Home Blog Page 544

ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

0

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಚೆಂಗಲರಾಯರೆಡ್ಡಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಹಂಡಿಗನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

0

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕೆ.ಪಿ.ಸಿ.ಸಿ.ಉಪಾಧ್ಯಕ್ಷ ವಿ.ಮುನಿಯಪ್ಪ ಪೂಜೆ ಸಲ್ಲಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬುಜಮ್ಮ, ಉಪಾಧ್ಯಕ್ಷ ಮುನಿನಾರಾಯಣಪ್ಪ, ಮಾಜಿ ಅಧ್ಯಕ್ಷ ಅಶ್ವಥ್ಥಬಾಬು, ಸದಸ್ಯರಾದ ಕಾಂತರಾಜು, ಪಿಳ್ಳಮುನಿಯಪ್ಪ, ಶ್ರೀನಿವಾಸಯ್ಯ, ವೆಂಕಟೇಶಯ್ಯ, ನಾಗಮ್ಮ, ಭಾಗ್ಯಮ್ಮ ಹಾಜರಿದ್ದರು.

ವಾಲ್ಮೀಕಿ ಮಹರ್ಷಿ ಜಯಂತಿ ಮಹೋತ್ಸವ

0

ತಾಲ್ಲೂಕಿನಾದ್ಯಂತ ಬುಧವಾರ ವಾಲ್ಮೀಕಿ ಮಹರ್ಷಿ ಜಯಂತಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ತಾಲ್ಲೂಕಿನ ಮಸ್ತಕಾಚಲ, ತಲಕಾಯಲಬೆಟ್ಟ, ತಲೆಕಾಯ್ದಬೆಟ್ಟ, ತಲಕಾಚಿನಕೊಂಡ ಮುಂತಾದ ಹೆಸರಿನಿಂದ ಕರೆಯಲ್ಪಡುವ ತಲಕಾಯಲಬೆಟ್ಟದಲ್ಲಿಯೇ ಪುರಾತನ ಕಾಲದಲ್ಲಿ ರಾಮಾಯಣ ಮಹಾಕಾವ್ಯ ಬರೆದ ವಾಲ್ಮೀಕಿ ಮಹರ್ಷಿ ಜನಿಸಿದ ಹಾಗೂ ಬಾಲ್ಯ ಯೌವನವನ್ನು ಕಳೆದನೆಂಬ ಪ್ರತೀತಿಯಿದೆ. ತಲಕಾಯಲಬೆಟ್ಟದಲ್ಲಿರುವ ವಾಲ್ಮೀಕಿ ಮಹರ್ಷಿಯ ಗುಹೆ ಮತ್ತು ಮೂರ್ತಿಗೆ ಪೂಜೆ ಸಲ್ಲಿಸಿದ ನಂತರ ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ವಾಲ್ಮೀಕಿ ಮಹರ್ಷಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.
‘ಪ್ರಪಂಚವಿರುವವರೆಗೂ ಉಳಿಯುವಂತಹ ಮಹಾಕಾವ್ಯ ರಾಮಾಯಣ. ಮಹರ್ಷಿ ವಾಲ್ಮೀಕಿ ರಚಿಸಿರುವ ಈ ಮಹಾಕಾವ್ಯದಲ್ಲಿರುವ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎಂ.ರಾಜಣ್ಣ ಈ ಸಂದರ್ಭದಲ್ಲಿ ತಿಳಿಸಿದರು.
ಮಯೂರ ವೃತ್ತದ ಬಳಿಯಿರುವ ವಾಲ್ಮೀಕಿ ದೇವಾಲಯದಲ್ಲಿ ಪೂಜೆಯನ್ನು ನೆರವೇರಿಸಿದ ನಂತರ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದೊಂದಿಗೆ ಮೆರವಣಿಗೆಯನ್ನು ನಡೆಸಲಾಯಿತು.
[lightbox thumb=”http://www.sidlaghatta.com/wp-content/uploads/2014/10/8oct2.jpg”]ತಾಲ್ಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ಟ್ರಾಕ್ಟರ್ ಮತ್ತು ಟೆಂಪೋಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಹೂಗಳಿಂದ ಅಲಂಕರಿಸಿ ಪ್ರಮುಖ ಬೀದಿಗಳಲ್ಲಿ ಸಾಗಿದರು. ಮಕ್ಕಳು ಮತ್ತು ದೊಡ್ಡವರು ವಾಲ್ಮೀಕಿ, ಸೀತೆ, ರಾಮ, ಲಕ್ಷ್ಮಣ, ಲವ, ಕುಶ ಮುಂತಾದ ವಿವಿಧ ಪೌರಾಣಿಕ ವೇಷಧಾರಿಗಳಾಗಿ ಎಲ್ಲರನ್ನೂ ಆಕರ್ಷಿಸಿದರು. ಗಾರಡಿ ಬೊಂಬೆಗಳು, ಮಹಿಳಾ ಡೊಳ್ಳು ಕುಣಿತದ ತಂಡ ಮತ್ತಿತರ ವೇಷಧಾರಿಗಳು ಜನರನ್ನು ರಂಜಿಸಿದರು.
ಜಿಲ್ಲಾ ವಾಲ್ಮೀಕಿ ಸಭಾ ಅಧ್ಯಕ್ಷ ಬಂಕ್‌ ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ಕೃಷ್ಣಪ್ಪ, ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಪ್ರಭಾರಿ ಗಣಪತಿ ಸಾಕರೆ, ಸಿ.ಡಿ.ಪಿ.ಒ ಲಕ್ಷ್ಮೀದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್‌.ಮುನಿಯಪ್ಪ, ರಾಜೇಂದ್ರ, ಮಂಜುನಾಥ್‌, ಓ.ಟಿ.ಕೃಷ್ಣಪ್ಪ, ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
 
 

ತಾಲ್ಲೂಕಿನಾದ್ಯಂತ ಬಕ್ರೀದ್ ಹಬ್ಬ ಆಚರಣೆ

0

ತ್ಯಾಗ ಬಲಿದಾನಗಳ ಸಂಕೇತವಾಗಿರುವಂತಹ ಬಕ್ರೀದ್ ಹಬ್ಬವನ್ನು ತಾಲ್ಲೂಕಿನಾದ್ಯಂತ ಮುಸ್ಲೀಮರು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮುಸ್ಲೀಮರು ಮೆರವಣಿಗೆ ನಡೆಸಿ ಬೈಪಾಸ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸೇರಿ ಸಕಲ ಮಾನವ ಕುಲದ ಒಳಿತಿಗಾಗಿ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದರು.
ಪರಸ್ಪರ ಅಪ್ಪಿಕೊಳ್ಳುವ ಮೂಲಕ ಹಬ್ಬದ ಶಭಾಶಯಗಳನ್ನು ಈ ಸಂದರ್ಭದಲ್ಲಿ ವಿನಿಮಯಿಸಿಕೊಂಡ ಜಮಾತ್ ಬಾಂಧವರು ಜುಲೂಸಿಲ್ಲಿ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಈದ್ಗಾ ಮೈದಾನದಲ್ಲಿ ದುವಾ ನೆರವೇರಿಸಿದರು.
ಬಕ್ರೀದ್ ಹಬ್ಬವನ್ನು ಈದ್-ಅಲ್-ಅದಾ ಎಂದೂ ಕರೆಯುತ್ತಾರೆ. ಈದ್-ಅಲ್-ಅದಾ ಹಬ್ಬವನ್ನು ಮುಸ್ಲೀಮರು, ಮುಸ್ಲಿಂ ಮಾಸಿಕವಾದ ಝುಲ್-ಹಿಜ್ಜಾದ ಹತ್ತನೆಯ ದಿನದಂದು ಆಚರಿಸುತ್ತಾರೆ. ಈ ಶುಭದಿನದಂದು ಕುರಿಯನ್ನು ಬಲಿ ನೀಡುತ್ತಾರೆ ಹಾಗೂ ಮಸೀದಿಗಳಲ್ಲಿ ಪ್ರಾರ್ಥಿಸುತ್ತಾರೆ. ಹಸ್ರತ್ ಇಬ್ರಾಹಿಮ್‌ ಅಲ್ಲಾಹನಿಗೆ ಶರಣಾಗುವ ಅಗ್ನಿಪರೀಕ್ಷೆಯ ಸ್ಮರಣಾರ್ಥವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.
ಬಲಿಗೊಳ್ಳುವ ಪಶುವಿನ ಮಾಂಸವನ್ನು ಬಳಸಿಕೊಳ್ಳುವುದರ ಕುರಿತು ಇಸ್ಲಾಂ ನಲ್ಲಿ ಕೆಲವು ಮಾರ್ಗದರ್ಶೀ ಸೂತ್ರಗಳಿವೆ. ಬಲಿಪಶುವಿನ ಮಾಂಸವನ್ನು ಮೂರು ಭಾಗಗಳಾಗಿ ವಿಭಾಗಿಸಿ, ದೊಡ್ಡಭಾಗವನ್ನು, ಅಶಕ್ತರಾದ ಅಥವಾ ಆ ದಿನದ ಊಟವನ್ನು ಗಳಿಸಲಾಗದ ಬಡವರಲ್ಲಿ ಹಂಚಬೇಕು. ಮಿಕ್ಕುಳಿದ ಎರಡು ಚಿಕ್ಕ ತುಂಡುಗಳನ್ನು ಗೆಳೆಯರು, ಬಂಧುಗಳು ಮತ್ತು ಕುಟುಂಬದ ಸದಸ್ಯರ ನಡುವೆ ಹಂಚಬೇಕು. ಇದು ಸಂಭ್ರಮದ ಹಾಗೂ ಭೂರಿಭೋಜನದ ಸಂದರ್ಭವಾಗಿದೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ, ಈ ಹಬ್ಬವು ಏಕತೆ ಹಾಗೂ ಭ್ರಾತೃತ್ವದ ಆಚರಣೆಯಾಗಿದೆ.
ರಾಜಕೀಯ ಮುಖಂಡರೂ ಸೇರಿದಂತೆ ವಿವಿಧ ಜನಾಂಗದವರೂ ಕೂಡಾ ಮುಸ್ಲಿಂ ಭಾಂಧವರಿಗೆ ಶುಭಾಶಯಗಳನ್ನು ಕೋರಿದರು. ಶಾಸಕ ಎಂ.ರಾಜಣ್ಣ, ಮೇಲೂರಿನ ಕೆ.ಸೂರ್ಯನಾರಾಯಣಗೌಡ, ಪುರಸಭೆ ಸದಸ್ಯ ಎನ್.ಲಕ್ಷ್ಮಣ, ಎನ್.ಸುರೇಶ್, ಎ.ವಿ.ಶ್ರೀನಾಥ್, ಎಲ್.ಮಂಜುನಾಥ್, ಎಸ್.ಎಂ.ರಮೇಶ್ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಮರಿಗೆ ಶುಭಕೋರಿದರು.

