Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಾಳನಾಯಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಆಂಜನೇಯ ಸಮೇತ ಸೀತಾರಾಮಚಂದ್ರ ಸ್ವಾಮಿ ದೇವರ ಪ್ರತಿಷ್ಠಾಪನಾ ಮಹೋತ್ಸವ ಗುರುವಾರ ಭಕ್ತಿಭಾವದಿಂದ ನೆರವೇರಿತು.
ಬೆಳಿಗ್ಗೆ 7 ಗಂಟೆಯಿಂದ ವಿವಿಧ ವೈದಿಕ ಪೂಜಾ–ಹೋಮ, ಧಾರ್ಮಿಕ ವಿಧಿವಿಧಾನಗಳು ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ದೇವಸ್ಥಾನದ ಆವರಣದಲ್ಲಿ ಶ್ರೀ ಸೀತಾರಾಮಚಂದ್ರ ಸ್ವಾಮಿ ಹಾಗೂ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯವನ್ನು ವೇದಪಂಡಿತರ ಸಮ್ಮುಖದಲ್ಲಿ, ಶ್ರೀ ವಿದ್ಯಾನಾರಾಯಣ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತಾದಿಗಳು ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಈ ಧಾರ್ಮಿಕ ಕಾರ್ಯಕ್ರಮದ ಯಶಸ್ಸಿಗೆ ದೇವಸ್ಥಾನದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು.
ಕುಂಭಿಗಾನಹಳ್ಳಿ ಎಸ್.ಎಫ್.ಸಿ.ಎಸ್ ಅಧ್ಯಕ್ಷ ಭೀಮೇಶ್, ಆರ್.ಶ್ರೀನಿವಾಸ್, ರಮೇಶ್, ರಾಮಚಂದ್ರಪ್ಪ, ಮಂಜಯ್ಯ, ಆನಂದ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
Sidlaghatta : ಶಿಡ್ಲಘಟ್ಟ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಹಕರಿಸಬೇಕು ಎಂದು ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ. ಉಮೇಶ್ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಅಂಗನವಾಡಿ–2ರಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಎನ್ಯುಮರೇಷನ್ ನಮೂನೆಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಪ್ರತಿಯೊಬ್ಬ ನಾಗರಿಕರೂ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಅನಗತ್ಯವಾಗಿ ಆತಂಕಪಡುವ ಅಗತ್ಯವಿಲ್ಲ. ಮತಗಟ್ಟೆ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಲಿದ್ದು, ಸೂಚಿಸಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡಿರಬೇಕು. ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ಹೊಂದಿರುವವರು ಒಂದು ಸ್ಥಳದಲ್ಲಿ ಮಾತ್ರ ಎನ್ಯುಮರೇಷನ್ ಅರ್ಜಿ ಸಲ್ಲಿಸಬೇಕು. ಎರಡೂ ಕಡೆ ಅರ್ಜಿ ಸಲ್ಲಿಸಿದರೆ ಹೆಸರು ಮತದಾರರ ಪಟ್ಟಿಯಿಂದ ಅಳಿಸುವ ಸಾಧ್ಯತೆ ಇರುತ್ತದೆ” ಎಂದು ತಿಳಿಸಿದರು.
ಕುಟುಂಬದಲ್ಲಿ ಮೃತಪಟ್ಟಿರುವವರು, ಬೇರೆ ಊರುಗಳಲ್ಲಿ ಮತದಾರರಾಗಿ ಹೆಸರು ಹೊಂದಿರುವವರು ಹಾಗೂ ಮದುವೆಯಾಗಿ ಬೇರೆ ಊರುಗಳಿಗೆ ತೆರಳಿರುವ ಮಹಿಳೆಯರ ಹೆಸರುಗಳನ್ನು ಪಟ್ಟಿಯಿಂದ ತೆಗೆಸಬೇಕು. 18 ವರ್ಷ ಪೂರೈಸಿದ ಯುವಕರು ನಮೂನೆ–6ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದರು.
ಮುಖಂಡ ರಾಮಕೃಷ್ಣಪ್ಪ ಮಾತನಾಡಿ, “ಮನೆಗಳಿಗೆ ಆಗಮಿಸುವ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಬೇಕು. ಅಧಿಕಾರಿಗಳು ನೀಡುವ ಎರಡು ನಮೂನೆಗಳಲ್ಲಿ ಒಂದನ್ನು ಭರ್ತಿ ಮಾಡಿ ಅವರಿಗೆ ಹಿಂದಿರುಗಿಸಿ, ಮತ್ತೊಂದನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಸೇರಿದಂತೆ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ ಸೂಕ್ತ ದಾಖಲೆಗಳೊಂದಿಗೆ ಮಾಡಿಸಿಕೊಳ್ಳಬಹುದು. ಜೂನ್ 30ರಿಂದ ಜುಲೈ 29ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಸಾರ್ವಜನಿಕರು ಸಹಕರಿಸಬೇಕು” ಎಂದು ಹೇಳಿದರು.
ಗ್ರಾಮ ಆಡಳಿತಾಧಿಕಾರಿ ತಿರುಮೂರ್ತಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರವಿಪ್ರಸಾದ್, ಮಂಜುನಾಥ್, ಮತಗಟ್ಟೆ ಅಧಿಕಾರಿ ವೆಂಕಟಲಕ್ಷ್ಮಮ್ಮ, ಗ್ರಾಮ ಸಹಾಯಕ ರಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಕನ್ನಡದ ಹಿರಿಯ ಸಾಹಿತಿ, ಜಾನಪದ ಸಾಹಿತ್ಯ ಸಂಗ್ರಾಹಕ ಫ.ಗು. ಹಳಕಟ್ಟಿ ಅವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಗ್ರೇಡ್–2 ತಹಶೀಲ್ದಾರ್ ಮಂಜುನಾಥ್, ಕನ್ನಡ ಜಾನಪದ ಸಾಹಿತ್ಯದ ಸಂರಕ್ಷಣೆ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಫ.ಗು. ಹಳಕಟ್ಟಿ ಅವರು ನೀಡಿದ ಕೊಡುಗೆ ಅನನ್ಯವಾಗಿದೆ. ಗ್ರಾಮೀಣ ಬದುಕು, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ದಾಖಲಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಟ್ಟ ಅವರ ಸೇವೆ ಸದಾ ಸ್ಮರಣೀಯ ಎಂದು ಹೇಳಿದರು.
