ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಅವರ ವಿಚಾರಧಾರೆ ಸಾರ್ವಕಾಲಿಕ ಮತ್ತು ಮನುಕುಲಕ್ಕೆ ಪೂರಕವಾದದ್ದು ಎಂದು ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಎನ್.ವೆಂಕಟೇಶ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ‘ಯುವ ಜನತೆ ಮತ್ತು ಪ್ರಜಾತಂತ್ರಕ್ಕಾಗಿ ಅಂಬೇಡ್ಕರ್’ ವಿಷಯದ ಕುರಿತಂತೆ ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಶಾಲೆಯ ಅಂಬೇಡ್ಕರ್ ಅಧ್ಯಯನ ಕೇಂದ್ರವು ‘ಯುವಕರು ಮತ್ತು ಪ್ರಜಾತಂತ್ರಕ್ಕಾಗಿ ಅಂಬೇಡ್ಕರ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ನಿಜವಾದ ಪ್ರಜಾತಾಂತ್ರಿಕ ಸಮಾಜವನ್ನು ರೂಪಿಸಲು ನೆರವಾಗುವ ಅಂಬೇಡ್ಕರ್ ಅವರ ಕೆಲವು ಮೂಲ ಬರಹಗಳನ್ನು ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಅವರ ಆರಾಧನೆ ಮಾಡಿದರೆ ಸಾಲದು, ಅವರ ವಿಚಾರಗಳನ್ನು ಮತ್ತು ಪ್ರಸ್ತುತತೆಯನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕಾಗಿದೆ. ನಮಗೆ ಅಗತ್ಯವಾಗಿರುವ ಜಾತ್ಯಾತೀತ ಮೌಲ್ಯಗಳುಳ್ಳ ಜೀವಂತ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಬೇಕಾದ ಚಳುವಳಿಯ ವಿಸ್ತಾರವನ್ನು ಪಡೆಯಲು ಅವರ ಸಮಗ್ರ ಚಿಂತನೆಯ ಮರುಮಂಥನ ನಡೆಯಬೇಕಿದೆ ಎಂದರು.
‘ಪ್ರಾಚೀನ ಭಾರತದಲ್ಲಿ ಕ್ರಾಂತಿ ಮತ್ತು ಪ್ರತಿಕ್ರಾಂತಿ’ ಎಂಬ ಅಂಬೇಡ್ಕರ್ ಅವರ ಕೃತಿಯ ಕುರಿತಂತೆ ಪಿಎಚ್ಡಿ ವಿದ್ಯಾರ್ಥಿ ಬೈರಪ್ಪ ಉಪನ್ಯಾಸ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರಾನಾಯಕ್, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ವಿ.ವೆಂಕಟೇಶ್, ಜನಾರ್ಧನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -