ದು ಈ ದಿನವನ್ನು ವಕೀಲರ ದಿನವನ್ನಾಗಿ ಆಚರಿಸಲಾಗುತ್ತಿದೆ. ದೇಶದ ಉದ್ದಗಲಕ್ಕೂ ಲಕ್ಷಾಂತರ ವಕೀಲರು ಇದ್ದು ಕೇವಲ ವಕೀಲಿಕೆ ಮಾಡುವುದರ ಬದಲಿಗೆ ಮಾನವೀಯತೆ ದೃಷ್ಟಿಯಿಂದ ಹಾಗೂ ಸಾಮಾಜಿಕ ಕಳಕಳಿಯಿಂದಲೂ ಕಾರ್ಯನಿರ್ವಹಿಸುವಂತೆ ವಕೀಲರಲ್ಲಿ ಮನವಿ ಮಾಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿಜಯದೇವರಾಜ್ ಅರಸ್, ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್, ಎಸ್.ಕುಮುದಿನಿ, ವಕೀಲರ ಸಂಘದ ಪದಾಕಾರಿಗಳು ಹಾಜರಿದ್ದರು.
ಒತ್ತಡದಿಂದ ಮಕ್ಕಳ ಕ್ರಿಯಾಶೀಲತೆ ಕುಂಠಿತಗೊಳ್ಳುತ್ತಿದೆ
ಮಕ್ಕಳ ಮೇಲೆ ಮಾನಸಿಕ ಒತ್ತಡವನ್ನು ಹೇರಿ ಅವರ ಸ್ವಾತಂತ್ರ್ಯವನ್ನು ಕಸಿಯುತ್ತಿರುವುದರಿಂದ ಮಕ್ಕಳ ಕ್ರಿಯಾಶೀಲತೆ ಕುಂಠಿತಗೊಳ್ಳುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ತಿಳಿಸಿದರು.
ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಮಕ್ಕಳ ಸುರಕ್ಷತಾ ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಗು ಸಮಾಜದ ಕಣ್ಣು. ಮಗುವು ಪ್ರಾಪ್ತ ವಯಸ್ಸಿಗೆ ಬರುವ ತನಕ ಪೋಷಿಸಿ, ಕಲಿಸಿ, ಸಂರಕ್ಷಿಸಿ ಸಮಾಜಮುಖಿಯಾಗಿ ಬೆಳೆಸಬೇಕಾದದ್ದು ಪೋಷಕರ ಹಾಗೂ ಸಮಾಜದ ಜವಾಬ್ದಾರಿ. ಈಚೆಗೆ ಹೆಚ್ಚಾಗಿ ಖಾಸಗಿ ಶಾಲೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಯಲ್ಲಿ ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವಾರು ನಿಯಮಗಳನ್ನು ಶಿಕ್ಷಣ ಸಂಸ್ಥೆಗಳು ಪಾಲಿಸಲು ಸೂಚನೆ ನೀಡಲಾಗಿದೆ. ಇದರೊಂದಿಗೆ ಬೋದಕ ಬೋದಕೇತರ ಸಿಬ್ಬಂದಿಗಳ ಸಂಪೂರ್ಣ ಮಾಹಿತಿಯನ್ನು ಭಾವಚಿತ್ರದ ಸಮೇತ ಸಂಗ್ರಹಿಸಿಡುವುದು ಖಡ್ಡಾಯ ಮಾಡಿದೆ. ಶಾಲೆಗೆ ಬರುವ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಪ್ರೀತಿಯಿಂದ ಕಾಣಬೇಕು. ಮಕ್ಕಳ ಪೋಷಕರಿಗೆ ಗುರುತಿನ ಚೀಟಿ ನೀಡುವುದು ಹಾಗೂ ಅಪರಿಚಿತ ವ್ಯಕ್ತಿಗಳನ್ನು ಶಾಲಾ ಆವರಣದಲ್ಲಿ ಅಥವಾ ಮಕ್ಕಳೊಂದಿಗೆ ಕಂಡುಬಂದಲ್ಲಿ ವಿಚಾರಿಸಬೇಕು.ಅನುಮಾನ ಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ಮಕ್ಕಳ ಸುರಕ್ಷತಾ ವಿಷಯದಲ್ಲಿ ಪೋಷಕರ ಮತ್ತು ಶಿಕ್ಷರ ಪಾತ್ರ ಅತಿ ಮುಖ್ಯವಾದದ್ದು. ಮಕ್ಕಳ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸತಕ್ಕದ್ದು. ಮಾನವತ್ವ ಗುಣವು ಎಲ್ಲರ ಮನಸ್ಸಿನಲ್ಲೂ ಮನೆ ಮಾಡಬೇಕು. ಆಗ ಮಕ್ಕಳು ದೇವರಂತೆ ಕಾಣುತ್ತಾರೆ. ಮುಗ್ಧ ಮಕ್ಕಳ ಮನಸ್ಸನ್ನು ಘಾಸಿಗೊಳಿಸುವ ಅಮಾನವೀಯತೆಯನ್ನು ಸಮಾಜದಿಂದ ತೊಲಗಿಸಲು ಎಲ್ಲರೂ ಶ್ರಮಿಸಬೇಕು ಎಂದು ನುಡಿದರು.
ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮೀದೇವಮ್ಮ, ಪುರಸಭಾ ಅಧ್ಯಕ್ಷೆ ಮುಷ್ಠರಿ ತನ್ವೀರ್, ಆರೋಗ್ಯ ಇಲಾಖೆಯ ಕಿರಣ್ ಕುಮಾರ್, ಶಿಕ್ಷಣ ಸಂಯೋಜಕ ರಾಮಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಡಿಸಂಬರ್ 5ರಂದು ಗುರುವಂದನಾ ಕಾರ್ಯಕ್ರಮ
ತಾಲ್ಲೂಕಿನ ಅಬ್ಲೂಡು ಗ್ರಾಮದಲ್ಲಿ ಡಿಸಂಬರ್ 5ರ ಶುಕ್ರವಾರ ತಾಲ್ಲೂಕು ಒಕ್ಕಲಿಗರ ಯುವ ಸೇನೆ ಮತ್ತು ಅಬ್ಲೂಡು ಗ್ರಾಮ ಪಂಚಾಯತಿ ಒಕ್ಕಲಿಗರ ಯುವಸೇನೆ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನಂದನಾಥ ಸ್ವಾಮಿಗಳು ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಪಟ್ಟಣದಿಂದ ವಿವಿಧ ಗ್ರಾಮಗಳ ಪಲ್ಲಕ್ಕಿಗಳು, ಕಲಾತಂಡಗಳೊಂದಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮಿಗಳನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಗುವುದು. ನಾಡಿನ ಹಿರಿಮೆ ಗರಿಮೆ ಸಾರುವ ಸ್ಥಬ್ದ ಚಿತ್ರಗಳು, ಜನಪದ ಸಿರಿಯನ್ನು ಸಾರುವ ವಿವಿಧ ವೇಷಭೂಷಣಗಳು, ಮಂಗಳವಾದ್ಯಗಳು ಮೆರವಣಿಗೆಯಲ್ಲಿರುತ್ತವೆ. ಅಬ್ಲೂಡಿನ ಗ್ರಾಮದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಅಬ್ಲೂಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹತ್ತು ಮಂದಿ ಸಾಧಕರಿಗೆ ಸನ್ಮಾನ ಇರುತ್ತದೆ. ಹತ್ತು ಸಾವಿರ ಮಂದಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿರುವುದಾಗಿ ತಿಳಿಸಿದರು.