ಜಾನಪದ ಸಾಹಿತ್ಯವನ್ನು ಕೇವಲ ಸಂಗ್ರಹಿಸುವುದಷ್ಟೇ ಅಲ್ಲದೆ, ಅದನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಕನ್ನಡ ನಾಡು–ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಉಪ ತಹಶೀಲ್ದಾರ್ ರಮೇಶ್, ಶಿರಸ್ತೆದಾರ್ ಆಸಿಯಾ ಬಿ., ವೇಣು ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Sidlaghatta : ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮದ್ಯೆ ವೀರಾಪುರ ಬಳಿ ರೈಲ್ವೆ ಅಂಡರ್ಪಾಸ್ನ ಕಬ್ಬಿಣದ ಸರಳುಗಳು ಪದೇ ಪದೇ ಕಿತ್ತು ಬಂದು ವಾಹನ ಸಂಚಾರಕ್ಕೆ ಅಡಚಣೆ, ಅಪಘಾತಗಳಿಗೆ ಕಾರಣವಾಗುತ್ತಿದ್ದು ಸ್ಥಳಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ ಇಲಾಖೆ ಅಧಿಕಾರಿಗಳು, ಪೊಲೀಸರೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲ್ವೆ ಅಂಡರ್ಪಾಸ್ನಲ್ಲಿ ಮಳೆ ನೀರು ಹರಿದು ಹೋಗಲು ಅಳವಡಿಸಿರುವ ಕಬ್ಬಿಣದ ಸರಳುಗಳ ವೆಲ್ಡಿಂಗ್ ಪದೇ ಪದೇ ಕಿತ್ತು ಬಂದು ಕಬ್ಬಿಣದ ಸರಳುಗಳು ಮೇಲ್ಮುಖವಾಗಿ ನಿಂತು ಸಂಚಾರಕ್ಕೆ ಅಡಚಣೆ ಆಗಿತ್ತಲ್ಲದೆ ಕಳೆದ ಐದಾರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದವು.
ತಾತ್ಕಾಲಿಕವಾಗಿ ವೆಲ್ಡಿಂಗ್ ಮಾಡುವ ಕಾರ್ಯ ನಡೆಸಿದರಾದರೂ ಒಂದೇ ದಿನದಲ್ಲಿ ವೆಲ್ಡಿಂಗ್ ಕಿತ್ತು ಬಂದು ಸಮಸ್ಯೆ ಮುಂದುವರೆದಿತ್ತು. ಸಮಸ್ಯೆ ನಿವಾರಿಸುವಂತೆ ವೀರಾಪುರ, ತಲದುಮ್ಮನಹಳ್ಳಿ ಗ್ರಾಮಸ್ಥರು ಪೊಲೀಸರು, ರೈಲ್ವೆ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಜತೆಗೆ ಸಮಸ್ಯೆ ಕುರಿತು ಶಾಸಕರ ಗಮನ ಸೆಳೆಯಲಾಗಿತ್ತು.
ಈ ಹಿನ್ನಲೆಯಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಅವರು ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮತ್ತೆ ಮತ್ತೆ ಸಮಸ್ಯೆ ಪುನರಾವರ್ತಿಸದಂತೆ ಶಾಶ್ವತವಾಗಿ ದುರಸ್ತಿ ಕೈಗೊಳ್ಳುವ ಬಗ್ಗೆ ಕೆಲ ಕಾಲ ಚರ್ಚಿಸಿದರು.
ಯಾವ ರೀತಿಯ ದುರಸ್ತಿ ಮಾಡಿದರೆ ಮಳೆನೀರು ಸರಾಗವಾಗಿ ಹರಿದು ಹೋಗಬೇಕು, ಕಬ್ಬಿಣದ ಸರಳುಗಳು ಮತ್ತೆ ಕಿತ್ತು ಬರಬಾರದು, ಸಂಚಾರಕ್ಕೆ ಯಾವುದೆ ರೀತಿಯಲ್ಲಿ ತೊಂದರೆ ಆಗಬಾರದು, ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡುವೆ ಸಮನ್ವಯತೆ ಸಾಧಿಸಿಕೊಂಡು ದುರಸ್ತಿ ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರು, ವೀರಾಪುರ ರೈಲ್ವೆ ಅಂಡರ್ಪಾಸ್ನಲ್ಲಿ ದೀರ್ಘಕಾಲದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು ಹಲವು ಅಪಘಾತಗಳೂ ಸಂಭವಿಸಿರುವುದು ಗಂಭೀರ ವಿಷಯವಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಂಜಿನಿಯರ್ಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತಕ್ಷಣವೇ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಕೇವಲ ತಾತ್ಕಾಲಿಕ ದುರಸ್ತಿಗೆ ಸೀಮಿತವಾಗದೆ, ಭವಿಷ್ಯದಲ್ಲಿ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸುವ ರೀತಿಯಲ್ಲಿ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ರೈಲ್ವೆ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ಗಳು, ನಗರ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ, ಸೇರಿದಂತೆ ತಲದುಮ್ಮನಹಳ್ಳಿ ಹಾಗೂ ವೀರಾಪುರ ಗ್ರಾಮಸ್ಥರು ಉಪಸ್ಥಿತರಿದ್ದರು.
Sidlaghatta : 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದು ರೈತರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್.ಎಸ್.ಅಬೀದ್ ಮನವಿ ಮಾಡಿದ್ದಾರೆ.
