Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಲಕ್ಕಹಳ್ಳಿ ಗ್ರಾಮದಲ್ಲಿ ಸುಮಾರು 120 ಅಡಿ ಆಳದ ಹಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ ಕೋತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.
ಗ್ರಾಮದ ಹಾಳು ಬಾವಿಯಲ್ಲಿ ಕೋತಿಯೊಂದು ಬಿದ್ದಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ದೌಡಾಯಿಸಿತು. ಅಧಿಕಾರಿ ಲೋಕೇಶ ಅವರ ನೇತೃತ್ವದಲ್ಲಿ, ಸಿಬ್ಬಂದಿಗಳಾದ ರಾಮಾಂಜಿನಪ್ಪ, ರಕ್ಷಿತ್, ಮಂಜುನಾಥ್ ಮತ್ತು ಸತೀಶ ಅವರು ಹಗ್ಗಗಳ ಸಹಾಯದಿಂದ ಕೋತಿಯನ್ನು ಮೇಲಕ್ಕೆತ್ತಿ ಸುರಕ್ಷಿತವಾಗಿ ರಕ್ಷಣೆ ಮಾಡಿದರು. ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಪ್ರಾಣಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Sidlaghatta : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿರುವ BJP ಸೇವಾಸೌಧ ಕಚೇರಿಯಲ್ಲಿ ಭಾನುವಾರ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಮಾಡಿ ಬಳಿಕ ಮಾತನಾಡಿದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ಭಾರತವು ಸನಾತನ ಸಂಸ್ಕೃತಿ ಮತ್ತು ಯೋಗ ಪರಂಪರೆಯ ತವರೂರು ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ರಲ್ಲಿ ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಪ್ರಸ್ತಾವನೆ ಮಂಡಿಸಿದ ಹಿನ್ನೆಲೆಯಲ್ಲಿ ಜೂನ್ 21ನ್ನು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು. ತಾವು ಆರೋಗ್ಯವಾಗಿರುವುದರ ಜೊತೆಗೆ ಇತರರಿಗೂ ಯೋಗದ ಮಹತ್ವವನ್ನು ತಿಳಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಗ್ರಾಮಾಂತರ ಮಂಡಲಾಧ್ಯಕ್ಷ ಆನಂದ್ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಯೋಗಾಸಕ್ತರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ನುರಿತ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನ ಪ್ರಕ್ರಿಯೆಗಳನ್ನು ನಡೆಸಲಾಯಿತು. ಭಾಗವಹಿಸಿದ್ದವರು ಸಾಮೂಹಿಕ ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಅರಿತುಕೊಂಡರು.
ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ನರೇಶ್,ಅಭಿ, ಪತಂಜಲಿ ಯೋಗ ಶಿಕ್ಷಣದ ಕೇಶವಮೂರ್ತಿ, ರಾಮಚಂದ್ರಪ್ಪ, ರಘು, ಪುರುಷೋತ್ತಮ್, ಮಂಜುಳಾ, ಚೆಲುವರಾಜ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
Sidlaghatta : Congress ಪಕ್ಷದ ಹಿರಿಯ ನಾಯಕರೂ ಆದಂತಹ ಬಿ.ಕೆ.ಹರಿಪ್ರಸಾದ್ ಅವರು KPCC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆನೆ ಬಲ ಬಂದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್ ಗೌಡ ಹೇಳಿದರು.
ಇಂದು ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷೇತ್ರದಿಂದ ಹೊರಟ ಸುಮಾರು ನೂರಕ್ಕೂ ಹೆಚ್ಚು ಬಸ್ ಹಾಗೂ ಕಾರುಗಳಿಗೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗು ಬಿ.ಕೆ.ಹರಿಪ್ರಸಾದ್ ಅವರ ಸಂಘಟನಾ ಚಾತುರ್ಯ ಪಕ್ಷವನ್ನು ಇನ್ನಷ್ಟು ಬಲಪಡಿಸಲಿದೆ. ಶಿಡ್ಲಘಟ್ಟ ಕ್ಷೇತ್ರದಿಂದ ನಮ್ಮ ಕಾರ್ಯಕರ್ತರು ತೋರಿರುವ ಈ ಅಭೂತಪೂರ್ವ ಬೆಂಬಲವೇ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಜಯೋತ್ಸವಕ್ಕೆ ಮುನ್ನುಡಿಯಾಗಲಿದೆ ಎಂದರು.
ತಾಲ್ಲೂಕಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದ ಮುಂಭಾಗದಿಂದ ತೆರಳಿದರು. ಪಕ್ಷದ ಬಾವುಟಗಳು, ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ನಾಯಕರ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಹಿಡಿದು ಕಾರ್ಯಕರ್ತರು ಜಯಘೋಷ ಹಾಕುತ್ತಾ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಪಂಚಾಯತಿ ಸದಸ್ಯರು ಹಾಗೂ ನೂರಾರು ಮಹಿಳಾ ಕಾರ್ಯಕರ್ತರು ಇದ್ದರು.
Sidlaghatta : ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಷಾ ಮಾತನಾಡಿ , ಯೋಗವು ಕೇವಲ ವ್ಯಾಯಾಮವಲ್ಲ, ಅದು ಆರೋಗ್ಯಕರ ಮತ್ತು ಶಿಸ್ತುಬದ್ಧ ಜೀವನಶೈಲಿಯ ಒಂದು ಭಾಗವಾಗಿದೆ ಎಂದು ಹೇಳಿದರು.
ನಿಯಮಿತ ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ಇಂದಿನ ಒತ್ತಡದ ಜೀವನದಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಿದ್ದು, ಪ್ರತಿಯೊಬ್ಬರೂ ತಮ್ಮ ದಿನಚರಿಯಲ್ಲಿ ಯೋಗಕ್ಕೆ ಸ್ಥಾನ ನೀಡಬೇಕು ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ಯೋಗವು ಭಾರತದ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ. ಎಲ್ಲರೂ ಯೋಗಾಭ್ಯಾಸವನ್ನು ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದರು.