ಶಾಕಾಂಬರಿಯಾದ ಗಂಗಾದೇವಿ

0

ಪಟ್ಟಣದ ವಾಸವಿ ರಸ್ತೆಯಲ್ಲಿರುವ ಪುರಾತನ ಗಂಗಾದೇವಿ ದೇವಾಲಯದಲ್ಲಿ ದಸರಾ ಹಬ್ಬದ ಪ್ರಯುಕ್ತ ವಿಶೇಷ ತರಕಾರಿ ಅಲಂಕಾರವನ್ನು ಮಾಡಲಾಗಿತ್ತು. ಆಲೂಗಡ್ಡೆ, ಬೀನ್ಸ್‌, ಟೊಮೇಟೋ, ಹೀರೇಕಾಯಿ, ಗೆಡ್ಡೆಕೋಸು, ನಿಂಬೆಹಣ್ಣು, ಕರಿಬೇವು, ಕ್ಯಾರೆಟ್‌, ಬೀಟ್‌ರೂಟ್‌, ಚಪ್ಪರದವರೆ, ದಪ್ಪಮೆಣಸಿನಕಾಯಿ, ಸೋರೆಕಾಯಿ, ಬೆಂಡೆಕಾಯಿ, ಮೂಲಂಗಿ, ಹೂಕೋಸು, ಎಲೆಕೇಸು, ಬದನೆಕಾಯಿ, ಪಡವಲಕಾಯಿ, ಕುಂಬಳ, ತೊಂಡೆಕಾಯಿ, ಹಾಗಲಕಾಯಿ ಮುಂತಾದ ತರಕಾರಿಗಳಿಂದ ದೇವಿಯನ್ನು ಸುಂದರವಾಗಿ ಅಲಂಕೃತಗೊಳಿಸಿದ್ದರು.
ಶಾಕಾಂಬರಿ ಎಂದೇ ಕರೆಯುವ ಈ ತರಕಾರಿ ಅಲಂಕೃತ ದೇವಿಯನ್ನು ನೂರಾರು ಭಕ್ತರು ಆಗಮಿಸಿ ದರ್ಶಿಸಿದರು. ಬೆಳಿಗ್ಗೆಯಿಂದಲೇ ನಡೆಯುತ್ತಿದ್ದ ಪೂಜೆಯಲ್ಲಿ ಭಕ್ತರು ಅದರಲ್ಲೂ ಹೆಚ್ಚಾಗಿ ಮಹಿಳೆಯರು ಪಾಲ್ಗೊಂಡಿದ್ದರು. ನಿಂಬೆಹಣ್ಣಿನ ದೀಪ, ತಂಬಿಟ್ಟಿನ ದೀಪ ಮತ್ತು ಅಚ್ಚುಬೆಲ್ಲದ ದೀಪಗಳನ್ನು ಹಚ್ಚಿ ದೇವಿಯನ್ನು ಪೂಜಿಸಿದರು. ಭಕ್ತರಿಗೆಲ್ಲಾ ಪ್ರಸಾದವನ್ನು ವಿತರಿಸಲಾಯಿತು ಎಂದು ಅರ್ಚಕ ರಾಮು ತಿಳಿಸಿದರು.

ಕೆಂಪೇಗೌಡ ನಗರದ ಮೂರನೇ ವಾರ್ಷಿಕೋತ್ಸವ

0

ಕೆಂಪೇಗೌಡ ಅವರ ದೂರದೃಷ್ಟಿ, ಸಾಮಾಜಿಕ ಕಳಕಳಿಯಿಂದ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಹೇಗೆ ಸಾಧ್ಯವಾಯಿತೋ ಅದೇ ರೀತಿ ಕೆಂಪೇಗೌಡರ ಹೆಸರಿಟ್ಟುಕೊಂಡ ಬಡಾವಣೆಯಿಂದಲೇ ಪಟ್ಟಣದ ಅಭಿವೃದ್ಧಿ ಪ್ರಾರಂಭವಾಗಲಿ ಎಂದು ತಾಲ್ಲೂಕು ಒಕ್ಕಲಿಗ ಸಂಘದ ನಿರ್ದೇಶಕ ಮುನಿಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಇದ್ಲೂಡು ರಸ್ತೆಯ ಕೆಂಪೇಗೌಡ ನಗರದಲ್ಲಿ ಶನಿವಾರ ನಡೆದ ಕೆಂಪೇಗೌಡ ನಗರದ ಮೂರನೇ ವಾರ್ಷಿಕೋತ್ಸವ ಹಾಗೂ ಒಕ್ಕಲಿಗರ ಯುವಸೇನೆ ನಗರ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಕೆಂಪೇಗೌಡ ಅವರು ಬೆಂಗಳೂರು ಮಾರುಕಟ್ಟೆ ಸ್ಥಾಪಿಸಿ ಸುತ್ತಮುತ್ತಲಿನ ನಾನಾ ಗ್ರಾಮಗಳ ಗುಡಿ ಕೈಗಾರಿಕೆ ಮಾಡಿದ್ದ ಸಮುದಾಯಗಳಿಗೆ ನೆರವಾದರು. ಹಂತಹಂತವಾಗಿ ಬೆಂಗಳೂರನ್ನು ಅಭಿವೃದ್ಧಿ ಪಡಿಸಿದರು. ಅವರ ಕನಸಿನಿಂದಾಗಿ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅವರ ಹೆಸರನ್ನಿಟ್ಟುಕೊಂಡ ಸಂಘಟನೆಗಳು ಕೇವಲ ಸಂಘಟನೆಗಳಷ್ಟೇ ಆಗಿರಬಾರದು. ಅವರ ಆದರ್ಶದ ಮುಂದುವರಿದ ಭಾಗದಂತಿರಬೇಕು. ಕೆಂಪೇಗೌಡರು ಹೇಗೆ ಎಲ್ಲಾ ಜಾತಿ, ವರ್ಗ, ಕಸುಬುಗಳ ಬಗ್ಗೆಯೂ ವಿಶಾಲ ಮನೋಭಾವದಿಂದ ರಾಷ್ಟ್ರಮಟ್ಟದ ಆಲೋಚನಾಪರರಾಗಿದ್ದರೋ ಅದೇ ರೀತಿ ಸಂಘಟನೆಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಊರಿನ ಬೆಳವಣಿಗೆಗೆ, ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಬಡಾವಣೆಗಳ ಹೆಸರನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿಲ್ಲ. ಆದರೂ ಜನರು ತಮ್ಮ ವಿಳಾಸಗಳನ್ನು ಎಲ್ಲೆಡೆ ಬರೆಯುವಾಗ ಬಳಸುತ್ತಿದ್ದಲ್ಲಿ ಚಾಲ್ತಿಗೆ ಬರುತ್ತದೆ ಮತ್ತು ಶಾಶ್ವತವಾಗುಳಿಯುತ್ತದೆ. ಪ್ರತಿಭಾವಂತರನ್ನು ಗುರುತಿಸಿ ಕೆಂಪೇಗೌಡರ ಹೆಸರಿನಲ್ಲಿ ಪುರಸ್ಕರಿಸಿ. ಹಿಂದೆ ಕೇವಲ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದ ಒಕ್ಕಲಿಗರು ಈಗ ವಿವಿಧ ಕ್ಷೇತ್ರದೆಡೆಗೆ ಹೋಗಬೇಕಾದ ಅನಿವಾರ್ಯತೆಯಿದೆ. ಶಿಕ್ಷಣ ಅತ್ಯವಶ್ಯವಿರುವುದರಿಂದ ಬಡ ಪ್ರತಿಭಾವಂತರನ್ನು ಪ್ರೋತ್ಸಾಹಿಸಿ ಎಂದು ನುಡಿದರು.
ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ನಾರಾಯಣಸ್ವಾಮಿ, ನಿರ್ದೇಶಕರಾದ ಸಿ.ಆರ್‌.ಶಿವಕುಮಾರ್‌, ಸೊಣ್ಣಪ್ಪ, ಜೆ.ವೆಂಕಟಸ್ವಾಮಿ, ಇ.ನಾರಾಯಣಪ್ಪ, ಬಚ್ಚರೆಡ್ಡಿ, ಒಕ್ಕಲಿಗರ ಯುವಸೇನೆ ನಗರ ಘಟಕ ಅಧ್ಯಕ್ಷ ಆರ್‌.ಪುರುಷೋತ್ತಮ್‌, ಗೌರವಾಧ್ಯಕ್ಷ ಎ.ಚಂದ್ರಶೇಖರ್‌, ಉಪಾಧ್ಯಕ್ಷ ವಿಜಯ್‌, ತಾಲ್ಲೂಕು ಒಕ್ಕಲಿಗರ ಯುವಸೇನೆ ಅಧ್ಯಕ್ಷ ಜೆ.ಎಸ್‌.ವೆಂಕಟಸ್ವಾಮಿ, ಗೌರವಾಧ್ಯಕ್ಷ ಎಚ್‌.ಡಿ.ಶಶಿಕುಮಾರ್‌, ಉಪಾಧ್ಯಕ್ಷ ಎ.ಉಮೇಶ್‌, ಸಿ.ಎ.ಮುನಿರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಕಾಲನ ಸವಾಲನ್ನು ಎದುರಿಸಿ ಮುಂದುವರೆಯುತ್ತಿರುವ ಶೆಟ್ಟಹಳ್ಳಿಯ ನಾರಾಯಣಪ್ಪ