ಶಿಡ್ಲಘಟ್ಟ ತಾಲ್ಲೂಕಿನ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿ ರೈತರ ಕುಂದು ಕೊರತೆಗಳನ್ನು ಆಲಿಸಿ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 7 ಬೆಳೆಗಳು ಸಹಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಪ್ರಮುಖ ಬೆಳೆಗಳು ಕುರಿತಂತೆ ತಾಲ್ಲೂಕುವಾರು ಮತ್ತು ಗ್ರಾಮ ಪಂಚಾಯತಿಯವರು ಈಗಾಗಲೇ ನೋಟಿಫಿಕೇಶನ್ ಮಾಡಲಾಗಿದೆ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಶೇಕಡ 2ರಷ್ಟು ವಿಮಾ ಕಂತನ್ನು ಪಾವತಿಸಿ ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬರಗಾಲದ ಸ್ಥಿತಿ ಬರುವ ಮುನ್ಸೂಚನೆ ಕಂಡುಬಂದಿದೆ ವಿಮಾ ಸೌಲಭ್ಯಗಳ ಮೂಲಕ ಅನುಕೂಲ ಮಾಡಿಕೊಳ್ಳಬೇಕೆಂದು ವಿನಂತಿಸಿದರು.
ಮುಖ್ಯ ಬೆಳೆಗಳಿಗೆ ಬಿತ್ತನೆ ಮಾಡಲು ಸಾಧ್ಯ ಆಗಲಿಲ್ಲ ಎಂದರೆ ಶೇಕಡಾ 25 ರಷ್ಟು ಮಾತ್ರ ಬಿತ್ತನೆ ಆಯಿತು, ಬಿತ್ತನೆ ವಿಫಲ, ಅಥವಾ ಬೆಳೆಗಳು ಒಣಗಿ ಹೋದರೂ ಸಹ ಶೇಕಡ 25ರಷ್ಟು ವಿಮಾ ಸೌಲಭ್ಯ ರೈತರಿಗೆ ಆಗಲಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕೃಷಿ ಸಹಾಯಕ ನಿರ್ದೇಶಕರು, ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದುಕೊಂಡು ವಿಮಾ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪಿಆರ್ ರವಿ ಇನ್ನಿತರರು ಉಪಸ್ಥಿತರಿದ್ದರು.
Sidlaghatta : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನದ ಅಂಗವಾಗಿ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ 100 ವರ್ಷ ಪೂರೈಸಿರುವ ಶತಾಯುಷಿ ಬೈಯಮ್ಮ ಕೋಂ ಮಲಿಯಪ್ಪ ಅವರ ನಿವಾಸಕ್ಕೆ ತಹಶೀಲ್ದಾರ್ ಗಗನಸಿಂಧು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮನೆ ಬಾಗಿಲಿಗೆ ಬಂದ ಅಧಿಕಾರಿಗಳೊಂದಿಗೆ ಮಾತನಾಡಿದ ಬೈಯಮ್ಮ ಅವರು, ಕಳೆದ ಮೂರು ವರ್ಷಗಳಿಂದ ತಮ್ಮ ವೃದ್ಧಾಪ್ಯ ವೇತನ ಸ್ಥಗಿತಗೊಂಡಿದ್ದು, ಹಲವಾರು ಬಾರಿ ಸಂಬಂಧಪಟ್ಟ ಕಚೇರಿಗಳಿಗೆ ಅಲೆದರೂ ಸಮಸ್ಯೆ ಇಂದಿಗೂ ಬಗೆಹರಿದಿಲ್ಲ ಎಂದು ಕಣ್ಣೀರಿಟ್ಟು ತಮ್ಮ ಅಳಲನ್ನು ವ್ಯಕ್ತಪಡಿಸಿದರು. ವಯಸ್ಸಾದ ಸಮಯದಲ್ಲಿ ಜೀವನೋಪಾಯಕ್ಕೆ ಆಸರೆಯಾಗಿದ್ದ ಪಿಂಚಣಿಯನ್ನು ಶೀಘ್ರದಲ್ಲೇ ಮರು ಆರಂಭಿಸಿಕೊಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.
ಬೈಯಮ್ಮ ಅವರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಗಗನ ಸಿಂಧು ಅವರು, ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ತಾಲ್ಲೂಕಿನ ವಿವಿದೆಡೆಡ ಇರುವ ಶತಾಯುಷಿ ಮತದಾರರನ್ನು ಗೌರವಿಸುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸುವ ಕಾರ್ಯವೂ ನಡೆದಿರುವುದು ಗಮನಾರ್ಹವಾಗಿದೆ.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್, ಸಿಡಿಪಿಒ ವಿದ್ಯಾ ವಸ್ತ್ರದ್ , ಕಂದಾಯ ನಿರೀಕ್ಷಕ ಶಶಿಧರ್, ಗ್ರಾಮ ಲೆಕ್ಕಿಗ ಮುನಿರಾಜು, ಸೇರಿದಂತೆ BLO ಗಳು ಉಪಸ್ಥಿತರಿದ್ದರು.
Sidlaghatta : ರೈತರನ್ನು ಒಕ್ಕಲೆಬ್ಬಿಸಿ ವಿನಾಕಾರಣ ಕಿರುಕುಳ ಹಾಗೂ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಚಿಕ್ಕಬಳ್ಳಾಪುರ ತಹಶೀಲ್ದಾರ್ ಸೇರಿದಂತೆ ಡಿ.ಎಫ್.ಓ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ಒತ್ತಾಯಿಸಿದರು.
ಜಿಲ್ಲೆಯ ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಬಳಿಯ ದಲಿತರ ಜಮೀನುಗಳನ್ನು ಅರಣ್ಯ ಇಲಾಖೆಯಿಂದ ರಕ್ಷಿಸಲು ಒತ್ತಾಯಿಸಿ ನಗರದ ಹೊರವಲಯದ ಅರಣ್ಯ ಇಲಾಖೆ ಕಚೇರಿ ಮುಂಭಾಗ ಸೋಮವಾರ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಾಂಕೇತಿಕ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಬಳಿ 1995 ರಲ್ಲೇ 7 ಮಂದಿ ದಲಿತ ಕುಟುಂಬಗಳಿಗೆ ಸರ್ಕಾರಿ ಜಮೀನು ಮಂಜೂರು ಆಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಡೀಮ್ಡ್ ಫಾರೆಸ್ಟ್ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಿ ವಿನಾಕಾರಣ ಕಿರುಕುಳ ನೀಡುತ್ತಿದ್ದು ರೈತ, ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ.