ಯೋಗಗುರು ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಯೋಗಾಭ್ಯಾಸದ ಮೂಲಕ ದೈಹಿಕ ಕ್ಷಮತೆ, ಏಕಾಗ್ರತೆ ಹಾಗೂ ಮಾನಸಿಕ ಸ್ಥಿರತೆ ವೃದ್ಧಿಯಾಗುತ್ತದೆ ಎಂಬುದರ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಜಿ. ಭಾಸ್ಕರ್, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.
Sugaturu, Sidlaghatta : ನೇಯ್ಗೆ ಜನಾಂಗದ (ತೊಗಟವೀರ ಕ್ಷತ್ರಿಯ) ಆರಾಧ್ಯ ದೈವ ಹಾಗೂ ಕುಲದೇವಿ ಸರ್ವಶಕ್ತಿ ಶ್ರೀ ಚೌಡೇಶ್ವರಿ ದೇವಿಯ ದೇವಾಲಯ ನೂತನ ಶಿಲಾಬಿಂಬ ಪ್ರತಿಷ್ಠಾಪನೆ, ವಿಮಾನ ಗೋಪುರ ಮತ್ತು ನವಗ್ರಹ ದೇವಸ್ಥಾನದ ಮಹಾಕುಂಭಾಭಿಷೇಕ ಮಹೋತ್ಸವವು ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ವೈಭವದಿಂದ ಜೂನ್ 22 ರಿಂದ ಜೂನ್ 24ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ತೊಗಟವೀರ ಕ್ಷತ್ರಿಯ ಜನಾಂಗದ ಹಿರಿಯರಾದ ಎಸ್.ಎಲ್.ಎನ್ ಟ್ರಸ್ಟ್ನ ಅಧ್ಯಕ್ಷ ದೇವನಹಳ್ಳಿಯ ಅಶ್ವತ್ಥನಾರಾಯಣ್ ಅವರ ಮುಂದಾಳತ್ವದಲ್ಲಿ ಆಕರ್ಷಕ ದೇವಾಲಯ ನಿರ್ಮಣ, ವಿವಿಧ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿವೆ.
ಜೂನ್ 22 ರಂದು ಗಂಗಾಪೂಜೆ, ಗ್ರಾಮ ಪ್ರದಕ್ಷಿಣೆ, ಗಣಪತಿ ಪೂಜೆ, ವಾಸ್ತು ಶಾಂತಿ, ಅಂಕುರಾರ್ಪಣೆ ಮತ್ತು ಯಾಗಶಾಲಾ ಪೂಜೆಗಳು ನೆರವೇರಲಿವೆ. ಜೂನ್ 23 ರಂದು ಹೋಮ-ಹವನಗಳು ನಡೆಯಲಿದ್ದು, ಬೆಳಿಗ್ಗೆ 10:30ಕ್ಕೆ ನೂತನ ಶಿಲಾಬಿಂಬಕ್ಕೆ ಭಕ್ತಾದಿಗಳಿಂದಲೇ ಜಲಾಧಿವಾಸ, ಕ್ಷೀರಾಧಿವಾಸ ಸೇವೆಗಳು, ಸಂಜೆ 108 ಸುಮಂಗಲಿಯರಿಂದ ಲಲಿತಾ ಸಹಸ್ರನಾಮ ಮತ್ತು ಕುಂಕುಮಾರ್ಚನೆ ನಡೆಯಲಿದೆ.
ಜೂನ್ 24 ರಂದು ದೇವಿಯ ನೂತನ ಶಿಲಾಬಿಂಬಕ್ಕೆ ಜೀವನ್ಯಾಸ ಮೂಡಿಸಿ, ವಿಮಾನ ಗೋಪುರ ಹಾಗೂ ಮೂಲದೇವತೆ ಶ್ರೀ ಚೌಡೇಶ್ವರಿ ದೇವಿಗೆ ಮಹಾಕುಂಭಾಭಿಷೇಕ ಮತ್ತು ವಿಶೇಷ ಪಂಚಾಮೃತ ಅಭಿಷೇಕಗಳು ನೆರವೇರಲಿವೆ.
ತೊಗಟವೀರ ಕ್ಷತ್ರಿಯ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮದ ಪೂಜ್ಯ ಶ್ರೀ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಶ್ರೀಗಂದದ ಸಸಿಗಳ ವಿತರಣೆ ಮಾಡಿದ ಶಾಲೆ:
ಈ ಶುಭ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸಲು ಸುಗಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮುಂದಾಗಿದೆ. ಶ್ರೀ ಚೌಡೇಶ್ವರಿ ದೇವಿಯ ಆಲಯದ ಲೋಕಾರ್ಪಣೆಯ ದಿವ್ಯ ಸ್ಮರಣೆಗಾಗಿ ದೇವಸ್ಥಾನದ ಆಹ್ವಾನ ಪತ್ರಿಕೆಯೊಂದಿಗೆ ಸಸಿಗಳನ್ನು ವಿತರಿಸುವ ಮಾದರಿ ಯೋಜನೆ ಕಾರ್ಯಗತಗೊಂಡಿದೆ. ಈ ಮೂಲಕ ಧರ್ಮ ಮತ್ತು ಪ್ರಕೃತಿಯ ನಡುವಿನ ಅವಿನಾಭಾವ ಸಂಬಂಧವನ್ನು ಸಾರಲಾಗುತ್ತಿದೆ.