0

ಆಧುನಿಕ ತಂತ್ರಜ್ಞಾನದಿಂದಾಗಿ ಹಲವಾರು ಪರಂಪರಾಗತ ಉದ್ದಿಮೆಗಳು ಕಣ್ಮರೆಯಾಗುತ್ತಿವೆ. ಅವುಗಳಲ್ಲಿ ಎಣ್ಣೆ ಗಾಣಗಳೂ ಒಂದು. ಹಿಂದೆ ತಾಲ್ಲೂಕಿನಲ್ಲಿ ಹಲವಾರು ಗ್ರಾಮಗಳಲ್ಲಿದ್ದ ಗಾಣಗಳು ಈಗ ಕೇವಲ ಪಳೆಯುಳಿಕೆಗಳಾಗಿ ಉಳಿದಿವೆ. ಸಂಪ್ರದಾಯಿಕ ಎಣ್ಣೆ ಗಾಣಗಳು ಎಣ್ಣೆ ಕಾರ್ಖಾನೆಯೊಂದಿಗೆ ಯಾವ ತರಹದ ಪೈಪೋಟಿಗಳನ್ನು ನಡೆಸಲಸಾಧ್ಯವಾಗಿವೆ. ಆದರೆ ತಾಲ್ಲೂಕಿನ ಶೆಟ್ಟಹಳ್ಳಿಯಲ್ಲಿ ಇನ್ನೂ ಹಳೆಯ ಗಾಣವನ್ನೇ ನಂಬಿ ಜೀವನ ನಡೆಸುವವರಿರುವುದು ವಿಶೇಷವಾಗಿದೆ. ತಾಲ್ಲೂಕಿನ ಎಲ್ಲ ಗಾಣಗಳೂ ನಿಂತುಹೋಗಿದ್ದರೂ ಶೆಟ್ಟಹಳ್ಳಿಯ ನಾರಾಯಣಪ್ಪ ಅವರದ್ದು ಮಾತ್ರ ಇನ್ನೂ ನಮ್ಮ ಪರಂಪರೆಯ ಪಳೆಯುಳಿಕೆಯಾಗಿ ಕಾಲನ ಸವಾಲನ್ನು ಎದುರಿಸಿ ಮುಂದುವರೆದಿದೆ.
ಗಾಣವೆಂದರೆ, ಒಂದು ವಸ್ತುವನ್ನು ಹಿಂಡಿ, ದ್ರವರೂಪದ ವಸ್ತುವನ್ನು ಪಡೆಯುವಲ್ಲಿ ಉಪಯೋಗಿಸುವ ಸಾಧನ. ಮೂಲತಃ ಕೊಬ್ಬರಿ, ಕಡಲೆ, ಹರಳು, ಹೊನ್ನೆ, ಎಳ್ಳು, ಔಡಲ, ಕುಸುಬಿ ಮುಂತಾದ ಎಣ್ಣೆ ಹಿಂಡುವ ಸಾಧನವಾಗಿದ್ದ ಗಾಣ, ನಂತರದ ದಿನಗಳಲ್ಲಿ ಇದು ಕಬ್ಬನ್ನು ಅರೆಯುವ ಸಾಧನವಾಗಿ ರೂಪುಗೊಂಡು ಆಲೆಮನೆ ಎಂಬ ಹೆಸರು ಪಡೆಯಿತು.
ಗಾಣದ ವಿನ್ಯಾಸವು ಮೊದಲು ಸುಮಾರು ೯ ರಿಂದ ೧೦ ಅಡಿ ವ್ಯಾಸದ ಚಪ್ಪಟೆಯಾದ ಗಟ್ಟಿ ನೆಲ ನಿರ್ಮಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಇಲ್ಲಿ ತೈಲ ಬೀಜಗಳನ್ನು ಹಾಕಲು ದೊಡ್ಡ ಒರಳನ್ನು ಇಡಲಾಗುತ್ತದೆ. ಅದಕ್ಕೆ ಗಾಣದ ಮರವನ್ನು ಕಟ್ಟುತ್ತಾರೆ. ಕಬ್ಬಿಣದ ಬಳೆಯ ಅಂಚನ್ನುಳ್ಳ ಮರದ ಒನಕೆಯನ್ನು ಗಾಣದ ಒರಳಿನ ಸೂಕ್ತವಾದ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಿರುತ್ತಾರೆ. ಗಾಣದ ಮರ ಹಾಗೂ ಒರಳಿನ ಕೆಳಭಾಗಕ್ಕೂ ಹೊಂದಿಕೊಂಡಿರುವಂತೆ ಕತ್ತರಿ ಹಲಗೆಯೊಂದನ್ನು ನಿರ್ಮಿಸಿ ಆ ಹಲಗೆಯ ಮೇಲೆ ಭಾರವಾದ ಕಲ್ಲುಗಳನ್ನು ಹೇರಿರುತ್ತಾರೆ.
ಕತ್ತರಿ ಹಲಗೆಯು ತನ್ನೊಂದು ಹಗ್ಗದಿಂದ ಗಾಣದ ಮಧ್ಯಭಾಗವನ್ನು ಆವರಿಸಿಕೊಂಡು ಭದ್ರವಾಗಿರುತ್ತದೆ. ನಂತರ ಒನಕೆಗೆ ಹೊಂದಿಕೊಂಡು ಆಸರೆಯಾಗಿರುವಂತೆಯೂ ಬೀಜಗಳನ್ನು ಅರೆಯುವ ಪ್ರಧಾನ ಕ್ರಿಯೆಯು ಸುಸೂತ್ರವಾಗುವಂತೆ ಮಲ್ಲಗಂಬವೊಂದನ್ನು ಸ್ವಲ್ಪ ಓರೆಯಾಗಿ ನಿಲ್ಲಿಸಲಾಗುತ್ತದೆ. ಹೀಗೆ ಸ್ಥಾನ ಗ್ರಹಣ ಮಾಡಿದ ಈ ಮಲ್ಲಗಂಬವು ಮಧ್ಯದಲ್ಲಿ ಬಲವಾದ ಹಗ್ಗದ ಜೋಡಣೆಯನ್ನು ಹೊಂದಿರುತ್ತದೆ. ಈ ಎಲ್ಲಾ ಸಿದ್ಧತೆಗಳನ್ನು ಒಳಗೊಂಡು ರಚನೆಯಾದ ಎಣ್ಣೆಗಾಣದ ಕ್ರಿಯೆಯಿಂದ ಕೊಬ್ಬರಿ, ಔಡಲ, ಶೇಂಗಾ ಮುಂತಾದ ತೈಲ ಬೀಜಗಳ ಎಣ್ಣೆ ಉತ್ಪಾದನೆಯಾಗುತ್ತದೆ. ಇಂಥಾ ಪ್ರತಿಭಾಪೂರ್ಣವಾದ ಗಾಣದ ಕರಕುಶಲ ಕಲೆಯು ಬಡಿಗನ ಕುಶಾಗ್ರಮತಿಯನ್ನು ಪ್ರತಿನಿಧಿಸುತ್ತದೆ. ನೋಡಲು ಲಿಂಗದ ಆಕಾರದ ಈ ಗಾಣ ತುಂಬಾ ಕಲಾತ್ಮಕತೆಯಿಂದ ಕೂಡಿದುದಾಗಿದೆ.
‘ನಮ್ಮ ಗಾಣದ ಕಲ್ಲು ಎಷ್ಟು ಹಳೆಯದೋ ತಿಳಿಯದು. ನಾನು ಹುಟ್ಟುವ ಮೊದಲಿಂದಲೂ ಇತ್ತು. ವರ್ಷದ ಬಿಸಿಲಿರುವ ಮೂರ್‍ನಾಕು ತಿಂಗಳಿನಲ್ಲಿ ಮಾತ್ರ ಈ ಕಸುಬು ಚೆನ್ನಾಗಿ ನಡೆಯುತ್ತದೆ. ಮೊದಲು ನಮ್ಮ ಹಳ್ಳಿಯಲ್ಲಿ ಎಂಟು ಗಾಣಗಳಿದ್ದವು. ಈಗ ಎಲ್ಲರೂ ನಿಲ್ಲಿಸಿಬಿಟ್ಟಿದ್ದಾರೆ. ಅವರಲ್ಲಿ ಕೆಲವರು ಯಂತ್ರಗಳಿಂದ ತಯಾರಿಸಿದ ಎಣ್ಣೆಯನ್ನು ಮಾರುವುದನ್ನು ಕಸುಬನ್ನಾಗಿಸಿಕೊಂಡಿದ್ದಾರೆ. ಮೊದಲಾದರೆ ಅರಳು, ಕಡಲೆ, ಇಪ್ಪೆ, ಎಳ್ಳು, ಕೊಬ್ಬರಿ ಮೊದಲಾದವುಗಳಿಂದ ಎಣ್ಣೆ ತೆಗೆಯುತ್ತಿದ್ದೆವು. ಆದರೆ ಈಗ ಹೆಚ್ಚಾಗಿ ಹೊಂಗೆಯನ್ನೇ ನಂಬ್ದಿದೇವೆ’ ಎನ್ನುತ್ತಾರೆ ಹಿರಿಯರಾದ ನಾರಾಯಣಪ್ಪ.
‘ಒಣಗಿದ ಎಣ್ಣೆ ಕಾಳುಗಳನ್ನು ಬೆಳಗಿನ ಅವಧಿಯಲ್ಲಿ ಗಾಣಕ್ಕೆ ಹಾಕಿ ಪುಡಿ ಮಾಡಿ ಜರಡಿ ಹಿಡಿಯುತ್ತೇವೆ. ನಂತರ ಪುಡಿಗೆ ಸ್ವಲ್ಪ ನೀರು ಹಾಕಿ ಹದವಾಗಿ ಉಂಡೆ ಮಾಡಿಟ್ಟು ಅವನ್ನು ಸಂಜೆ ವೇಳೆಗೆ ಗಾಣಕ್ಕೆ ಹಾಕಿ ಎಣ್ಣೆ ತೆಗೆಯುತ್ತೇವೆ. ೫೦ ಕೆಜಿ ಬೀಜದಿಂದ ೧೦ ಕೆಜಿ ಎಣ್ಣೆ ತಯಾರಾಗುತ್ತದೆ ಮತ್ತು ೩೦ ಕೆಜಿ ಹಿಂಡಿ ಸಿಗುತ್ತದೆ. ಹಿಂಡಿ ತೋಟಗಳಿಗೆ ಒಳ್ಳೆಯ ಗೊಬ್ಬರ. ಒಂದು ಕೆಜಿ ಎಣ್ಣೆ ೬೫ ರಿಂದ ೭೦ ರೂಗೆ ಮಾರಾಟವಾದರೆ, ಹಿಂಡಿ ಒಂದು ಕೆಜಿಯನ್ನು ೧೬ ರೂಗಳಂತೆ ಮಾರುತ್ತೇವೆ. ಹೊಂಗೆ ಬೀಜವನ್ನು ನಾವು ರೈತರಿಂದ ಒಂದು ಸೇರಿಗೆ ೨೦೦ ಗ್ರಾಂ ಎಣ್ಣೆ ನೀಡಿ ಪಡೆಯುತ್ತೇವೆ. ಅದರಿಂದ ಸಿಗುವ ಚಕ್ಕೆ ಅಥವಾ ಹಿಂಡಿಯೇ ನಮಗೆ ಲಾಭ. ಯಂತ್ರದಿಂದ ತಯಾರಾದ ಎಣ್ಣೆಗಿಂತ ಗಾಣದಲ್ಲಿ ತೆಗೆಯುವ ಎಣ್ಣೆ ಗುಣಮಟ್ಟದಲ್ಲಿ ಚೆನ್ನಾಗಿರುತ್ತದೆಂದು ಕೆಲವರು ನಮ್ಮಲ್ಲೇ ಕೊಳ್ಳುತ್ತಾರೆ. ಗಾಣಕ್ಕೆ ಕೆಲಸವಿರದ ಸಮಯದಲ್ಲಿ ನಾವು ವ್ಯವಸಾಯ ಮತ್ತು ಪಶುಪಾಲನೆಯಲ್ಲಿ ತೊಡಗುತ್ತೇವೆ’ ಎಂದು ಅವರು ಹೇಳಿದರು.
‘ಗುಂಡು ತೋಪುಗಳು ಕರಗುತ್ತಿವೆ. ಅವುಗಳಲ್ಲಿ ಬೆಳೆಯುತ್ತಿದ್ದ ಹೊಂಗೆ ಇಪ್ಪೆ, ಬೇವು ಮೊದಲಾದ ಮರಗಳಿಂದ ಸಿಗುತ್ತಿದ್ದ ಎಣ್ಣೆ ಬೀಜಗಳ ಲಭ್ಯತೆ ಕಡಿಮೆಯಾಗುತ್ತಿದೆ. ಅಕಸ್ಮಾತ್ ಎಣ್ಣೆ ಬೀಜಗಳು ಸಿಕ್ಕರೂ ಕೊಂಡು ಶೇಖರಿಸುವಷ್ಟು ಹಣ ಗಾಣದವರ ಬಳಿ ಇರುವುದಿಲ್ಲ. ಹೀಗಾಗಿ ಗಣಿಗಳು ಸ್ಥಗಿತಗೊಂಡು, ದುಡಿಯುವ ಸಂಪತ್ತು ವ್ಯರ್ಥವಾಗಿದೆ. ಸರ್ಕಾರ ಎಣ್ಣೆ ಬೀಜಗಳನ್ನು ಒದಗಿಸುವುದರಿಂದ ಈ ಪಾರಂಪರಿಕ ವೃತ್ತಿಯ ಅವಸಾನವನ್ನು ತಡೆಯಲು ಪ್ರಯತ್ನಿಸಬೇಕು’ ಎಂದು ಗ್ರಾಮದ ಹಿರಿಯರೊಬ್ಬರು ತಿಳಿಸಿದರು.
 