ಮಂಜೂರಾದ ಭೂಮಿ ನಮ್ಮದು ಎಂದು ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಹಿಂದೆ ಇದು ಅರಣ್ಯ ಇಲಾಖೆಗೆ ಸೇರಿಲ್ಲ. ಕಂದಾಯ ಇಲಾಖೆಗೆ ಸೇರಿದ್ದು ಎಂದು ಹೇಳಿದರೆ, ಇನ್ನೊಮ್ಮೆ ಇದು ಅರಣ್ಯ ಇಲಾಖೆಗೆ ಸೇರಿದ ಭೂಮಿ ಎಂದು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ.
ಅರಣ್ಯ ಇಲಾಖೆಯ ಸೆಟ್ಲಮೆಂಟ್ ಅಧಿಕಾರಿಗಳಿಂದಲೂ ಈ 21 ಎಕರೆ ಜಮೀನು 7 ಮಂದಿ ದಲಿತ ಕುಟುಂಬಗಳಿಗೆ ಸೇರಿದ್ದು ಎಂದು ತೀರ್ಪು ನೀಡಿದ್ದರೂ ಕೂಡ ಅರಣ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ತಮ್ಮ ತಮ್ಮಲ್ಲಿ ಒಮ್ಮತವಿಲ್ಲದೆ ವಿನಾಕಾರಣ ದಲಿತ ರೈತ ಕುಟುಂಬಗಳಿಗೆ ತೊಂದರೆ ಕೊಡುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ 7 ಜನ ದಲಿತರ ಭೂಮಿಗಳ ದುರಸ್ತಿಯನ್ನು ತಕ್ಷಣವೇ ಮಾಡಿಸಿ ಭೂಮಿ ಬಿಟ್ಟುಕೊಡಬೇಕು. ಹಾಗೂ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ತಹಶೀಲ್ದಾರ್ ಸೇರಿದಂತೆ ಡಿ.ಎಫ್.ಓ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಲಯ ಅರಣ್ಯಾಧಿಕಾರಿ ರಾಜೇಶ್ ಗವಾಲ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಚಾಲಕ ದೊಡ್ಡತಿರುಮಳಯ್ಯ, ಸಂಘಟನಾ ಸಂಚಾಲಕರಾದ ನರೇಶ್, ರಾಜಕುಮಾರ್, ದೇವಪ್ಪ, ಡಿ.ಎಂ.ವೆಂಕಟೇಶ್, ಗಂಗಾಧರ್, ಮುನಿಕದಿರಪ್ಪ, ಮಹಿಳಾ ಘಟಕದ ಅರಣಾ, ಭಾರತಮ್ಮ, ದೇವರಾಜಮ್ಮ, ವೀಣಾ, ಗಂಗರತ್ನಮ್ಮ, ಅಮರಾವತಿ ಹಾಜರಿದ್ದರು.
Sidlaghatta : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಚಿಕ್ಕಬಳ್ಳಾಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಶಿಡ್ಲಘಟ್ಟ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಸೋಮವಾರ ನಗರದಲ್ಲಿ ಬೃಹತ್ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.
ನಗರ ಪೊಲೀಸ್ ಠಾಣೆ ಮುಂಭಾಗದಿಂದ ನೆಹರೂ ಮೈದಾನದವರೆಗೆ ನಡೆದ ಜಾಥಾದ ಮೂಲಕ ಸಾರ್ವಜನಿಕರಿಗೆ ಮತದಾರರ ಪಟ್ಟಿಯ ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಶೇಷ ಸಮೀಕ್ಷೆ (ಎಸ್.ಐ.ಆರ್) ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ತಹಶೀಲ್ದಾರ್ ಗಗನ್ ಸಿಂಧು, ಪೌರಾಯುಕ್ತೆ ಅಮೃತ, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಅಧಿಕಾರಿಗಳು ನೀಡಿದ ಮಾಹಿತಿಯಂತೆ, 2002ರ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದವರ ವಿವರಗಳನ್ನು ಆಧರಿಸಿ ಪ್ರಸ್ತುತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯ ನಡೆಯುತ್ತಿದೆ. ತಂದೆ-ತಾಯಿ ಅಥವಾ ಅಜ್ಜ-ಅಜ್ಜಿಯರ ಹಳೆಯ ಮತದಾರರ ವಿವರಗಳನ್ನು ಒದಗಿಸಿದರೆ ಅದಕ್ಕೆ ಅನುಗುಣವಾಗಿ ಮ್ಯಾಪಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮ್ಯಾಪಿಂಗ್ ವೇಳೆ ಪ್ರತ್ಯೇಕ ದಾಖಲೆಗಳ ಅಗತ್ಯವಿಲ್ಲ. ಆದರೆ ಮ್ಯಾಪಿಂಗ್ ಸಾಧ್ಯವಾಗದ ಸಂದರ್ಭಗಳಲ್ಲಿ ಜನ್ಮ ದಿನಾಂಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಹಾಗೂ ಬೂತ್ ಮಟ್ಟದ ಏಜೆಂಟ್ಗಳು (ಬಿ.ಎಲ್.ಎ) ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಲಿದ್ದಾರೆ. ಅರ್ಹ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಜೊತೆಗೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಿದ್ದಾರೆ.
ಬಿ.ಎಲ್.ಒ.ಗಳು ಮನೆಗಳಿಗೆ ಭೇಟಿ ನೀಡಿದಾಗ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಿದ್ದು, ಸಾರ್ವಜನಿಕರು ತಮ್ಮ ನಿಖರ ಮಾಹಿತಿ ಹಾಗೂ ಹೊಸ ಭಾವಚಿತ್ರದೊಂದಿಗೆ ಫಾರ್ಮ್ ಅನ್ನು ಎರಡು ಪ್ರತಿಗಳಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು. ಫಾರ್ಮ್ ಸ್ವೀಕರಿಸಿದ ನಂತರ ಬಿ.ಎಲ್.ಒ.ಗಳು ಸಹಿ ಮಾಡಿದ ಸ್ವೀಕೃತಿ ಪತ್ರವನ್ನು ಮತದಾರರಿಗೆ ನೀಡಲಿದ್ದಾರೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಎಲ್ಲಾ 244 ಮತಗಟ್ಟೆಗಳಲ್ಲೂ ಮತದಾರರ ಸೌಲಭ್ಯ ಕೇಂದ್ರಗಳನ್ನು ಆರಂಭಿಸಲಾಗಿದೆ. ಅಲ್ಲದೆ ತಾಲ್ಲೂಕು ಕಚೇರಿ ಹಾಗೂ ನಗರಸಭೆ ಕಚೇರಿಗಳಲ್ಲಿಯೂ ಬಿ.ಎಲ್.ಒ. ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ಫಾರ್ಮ್ ಭರ್ತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಪ್ರತಿದಿನ ನಿಗದಿತ ಸಮಯದಲ್ಲಿ ಒದಗಿಸಲಾಗುತ್ತಿದೆ.
ಈ ವಿಶೇಷ ಪರಿಷ್ಕರಣೆ ಅಭಿಯಾನದ ಮುಖ್ಯ ಉದ್ದೇಶ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವುದು ಹಾಗೂ ಅನರ್ಹ ಅಥವಾ ನಕಲಿ ಹೆಸರುಗಳನ್ನು ತೆಗೆದುಹಾಕುವುದಾಗಿದೆ. ಶಿಡ್ಲಘಟ್ಟ ಕ್ಷೇತ್ರದಲ್ಲಿ ಈಗಾಗಲೇ ಶೇ 97.7ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯನ್ನು ಶೇ 100ರಷ್ಟು ನಿಖರಗೊಳಿಸಲು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ಸಹಕಾರ ನೀಡುವಂತೆ ತಹಸೀಲ್ದಾರ್ ಗಗನ್ ಸಿಂಧು ಮನವಿ ಮಾಡಿದರು.
Sidlaghatta : ನಾಡಪ್ರಭು ಶ್ರೀಕೆಂಪೇಗೌಡರ ಜಯಂತಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದು, ಅವರ ವಿರುದ್ದ ಘೋಷಣೆಗಳನ್ನು ಕೂಗಿದ್ದು ಹಾಗೂ ಅವರ ಕಾರಿನತ್ತ ಚಪ್ಪಲಿ ಎಸೆಯುವಂತ ಕಾರ್ಯ ಎಂದಿಗೂ ನಮ್ಮ ಒಕ್ಕಲಿಗ ಸಮುದಾಯವರು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟದ ಪದಾಧಿಕಾರಿಗಳ ಜತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರದೀಪ್ ಈಶ್ವರ್ ಅವರಿಗೆ ಆಗದವರು ಮತ್ತು ನಮ್ಮ ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಯಾರೋ ಕಿಡಿಗೇಡಿಗಳು ಮಾಡದಿ ಕೃತ್ಯವಿದು. ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮ ಜರುಗಿಸುತ್ತದೆ ನಮ್ಮದೇನು ಅಭ್ಯಂತರವಿಲ್ಲ ಎಂದರು.
ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರು ನಮ್ಮ ಸಮುದಾಯಕ್ಕೆ ಮಾತ್ರವಲ್ಲ ಜಗತ್ತಿಗೆ ಹೆಮ್ಮೆ. ಅವರ ಜಯಂತಿಯಂದು ನಡೆದ ಕೃತ್ಯಕ್ಕೆ ರಾಜ್ಯ ಒಕ್ಕಲಿಗರ ಒಕ್ಕೂಟವು ವಿಷಾಧ ವ್ಯಕ್ತಪಡಿಸುತ್ತದೆ. ನಮ್ಮ ಸಮುದಾಯದ ಕಾರ್ಯಕ್ರಮದಲ್ಲಿ ಅಹ್ವಾನಿತರಾದ ಗೌರವಾನ್ವಿತ ಪ್ರದೀಪ್ ಈಶ್ವರ್ ಅವರಿಗೆ ನಡೆದ ಅಪಮಾನಕ್ಕೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ ಎಂದರು.
ಖಂಡನೆ :
ಆದರೆ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ಧಕ್ಕೆ ತರುವಂತೆ ನಡೆದುಕೊಳ್ಳುವ ಮೂಲಕ ಅವರಿಗೆ ಮತಕೊಟ್ಟು ಗೆಲ್ಲಿಸಿದ ಕ್ಷೇತ್ರದ ಎಲ್ಲ ಜಾತಿ ಧರ್ಮಗಳನ್ನೊಳಗೊಂಡ ಮತದಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ದೂರಿ, ಪ್ರದೀಪ್ ಈಶ್ವರ್ ಅವರಿಗೆ ಕ್ಷೇತ್ರದ ಎಲ್ಲ ಧರ್ಮ ಜಾತಿಯ ಮತದಾರರು ಕೂಡ ಮತಕೊಟ್ಟು ಗೆಲ್ಲಿಸಿದ್ದಾರೆ. ಮುಖ್ಯವಾಗಿ ಅವರು ಜೆಡಿಎಸ್ನ ಮತಗಳಿಂದಲೆ ಗೆದ್ದಿದ್ದು ಎಂದರೂ ತಪ್ಪಾಗಲಾರದು.
ಗೆದ್ದ ಮೇಲೆ ಅವರು ಬುದ್ದಿ ಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆ. ಎರಡು ಬಾರಿ ಸಿಎಂ ಆಗಿ, ಕೇಂದ್ರದಲ್ಲಿ ಮಂತ್ರಿಯಾಗಿ ಅಪಾರ ಅನುಭವ ಇರುವ, ರೈತರು ಹಾಗೂ ಜನ ಸಾಮಾನ್ಯರ ಪರ ಕಾಳಜಿಯುಳ್ಳ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡಲು ಪ್ರದೀಪ್ ಈಶ್ವರ್ಗೆ ನೈತಿಕತೆ ಇಲ್ಲ. ಮಾತನಾಡುವಾಗ ಪ್ರಜ್ಞೆ ಇದ್ದು ಮಾತನಾಡಬೇಕೆಂದು ಎಚ್ಚರಿಕೆ ಕೊಟ್ಟರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರೂ ಆದ ಎಸ್.ಎನ್.ಸುಬ್ಬಾರೆಡ್ಡಿ, ಡಾ.ಎಂ.ಸಿ.ಸುಧಾಕರ್, ಗೌರಿಬಿದನೂರಿನ ಎನ್.ಎಚ್.ಶಿವಶಂಕರ್ರೆಡ್ಡಿ ಅವರಿಂದ ಪ್ರದೀಪ್ ಈಶ್ವರ್ ಗೆದ್ದಿದ್ದು. ಆದರೆ ಗೆದ್ದ ಮೇಲೆ ಇವರ ಬೆನ್ನಿಗೆ ಚೂರಿ ಹಾಕುವ, ಇವರಿಗೆ ಮುಜುಗರವಾಗುವ, ಕಾಂಗ್ರೆಸ್ಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರ ಬಳಿ ಮಾತ್ರ ಇಟ್ಟುಕೊಳ್ಳಬೇಡಿ, ಅವರು ಸಾಮಾನ್ಯ ರೈತ ಕುಟುಂಬದಿಂದ ಬಂದವರು. ಅವರ ನಡೆ ನುಡಿ ಸೇವಾ ಕಾರ್ಯಗಳು ಇಡೀ ರಾಜ್ಯದಲ್ಲಿಯೆ ಮಾದರಿಯಾಗಿದೆ. ಅವರ ಬಗ್ಗೆ ಮಾತನಾಡುವಾಗ ಮೈಯ್ಯೆಲ್ಲಾ ಎಚ್ಚರಿಕೆ ಇಟ್ಟುಕೊಂಡು ಮಾತನಾಡಬೇಕೆಂದರು.
ನೀವು ಪದೇ ಪದೇ ಓಬಿಸಿ ಹುಡುಗ ಅನ್ನಬೇಡ, ನಾವು ಓಬಿಸಿಗಳೆ. ನಮ್ಮ ಸಮುದಾಯದ ಮತಗಳು ನಿಮಗೆ ಬಂದಿವೆ. ಮುಂದಿನ ದಿನಗಳಲ್ಲಾದರೂ ನಿಮ್ಮ ನಡೆ ನುಡಿಯನ್ನು ಬದಲಿಸಿಕೊಳ್ಳಿ. ಇಲ್ಲವಾದಲ್ಲಿ ರಾಜ್ಯಾಧ್ಯಂತ ಒಕ್ಕಲಿಗರ ಒಕ್ಕೂಟದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ನಾಗರಾಜ್ ರೆಡ್ಡಿ, ಚಿಕ್ಕಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಮಂಜುನಾಥ್ಗೌಡ, ಗೌರಿಬಿದನೂರು ತಾಲ್ಲೂಕು ಅಧ್ಯಕ್ಷ ವೆಂಕಟರೆಡ್ಡಿ, ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ಬಾಬುರೆಡ್ಡಿ, ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಶ್ರೀನಾಥರೆಡ್ಡಿ ಹಾಜರಿದ್ದರು.
Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಭಾರತ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪೋಷಕರು ಸಹಕರಿಸಬೇಕೆಂದು ಶಾಸಕ ಬಿ.ಎನ್. ರವಿಕುಮಾರ್ ಮನವಿ ಮಾಡಿದರು.
ತಾಲ್ಲೂಕಿನ ಆನೂರು ಹುಣಸೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ 0-5 ವರ್ಷದ 20,755 ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗೆ ಕಡ್ಡಾಯವಾಗಿ ಪೋಷಕರು ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಮಕ್ಕಳ ಆರೋಗ್ಯ ಕಾಪಾಡುವ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕೆಂದು ವಿನಂತಿಸಿದರು.
ತಹಶೀಲ್ದಾರ್ ಗಗನ ಸಿಂಧು, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ, ಸಿಡಿಪಿಓ ವಿದ್ಯಾ ವಸ್ತ್ರದ, ಕೆ.ಮುತ್ತಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನರ್ಮದಾ, ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು, ನಾರಾಯಣಸ್ವಾಮಿ, ಆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ಚಿಕ್ಕಣ್ಣ, ನರಸಿಂಹಮೂರ್ತಿ ಹಾಜರಿದ್ದರು.
ಶಿಡ್ಲಘಟ್ಟ ತಾಲೂಕಿನಲ್ಲಿ 28 ಜೂನ್ ರಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಗತಿ
Rural : 97.96 % Urban : 91.30 % Total : 96.04 %
29 ಜೂನ್ ರಿಂದ ಮನೆ ಮನೆಗೆ ಹೋಗಿ ಉಳಿದ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆಯುತ್ತದೆ.
Sugaturu, Sidlaghatta : ಕೆಂಪೇಗೌಡರು ಕೇವಲ ಒಂದು ನಗರವನ್ನು ಕಟ್ಟಿದ ರಾಜನಾಗಿರದೇ, ಐನೂರು ವರ್ಷಗಳ ಹಿಂದೆಯೇ ಆಧುನಿಕ ನಗರಾಭಿವೃದ್ಧಿಗೆ ಮುನ್ನುಡಿ ಬರೆದ ಮಹಾನ್ ದ್ರಷ್ಟಾರ. ಅವರ ಶೌರ್ಯ, ಸಾಹಸ ಹಾಗೂ ಪ್ರಜಾವತ್ಸಲತೆ ಇಂದಿನ ಪೀಳಿಗೆಗೆ ಮತ್ತು ಆಡಳಿತಗಾರರಿಗೆ ದಾರಿದೀಪವಾಗಿದೆ ಎಂದು ಕೆಂಪೇಗೌಡ ಯುವಕಸಂಘದ ನಿರ್ದೇಶಕ ಎನ್.ಮಂಜುನಾಥ್ ಗೌಡ ಪ್ರಶಂಸಿಸಿದರು.
ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಕೆಂಪೇಗೌಡ ಯುವಕಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ಅವರು ಬೆಂಗಳೂರನ್ನು ವೈಜ್ಞಾನಿಕವಾಗಿ ನಿರ್ಮಿಸಿದವರು. ಕೆರೆ-ಕಟ್ಟೆಗಳ ನಿರ್ಮಾಣ, ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಮತ್ತು ಪರಿಸರ ಸಮತೋಲನಕ್ಕೆ ಅವರು ನೀಡಿದ ಆದ್ಯತೆಯು ಕೆಂಪೇಗೌಡರಿಗಿದ್ದ ಪರಿಸರ ಪ್ರೇಮಕ್ಕೆ ಸಾಕ್ಷಿಯಾಗಿದೆ. ಅಂದು ಅವರು ದೂರದೃಷ್ಟಿಯಿಂದ ನಿರ್ಮಿಸಿದ ರಸ್ತೆಗಳು, ಕೋಟೆ-ಕೊತ್ತಲಗಳು ಹಾಗೂ ಮಾರುಕಟ್ಟೆಗಳು ಇಂದಿಗೂ ಬೆಂಗಳೂರಿನ ಆರ್ಥಿಕತೆಯ ಬೆನ್ನೆಲುಬಾಗಿ ನಿಂತಿವೆ ಎಂದರು.
ಇತಿಹಾಸ ಪ್ರಸಿದ್ಧ ಶ್ರೀ ಸತ್ಯಮ್ಮದೇವಿ ದೇವಾಲಯದಲ್ಲಿ ವಿಶೇಷ ಪೂಜೆಸಲ್ಲಿಸಿದ ನಂತರ ಕೆಂಪೇಗೌಡರ ಭಾವಚಿತ್ರವನ್ನು ಹೊತ್ತ ಪಲ್ಲಕ್ಕಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಕೆಂಪೇಗೌಡ ಯುವಕ ಸಂಘದ ವಿಜಯಕುಮಾರ್, ಅಶೋಕ್ ಕುಮಾರ್, ಗಣೇಶ್, ಪೋಟೋ ರವಿಕುಮಾರ್, ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ವಿಶ್ವನಾಥ್, ಚೇತನ್, ಮಂಜುನಾಥ್, ಮಹೇಶ್, ಹಿರಿಯರಾದ ಕೃಷ್ಣಪ್ಪ, ಮರೇಗೌಡ, ಮುನೇಗೌಡ, ಮುನಿರಾಜು, ಆಂಜನೇಯರೆಡ್ಡಿ, ಹರೀಶ್ ಹಾಜರಿದ್ದರು.
Sidlaghatta : “ನಾನು, ನಾನೇ, ನನ್ನಿಂದ…” ಎನ್ನುವ ದುರಹಂಕಾರದ ಮಾತುಗಳನ್ನು ಬಿಟ್ಟು, “ದೇವರ ಕೃಪೆಯಿಂದ, ಕಾಂಗ್ರೆಸ್ ಕಾರ್ಯಕರ್ತರ, ಗುರು-ಹಿರಿಯರ ಆಶೀರ್ವಾದದಿಂದ ಮತ್ತು ಎಲ್ಲರ ಸಹಕಾರದಿಂದ” ಎಂಬ ವಿನಯಪೂರ್ವಕ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಎಂಬುದಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಿಳಿಸಿದರು.
ಕ್ಷೇತ್ರದಲ್ಲಿ ಮುಂಬರುವ 2028 ರ ಚುನಾವಣೆಯಲ್ಲಿ ಹಾಲಿ ಶಾಸಕ ಬಿ.ಎನ್.ರವಿಕುಮಾರ್ ಹಾಗು ತಮ್ಮ ನಡುವೆ ಮಾತ್ರ ಸ್ಪರ್ಧೆ (ಪೈಪೋಟಿ) ಇರಲಿದೆ. ಉಳಿದವರು ಮೂರನೇ ಅಥವ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಡುತ್ತಾರೆ ಎಂದು 2023 ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಪುಟ್ಟು ಆಂಜಿನಪ್ಪ ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾನು ಎನ್ನುವುದರ ಬದಲು ನಾವು ಎಂದಾಗ ಕ್ಷೇತ್ರದಲ್ಲಿ ಕಾಂಗ್ರೆಸ್ ಗಟ್ಟಿಗೊಳ್ಳುತ್ತದೆ. ಮತದಾರ ದೇವರುಗಳ ತೀರ್ಮಾನವೇ ಅಂತಿಮ ಎಂಬುದನ್ನು ಮರೆಯಬಾರದು. ಕಾಂಗ್ರೆಸ್ ಪಕ್ಷವೇ ನನ್ನ ತಾಯಿ ಮತ್ತು ದೇವರು ಎಂದು ಯಾರು ತಿಳಿದು ಅದರಂತೆ ನಡೆದುಕೊಳ್ಳುತ್ತಾರೋ ಅವರಿಗೆ ಪಕ್ಷ ಖಂಡಿತವಾಗಿಯೂ ಸ್ಥಾನಮಾನಗಳನ್ನು ನೀಡುತ್ತದೆ. ಪುಟ್ಟು ಆಂಜಿನಪ್ಪ ಅವರು ದುಡುಕಬಾರದು. ಈ ಹಿಂದೆ ಕೂಡ ಎರಡು ಬಾರಿ ದುಡುಕಿ ಪಕ್ಷ ವಿರೋಧಿಯಾಗಿ ಕೆಲಸ ಮಾಡಿದ್ದೀರಿ. ಸ್ವತಂತ್ರ ಅಭ್ಯರ್ಥಿ ಎಂಬುದಾಗಿ ತಮ್ಮನ್ನು ಬಿಂಬಿಸಿಕೊಂಡು ತಮ್ಮ ಜೊತೆಗಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರಕ್ಕೀಡು ಮಾಡಬೇಡಿ. ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ಒಡೆಯುವ ಕೆಲಸ ಮಾಡಬೇಡಿ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿರುವವರಿಗೆ ವ್ಯಕ್ತಿ ಪೂಜೆಯಿಲ್ಲ. ಇಲ್ಲಿ ಪಕ್ಷವೇ ದೊಡ್ಡದು. ಹೈ ಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿದ್ದು ಪಕ್ಷವನ್ನು ಸಂಘಟಿಸೋಣ. ಪಕ್ಷದೊಳಗೆ ಇದ್ದು, ಸ್ವತಂತ್ರ ಅಭ್ಯರ್ಥಿ ಎಂಬಂತೆ ಮಾತನಾಡಿ ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಬೇಡಿ ಎಂದು ಹೇಳಿದರು.