ಈ ಬಾರಿಯ ಹಸಿರು ಅಭಿಯಾನಕ್ಕೆ ಶಾಲೆಯ ಹಿರಿಯ ವಿದ್ಯಾರ್ಥಿ, ಬೆಂಗಳೂರು ಜಲಮಂಡಳಿಯ ಸಹಾಯಕ ಎಂಜಿನಿಯರ್ ದಿನೇಶ್ ಅವರು ಕೈಜೋಡಿಸಿದ್ದು, ಶಾಲೆಯ “ಸುಂದರಲಾಲ್ ಬಹುಗುಣ ಇಕೋ ಕ್ಲಬ್” ವತಿಯಿಂದ ಒಟ್ಟು 500 ಶ್ರೀಗಂಧದ ಸಸಿಗಳನ್ನು ವಿತರಿಸಲಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಒಂದೊಂದು ಮರವನ್ನು ನೆಟ್ಟು, ಪೋಷಿಸಿ ಬೆಳೆಸಬೇಕೆಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ಇಕೋ ಕ್ಲಬ್ನ ಕಾರ್ಯದರ್ಶಿ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಮಾತನಾಡಿ, ಶ್ರೀಗಂಧವು ಕೇವಲ ಆರ್ಥಿಕವಾಗಿ ಲಾಭದಾಯಕವಷ್ಟೇ ಅಲ್ಲ, ನಮ್ಮ ಸಂಸ್ಕೃತಿಯ ಮತ್ತು ಮಣ್ಣಿನ ಸುಗಂಧವಾಗಿದೆ. ಇದನ್ನು ಬೆಳೆಸಲು ಹೆಚ್ಚಿನ ಆರೈಕೆ ಬೇಕಾಗಿಲ್ಲ, ಆರಂಭದ ಕೆಲವು ತಿಂಗಳುಗಳು ಸಮರ್ಪಕವಾಗಿ ನೀರು ಉಣಿಸಿ, ಜಾನುವಾರುಗಳಿಂದ ರಕ್ಷಿಸಿದರೆ ಸಾಕು, ಅತ್ಯಂತ ಸರಳವಾಗಿ ಬೆಳೆಯುತ್ತದೆ ಎಂದು ವಿವರಿಸಿದರು.
Sugaturu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಘ ಸೇವಾ ಟ್ರಸ್ಟ್ ಹಾಗೂ ಬಂಗಲೆ ಕುಟುಂಬದ ಜಂಟಿ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಶರಣಸಾಹಿತ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶರಣಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಡಪದ್ ಅವರು, ಇಂದಿನ ಆಧುನಿಕ ಜಗತ್ತಿನಲ್ಲಿ ಯುವಪೀಳಿಗೆಯು ಕೇವಲ ಅಂಕಗಳಿಕೆಯ ಶಿಕ್ಷಣಕ್ಕೆ ಸೀಮಿತವಾಗದೆ, ಮಾನವೀಯ ಮೌಲ್ಯಗಳನ್ನು ಕಲಿಯುವುದು ಅತ್ಯಗತ್ಯವಾಗಿದೆ. ಶರಣರು ನುಡಿದಂತೆ ನಡೆದವರು. ಅವರ ಬದುಕು ನಮಗೆ ದಾರಿದೀಪವಾಗಬೇಕು. ವಿದ್ಯಾರ್ಥಿಗಳು ತಂದೆ-ತಾಯಿ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ, ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ವಚನಸಾಹಿತ್ಯದಲ್ಲಿನ ನೈತಿಕ ಮೌಲ್ಯಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ಅವರು ಮಾತನಾಡಿ, ವಚನಸಾಹಿತ್ಯವು ಕೇವಲ ಒಂದು ಕಾಲಘಟ್ಟಕ್ಕೆ ಸೀಮಿತವಾದ ಸಾಹಿತ್ಯವಾಗಿರದೇ ಸಾರ್ವಕಾಲಿಕ ಜೀವನ ಧರ್ಮವಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಚನಗಳ ಓದು ಮತ್ತು ಶರಣರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದರು.
ದೇವನಹಳ್ಳಿ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್ಬಾಬು ಅವರು ಮಾತನಾಡಿ, ಇಂದಿನ ಯುವಪೀಳಿಗೆಯು ತಂತ್ರಜ್ಞಾನದ ಸುಳಿಗೆ ಸಿಲುಕಿ ನಮ್ಮ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಬೇರುಗಳಿಂದ ದೂರವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ವಚನಗಾಯನ ನಡೆಸಿ ಪುಸ್ತಕ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಪದ್ಮಶ್ರೀ, ಶಿಕ್ಷಕ ಎ.ಬಿ.ನಾಗರಾಜ, ಟಿ.ಎಂ.ಮಧು, ಎಸ್.ಡಿ.ಎಂ.ಸಿ ಮಾಜಿ ಸದಸ್ಯ ಬಚ್ಚೇಗೌಡ ಹಾಜರಿದ್ದರು.
Sidlaghatta : ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 18 ರಂದು ಚಿಕ್ಕದಾಸೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿ ಶ್ರೀಮತಿ ಬೈರಮ್ಮ ಅವರು ಮಧ್ಯಾಹ್ನ 12 ಗಂಟೆಗೆ ಮನೆಗೆ ಬೀಗ ಹಾಕಿ, ಕೀಯನ್ನು ಮೆಟ್ಟಿಲಿನ ಕೆಳಗೆ ಇಟ್ಟು ದೇವಸ್ಥಾನಕ್ಕೆ ಹೋಗಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ವಾಪಸ್ ಬಂದು ನೋಡಿದಾಗ, ಮನೆಯ ಬೀಗ ತೆಗೆದಿರುವುದು ಗಮನಕ್ಕೆ ಬಂದಿದೆ. ಮನೆಯ ಒಳಗಿನ ಬೀರುವಿನಲ್ಲಿದ್ದ ಸುಮಾರು 6.4 ಲಕ್ಷ ಮೌಲ್ಯದ 85 ಗ್ರಾಂ ಬಂಗಾರದ ಒಡವೆಗಳು ಕಳ್ಳತನವಾಗಿರುವುದು ತಿಳಿದುಬಂದಿದೆ.
ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣವನ್ನು ಭೇದಿಸಲು ಪ್ರತ್ಯೇಕ ತಂಡವನ್ನು ರಚಿಸಿ, ಖಚಿತ ಮಾಹಿತಿಯ ಮೇರೆಗೆ ಅದೇ ಗ್ರಾಮದ ಮುನಿರಾಜು (42) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ ಕಳುವಾಗಿದ್ದ 85 ಗ್ರಾಂ ತೂಕದ ಸಂಪೂರ್ಣ ಬಂಗಾರದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಷೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ, ಚಿಂತಾಮಣಿ ಉಪ-ವಿಭಾಗದ ಪ್ರಭಾರ ಡಿವೈಎಸ್ಪಿ ಪ್ರಕಾಶ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಶಿಡ್ಲಘಟ್ಟ ವೃತ್ತದ ಸಿಪಿಐ ಆನಂದಕುಮಾರ್ ಜೆ.ಎನ್ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಎಸ್ ಐ ಸುನೀಲ್ ಕುಮಾರ್, ಸಿಬ್ಬಂದಿ ಸಂದೀಪ್, ಮುರಳಿಕೃಷ್ಣ, ರವೀಂದ್ರ, ಆಂಜನೇಯ, ನಾಗರಾಜ, ಅಂಬರೀಷ್, ಮಂಜುನಾಥ ಮತ್ತು ಶ್ರೀಮತಿ ಲಕ್ಷ್ಮಿ ರವರ ತಂಡ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
Sidlaghatta : ಮಾಜಿ ಸಚಿವ ಬಿ. ಜಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿ ಶಿಡ್ಲಘಟ್ಟ ನಗರದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಅಮೀರ್ ಬಾಬಾ ದರ್ಗಾದಿಂದ ಕಾಂಗ್ರೆಸ್ ಭವನವರಿಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸಮಾಜದಲ್ಲಿರುವ ಎಲ್ಲಾ ಜಾತಿ ವರ್ಗಗಳನ್ನು ಪ್ರೀತಿಸುವ ಬಡವರ ಸಂಕಷ್ಟಗಳನ್ನು ಅರಿತಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಮಾಡಿ ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ನಗರದಲ್ಲಿ ನಡೆಸಿದ ಮೆರವಣಿಗೆ ವೇಳೆಯಲ್ಲಿ ಜಮೀರ್ ಅಹ್ಮದ್ ಖಾನ್ ಭಾವಚಿತ್ರವುಳ್ಳ ಭಿತ್ತಿಪತ್ರಗಳನ್ನು ಹಿಡಿದು ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹರಿಪ್ರಸಾದ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಅವರುಗಳು ಮುಸ್ಲಿಂ ಸಮುದಾಯದ ಪರವಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿ ಆಗಿ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಅಫ್ಸರ್ ಪಾಷಾ, ಮಾಜಿ ಸದಸ್ಯ ಸಮಿಉಲ್ಲಾ, ಮೌಲಾ ರಿಯಾಜ್, ಬಾಬಾ ಫಕ್ರುದ್ದೀನ್, ಬಾಂಬೆ ನವಾಜ್, ಸೈಯದ್ ಬಾಬಾ, ಆದಿಲ್, ಸಿ.ಎಂ. ಬಾಬು, ತನ್ವೀರ್ ಪಾಷಾ ಹಾಜರಿದ್ದರು.
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ಕೃಷಿಕ ಎಚ್.ಜಿ.ಗೋಪಾಲಗೌಡ ಅವರ ಹಿಪ್ಪುನೇರಳೆ ಸೊಪ್ಪಿನ ತೋಟಕ್ಕೆ ಶುಕ್ರವಾರ ಕೃಷಿ ವಿಶ್ವವಿದ್ಯಾಲಯದ 52 ಮಂದಿ ವಿದ್ಯಾರ್ಥಿಗಳು ಕೃಷಿ ವಿಜ್ಞಾನಿ ಡಾ.ವಿನೋದ ಅವರೊಂದಿಗೆ ಭೇಟಿ ನೀಡಿದ್ದರು.
ಸಮಗ್ರ ಕೃಷಿ ಪದ್ಧತಿ, ಹಿಪ್ಪುನೇರಳೆ ತೋಟದ ನಿರ್ವಹಣೆ, ಮಣ್ಣುಪರೀಕ್ಷೆ, ರೇಷ್ಮೆ ಸೊಪ್ಪಿಗೆ ಸುಳಿ, ಗಂಟು, ಬೇರುಕೊಳೆ, ಸುರಳಿ, ಎಲೆ ಮುದುರು, ನುಸಿರೋಗಗಳ ಬಗ್ಗೆ ಕೃಷಿ ವಿಜ್ಞಾನಿ ಡಾ.ವಿನೋದ ಅವರು ರೈತರು ಹಾಗೂ ವಿದ್ಯಾರ್ಥಿಗಳಿಗೆ ವಿವರಿಸಿ, ರೋಗಗಳ ಹತೋಟಿ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.
ರೈತ ಎಚ್.ಜಿ.ಗೋಪಾಲಗೌಡ ಅವರು ಮಾತನಾಡಿ, ರೇಷ್ಮೆ ಮತ್ತು ಹೈನುಗಾರಿಕೆಯು ಗ್ರಾಮೀಣ ರೈತರಿಗೆ ವರ್ಷದ ಉದ್ದಕ್ಕೂ ಸತತ ಆದಾಯ ಮತ್ತು ಉದ್ಯೋಗ ಒದಗಿಸಿ, ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಕೊಡುಗೆ ನೀಡುತ್ತವೆ. ರೇಷ್ಮೆ ಕೃಷಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭದಾಯಕವಾಗಿದ್ದು, ಹೈನುಗಾರಿಕೆಯು ನಿತ್ಯ ಆದಾಯ ಮತ್ತು ಮಹಿಳಾ ಸಬಲೀಕರಣ ಒದಗಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜಮೀನು ಇದ್ದವರು ಇದ್ದರೆ ಕೃಷಿ ಮಾಡಿ, ಕ್ಬೇರೆಡೆ ಕೆಲಸಕ್ಕೆ ಹೋಗಬೇಡಿ ಎಂದು ಕಿವಿಮಾತು ಹೇಳಿದರು.
ಕೃಷಿ ವಿದ್ಯಾರ್ಥಿಗಳು ರೇಷ್ಮೆ ಹುಳು ಸಾಕಾಣಿಕೆ ಮನೆ, ಚಂದ್ರಂಕಿ ಶೆಡ್ಡು, ಸಮಗ್ರ ಕೃಷಿ, ಎಮ್ಮೆ, ಹಸು, ಕುರಿ, ಕೋಳಿ ಜೇನು, ಮೀನು ಸಾಕಾಣಿಕೆಯನ್ನು ನೋಡಿ ಮಾಹಿತಿ ಪಡೆದರು.