ಅಬ್ಲೂಡು ಗ್ರಾಮ ಪಂಚಾಯತಿ ಒಕ್ಕಲಿಗ ಯುವ ಸೇನೆ ಅಧ್ಯಕ್ಷ ಪ್ರತಾಪ್, ತಾಲ್ಲೂಕು ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ, ಉಪಾಧ್ಯಕ್ಷ ಆರ್.ಎ.ಉಮೇಶ್, ನಗರ ಘಟಕ ಅಧ್ಯಕ್ಷ ಪುರುಷೋತ್ತಮ್, ಪದಾಧಿಕಾರಿಗಳಾದ ಮುರಳಿ, ಗೋಪಾಲ್, ತ್ಯಾಗರಾಜ್, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಸಂಗಮ
ತಾಲ್ಲೂಕಿನ ಮುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಕ್ಕಿಗಳ ಚಿಲಿಪಿಲಿ ಸದ್ದಿನಂತೆ ಮಕ್ಕಳ ಒಡನಾಟ, ಮಾತುಕತೆ, ಭಾವನೆಗಳ ಹಂಚಿಕೊಳ್ಳುವಿಕೆ ನಡೆದಿತ್ತು. ಶಾಲೆಯು ಎಂದಿನಂತಿರದೆ ನೂರು ಮಂದಿ ಹೊಸ ವಿದ್ಯಾರ್ಥಿಗಳ ಆಗಮನದಿಂದಾಗಿ ಕಳೆಗಟ್ಟಿತ್ತು.
ವಿವಿಧ ದೇಶಗಳಿಂದ ಬೆಂಗಳೂರಿಗೆ ಬಂದು ವೃತ್ತಿ ನಿರತರಾಗಿರುವವರು ತಮ್ಮ ಮಕ್ಕಳನ್ನು ಓದಿಸುವ ಬೆಂಗಳೂರಿನ ದಿ ಇಂಟರ್ನ್ಯಾಷನಲ್ ಸ್ಕೂಲ್ ಬ್ಯಾಂಗಳೂರ್(ಟಿಐಎಸ್ಬಿ) ಶಾಲೆಯ ಒಂಭತ್ತನೇ ತರಗತಿಯ ನೂರು ಮಂದಿ ವಿದ್ಯಾರ್ಥಿಗಳು ಮುತ್ತೂರಿನ ಸರ್ಕಾರಿ ಪ್ರೌಢಶಾಲೆಗೆ ಬಂದಿದ್ದರು.
‘ನಮ್ಮ ಮುತ್ತೂರು’ ಸಂಸ್ಥೆ ಆಯೋಜಿಸಿದ್ದ ಈ ನಗರ ಮತ್ತು ಗ್ರಾಮೀಣ ಮಕ್ಕಳ ಪರಸ್ಪರ ಒಡನಾಟದ ಕಾರ್ಯಕ್ರಮಕ್ಕೆ ಮಕ್ಕಳು ಉತ್ತಮವಾಗಿ ಸ್ಪಂದಿಸಿದರು. ಶಾಲೆಯ ಕೋಣೆಯಲ್ಲಿ ಒಬ್ಬ ಟಿಐಎಸ್ಬಿ ವಿದ್ಯಾರ್ಥಿ ಪಕ್ಕ ಮುತ್ತೂರಿನ ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಂಡ ಮಕ್ಕಳಲ್ಲಿ ಹೊಸ ಪರಿಚಯದೊಂದಿಗೆ ಗೆಳೆತನ ಮೂಡಿದವು. ಪರಸ್ಪರ ಅರಿಯಲು ಇಂಗ್ಲೀಷ್ ಮಾಧ್ಯಮವಾದರೂ ಭಾವನೆಗಳನ್ನು ಹಂಚಿಕೊಳ್ಳಲು ಭಾಷೆಯು ಅಡ್ಡಿಯಾಗಲಿಲ್ಲ. ತಮ್ಮ ಕುಟುಂಬದ ಬಗ್ಗೆ ವಿವರಗಳನ್ನು ಬರೆಯಲು ಪ್ರತಿಯೊಬ್ಬರಿಗೂ ಕಾರ್ಡುಗಳನ್ನು ವಿತರಿಸಿ ಆ ಮೂಲಕ ಪರಸ್ಪರ ಅರಿಯಲು ನೆರವನ್ನು ನೀಡಲಾಯಿತು.