ಎಲ್ಲರೂ ಒಗ್ಗೂಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ. ಕಾಂಗ್ರೆಸ್ ಪಕ್ಷದೊಳಗಿದ್ದು ಕತ್ತು ಕೊಯ್ಯುವ ಕೆಲಸ ಮಾಡುವುದು ಬೇಡ. ಒಳಗೊಂದು ಹೊರಗೊಂದು ಮುಖವಾಡ ಧರಿಸಬಾರದು. 2028 ರ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಶಾಸಕ ಎಂಬುದನ್ನು ತೀರ್ಮಾನಿಸುವುದು ಕ್ಷೇತ್ರದ ಮತದಾರ ದೇವರುಗಳು ಎಂಬ ಎಚ್ಚರವಿರಲಿ ಎಂದರು.
Sidlaghatta : ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರ ದೂರದೃಷ್ಟಿ, ಜನಪರ ಆಡಳಿತ, ಸಮಾಜಮುಖಿ ಚಿಂತನೆ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಕರೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ಆದರ್ಶಗಳು, ಸಮಾಜಮುಖಿ ಕಾರ್ಯಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಾಗಿದೆ. 12ನೇ ಶತಮಾನದ ಬಸವಣ್ಣ, 16ನೇ ಶತಮಾನದ ನಾಡಪ್ರಭು ಕೆಂಪೇಗೌಡರು, ಮಹರ್ಷಿ ವಾಲ್ಮೀಕಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಅವರ ಸೇವೆ ಮತ್ತು ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.
100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ ಶಾಸಕ ರವಿಕುಮಾರ್, “ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ” ಎಂಬ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಹಸೀಲ್ದಾರ್ ಗಗನ ಸಿಂಧು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಶತಮಾನಗಳ ಹಿಂದೆಯೇ ಬೆಂಗಳೂರಿನ ಭವಿಷ್ಯವನ್ನು ಊಹಿಸಿ ನಗರ ನಿರ್ಮಾಣಕ್ಕೆ ಯೋಜನೆ ರೂಪಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.
ವಿದ್ಯಾರ್ಥಿಗಳು ಸಹ ಜೀವನದಲ್ಲಿ ಸ್ಪಷ್ಟ ಗುರಿ, ದೃಢ ಸಂಕಲ್ಪ ಮತ್ತು ದೂರದೃಷ್ಟಿಯೊಂದಿಗೆ ಯೋಜಿತವಾಗಿ ಪರಿಶ್ರಮಪಟ್ಟರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಅದ್ದೂರಿ ಪಲ್ಲಕ್ಕಿ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ :
ಕಾರ್ಯಕ್ರಮಕ್ಕೂ ಮುನ್ನ ನಗರದ ಮಯೂರ ವೃತ್ತದ ಬಳಿಯ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಬಸ್ ನಿಲ್ದಾಣದಿಂದ ಟಿ.ಬಿ. ರಸ್ತೆ, ಕೋಟೆ ವೃತ್ತ ಹಾಗೂ ಕಾಂಗ್ರೆಸ್ ಭವನ ರಸ್ತೆ ಮಾರ್ಗವಾಗಿ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿಗಳ ಅದ್ದೂರಿ ಮೆರವಣಿಗೆ ನಡೆಯಿತು.
ಡೊಳ್ಳು ಕುಣಿತ, ತಮಟೆ ವಾದನ, ಜಾನಪದ ಕಲಾತಂಡಗಳ ಮನಮೋಹಕ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭೆ ಆಯುಕ್ತೆ ಅಮೃತ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಅಪ್ಪೇಗೌಡನಹಳ್ಳಿ ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್, ಯುವ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಅದ್ದೂರಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ರೈತರ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮುನಿನಂಜಪ್ಪ, ತಾದೂರು ಮಂಜುನಾಥ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಯಂತಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.
Sidlaghatta : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ ಮತ್ತು ವಸತಿ ಶಾಲೆಗಳಿಗೆ ಸರಬರಾಜು ಮಾಡಬೇಕಿದ್ದ ಗೋಧಿ ಈಗ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಎಚ್. ಕ್ರಾಸ್ ಜಂಗಮಕೋಟೆ ಮಾರ್ಗದ ಮೂಲಕ ಹೊಸಕೋಟೆಗೆ ತೆರಳುತ್ತಿದ್ದ ವೇಳೆಯಲ್ಲಿ ಶಿಡ್ಲಘಟ್ಟ ಗ್ರಾಮಂತರ ಪೊಲೀಸ್ ಠಾಣೆ ಪಿ.ಎಸ್.ಐ ಸುನಿಲ್ ಮತ್ತು ಸಿಬ್ಬಂದಿ ಜಂಗಮಕೋಟೆ ಕ್ರಾಸ್ ನಲ್ಲಿ ಸುಮಾರು 14 ಟನ್ 250ಕ್ಕೂ ಅಧಿಕ ಗೋಧಿ ಚೀಲಗಳನ್ನು ಹಾಗೂ ಕ್ಯಾಂಟರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಶಿಡ್ಲಘಟ್ಟ ಗ್ರಾಮಂತರ ಪೊಲೀಸರು ಆಹಾರ ಇಲಾಖೆಯ ನಿರೀಕ್ಷಕಿ ವೆಂಕಟ ಲಕ್ಷ್ಮಿ ಮತ್ತು ಸಿಬ್ಬಂದಿಯವರ ಸಮ್ಮುಖದಲ್ಲಿ ಅಕ್ರಮವಾಗಿ ಸರಬರಾಜು ಆಗುತ್ತಿದ್ದ ಗೋಧಿ ದಾಸ್ತಾನು ಕುರಿತು ಮಹಜರ ನಡೆಸಿದರು.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.