ನಿಸರ್ಗದತ್ತ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸಬೇಕು. ಮಳೆ ತುಂಬಾ ಕೊರತೆಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತದೆ. ಇದರಿಂದ ಅಂತರ್ಜಲ ಕೂಡ ಬತ್ತಿಹೋಗುತ್ತಿದೆ. ಮಳೆ ನೀರನ್ನು ಹಿಡಿದಿಡುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ತಿಳಿಸಿದರು.
ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ‘ಅಂತರರಾಷ್ಟ್ರೀಯ ಜಲ ದಿನಾಚರಣೆ’ಯ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ನೀರಿನ ಅಭಾವ ಉಂಟಾಗದಂತೆ ತಡೆಯಬೇಕಿದ್ದರೆ ಗಿಡಗಳನ್ನು ಹೆಚ್ಚು ಹೆಚ್ಚು ಬೆಳೆಸಬೇಕು, ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಬೇಕು. ಪ್ರತಿಯೊಂದು ಮನೆಗಳಲ್ಲೂ ಮಳೆ ನೀರು ಕೊಯ್ಲನ್ನು ಅಳವಡಿಸಿಕೊಳ್ಳಬೇಕು. ಗ್ರಾಮಗಳಲ್ಲಿ ಇಂದಿಗೂ ನೀರಿನ ಕೊರತೆಯ ತೀವ್ರ ಸಮಸ್ಯೆ ಇದೆ. ನೀರನ್ನು ಅನವಶ್ಯಕವಾಗಿ ಪೋಲುಮಾಡದೆ ಹನಿ ಹನಿ ನೀರನ್ನು ಸಂರಕ್ಷಿಸುವುದು, ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎನ್.ಎ.ಶ್ರೀಕಂಠ ಮಾತನಾಡಿ, ಸಮಾಜ ಎಷ್ಟೇ ಪ್ರಗತಿಪಥದಲ್ಲಿ ಸಾಗಿದರೂ ನೀರನ್ನು ಎಟಿಎಂನಿಂದ ಪಡೆಯಲು ಸಾಧ್ಯವಿಲ್ಲ. ಹೀಗಾಗಿ, ಜಲಮೂಲಗಳ ರಕ್ಷಣೆಗೆ ವಿಶೇಷ ಒತ್ತು ನೀಡಬೇಕು. ಪ್ರಗತಿಯೊಂದಿಗೆ ಸಾಮಾಜಿಕ ಕಳಕಳಿಗೂ ಆದ್ಯತೆ ನೀಡಬೇಕು ಎಂದು ನುಡಿದರು.
ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ನಗರಸಭೆಯ ಎಇಇ ರಾಜೇಂದ್ರ ಕುಮಾರ ಹಾಜರಿದ್ದರು.
- Advertisement -
- Advertisement -
- Advertisement -
- Advertisement -