Sugaturu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ನವವಿವಾಹಿತ ಮಹಿಳೆಯರಲ್ಲಿ ಕಂಡುಬರುತ್ತಿರುವ ಸಂತಾನಾಭಿವೃದ್ಧಿ ಸಮಸ್ಯೆ ಹಾಗೂ ಆರೋಗ್ಯ ಏರುಪೇರುಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದನ್ವಯ ರಚಿಸಲಾಗಿದ್ದ ಉನ್ನತ ಮಟ್ಟದ ಪರಿಣಿತ ವೈದ್ಯರ ತನಿಖಾ ತಂಡವು ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರು, ನವವಿವಾಹಿತರು, ನೌಕರರು ಮತ್ತಿತರರಿಂದ ಮಹತ್ವದ ಮಾಹಿತಿ ಸಂಗ್ರಹಿಸಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್. ರವಿಕುಮಾರ್ ಅವರ ಪತ್ರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆಯ ಮೇರೆಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತನಿಖಾ ಸಮಿತಿಯನ್ನು ರಚಿಸಿದ್ದರು.
ಗ್ರಾಮಕ್ಕೆ ಭೇಟಿ ನೀಡಿದ ಪರಿಣಿತ ವೈದ್ಯರ ತಂಡ: ಶುಕ್ರವಾರ ಸುಗಟೂರು ಗ್ರಾಮಕ್ಕೆ ಭೇಟಿ ನೀಡಿದ ಸಮಿತಿಯಲ್ಲಿ ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಸ್ತ್ರೀ ರೋಗ ತಜ್ಞೆ ಡಾ. ಧರಣಿ, ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಸೌಜನ್ಯ ಎಸ್. ವಾಲೇಕರ್, ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ಆಸ್ಪತ್ರೆ,ಯ ಕಮ್ಯುನಿಟಿ ಮೆಡಿಸಿನ್ ತಜ್ಞ ಡಾ. ಯೋಗೇಂದ್ರ, ಚಿಕ್ಕಬಳ್ಳಾಪುರ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಸಂತೋಷ್ ಬಾಬು. ಜಿ.ವಿ. ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರಕಾಶ್ ಎಂ. ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ದೇವರಾಜ್ , ಶಿಡ್ಲಘಟ್ಟ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ನಂದಿನಿ ಇದ್ದರು.
ಮಾಹಿತಿ ಸಂಗ್ರಹ ಮತ್ತು ಪರಿಶೀಲನೆ: ತಂಡದ ಅಧಿಕಾರಿಗಳು ಗ್ರಾಮದ ಜನಪ್ರತಿನಿಧಿಗಳು, ಮಹಿಳೆಯರು ಹಾಗೂ ಸ್ಥಳೀಯ ಸಾರ್ವಜನಿಕರನ್ನು ಖುದ್ದಾಗಿ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದರು. ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ (2023-24, 2024-25 ಮತ್ತು 2025-26) ಅರ್ಹ ದಂಪತಿಗಳು, ಗರ್ಭಿಣಿಯರ ದಾಖಲಾತಿ, ಇತ್ತೀಚೆಗೆ ಮದುವೆಯಾದವರ ವಿವರ, ಪ್ರೈಮರಿ ಇನ್ ಫರ್ಟಿಲಿಟಿ ಹಾಗೂ ಗರ್ಭಪಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವರವಾದ ಹಿಸ್ಟರಿ ಮತ್ತು ಅಂಕಿ-ಅಂಶಗಳ ಲೈನ್ ಲಿಸ್ಟ್ ಅನ್ನು ಪರಿಶೀಲಿಸಿ ನಿಖರವಾದ ಮಾಹಿತಿ ಕ್ರೋಡೀಕರಿಸಿದರು. ಕೂಡಲೇ ಹಿರಿಯ ಅಧಿಕಾರಿಗಳಿಗೆ ವೈದ್ಯರ ತಂಡವು ವರದಿ ಸಲ್ಲಿಸುವ ನಿರೀಕ್ಷೆ ಇದೆ.
ಸರ್ಕಾರಿ ಶಾಲೆಗೆ ಭೇಟಿ – ಮೆಚ್ಚುಗೆ: ಇದೇ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ತಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಶಾಲಾ ಆವರಣದಲ್ಲಿ ನೀರು ನಿಂತು ಡೆಂಗೆಯಂತಹ ಕಾಯಿಲೆಗಳನ್ನು ತರಬಲ್ಲ ಯಾವುದೇ ಸೂಚನೆಗಳು ಕಾಣದಿರುವುದನ್ನು ಖಾತ್ರಿಮಾಡಿಕೊಳ್ಳಲಾಯಿತು. ಶಾಲಾ ಆವರಣದಲ್ಲಿ ಕಾಪಾಡಿಕೊಂಡಿರುವ ಅತ್ಯುತ್ತಮ ಸ್ವಚ್ಛತೆ, ಶಿಸ್ತು ಹಾಗೂ ಸುಂದರ ಹಸಿರು ಪರಿಸರವನ್ನು ವೀಕ್ಷಿಸಿದ ಅಧಿಕಾರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಶೀಘ್ರದಲ್ಲೇ ಆರೋಗ್ಯ ಶಿಬಿರದ ಭರವಸೆ: ಗ್ರಾಮಸ್ಥರ ಆರೋಗ್ಯ ಕಾಳಜಿಯನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯರ ತಂಡ, ಶೀಘ್ರದಲ್ಲೇ ಸುಗಟೂರು ಗ್ರಾಮದಲ್ಲಿ ಸ್ತ್ರೀರೋಗ ಹಾಗೂ ಸಂತಾನೋತ್ಪತ್ತಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿಶೇಷ ತಜ್ಞ ವೈದ್ಯರನ್ನೊಳಗೊಂಡ ಬೃಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ದೇವರಾಜು, ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಜಂಗಮಕೋಟೆ ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯ ಡಾ.ಶ್ರೀಹರಿ, ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎನ್.ಆಶಾ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ, ಭಾಗ್ಯಮ್ಮ ಹಾಜರಿದ್ದರು.
Sidlaghatta : ಶಿಡ್ಲಘಟ್ಟ ನಗರಕ್ಕೆ ಶುಕ್ರವಾರ ಆಗಮಿಸಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಅವರನ್ನು ಬೆಳಿಗ್ಗೆ ಮಯೂರ ವೃತ್ತದಿಂದ ಅಶೋಕ ರಸ್ತೆ, ಶಂಕರ ಮಠ ರಸ್ತೆ, ಮುತ್ತೂರು ಬೀದಿಯ ರಾಘವೇಂದ್ರ ಸ್ವಾಮಿಗಳ ದೇವಾಲಯದವರೆಗೂ ಶೋಭಾಯಾತ್ರೆ ಮೂಲಕ ಕರೆತರಲಾಯಿತು. ಪುರೋಹಿತರ ಸಂಘದ ವತಿಯಿಂದ ವೇದಘೋಷ , ಪೂರ್ಣ ಕುಂಭ ಸ್ವಾಗತ, ನಾದಸ್ವರ ತಂಡ, ವಿವಿಧ ಭಜನಾ ತಂಡಗಳು , ವಿವಿಧ ಸಂಘಗಳ ಪದಾಧಿಕಾರಿಗಳು, ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ನಗರದ ಮುತ್ತೂರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಯವರು, ಸಂಸ್ಥಾನ ಪೂಜೆಯನ್ನು ನೆರವೇರಿಸಿ ಭಕ್ತವೃಂದಕ್ಕೆ ಅನುಗ್ರಹ ಭಾಷಣ ಮಾಡಿ, “ಆಭರಣ, ಹಣದ ವೈಭೋಗದ ಬದಲು ಶುದ್ಧ ಭಕ್ತಿಯಿಂದಷ್ಟೇ ದೇವರನ್ನು ಒಲಿಸಿಕೊಳ್ಳುವುದು ಸಾಧ್ಯ. ಎಲ್ಲಿ ಭಕ್ತಿ ಇರುತ್ತದೋ ಅಲ್ಲಿ ದೇವರು ನೆಲೆಯಾಗುತ್ತಾನೆ. ದೇವರ ಆರಾಧನೆ ನಿರ್ಮಲ ಮನಸ್ಸು ಮತ್ತು ಪ್ರೀತಿಯಿಂದ ಮಾಡಬೇಕು. ದೇವರಿಗೆ ಭಕ್ತಿಯ ಅಭಿಷೇಕ ನಿರಂತರವಾಗಿ ನಡೆಯಬೇಕು. ಸತ್ಕರ್ಮಗಳ ಆಚರಣೆಯಿಂದ ಸಾತ್ವಿಕ ಸಂಪತ್ತು ಲಭಿಸಲು ಸಾಧ್ಯ. ಭಕ್ತಯುಕ್ತ ಹೃದಯದಲ್ಲಿಯೇ ದೇವರು ಪ್ರತ್ಯಕ್ಷವಾಗುತ್ತಾನೆ” ಎಂದು ಹೇಳಿದರು.
ಶಾಸಕ ಬಿ.ಎನ್.ರವಿಕುಮಾರ್ ಮನೆಯಲ್ಲಿ ಪಾದಪೂಜೆಯಿಂದ ಪ್ರಾರಂಭವಾಗಿ, ಅಪ್ಪೇಗೌಡನಹಳ್ಳಿ ಲಕ್ಮೀನಾರಾಯಣ ರೆಡ್ಡಿ ಅವರ ಗೋವಿನ ಸಾಕಾಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಸ್ವಾಮೀಜಿ, ನಗರದ ವಿವಿಧ ಭಕ್ತರ ಮನೆಗಳಿಗೆ ಪಾದಪೂಜೆಗಾಗಿ ಭೇಟಿ ನೀಡಿ ಆಶೀರ್ವದಿಸಿದರು. ಕ್ರೆಸೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ತಮೀಮ್ ಅನ್ಸಾರಿ ಸೇರಿದಂತೆ ವಿವಿಧ ಜಾತಿ, ಧರ್ಮಗಳ ಮುಖಂಡರು ಆಗಮಿಸಿ ಸ್ವಾಮಿಗಳ ಆಶೀರ್ವಾದ ಪಡೆದರು. ಸ್ವಾಮೀಜಿ ಭಕ್ತರಿಗೆ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ನಗರದ ಟಿ.ಬಿ.ರಸ್ತೆಯ ಶ್ರೀಕೃಷ್ಣನ ದೇವಸ್ಥಾನಕ್ಕೆ ಭೇಟಿ ನೀಡಿ ಕೃಷ್ಣನಿಗೆ ಆರತಿ ಮಾಡಿದರು , ನಗರದ ಶ್ರೀ ವಾಸವಿ ಶಾಲೆ , ಚಿಕ್ಕದಾಸರಹಳ್ಳಿ ಶ್ರೀ ಲಕ್ಮೀ ವಿಧ್ಯಾನಿಕೇತನ ಮತ್ತು ನಡಿಪಿನಾಯಕನಹಳ್ಳಿ ನವೋದಯ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಆಶೀರ್ವದಿಸಿದರು.
ತಾಲ್ಲೂಕು ಬ್ರಾಹ್ಮಣ ಯುವಕ ಸಂಘದ ಅಧ್ಯಕ್ಷ ವೈಶಾಖ, ಕಾರ್ಯದರ್ಶಿ ಕೆ.ಮಂಜುನಾಥ್, ಖಜಾಂಚಿ ಹರೀಶ್, ರಾಘವೇಂದ್ರ ಸ್ಚಾಮಿ ಸೇವಾ ಟ್ರಸ್ಟ್ ಸದಸ್ಯ ವಾಸುದೇವರಾವ್, ಸುದೀಂದ್ರ, ವಿಪ್ರ ಪ್ರತಿಭಾ ಪುರಸ್ಕಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ , ಮಾಜಿ ಶಾಸಕ ಎಂ.ರಾಜಣ್ಣ, ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ವಿವಿಧ ದೇವಾಲಯಗಳ ಪ್ರಮುಖರು ಭಾಗವಹಿಸಿದ್ದರು.
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿರುವ ಆತಂಕಕಾರಿ ಘಟನೆ ನಡೆದಿದೆ. ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ ಬಾಲಕಿ 3 ತಿಂಗಳ ಗರ್ಭಿಣಿ ಆಗಿರುವುದು ತಿಳಿದು ಬಂದಿದೆ.