[images cols=”three”]
[image link=”#” image=”1873″]
[image link=”#” image=”1874″]
[image link=”#” image=”1875″]
[/images]

ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

0

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಗಂಗಾದೇವಿ ದೇವಾಲಯದಲ್ಲಿ ಗುರುವಾರ ಪೂಜೆ ಸಲ್ಲಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಾಲ್ಲೂಕಿನಲ್ಲಿ ಪ್ರತಿ ಪಂಚಾಯತಿಯಲ್ಲೂ ನಡೆಸುವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರೇಷ್ಮೆ ಹಿತರಕ್ಷಣಾ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಮಳ್ಳೂರು ಹರೀಶ್, ಆರ್.ಎ.ಉಮೇಶ್, ನಾಗರಾಜು, ಸೂರ್ಯನಾರಾಯಣಗೌಡ, ಧರ್ಮೇಂದ್ರಕುಮಾರ್, ಜಿ.ಎನ್.ಶ್ರೀನಿವಾಸ್, ಗೋಪಾಲ್, ಶ್ರೀನಿವಾಸಮೂರ್ತಿ, ಅಶ್ವಥ್ಥಪ್ಪ ಹಾಜರಿದ್ದರು.

ಸಗಟೂರಿನಲ್ಲಿ ಗಾಂಧೀಜಿ, ಶಾಸ್ತ್ರೀಜಿ, ವಿ.ಸೀತಾರಾಮಯ್ಯ ಜಯಂತಿ ಆಚರಣೆ

0

ಕನ್ನಡ ಸಾರಸ್ವತ ಲೋಕಕ್ಕೆ ವಿ.ಸೀತಾರಾಮಯ್ಯನವರು ೩೦ ಕ್ಕೂ ಹೆಚ್ಚು ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದು, ನಿರಂತರ ನಾಡು-ನುಡಿಯ ಸೇವೆಯನ್ನು ಗುರಿಯಾಗಿಸಿಕೊಂಡಿದ್ದರು ಎಂದು ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೆ.ವೆಂಕಟಾಪುರ ಗ್ರಾಮಪಂಚಾಯಿತಿ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಗಾಂಧಿಜಯಂತಿ, ಲಾಲ್‌ಬಹದ್ದೂರ್ ಶಾಸ್ತ್ರೀ ಮತ್ತು ವಿ ಸೀತಾರಾಮಯ್ಯ ಜಯಂತಿ ಹಾಗೂ ಸ್ವಚ್ಚ ಭಾರತ್ ಆಂದೋಲನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸ್ವಾತಂತ್ರ್ಯಾನಂತರದಲ್ಲಿ ದೇಶ ಎದುರಿಸಿದ ಗಡಿವಿವಾದಗಳಂತಹ ಗಂಭೀರ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ದೇಶಸೇವೆಯಲ್ಲಿಯೇ ತನುನೀಗಿದ ಲಾಲ್‌ಬಹದ್ದೂರ್ ಶಾಸ್ತ್ರೀಜಿಯವರ ಜೀವನಾದರ್ಶಗಳು ಅನುಕರಣೀಯ ಎಂದು ಅವರು ವಿವರಿಸಿದರು.
ಶಿಕ್ಷಕ ಎ.ಬಿ.ನಾಗರಾಜು ಅವರು ಗಾಂಧಿಜೀವನ ಕುರಿತು ಮಾತನಾಡಿದರು. ಶಿಕ್ಷಕ ಎಂ.ಎಂ.ಜಗದೀಶ್ ಅವರು ನೈರ್ಮಲ್ಯ ಕುರಿತು ಮಾತನಾಡಿದರು.
ಗ್ರಾಮದಲ್ಲಿ ಸ್ವಚ್ಚಭಾರತ್ ಅಭಿಯಾನ ಜಾಗೃತಿ ಜಾಥಾ ನಡೆಯಿತು. ಕಲ್ಲೇಶ್ವರ ಸ್ವಾಮಿ ದೇವಾಯದ ಆವರಣದಲ್ಲಿ ಸ್ವಚ್ಚ ಮಾಡುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಎಸ್.ಆರ್.ನಾಗೇಶ್, ಜೆ.ವೆಂಕಟಾಪುರ ಗ್ರಾಮಪಂಚಾಯತಿ ಅಧ್ಯಕ್ಷೆ ಜಿ.ಭಾಗ್ಯಮ್ಮ, ಸದಸ್ಯ ಎನ್.ಅಶ್ವತ್ಥಪ್ಪ, ಚಂದ್ರೇಗೌಡ, ಶಿವಶಂಕರಪ್ಪ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಕೆ.ಕಾತ್ಯಾಯಿನಿ, ಎಂ.ದೇವರಾಜು, ಮುಖ್ಯಶಿಕ್ಷಕ ವಿ.ಎನ್.ಗೋಪಾಲಕೃಷ್ಣಯ್ಯ, ಶಿಕ್ಷಕ ಬಿ.ನಾಗರಾಜು, ಎಚ್.ತಾಜೂನ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
[images cols=”three” lightbox=”true”]
[image link=”1862″ image=”1862″]
[image link=”1863″ image=”1863″]
[image link=”1864″ image=”1864″]
[/images]

ಗಾಂಧಿಜಯಂತಿ ಹಾಗೂ ಲಾಲ್‌ಬಹಾದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಭಾವಚಿತ್ರ ಕೊಡುಗೆ

0

ಶಿಡ್ಲಘಟ್ಟದ ಗರುಡಾದ್ರಿ ವಿದ್ಯಾಸಂಸ್ಥೆಯವರು ಗಾಂಧಿಜಯಂತಿ ಹಾಗೂ ಲಾಲ್‌ಬಹಾದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಪುರಸಭೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪೊಲೀಸ್‌ ಠಾಣೆಗಳು ಮತ್ತು ತಾಲ್ಲೂಕು ಕಚೇರಿಗಳಿಗೆ ಮಹಾತ್ಮಾ ಗಾಂಧೀಜಿ ಮತ್ತು ಲಾಲ್‌ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.