ಮುತ್ತೂರಿಗೆ ಆಗಮಿಸಿದ್ದ ಟಿಐಎಸ್ಬಿ ಶಾಲೆಯ ಮಕ್ಕಳು ಮುತ್ತೂರು ಗ್ರಾಮದಲ್ಲಿ ಹೈನುಗಾರಿಕೆ, ರೇಷ್ಮೆ ಗೂಡಿನ ಹಂತಗಳು, ದ್ರಾಕ್ಷಿ ಬೆಳೆ, ತರಕಾರಿ ಮುಂತಾದವುಗಳನ್ನು ಕಂಡು ಗ್ರಾಮೀಣ ಪರಿಸರವನ್ನು ಆಸ್ವಾದಿಸಿದರು. ಟ್ರಾಕ್ಟರಿನಲ್ಲಿ ಕುಳಿತು ಪಯಣಿಸಿದರು. ತಾವೂ ಮಣ್ಣಿನ ಮಕ್ಕಳಂತೆ ಮುತ್ತೂರು ಗ್ರಾಮದ ಸ್ಮಶಾನದ ಬಳಿ ನೂರು ಗಿಡಗಳನ್ನು ನೆಟ್ಟರು. ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿನ ಔಷಧಿ ವನದಲ್ಲಿ ತಾವೂ ಒಂದಷ್ಟು ಸಸಿಗಳನ್ನು ನೆಟ್ಟರು.
ಮುತ್ತೂರಿನ ಮಕ್ಕಳು ಚೀನಾ, ಬ್ರಿಟನ್ ಮುಂತಾದ ದೇಶಗಳ ಮೂಲದ ಹಾಗೂ ಉತ್ತರ ಭಾರತ ಮೂಲದ ಮಕ್ಕಳೊಂದಿಗೆ ಅವರ ಹಿನ್ನೆಲೆಯ ಬಗ್ಗೆ ಮಾಹಿತಿ ಪಡೆದರು. ಸರಾಗವಾಗಿ ಇಂಗ್ಲೀಷ್ನಲ್ಲಿ ಮಾತು ಬರದಿದ್ದರೂ ಸಂವಹನ ಸಾಧಿಸಿ ಹೊಸ ಹೊಸ ಗೆಳೆಯರನ್ನು ಸಂಪಾದಿಸಿದರು. ಪರಸ್ಪರ ಬರವಣಿಗೆಯ ರೀತಿಯನ್ನು ಹೋಲಿಕೆ ಮಾಡಿಕೊಂಡರು.
ಗ್ರಾಮೀಣ ಕ್ರೀಡೆಗಳಾದ ಗಿಲ್ಲಿದಾಂಡು, ಬುಗುರಿ, ಲಗೋರಿ, ಗಾಳಿಪಟ, ಅಳಗುಳಿಮನೆ ಮುಂತಾದವುಗಳನ್ನು ಎಲ್ಲಾ ಮಕ್ಕಳೂ ಒಂದಾಗಿ ಆಡಿ ನಲಿದರು. ಎರಡೂ ಮಕ್ಕಳ ಬಾಂಧವ್ಯ ಬೆಸೆಯಲು ಕ್ವಿಜ್ ಮುಂತಾದ ಚಟುವಟಿಕೆಗಳನ್ನು ಎರಡೂ ಶಾಲೆಯ ಶಿಕ್ಷಕರು ನಡೆಸಿದರು.
ಬೆಂಗಳೂರಿನಿಂದ ಆಗಮಿಸಿದ್ದ ಮಕ್ಕಳು ಮುತ್ತೂರು ಶಾಲೆಯ ತಮ್ಮ ಹೊಸ ಸ್ನೇಹಿತರಿಗಾಗಿ ಪುಟ್ಟ ಪುಟ್ಟ ಉಡುಗೊರೆಗಳನ್ನು ತಂದಿದ್ದರು. ಉಡುಗೊರೆಗಳನ್ನು ತಮ್ಮ ಹೊಸ ಸ್ನೇಹಿತರಿಂದ ಪಡೆದ ಮುತ್ತೂರಿನ ಮಕ್ಕಳು ಶಾಲಾ ಅವಧಿ ಮುಗಿಯುತ್ತಿದ್ದಂತೆ ತಮ್ಮ ಮನೆ, ತೋಟ, ದೇವಸ್ಥಾನ ಮುಂತಾದ ಗ್ರಾಮದ ವಿವಿಧ ತಾಣಗಳನ್ನು ಸುತ್ತಾಡಿಸಿದರು. ತಮ್ಮ ಕುಟುಂಬದವರಿಗೆಲ್ಲಾ ಪರಿಚಯಿಸಿದರು.