ಸರ್ಕಾರಿ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಬೇಸಿಗೆ ರಜೆ ಇರುವಾಗ ತನ್ನೂರಿಗೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅದೇ ಊರಿನ ಚಂದ್ರು ಎಂಬಾತ ಈ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಈ ವಿಷಯ ಮನೆಯವರಿಗೆ ಅಥವಾ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಆಗಾಗ ಮೂರು ನಾಲ್ಕು ಬಾರಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಬಾಲಕಿಯ ತಂದೆ ತಾಯಿ ಕುರಿ ಮೇಯಿಸಲೆಂದು ಬಯಲಿಗೆ ಹೋಗಿದ್ದಾಗ ಚಂದ್ರು ಈ ಕುಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ.
ಬೇಸಿಗೆ ಮುಗಿದು ಮತ್ತೆ ವಸತಿ ಶಾಲೆಗೆ ಬಂದಾಗ ಅಲ್ಲಿ ಬಾಲಕಿಯು ಆರೋಗ್ಯ ತಪಾಸಣೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಗೆ 3 ತಿಂಗಳಿಂದಲೂ ಫಿರಿಯಡ್ಸ್ ಆಗಿಲ್ಲ ಎಂದು ತಿಳಿಸಿದ್ದು ಆಗ ಪೋಷಕರೊಂದಿಗೆ ಆಸ್ಪತ್ರೆಗೆ ಕರದೊಯ್ದು ತಪಾಸಣೆ ನಡೆಸಿದಾಗ ಆಕೆ 3 ತಿಂಗಳ ಗರ್ಭಿಣಿ ಆಗಿರುವುದಾಗಿ ವೈದ್ಯರು ದೃಢಪಡಿಸಿದ್ಧಾರೆ. ದಿಬ್ಬೂರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಬಾಲಕಿಯನ್ನು ಬಾಲಕಿಯರ ವಸತಿ ನಿಲಯಕ್ಕೆ ದಾಖಲಿಸಲಾಗಿದೆ.
Sidlaghatta : ವೈಯಕ್ತಿಕ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡಾಗ ಮಾತ್ರ ನಾವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಕಾರ್ಯ ಅನನ್ಯವಾದುದು ಎಂದು BJP ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.
ನಗರದ ಕೋಟೆ ವೃತ್ತದ ಶ್ರೀರಾಮ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬಿಜೆಪಿಯಿಂದ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಚ್ಛತೆ ವಿಷಯ ಬಂದಾಗ ನಾವು ನಿದ್ದಯಿಂದ ಏಳುವುದಕ್ಕೂ ಮೊದಲೆ ಎದ್ದು ಇಡೀ ನಗರದಲ್ಲಿ ಕಸ ಕಡ್ಡಿ ತೆಗೆದು ಸ್ವಚ್ಛತೆ ಮಾಡುತ್ತಾರೆ. ಅವರ ಮನೆಯಲ್ಲಿ ಅವರು ಸ್ವಚ್ಛತೆಯನ್ನು ಮಾಡಿಕೊಳ್ಳದಿದ್ದರೂ ನನ್ನ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಅವರ ಸೇವೆಗೆ ನಾವು ಬೆಲೆ ಕಟ್ಟಲು ಆಗುವುದಿಲ್ಲ.
ಅವರಿಂದಲೆ ನಾವು ನಮ್ಮ ಮಕ್ಕಳು ಕುಟುಂಬದವರು ಆರೋಗ್ಯದಿಂದ ಇದ್ದೇವೆ ಎಂದರೆ ಅದು ಪೌರಕಾರ್ಮಿಕರ ಕಾರ್ಯದಿಂದಲೆ ಎಂದರೂ ತಪ್ಪಾಗಲಾರದು ಎಂದು ಅಭಿಪ್ರಾಯಪಟ್ಟರು.
ಪೌರಕಾರ್ಮಿಕರಿಗೆ ಇಲ್ಲಿ ಪ್ರತಿ ತಿಂಗಳೂ ಸಕಾಲಕ್ಕೆ ಸಂಬಳ ಸಿಗುತ್ತಿಲ್ಲ, ನಗರಸಭೆಗೆ ಆದಾಯದ ಕೊರತೆಯಿಂದ ಪೌರಕಾರ್ಮಿಕರಿಗೆ ಕಾಲ ಕಾಲಕ್ಕೆ ಸಂಬಳ ಸಿಗದಿದ್ದರೂ ಪೌರಕಾರ್ಮಿಕರು ಮಾತ್ರ ಎಂದಿಗೂ ತಮ್ಮ ಕೆಲಸವನ್ನು ನಿಲ್ಲಿಸಿಲ್ಲ. ಹಾಗಾಗಿ ಅವರ ಸೇವೆಯನ್ನು ನಾವೆಲ್ಲರೂ ಗುರ್ತಿಸುವಂತಾಗಬೇಕು ಎಂದರು.
ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ಪೌರಕಾರ್ಮಿಕರ ಸೇವಾ ಭದ್ರತೆಯನ್ನು ಒದಗಿಸುವುದು ಮತ್ತು ಇತರೆ ಮೂಲ ಸವಲತ್ತುಗಳನ್ನು ಹೆಚ್ಚಿಸುವ ಕೆಲಸ ನಮ್ಮ ಪಕ್ಷದಿಂದ ಖಂಡಿತಾ ಆಗಲಿದೆ ಎಂದು ಭರವಸೆ ನೀಡಿದರು.
ನಮ್ಮ ಪಕ್ಷದ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಪೌರಕಾರ್ಮಿಕರಿಗೆ ಬಹಳ ಗೌರವ ನೀಡುತ್ತಾರೆ. ಪೌರ ಕಾರ್ಮಿಕರ ಎಲ್ಲ ಕಷ್ಟ ಕಾರ್ಪಣ್ಯಗಳು ಅವರಿಗೆ ಗೊತ್ತಿದೆ. ಆ ಕಾರಣಕ್ಕೆ ಜಿಲ್ಲೆಯಲ್ಲಿ ಎಲ್ಲ ತಾಲೂಕುಗಳಲ್ಲೂ ಈ ದಿನ ಸ್ವಚ್ಛತಾ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು. ಡಾ.ಸತ್ಯನಾರಾಯಣರಾವ್ ಸೇರಿದಂತೆ ಬಿಜೆಪಿಯ ಮುಖಂಡರು ಹಾಜರಿದ್ದರು.
Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯ ಇನ್ನೇನು ಆರಂಭವಾಗಲಿದ್ದು ನಮ್ಮ ಕಾಂಗ್ರೆಸ್ ಪಕ್ಷದ ಯಾವೊಬ್ಬ ಕಾರ್ಯಕರ್ತರ ಹೆಸರು ಕೂಡ ಕೈ ಬಿಟ್ಟು ಹೋಗದಂತೆ ಎಚ್ಚರಿಕೆವಹಿಸಬೇಕು ಎಂದು ಮುಖಂಡ ಬಿ.ವಿ.ರಾಜೀವ್ಗೌಡ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಮ್ಮ ವಿರೋಧಿಗಳು ಅವರಿಗೆ ಬೇಕಾದ ಅಧಿಕಾರಿಗಳನ್ನು ಮತಗಟ್ಟೆಗಳಿಗೆ ಬಿ.ಎಲ್.ಒ ಅಧಿಕಾರಿಗಳನ್ನಾಗಿ ನೇಮಿಸಿಕೊಂಡಿದ್ದು ಅವರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಹೆಸರುಗಳನ್ನು ಮತಪಟ್ಟಿಯಿಂದ ಕೈ ಬಿಡುವ ಅವಕಾಶಗಳು ಹೆಚ್ಚಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಯಾವುದೆ ಬಿ.ಎಲ್.ಒಗಳು ಪಕ್ಷ, ಜಾತಿ ತಾರತಮ್ಯವಾಗಿ ಕಾರ್ಯನಿರ್ವಹಿಸಿದರೆ ಅಥವಾ ಕರ್ತವ್ಯ ನಿರ್ಲಕ್ಷಿಸಿದರೆ ಕೂಡಲೆ ಅಂತಹವರ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಗಮನಕ್ಕೆ ತನ್ನಿ. ಚುನಾವಣಾ ಆಯೋಗವು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.
ನಮ್ಮ ಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ನಮ್ಮೆಲ್ಲರಿಗೂ ಮಾಹಿತಿ ನೀಡಿದ್ದು ಈ ವಿಷಯದಲ್ಲಿ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು, ನಮ್ಮ ಪಕ್ಷದ ಯಾವುದೆ ಒಬ್ಬ ಕಾರ್ಯಕರ್ತ, ಕಾರ್ಯಕರ್ತೆಯ ಹೆಸರು ಕೂಡ ಉದ್ದೇಶಪೂರ್ವಕವಾಗಿ ಕೈ ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನನ್ನ ಸಂಪೂರ್ಣ ಸಹಕಾರ ನಿಮಗಿರುತ್ತದೆ ಎಂದರು.
Sidlaghatta : ಶಿಡ್ಲಘಟ್ಟಕ್ಕೆ 47 ವರ್ಷಗಳ ನಂತರ ಉಡುಪಿ ಪೇಜಾವರ ಮಠದ ಶ್ರೀಗಳ ಆಗಮನವಾಗುತ್ತಿದೆ. 1979 ರ ಜೂನ್ 22 ರಂದು ಅಂದಿನ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಆಗಮಿಸಿ, ಮುತ್ತೂರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಜೂನ್ 19ರ ಶುಕ್ರವಾರ ಅದೇ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಈಗಿನ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಆಗಮಿಸಲಿದ್ದಾರೆ.
ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಪೇಜಾವರ ಮಠದ 29ನೇ ಪೀಠಾಧಿಪತಿಗಳಾಗಿದ್ದರು. ಅವರು ಧಾರ್ಮಿಕ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಮಹತ್ತರ ಸೇವೆ ಸಲ್ಲಿಸಿದರು. ಸಮಾನತೆ, ಗೋಸಂರಕ್ಷಣೆ, ಧರ್ಮಪ್ರಚಾರ ಮತ್ತು ಸಮಾಜಸೇವೆಗೆ ವಿಶೇಷ ಒತ್ತು ನೀಡಿದ್ದರು. ಅವರು 2019ರ ಡಿಸೆಂಬರ್ 29ರಂದು ಬೃಂದಾವನಸ್ಥರಾದರು.
ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಪೇಜಾವರ ಮಠದ 30ನೇ ಪೀಠಾಧಿಪತಿಗಳಾಗಿದ್ದು, ತಮ್ಮ ಗುರುಗಳಾದ ಶ್ರೀ ವಿಶ್ವೇಶ ತೀರ್ಥರ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಧರ್ಮಪ್ರಚಾರ, ಶಿಕ್ಷಣ, ಯುವಜನರಿಗೆ ಸಂಸ್ಕಾರ ಬೋಧನೆ ಹಾಗೂ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ.
ಜೂನ್ 19ರ ಶುಕ್ರವಾರ ನಗರದ ಮುತ್ತೂರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಆಗಮಿಸಿ, ಸಂಸ್ಥಾನ ಪೂಜೆಯನ್ನು ನೆರವೇರಿಸಿ ಭಕ್ತವೃಂದವನ್ನು ಆಶೀರ್ವದಿಸಲಿದ್ದಾರೆ. ಪ್ರತಿಯೊಂದು ದೇವಾಲಯದ ಮುಖಂಡರು, ವಿವಿಧ ಜಾತಿ, ಸಂಘ ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿದ್ದೇವೆ. ಬೆಳೆಗ್ಗೆ 8 ಗಂಟೆಗೆ ಮಯೂರ ವೃತ್ತದಿಂದ ಪ್ರಾರಂಭವಾಗುವ ಶೋಭಾಯಾತ್ರೆಯಲ್ಲಿ ಶ್ರೀಗಳನ್ನು ವೇದಘೋಷ, ಭಜನೆ, ಸ್ತೋತ್ರಗಳ ಮೂಲಕ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕರೆತರಲಿದ್ದು, ಧರ್ಮಾತೀತರಾಗಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕೆಂದು ಮನವಿ ಮಾಡುತ್ತಿರುವುದಾಗಿ ತಾಲ್ಲೂಕು ಬ್ರಾಹ್ಮಣ ಯುವಕ ಸಂಘದ ಸದಸ್ಯರು ತಿಳಿಸಿದ್ದಾರೆ.