ಸ್ವಚ್ಛತೆಯಿಂದ ಆರೋಗ್ಯ, ಆದಾಯ ಮತ್ತು ನೆಮ್ಮದಿ – ಶಾಸಕ ಎಂ.ರಾಜಣ್ಣ

0

ಮಕ್ಕಳು ಶೌಚಾಲಯ ನಿರ್ಮಿಸುವಂತೆ ಪೋಷಕರನ್ನು ಒತ್ತಾಯಿಸುವಂತೆ ಶಿಕ್ಷಕರು ಪ್ರೇರೇಪಿಸಬೇಕು. ಸ್ವಚ್ಛತೆಯಿಂದ ಆರೋಗ್ಯ, ಆದಾಯ ಮತ್ತು ನೆಮ್ಮದಿ ಎಂಬ ಮನಸ್ಥಿತಿ ಎಲ್ಲರಲ್ಲೂ ಮನೆಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ಅಭಿಪ್ರಾಯಪಟ್ಟರು.
ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಗುರುವಾರ ಗಾಂಧಿಜಯಂತಿ ಪ್ರಯುಕ್ತ ‘ಸ್ವಚ್ಛ ಭಾರತ ಅಭಿಯಾನ’ ಉದ್ಘಾಟಿಸಿ ಅವರು ಮಾತನಾಡಿದರು. ಕಸವನ್ನು ಚರಂಡಿ, ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಹಾಕಬಾರದು. ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ನೀವಿರುವ ಸ್ಥಳ ಸ್ವಚ್ಛವಾಗಿರಲಿ. ಪ್ಲಾಸ್ಟಿಕ್‌ ಬಳಸುವುದನ್ನು ಕಡಿಮೆ ಮಾಡಿ. ನಮ್ಮ ಮನೆ ಮಾತ್ರ ಸ್ವಚ್ಛವಾಗಿದ್ದರೆ ಸಾಕು ಎಂಬ ಮನಸ್ಥಿತಿ ಬಿಡಬೇಕು. ಕೆರೆ ಅಥವಾ ನೀರಿನ ಮೂಲಗಳಿಗೆ ತ್ಯಾಜ್ಯ ಸೇರದಂತೆ ಎಚ್ಚರವಹಿಸಿ. ಮನೆಯ ಶೌಚಾಲಯದಂತೆ ಸಾರ್ವಜನಿಕ ಶೌಚಾಲಯವನ್ನು ಬಳಸಿ. ಸ್ವಚ್ಛ ಭಾರತ ನಿರ್ಮಾಣ ಸರ್ಕಾರಿ ಕಾರ್ಯಕ್ರಮವಲ್ಲ ನಮ್ಮ ಸ್ವಂತ ಕೆಲಸ ಎಂದು ಭಾವಿಸಿ ಎಂದು ಹೇಳಿದರು.
ಜಿಲ್ಲಾ ಯೋಜನಾಧಿಕಾರಿ ರಾಮಕೃಷ್ಣಪ್ಪ ಮಾತನಾಡಿ, ವಾರಕ್ಕೆರಡು ಗಂಟೆಯಂತೆ ವರ್ಷಕ್ಕೆ ನೂರು ಗಂಟೆಗಳ ಅವಧಿಯನ್ನು ಸಾರ್ವಜನಿಕರು ಶ್ರಮದಾನಕ್ಕೆ ಮೀಸಲಿಡಬೇಕು. ಪಂಚಾಯತಿ ವ್ಯಾಪ್ತಿಯಲ್ಲಿ ಸಭೆ ಕರೆದು ಸ್ವಚ್ಛತಾ ಆಂದೋಲನದ ಬಗ್ಗೆ ಅರಿವು ಮೂಡಿಸಿ ಗಾಂಧೀಜಿಯವರ ಆದರ್ಶವನ್ನು ಸಾಕಾರಗೊಳಿಸಬೇಕು.
ದಿಬ್ಬೂರಹಳ್ಳಿಯ ಬೀದಿಗಳಲ್ಲಿ ಕಸ ಗುಡಿಸುವ ಮೂಲಕ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದರು.
ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ದಿಬ್ಬೂರಹಳ್ಳಿ ಪಂಚಾಯತಿ ಅಧ್ಯಕ್ಷ ಧನಂಜಯರೆಡ್ಡಿ, ಪ್ರಭಾರಿ ಕಾರ್ಯನಿರ್ವಾಹಣಾಧಿಕಾರಿ ಗಣಪತಿ ಸಾಕರೆ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಚ್ಛತೆ

0

ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದಿದ್ದ ಚನಿಕೆ, ಗುದ್ದಲಿ. ವರಾರಿ, ಕೊಡಲಿ ಮುಂತಾದ ಪರಿಕರಗಳಿಂದ ಶಾಲಾ ಆವರಣದ ಕಳ್ಳಿ ಮುಳ್ಳುಗಳನ್ನು ತೆಗೆದರು. ಇತ್ತೀಚೆಗಷ್ಟೆ ವಿಜನ್‌ ಗ್ರೀನ್‌ ಸಂಸ್ಥೆಯ ಸಹಯೋಗದೊಂದಿಗೆ ನೆಟ್ಟಿದ್ದ ನೂರು ಗಿಡಗಳ ಅಡಿಯಲ್ಲಿ ಪಾತಿ ಮಾಡಿದರು. ಹನಿನೀರಾವರಿ ಪೈಪುಗಳನ್ನು ಅಳವಡಿಸಿದರು. ಗಿಡಗಳಿಗೆ ಔಷಧಿಯನ್ನು ಸಿಂಪಡಿಸಿದರು. ವಿದ್ಯಾರ್ಥಿಗಳೊಂದಿಗೆ ಶಾಲಾ ಸಿಬ್ಬಂದಿ, ಅಂಗನವಾಡಿ, ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್‌ಬಹಾದ್ದೂರ್‌ ಶಾಸ್ತ್ರಿ ಕುರಿತಂತೆ ಮಾತನಾಡಿದರು.

ಸ್ವಾವಲಂಬನೆ ಜೀವನ ನಡೆಸಿ – ಅಸಿಸ್ಟೆಂಟ್‌ ಸಬ್‌ಇನ್ಸ್‌ಪೆಕ್ಟರ್‌ ನಂಜುಂಡಪ್ಪ

0

ಸ್ವಾವಲಂಬನೆ ಜೀವನ ನಡೆಸಲು ವಿವಿಧ ಯೋಜನೆಗಳು ಅಭ್ಯವಿದ್ದು ಸದುಪಯೋಗಪಡಿಸಿಕೊಳ್ಳುವಂತೆ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಅಸಿಸ್ಟೆಂಟ್‌ ಸಬ್‌ಇನ್ಸ್‌ಪೆಕ್ಟರ್‌ ನಂಜುಂಡಪ್ಪ ಹೇಳಿದರು.
ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಮ ಸಮಾಲೋಚನಾ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿ ಬದುಕಿನಲ್ಲಿ ಉತ್ತಮ ಶಿಕ್ಷಣ, ಹಿರಿಯರ ಮಾರ್ಗದರ್ಶನ ಹಾಗೂ ಶಿಸ್ತು ಅಳವಡಿಸಿಕೊಂಡಲ್ಲಿ ಮಾತ್ರ ಸಮಾಜದಲ್ಲಿ ಉತ್ತಮ ಜೀವನ ನಡೆಸಬಹುದು ಎಂದರು.
ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಗುಂಪುಗಳನ್ನು ರಚಿಸಿ ಅವರಿಗೆ ಟೈಲರಿಂಗ್, ಪ್ರಸೂತಿ ತರಬೇತಿ ನೀಡಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಸಂಸ್ಥೆಯ ವತಿಯಿಂದ ರೂಪಿಸಲಾಗುವುದು ಎಂದು ತಿಳಿಸಿದರು.
ಸಾದಲಿ ವಲಯದ ಮೇಲ್ವಿಚಾರಕ ಗಣೇಶ್, ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್.ರಾಜಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ಎಚ್.ಮಂಜುನಾಥ, ಡಿ.ಸಿ.ರಾಮಚಂದ್ರ, ಗ್ರಾಮದ ಹಿರಿಯ ಬಿ.ಚಿಕ್ಕಪ್ಪಯ್ಯ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಆರೋಗ್ಯವಂತ ಪರಿಸರ ಸೃಷ್ಠಿಸಿ – ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಕೆ.ಮಂಜುನಾಥ್

0

ಆರೋಗ್ಯವಂತ ಪರಿಸರಕ್ಕಾಗಿ ಸ್ವಚ್ಛತೆ ಹಾಗೂ ಶೇಕಡಾ ನೂರರಷ್ಟು ಶೌಚಾಲಯವನ್ನು ಹೊಂದುವುದು ಅತ್ಯವಶ್ಯ ಎಂದು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಕೆ.ಮಂಜುನಾಥ್‌ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ನೈರ್ಮಲ್ಯತೆಗೆ ಆದ್ಯತೆ ನೀಡುವುದರಿಂದ ಸ್ವಚ್ಛ ಶುಭ್ರ ಆರೋಗ್ಯಪೂರ್ಣ ಗ್ರಾಮಗಳಾಗುತ್ತವೆ, ಇತರರಿಗೆ ಮಾದರಿಯಾಗುತ್ತದೆ ಎಂದು ಹೇಳಿದರು.
ನೋಡೆಲ್‌ ಅಧಿಕಾರಿ ಗುರುಬಸಪ್ಪ ಮಾತನಾಡಿ ನರೇಗಾ ಯೋಜನೆಯಲ್ಲಿ ಸಿಸಿ ರಸ್ತೆಗಳನ್ನು ಮಾಡಬಹುದಾಗಿದೆ ಎಂದು ವಿವರಿಸಿದರು.
ಪ್ರಭಾರ ಅಭಿವೃದ್ಧಿ ಅಧಿಕಾರಿ ಸಿದ್ದಣ್ಣ, ಲೆಕ್ಕ ಪರಿಶೋಧಕ ಶ್ರೀನಿವಾಸ್‌, ಗ್ರಾಮ ಪಂಚಾಯತಿ ಅಧ್ಯಕ್ಷೆ ಮುನಿರತ್ನಮ್ಮ ತಿರುಮಳೇಶ್‌, ಸದಸ್ಯರಾದ ಮುನಿಕೃಷ್ಣಪ್ಪ, ರೂಪೇಶ್‌, ಸ್ಮಿತಾ ಸುರೇಶ್‌, ಕೃಷ್ಣಮ್ಮ ನಾಗರಾಜ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಜಮ್ನಾಪರಿ ತಳಿ ಮೇಕೆ ಜೋಡಿಗೆ ಒಂದು ಲಕ್ಷ ರೂಪಾಯಿ