‘ಮಕ್ಕಳ ಮನಸ್ಸು ಮುಗ್ಧವಾದುದು. ಕಲ್ಮಶವಿರುವುದಿಲ್ಲ. ಸಂಪರ್ಕ ಕ್ರಾಂತಿಯಿಂದಾಗಿ ಇಡೀ ಪ್ರಪಂಚವೇ ಒಂದು ಗ್ರಾಮದಂತಾದರೂ, ಎಷ್ಟೋ ಮಕ್ಕಳಿಗೆ ಹಳ್ಳಿಯ ಪರಿಕಲ್ಪನೆ ಇರುವುದಿಲ್ಲ. ತಾವು ಕುಡಿಯುವ ಹಾಲಿನ ಹಿಂದಿನ ಶ್ರಮದ ಅರಿವಿರುವುದಿಲ್ಲ. ಗ್ರಾಮೀಣ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಮತ್ತು ನಗರ ಮಕ್ಕಳಿಗೆ ಗ್ರಾಮವನ್ನು ತೋರಿಸಲು ಹೊಸ ಪ್ರಯತ್ನವನ್ನು ನಡೆಸಿದ್ದೇವೆ. ಇದಕ್ಕೆ ಶಾಲೆಯ ಶಿಕ್ಷಕರು, ಗ್ರಾಮಸ್ಥರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ನಮ್ಮ ಮುತ್ತೂರು ಸಂಸ್ಥೆಯ ಉಷಾಶೆಟ್ಟಿ ತಿಳಿಸಿದರು.
ಪ್ರತಿ ಮಂಗಳವಾರ ಹೋಬಳಿ ಮಟ್ಟದಲ್ಲಿ ಬಿ.ಜೆ.ಪಿ ಪಕ್ಷದ ಸ್ವಚ್ಛತಾ ಅಭಿಯಾನ
ಪ್ರತಿ ಮಂಗಳವಾರ ಪಟ್ಟಣ ಹಾಗೂ ಹೋಬಳಿ ಮಟ್ಟದಲ್ಲಿ ಬಿ.ಜೆ.ಪಿ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತೇವೆ ಎಂದು ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರಗೌಡ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಬಿ.ಜೆ.ಪಿ ಪಕ್ಷದ ಸದಸ್ಯರೊಡಗೂಡಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಬಿ.ಜೆ.ಪಿ ಸದಸ್ಯತ್ವದ ಆಂದೋಲನವನ್ನು ತಾಲ್ಲೂಕಿನಲ್ಲಿ ಪ್ರಾರಂಭಿಸಿದ್ದೇವೆ. ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಸಾಕಷ್ಟು ಕಡಿಮೆ ಮಾಡಿದೆ. ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಈಗಾಗಲೇ 4 ಕೋಟಿ ರೂ ಉಳಿತಾಯವಾಗುತ್ತಿದೆ. ರಾಜ್ಯ ಸರ್ಕಾರ ಬಸ್ ದರ ಇನ್ನೂ ಇಳಿಸಿಲ್ಲ. ಇದು ಖಂಡನೀಯ. ಜನರಿಗೆ ಅನುಕೂಲ ಆಗುವ ಕಾರ್ಯಯೋಜನೆಗಳನ್ನು ಸರ್ಕಾರ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಯು ತಾಲ್ಲೂಕಿನಾದ್ಯಂತ ಬರುವ ರೋಗಿಗಳನ್ನು ಗುಣಪಡಿಸುವ ತಾಣವಾಗಿದ್ದು, ಈ ಸ್ಥಳದಲ್ಲಿ ಸ್ವಚ್ಛತೆಯು ಅತಿಮುಖ್ಯವಾದದ್ದು. ಅದಕ್ಕಾಗಿ ಬಿ.ಜೆ.ಪಿ ಪಕ್ಷದ ವತಿಯಿಂದ ಸ್ವಚ್ಛತೆ ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯಿಂದ ಪ್ರಾರಂಭಿಸುತ್ತಿರುವುದಾಗಿ ತಿಳಿಸಿದರು.
ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಯಿರಿ, ಶ್ರೀಧರ್, ರಾಘವೇಂದ್ರ, ದಾಮೋದರ್, ತ್ಯಾಗರಾಜ್, ನಂದೀಶ್, ಶಿವಕುಮಾರಗೌಡ, ಸುಜಾತಮ್ಮ, ಮುನಿರತ್ನಮ್ಮ, ಶಿವಮ್ಮ, ಪ್ರಕಾಶ್, ಅಶ್ವಥ್, ನರೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಶಿಡ್ಲಘಟ್ಟದ ಚಳಿಗಾಲದ ಆಗಸದ ಚಿತ್ತಾರಗಳು


ಶಿಡ್ಲಘಟ್ಟದ ರೈಲ್ವೆ ನಿಲ್ದಾಣ ಚಳಿಗಾಲದ ಆಗಸದ ಚಿತ್ತಾರಗಳನ್ನು ಪ್ರದರ್ಶಿಸುತ್ತಾ ಮಂಗಳವಾರ ಮುಂಜಾನೆ ಮತ್ತು ಸಂಜೆ ವಿವಿಧ ರಂಗನ್ನು ಬಳಿದುಕೊಂಡಂತೆ ಕಂಡುಬಂದಿತು.
ಕಾರ್ಯತತ್ಪರತೆ ವಿದ್ಯಾರ್ಥಿಗಳ ಮಂತ್ರವಾಗಬೇಕು
ವಿದ್ಯಾರ್ಥಿಗಳು ಅನಗತ್ಯ ವಿಷಯಗಳತ್ತ ಗಮನಹರಿಸಬಾರದು. ಕಾರ್ಯತತ್ಪರತೆ ವಿದ್ಯಾರ್ಥಿಗಳ ಮೂಲಮಂತ್ರವಾಗಬೇಕು ಎಂದು ಪ್ರವಚನಕಾರ ತಳಗವಾರ ಟಿ.ಎಲ್.ಆನಂದ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಕುಂದಲಗುರ್ಕಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಶಿಬಿರದಲ್ಲಿ ವಿದ್ಯಾರ್ಥಿಗಳ ಯಶಸ್ಸಿಗೆ ಸೂತ್ರಗಳು ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯದ ಅರಿವಿರಬೇಕು. ಉತ್ತಮ ಪ್ರಯತ್ನವಿಲ್ಲದೆ ಒಳ್ಳೆಯ ಫಲಿತಾಂಶ ದೊರೆಯುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು. ನಿರಂತರವಾದ ಅಧ್ಯಯನ ಮಾಡಿ, ಮುಂಬರುವ ಪರೀಕ್ಷೆಗಳನ್ನು ಆತ್ಮವಿಶ್ವಾಸ ದಿಂದ ಎದುರಿಸಿ, ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಎಂದರು.
ಉಪನ್ಯಾಸದಲ್ಲಿ ಉದಾಹರಣೆ ಸಹಿತ ಹಲವಾರು ನಿದರ್ಶನಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು ಹಾಗೂ ವಿದ್ಯಾರ್ಥಿಗಳ ಓದಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಗಳನ್ನು ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ರೋಸಲೀನ್ ಪೆರೇರಾ ಮಾತನಾಡಿ, ವಿದ್ಯಾರ್ಥಿ ಜೀವನದ ಯಶಸ್ಸಿನ ಬಗ್ಗೆ ಉಪನ್ಯಾಸ ನೀಡಿರುವ ವಿಷಯವನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯಿರಿ ಎಂದರು.
ಕುಂದಲಗುರ್ಕಿ ಗ್ರಾಮಪಂಚಾಯತಿ ಅಧ್ಯಕ್ಷ ಕೆ.ಎಂ.ವೆಂಕಟೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಶಾಲೆಯ ಶಿಕ್ಷಕರಾದ ಟಿ.ಆರ್.ಗೀತಾಕುಮಾರಿ, ಸಿ.ಪ್ರಶಾಂತ್ ಕುಮಾರ್, ಕೆ.ಎಂ.ರಮೇಶ್ ಕುಮಾರ್, ಎಲ್.ವಿ.ವೆಂಕಟರೆಡ್ಡಿ, ವಿ.ಮಂಜುನಾಥ್, ಎಸ್.ಗುಂಡಪ್ಪ, ಹನುಮಪ್ಪ ಸೊಟಕ್ಕನವರ್, ಎಸ್. ವೆಂಕಟರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

