ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”ಯ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಸಂಜು ಕುಮಾರ್ ಎ.ಪಚ್ಚಾಪುರೆ ಮಾತನಾಡಿದರು.
ಮಹಿಳೆಯರಿಗಾಗಿ ನಾನಾ ಕಾನೂನುಗಳಿದ್ದು, ಈ ಬಗ್ಗೆ ಎಲ್ಲ ಮಹಿಳೆಯರು ಸಂಪೂರ್ಣವಾಗಿ ಅರಿತುಕೊಳ್ಳಬೇಕು. ಇಲ್ಲವಾದರೆ ಒಂದಿಲ್ಲೊಂದು ಶೋಷಣೆಗೆ ಒಳಗಾಗುವುದು ತಪ್ಪುವುದಿಲ್ಲ. ವಿದ್ಯಾವಂತ ಮಹಿಳೆಯರು ಈ ಬಗ್ಗೆ ಅರಿತು ಗ್ರಾಮೀಣ ಪ್ರದೇಶದ ಮಹಿಳೆಯರಲ್ಲಿ ಅರಿವು ಮೂಡಿಸುವ ಮೂಲಕ ಎಷ್ಟೋ ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುವುದನ್ನು ತಪ್ಪಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು.
ಮಹಿಳಾ ಸಂರಕ್ಷಣಾ ಕಾಯಿದೆ, ಮಹಿಳಾ ದೌರ್ಜನ್ಯ ಕಾಯ್ದೆ, ವರದಕ್ಷಿಣೆ ವಿರೋಧಿ ಕಾಯ್ದೆ ಸೇರಿ ಹಲವು ಕಾಯ್ದೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. 2005 ರಲ್ಲಿ ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಆಸ್ತಿ ನೀಡುವ ಕಾಯ್ದೆ ಜಾರಿಯಾಗಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸರ್ಕಾರಿ ವಕೀಲೆ ಎಸ್.ಕುಮುದಿನಿ ಮಾತನಾಡಿ, ಸಂವಿಧಾನ ಪುರುಷ ಹಾಗೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಿದೆ. ಆದರೆ ಪುರಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಿಂತಿಲ್ಲ. ಇದಕ್ಕೆ ಹೆಣ್ಣು ಮಕ್ಕಳಲ್ಲಿ ಶಿಕ್ಷಣದ ಕೊರತೆ ಕಾರಣವಾಗಿದೆ. ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಶೋಷಣೆಯಿಂದ ಮುಕ್ತಗೊಳಿಸಬೇಕು. ಭ್ರೂಣ ಹತ್ಯೆ ನಿಲ್ಲಬೇಕು ಎಂದು ಹೇಳಿದರು.
ಮಹಿಳಾ ಸಾಂತ್ವನ ಕೇಂದ್ರದ ವಿಜಯಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ವಕೀಲರಾದ ಸುಬ್ರಮಣ್ಯಪ್ಪ, ವೀಣಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಾಗವೇಣಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮುನಿರತ್ನಮ್ಮ ಹಾಜರಿದ್ದರು.
- Advertisement -
- Advertisement -
- Advertisement -