0

ಇಪ್ಪತ್ತೈದು ಸಾವಿರ ರೂಪಾಯಿಗಳ ಬಂಡವಾಳ ಹೂಡಿ ಒಂದು ವರ್ಷವಾಗಿದೆಯಷ್ಟೆ. ಈಗ ಅದು ಒಂದು ಲಕ್ಷ ರೂಪಾಯಿಗಳ ಆದಾಯ ತರುತ್ತಿದೆ. ಇದು ಯಾವುದೇ ಶೇರ್‌ ಮಾರ್ಕೆಟ್‌ ವ್ಯವಹಾರವಲ್ಲ. ತಾಲ್ಲೂಕಿನ ತಲದುಮ್ಮನಹಳ್ಳಿಯ ರೈತ ಟಿ.ಆರ್‌.ವೆಂಕಟೇಶ್‌ ಅವರು ಸಾಕಿರುವ ಮೇಕೆಗಳ ಬೆಲೆಯಿದು.
ಕಳೆದ ವರ್ಷ ಹಿಂಡಿಗನಾಳ ಸಂತೆಯಲ್ಲಿ 25 ಸಾವಿರ ರೂಗಳು ಕೊಟ್ಟು ಜಮ್ನಾಪರಿ ತಳಿಯ ಎರಡು ಮೇಕೆಗಳನ್ನು ತಂದಿದ್ದ ವೆಂಕಟೇಶ್‌ ಒಂದು ವರ್ಷದ ತರುವಾಯ ಒಂದು ಲಕ್ಷ ರೂಗಳಿಗೆ ಮಾರಾಟ ಮಾಡಿದ್ದಾರೆ. ರೈತರು ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಹೊಸ ಆಶಾಕಿರಣದಂತೆ ಉಪಕಸುಬಿನಲ್ಲೂ ಹಣ ಸಂಪಾದಿಸಬಹುದೆಂದು ತೋರಿಸಿಕೊಟ್ಟಿದ್ದಾರೆ.
ಜಮ್ನಾಪರಿ ತಳಿಯು ನಮ್ಮ ದೇಶೀ ತಳಿಯಾಗಿದ್ದು, ಜಮುನಾ ನದಿ ದಂಡೆಯ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದಲ್ಲಿ ಕಂಡು ಬರುತ್ತಿದ್ದುದರಿಂದ ಜಮ್ನಾಪರಿ ಎಂಬ ಹೆಸರು ಬಂದಿದೆ. ಹೆಚ್ಚಾಗಿ ಹಾಲು ಮತ್ತು ಮಾಂಸಕ್ಕಾಗಿಯೇ ಇವನ್ನು ಸಾಕಲಾಗುತ್ತದೆ. ಉದ್ದವಾದ ಜೋಲು ಕಿವಿಗಳು ಮತ್ತು ಕೊಂಬುಗಳು ಜಮ್ನಾಪುರಿ ಮೇಕೆಗಳ ವಿಶಿಷ್ಠ ಲಕ್ಷಣಗಳು.
ತಲದುಮ್ಮನಹಳ್ಳಿಯ ರೈತ ಟಿ.ಆರ್‌.ವೆಂಕಟೇಶ್‌ಅವರು ಸಾಕಿರುವ ಒಂದು ಮೇಕೆ 111 ಕೆಜಿ ಇದ್ದರೆ ಮತ್ತೊಂದು 120 ಕೆಜಿ ಭಾರವಿದೆ. ಅವರು ಚಳ್ಳಕೆರೆ ಕುರಿಗಳನ್ನೂ ಸಾಕಿದ್ದು, ಬಕ್ರಿದ್‌ ಹಬ್ಬದ ಆಸುಪಾಸಿನಲ್ಲಿ ಅಧಿಕ ಬೆಲೆಗೆ ಮಾರಾಟವಾಗುತ್ತಿವೆ.
‘ನಾಟಿ ಕುರಿ ಅಥವಾ ಮೇಕೆಯನ್ನು ಸಾಕಿದರೆ 30 ರಿಂದ 40 ಕೆಜಿ ತೂಕ ಬರಲು ಎರಡರಿಂದ ಎರಡೂವರೆ ವರ್ಷ ಸಾಕಬೇಕಾಗುತ್ತದೆ. ಆದರೆ ಒಂದು ವರ್ಷದ ಜಮ್ನಾಪುರಿ ತಳಿಯನ್ನು ತಂದು ಕೇವಲ ಒಂದು ವರ್ಷ ಸಾಕಿರುವೆ. 100 ರಿಂದ 120 ಕೆಜಿ ತೂಗುತ್ತಿವೆ. ಸೀಮೆಹುಲ್ಲು, ರಾಗಿಹುಲ್ಲು, ಹಿಪ್ಪುನೇರಳೆ ಸೊಪ್ಪಿನ ತ್ಯಾಜ್ಯ, ಮನೆಯಲ್ಲಿ ಉಳಿಯುವ ಅಡುಗೆ ಪದಾರ್ಥಗಳನ್ನಷ್ಟೆ ಹಾಕಿ ಸಾಕಿದ್ದೇವೆ. ಇವಕ್ಕೆ ರೋಗಗಳೂ ಹೆಚ್ಚಾಗಿ ಬರುವುದಿಲ್ಲ. ರೈತರಿಗೆ ಉಪಕಸುಬಿನಂತಿರುವ ಮೇಕೆ ಸಾಕಣೆಯಿಂದಾಗಿ ಆರ್ಥಕ ಸದೃಢರಾಗಬಹುದು. ಮನೆಯಲ್ಲಿ ಕುರಿ, ಮೇಕೆಗಳಿದ್ದರೆ ಎ.ಟಿ.ಎಂ ಇದ್ದಂತೆ’ ಎಂದು ವೆಂಕಟೇಶ್‌ ತಿಳಿಸಿದರು.

ಸಾಲ ಮರುಪಾವತಿಯಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ

0

ದೇಶಾದ್ಯಂತ ಸಾಲ ಮರುಪಾವತಿಯಲ್ಲಿ ಮಹಿಳೆಯರು ಹಾಗೂ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಮುಂಚೂಣಿಯಲ್ಲಿರುವುದರಿಂದ ಮಹಿಳೆಯರಿಗೆ ಸಾಲ ನೀಡಲೂ ಬ್ಯಾಂಕ್‌ಗಳವರು ಮುಂದೆಬರಬೇಕೆಂದು ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು. ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ವತಿಯಿಂದ ಭಕ್ತರಹಳ್ಳಿ ಗ್ರಾಮದ ಸಂಘದ ಶಾಖೆಯ ಆವರಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಮಹಿಳಾ ಸ್ವ-ಸಹಾಯ ಗುಂಪುಗಳ ಸಾಲ ಮತ್ತು ಕೆ.ಸಿ.ಸಿ. ಸಾಲ ವಿತರಣಾ ಸಮಾರಂಭದಲ್ಲಿ ೨ಕೋಟಿ ೩೮ ಲಕ್ಷದ ೮೦ ಸಾವಿರ ರೂ ಸಾಲದ ಚೆಕ್ಕುಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಬಡ್ಡಿ ರಹಿತ ಸಾಲಗಳನ್ನು ನಿಗದಿತ ಸಮಯದಲ್ಲಿ ರೈತರು ಮರುಪಾವತಿ ಮಾಡುವುದರೊಂದಿಗೆ ಸಹಕಾರ ಸಂಘಗಳ ಅಭಿವೃದ್ಧಿಗೆ ಸಹಕರಿಸಬೇಕು.ತೀವ್ರ ಮಳೆಯ ಕೊರತೆಯಿಂದಾಗಿ ಕೃಷಿಚಟುವಟಿಕೆಗಳಿಂದ ದೂರವುಳಿದು, ನಗರಪ್ರದೇಶಗಳ ಕಡೆಗೆ ಗುಳೆಹೊರಡುವಂತಹ ಸ್ಥಿತಿಗೆ ಬಂದು ತಲುಪಿರುವ ಈ ಭಾಗದ ಜನತೆಗೆ ಆಶಾಕಿರಣವಾಗಿ ಬಡ್ಡಿರಹಿತ ಸಾಲಗಳನ್ನು ನೀಡಲು ಮುಂದೆ ಬಂದಿರುವ ಕೋಲಾರ-ಚಿಕ್ಕಬಳ್ಳಾಪುರ ಡಿ.ಸಿ.ಸಿ. ಬ್ಯಾಂಕಿನ ಸೇವೆಯನ್ನು ಈ ಭಾಗದ ರೈತರು ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು. ಈ ಭಾಗದ ಜನತೆಯ ದಶಕಗಳ ಕನಸಾಗಿರುವ ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಅಗತ್ಯವಾಗಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಬೆಂಗಳೂರಿನಿಂದ ವ್ಯರ್ಥವಾಗಿ ವರ್ತೂರು ಕೆರೆಗೆ ಹರಿದು ಹೋಗುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಿ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ಹರಿಸಲು ಚಿಂತನೆ ನಡೆಸಿದ್ದು ಈ ಭಾಗದ ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳೊಡನೆ ಚರ್ಚಿಸಿ ಆದಷ್ಟು ಬೇಗ ಈ ಭಾಗಕ್ಕೆ ನೀರು ತರಲು ಪ್ರಾಂಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ನುಡಿದರು. ಶಾಸಕ ಎಂ.ರಾಜಣ್ಣ ಮಾತನಾಡಿ ಸಹಕಾರಿ ತತ್ವದಡಿಯಲ್ಲಿ ನಡೆಯುತ್ತಿರುವ ಈ ಬ್ಯಾಂಕುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಸ್ಥಳೀಯ ಜನತೆಯ ಹೆಚ್ಚಿನ ಸಹಕಾರ ಅಗತ್ಯವಾಗಿದೆ, ಆಡಳಿತ ಮಂಡಳಿಗಳು ಹೆಚ್ಚು ಕಾಳಜಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಾಗಿದೆ ಎಂದರು.
ಕೋಲಾರ ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೆಗೌಡ ಮಾತನಾಡಿ ಈ ಭಾಗದ ರೈತರು ಹೂಡಿಕೆ ಮಾಡಿಟ್ಟಿರುವ ಹಣವನ್ನು ಕ್ರೋಡಿಕರಿಸಿ ಉಳಿಕೆ ಮಾಡಿದ ಹಣವನ್ನು ರೈತರು ಸೇರಿದಂತೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಚಿಂತನೆ ನಡೆಸಲಾಗಿದೆ ಎಂದರು. ಈ ಸಂದರ್ಭದಲ್ಲಿ ೧೫ ಮಹಿಳಾ ಸ್ವಸಹಾಯ ಸಂಘಗಳಿಗೆ ೫೫ ಲಕ್ಷ ೬೦ ಸಾವಿರ ರೂ ಸೇರಿದಂತೆ ಕೆಸಿಸಿ ಸಾಲ ೯೨ ಮಂದಿ ಫಲಾನುಭವಿಗಳಿಗೆ ೧ಕೋಟಿ ೮೩ ಲಕ್ಷದ ೨೦ ಸಾವಿರ ಸೇರಿದಂತೆ ಒಟ್ಟು ೨ಕೋಟಿ ೩೮ ಲಕ್ಷದ ೮೦ ಸಾವಿರ ರೂ ಸಾಲದ ಚೆಕ್ಕುಗಳನ್ನು ವಿತರಣೆ ಮಾಡಲಾಯಿತು.
ಮಳ್ಳೂರು ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಸ್.ಎಂ.ನಾರಾಯಣಸ್ವಾಮಿ, ಸತೀಶ್, ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಂ.ಗೋಪಾಲಗೌಡ, ಮುಖಂಡ ಬಿ.ಎನ್.ರವಿಕುಮಾರ್, ಕೆ.ಎಂ. ಜಗದೀಶ್‌, ಹಾಪ್‌ಕಾಮ್ಸ್ ಮಾಜಿ ಅಧ್ಯಕ್ಷ ಬಿ.ವಿ.ಮುನೇಗೌಡ, ವೆಂಕಟಮೂರ್ತಿ, ಎಸ್‌.ಎನ್‌.ವೆಂಕಟೇಶ್‌, ಸೂರ್ಯನಾರಾಯಣಗೌಡ, ಕಾಳಪ್ಪ, ರಮೇಶ್‌, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ಡಿಸಿಸಿ ಬ್ಯಾಂಕ್ ಶಿಡ್ಲಘಟ್ಟ ಶಾಖೆಯ ವ್ಯವಸ್ಥಾಪಕ ಆರ್.ಲಿಂಗರಾಜು, ತಾಲ್ಲೂಕು ಪಂಚಾಯತಿ ಸದಸ್ಯ ವೆಂಕಟೇಶ್, ಸಂಘದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ಮಂಜುನಾಥ್, ಜಿ.ಕೆ.ಪೃಥ್ವೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಶುಲ್ಕ ವಸೂಲಿ ವಿರುದ್ಧ ರೈತರ ಪ್ರತಿಭಟನೆ

0

ರೇಷ್ಮೆ ಗೂಡಿನ ಮಾರುಕಟ್ಟೆಗೆ ಗೂಡುಗಳನ್ನು ಹೊತ್ತು ತರುವಂತಹ ವಾಹನಗಳಿಂದ ಪುರಸಭೆಯವರು ಶುಲ್ಕ ವಸೂಲಿ ಮಾಡುವ ಕ್ರಮವನ್ನು ವಿರೋಧಿಸಿ ಸೋಮವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪುರಸಭೆ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿದೆಡೆಯಿಂದ ಪಟ್ಟಣದ ರೇಷ್ಮೆ ಗೂಡಿನ ಮಾರುಕಟ್ಟೆಗೆ ಗೂಡುಗಳನ್ನು ಹೊತ್ತು ತರುವಂತಹ ವಾಹನಗಳಿಂದ ಪುರಸಭೆಯಿಂದ ವಸೂಲಿ ಮಾಡುತ್ತಿದ್ದ ಶುಲ್ಕದ ಟೆಂಡರ್‌ನ್ನು ಕಳೆದ ಏಪ್ರಿಲ್ ನಿಂದ ನಿಲ್ಲಿಸಿದ್ದರು. ಆದರೆ ಇದೀಗ ರೈತರ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ಷಡ್ಯಂತ್ರ ರೂಪಿಸಿರುವ ಪುರಸಭೆ ಮುಖ್ಯಾಧಿಕಾರಿ ಎಸ್.ಎ.ರಾಮ್‌ಪ್ರಕಾಶ್ ಅವರ ಕ್ರಮ ವಿರೋಧಿಸಿ ರೈತರು ಪ್ರತಿಭಟಿಸಿದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ಪಟ್ಟಣದ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಾಜ್ಯದ ಬೇರೆ ಬೇರೆ ಕಡೆಗಳಿಂದ ರೈತರ ಗೂಡುಗಳನ್ನು ಹೊತ್ತುತರಲು ನೂರಾರು ವಾಹನಗಳು ಬರುತ್ತವೆ. ಹೀಗೆ ಬಂದ ವಾಹನಗಳಿಂದ ರಾಜ್ಯದ ಯಾವುದೇ ಮಾರುಕಟ್ಟೆಯಲ್ಲಿ ಹಣ ವಸೂಲಿ ಮಾಡುವುದಿಲ್ಲ. ಶಿಡ್ಲಘಟ್ಟದಲ್ಲಿ ರೇಷ್ಮೆ ಗೂಡು ಮಾರುಕಟ್ಟೆಗೆ ಯಾವುದೇ ಮೂಲಭೂತ ಸವಲತ್ತುಗಳನ್ನು ಒದಗಿಸದ ಪುರಸಭೆಯವರು ಹಣ ವಸೂಲಿ ಮಾಡುವುದನ್ನು ಈ ಹಿಂದೆ ರೈತರು ಸೇರಿದಂತೆ ರೀಲರ್‌ಗಳು ಪ್ರತಿಭಟಿಸಿದ್ದರು. ಕಳೆದ ಮಾರ್ಚ್ ತಿಂಗಳ ಅಂತ್ಯಕ್ಕೆ ಶುಲ್ಕ ವಸೂಲಿ ಮಾಡುವುದನ್ನು ಪುರಸಭೆ ಅಧಿಕಾರಿಗಳು ಕೈಬಿಟ್ಟಿದ್ದರು.
ಆದರೆ ಇದೀಗ ಸೆಪ್ಟೆಂಬರ್‌ ೩೦ ರಂದು ನಡೆಯಲಿರುವ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಗಳ ಪೈಕಿ ಈ ಮೇಲ್ಕಂಡ ವಿಷಯವನ್ನು ಸೇರಿಸಿ ರೈತರಿಗೆ ಮೋಸ ಮಾಡಲು ಹೊರಟಿರುವ ಮುಖ್ಯಾಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ಈಗಾಗಲೇ ತೀವ್ರ ಬರಗಾಲದಿಂದಾಗಿ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಸಹಾಯಕ್ಕೆ ಬರಬೇಕಾದ ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ರೈತರನ್ನು ಸುಲಿಗೆ ಮಾಡಲು ಮುಂದಾಗಿರುವುದು ವಿಪರ್ಯಾಸ ಎಂದ ಪ್ರತಿಭಟನಾಕಾರರು, ಈ ಕೂಡಲೇ ರೈತರಿಂದ ಶುಲ್ಕದ ರೂಪದಲ್ಲಿ ವಸೂಲಿ ಮಾಡಲೊರಟಿರುವ ಕ್ರಮ ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರೈತರು ಸೇರಿದಂತೆ ರೀಲರ್‌ಗಳು ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿ ಎಸ್.ಎ.ರಾಮ್‌ಪ್ರಕಾಶ್ ಮಾತನಾಡಿ, ಮಾರುಕಟ್ಟೆಯ ಬಳಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಈಗಾಗಲೇ ನಿಲ್ಲಿಸಲಾಗಿದ್ದು, ಕಳೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ಬಂದಿತ್ತಾದರೂ ಮುಂದಿನ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ನಿರ್ದಾರ ವ್ಯಕ್ತವಾಗಿತ್ತು. ಹಾಗಾಗಿ ನಾಳೆಯ ಸಭೆಯಲ್ಲಿ ಚರ್ಚಿಸುವ ವಿಷಯಗಳಲ್ಲಿ ಇದನ್ನು ಸೇರಿಸಲಾಗಿದೆಯೇ ಹೊರತು ಇದರಲ್ಲಿ ರೈತರಿಗೆ ಅನ್ಯಾಯ ಮಾಡುವ ಉದ್ದೇಶವಿಲ್ಲ. ಇನ್ನು ಈಗ ರೈತರು ನೀಡಿರುವ ಮನವಿಯನ್ನು ನಾಳಿನ ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ಆಂಜನೇಯರೆಡ್ಡಿ, ಕಾರ್ಯದರ್ಶಿ ಟಿ.ಕೃಷ್ಣಪ್ಪ, ಬೋದಗೂರು ಮುನಿರಾಜು, ಟಿ.ಆರ್.ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಯುವಜನರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಬೇಕು

0

ಯುವಜನರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ, ದೇಶದಲ್ಲಿ ಬೇರು ಮಟ್ಟದಲ್ಲಿ ತಳವೂರಿರುವ ಭ್ರಷ್ಟಾಚಾರವನ್ನು ಕಿತ್ತು ಹಾಕುವ ಕೆಲಸ ತುರ್ತಾಗಿ ಆಗಬೇಕಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್‌ಐ)ನ ರಾಜ್ಯ ಸಮಿತಿ ಖಜಾಂಚಿ ಬಿ.ವಿ.ಸಂಪಂಗಿ ಅಭಿಪ್ರಾಯಪಟ್ಟರು.
ದೇಶಪ್ರೇಮಿ ಭಗತ್‌ಸಿಂಗ್‌ರವರ 108ನೇ ಜನ್ಮ ದಿನೋತ್ಸವ ಅಂಗವಾಗಿ ಭಾನುವಾರ ಪಟ್ಟಣದ ರಾಜ್ಯ ಸಾರಿಗೆ ಬಸ್ ನಿಲ್ದಾಣದಲ್ಲಿ ಡಿವೈಎಫ್‌ಐನಿಂದ ಹಮ್ಮಿಕೊಂಡಿದ್ದ ಡಿವೈಎಫ್‌ಐ ಸಂಘಟನೆಯ ಸದಸ್ಯತ್ಯ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಹೋರಾಟದ ಮನೋಭಾವವೇ ಇಲ್ಲವಾಗುತ್ತಿದೆ. ನೆರೆ ಹೊರೆಯ ಸಮಾಜದಲ್ಲಿ ಏನೆ ಆಗಲಿ ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವಂತೆ ಯುವಜನರು ವರ್ತಿಸುತ್ತಿರುವುದು ವಿಷಾಧಕರ ಸಂಗತಿ. ವಿಜ್ಞಾನ ತಂತ್ರಜ್ಞಾನ ಬೆಳವಣಿಗೆಯಾದಂತೆ ಯುವಜನರು ಹಾಗೂ ವಿದ್ಯಾರ್ಥಿಗಳ ಬೆರಳ ತುದಿಯಲ್ಲೇ ಇಂಟರ್‌ನೆಟ್, ಫೇಸ್‌ಬುಕ್ ಇನ್ನಿತರೆ ಹತ್ತು ಹಲವು ಸೌಕರ್ಯಗಳ ಲಭ್ಯವಿದ್ದು ತಂತ್ರಜ್ಞಾನದ ಬೆಳವಣಿಗೆಯಿಂದ ಇಡೀ ವಿಶ್ವವೇ ಪುಟ್ಟ ಗ್ರಾಮದಂತಾಗಿದೆ.ನಾನಾ ದೇಶಗಳ ಆಚಾರ, ವಿಚಾರ, ತೊಡುಗೆ, ಉಡುಗೆ ಸೇರಿದಂತೆ ಅಲ್ಲಿನ ಸಂಸ್ಕೃತಿಯ ಪ್ರಭಾವವೂ ನಮ್ಮವರ ಮೇಲೆ ಬಿದ್ದಿದ್ದು ನಮ್ಮ ದೇಶದ ಆಚಾರ, ವಿಚಾರಗಳು ಅಪಥ್ಯವಾಗುತ್ತಿವೆ. ಇದರಿಂದಾಗಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತನು, ಮನ, ಧನ ಅರ್ಪಿಸಿ ಹುತ್ಮಾತ್ಮರು ಸಹ ಯಾರೆಂದು ಗೊತ್ತಿಲ್ಲದಂತಾಗಿದೆ ಎಂದು ವಿಷಾಸಿದರು. ಯುವಜನರು, ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಮಾತ್ರವೇ ಇದೆಲ್ಲದಕ್ಕೂ ಪರಿಹಾರ ಸಿಗಲಿದೆ. ಇಲ್ಲವಾದಲ್ಲಿ ನಮ್ಮ ಮುಂದಿನ ಪೀಳಿಗೆ ಸಹ ಈ ಸಮಸ್ಯೆಗಳನ್ನು ಎದುರಿಸಿಕೊಂಡೆ ಬದುಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಡಿವೈಎಫ್‌ಐ ಸಂಘಟನೆಗೆ ಸದಸ್ಯತ್ವವನ್ನು ಆರಂಭಿಸಲಾಯಿತು. ಮುಖಂಡರಾದ ಕುಂದಲಗುರ್ಕಿ ಮುನೀಂದ್ರ, ಸದಾನಂದ, ವಾಸು, ಸಯ್ಯದ್, ಮಂಜುನಾಥ್, ವೆಂಕಟೇಶ್, ಸಿಐಟಿಯುನ ಲಕ್ಷ್ಮಿದೇವಮ್ಮ, ಎಸ್‌ಎಫ್‌ಐನ ಅಂಬರೀಷ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ವಪ್ರತಿಷ್ಠೆಗಾಗಿ ಖಾಸಗಿ ವಸತಿಶಾಲೆಗಳತ್ತ ಆಕರ್ಷಿತರಾಗುತ್ತಿರುವ ಪೋಷಕರು

0

ಪೋಷಕರು ತಮ್ಮ ಸ್ವಪ್ರತಿಷ್ಠೆಗಾಗಿ ಖಾಸಗಿ ವಸತಿಶಾಲೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಕೌಟುಂಬಿಕ ಪ್ರೀತಿ, ಜವಾಬ್ದಾರಿ ಹಾಗೂ ಸಂಬಂಧಗಳ ಕೊರತೆಯುಂಟಾಗಲಿದೆ ಎಂದು ವರದನಾಯಕನಹಳ್ಳಿ ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕ ರಾಮಕೃಷ್ಣ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ಸಮೀಪವಿರುವ ಮುತ್ತೂಟ್‌ ಹಣಕಾಸು ಸಂಸ್ಥೆಯಲ್ಲಿ ಭಾನುವಾರ ನಡೆದ ಉಚಿತ ಪುಸ್ತಕ ವಿತರಣೆ ಮತ್ತು ಶಿಕ್ಷಣ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು. ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸಿ ವಿದ್ಯಾರ್ಥಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಪಠ್ಯದಲ್ಲಿ ಮಾನವೀಯ ಮೌಲ್ಯಗಳ ವಿಷಯಗಳನ್ನು ಅಳವಡಿಸಬೇಕಾದ ಅಗತ್ಯವಿದೆ. ಶಿಕ್ಷಣ ಕೇವಲ ಅಂಕಗಳಿಕೆ ಸೀಮಿತವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಹೊಂದಿರುವ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಸ್ವಾತಂತ್ರ್ಯ ನೀಡಬೇಕು. ಗಾಂಧಿಜಿ ಅವರ ಆಸೆಯಂತೆ ಮೂಲ ಶಿಕ್ಷಣ ಕಲಿಸಲು ಆದ್ಯತೆ ನೀಡಬೇಕೆಂದರು.
ತಾಲೂಕಿನ ತುಮ್ಮನಹಳ್ಳಿ ಸರಕಾರಿ ಶಾಲೆಯ ಶಿಕ್ಷಕ ಶ್ರೀಧರ್ ಮಾತನಾಡಿ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ನೀರಿಗಾಗಿ ಆಹಾಕಾರ ಉಂಟಾಗಿ ಅಂತರ್ಜಲಮಟ್ಟ ಕುಸಿದು ಫ್ಲೋರೈಡ್ ಮಿಶ್ರಿತ ನೀರು ಸೇವಿಸುತ್ತಾ ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತಿದೆ. ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ನೀರಿನ ಮಹತ್ವದ ಕುರಿತು ಜನರಲ್ಲಿ ಜಲಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಲೇಖನಾ ಸಾಮಾಗ್ರಿಗಳು ಹಾಗೂ ನೋಟ್‌ಪುಸ್ತಕಗಳನ್ನು ವಿತರಿಸಲಾಯಿತು.
ಮುತ್ತೂಟ್‌ ಸಂಸ್ಥೆಯ ಮಾಕೇಟಿಂಗ್ ಮುಖ್ಯಸ್ಥ ಶಿವಕುಮಾರ್, ವೈದ್ಯ ಡಾ.ಸತ್ಯನಾರಾಯಣರಾವ್‌, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆನೂರು ನಾರಾಯಣಪ್ಪ, ಉದ್ಯಮಿ ಎಂ.ಎಸ್‌.ಜ್ಞಾನೇಶ್ವರ್, ವಾಸವಿ ಶಾಲೆಯ ಶಿಕ್ಷಕ ನಾಗರಾಜ್, ಮುತ್ತೂಟ್‌ ಸಂಸ್ಥೆಯ ವ್ಯವಸ್ಥಾಪಕ ಮನೋಹರ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮಕ್ಕಳನ್ನು ಆರೋಗ್ಯವಂತರನ್ನಾಗಿ, ಗುಣವಂತರನ್ನಾಗಿ ಮಾಡಬೇಕು

0

ಮಂಗಳ ಗ್ರಹವನ್ನು ತಲುಪಿದ ಉಪಗ್ರಹವನ್ನು ತಯಾರಿಸಿರುವ ಮೇಧಾವಿಗಳಿರುವ ಭಾರತದಲ್ಲಿ ಇಂದಿಗೂ ಮಕ್ಕಳ ಪೌಷ್ಟಿಕತೆ ಹಾಗು ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸುವ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ಮಾಡುತ್ತಿರುವುದು ದುಃಖಕರ ಸಂಗತಿ ಎಂದು ಚಿಕ್ಕಬಳ್ಳಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ.ತುರಮರಿ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದ ಕಲ್ಯಾಣಮಂಟಪದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಮಕ್ಕಳ ಅಪೌಷ್ಠಿಕತೆ ತಡೆಗಟ್ಟುವುದರ ಬಗೆಗಿನ ಸಮಗ್ರ ಕಾರ್ಯಯೋಜನೆ ಅನುಷ್ಠಾನ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವುದರ ಬಗ್ಗೆ ಅರಿವು-ನೆರವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದುವರೆಯುತ್ತಿರುವ ಭಾರತ ದೇಶದಲ್ಲಿ ಅಪೌಷ್ಟಿಕತೆಯನ್ನು ತಡೆಗಟ್ಟಿ ಸಮಾಜವನ್ನು ಸದೃಢವಾಗಿ ನಿರ್ಮಾಣ ಮಾಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನತೆ ಆಸಕ್ತಿ ವಹಿಸಬೇಕು. ಪ್ರತಿಯೊಂದು ಮಗುವಿಗೂ ತಾಯಂದಿರು ತಮ್ಮ ಎದೆಹಾಲನ್ನು ಉಣಿಸುವುದರೊಂದಿಗೆ, ಮಕ್ಕಳಿಗೆ ಹಸಿರು ತರಕಾರಿಗಳು, ಸೊಪ್ಪು, ಸೇರಿದಂತೆ ಪೌಷ್ಟಿಕಾಂಶ ಭರಿತವಾದ ಆಹಾರವನ್ನು ನೀಡಿ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಬೇಕು. ಗುಣಮಟ್ಟದ ಶಿಕ್ಷಣ ಮತ್ತು ಚಿಕ್ಕವಯಸ್ಸಿನಿಂದಲೇ ಸಂಸ್ಕಾರವನ್ನು ಬೆಳೆಸಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಖಡ್ಡಾಯವಾಗಿ ಮರಳಿ ಶಾಲೆಯ ಕಡೆಗೆ ತರುವಂತಹ ಕೆಲಸಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹೇಳಿದರು.
ಮಕ್ಕಳಿಗೆ, ಗರ್ಭಿಣಿಯರಿಗೆ ನೀಡಬೇಕಿರುವ ವಿವಿಧ ರೀತಿಯ ಕಾಳು ಬೇಳೆಗಳು, ತರಕಾರಿ ಸೊಪ್ಪು, ಮೊಳಕೆ ಬರಿಸಿರುವ ಕಾಳುಗಳು, ಹಣ್ಣುಗಳು ಮುಂತಾದ ತಿನಿಸುಗಳು ಹಾಗೂ ಮಾಹಿತಿ ಫಲಕಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಎನ್.ಶೀಲಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿಜಯದೇವರಾಜ್‌ಅರಸ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ, ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲರಾದ ಈ.ಡಿ.ಶ್ರೀನಿವಾಸ್, ಎಸ್.ಕುಮುದಿನಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಲಕ್ಷ್ಮಿದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಡಾ.ಎಂ.ವಿಜಯಾ, ಮಕ್ಕಳ ತಜ್ಞ ಡಾ. ಗಿರೀಶ್, ಸೌಮ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.