ತಾಲ್ಲೂಕಿನಲ್ಲಿ ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಕಂಡಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿ. ಪ್ರಾರ್ಥನಾ ಸ್ಥಳಗಳು, ದೇವಾಲಯಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸಿಸಿ ಟಿವಿ, ಕ್ಯಾಮೆರಾ ಹಾಗೂ ಮೆಟಲ್ ಡಿಟೆಕ್ಟರ್ ಅಳವಡಿಸಿಕೊಳ್ಳಬೇಕೆಂದು ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಕುಮಾರ್ ತಿಳಿಸಿದರು.
ನಗರದ ಕಂದಾಯ ಭವನದ ಆವರಣದಲ್ಲಿ ಸೋಮವಾರ ಈಚೆಗೆ ಶ್ರೀಲಂಕಾದಲ್ಲಿ ನಡೆದ ಬಾಂಬ್ ಧಾಳಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ನಾಗರಿಕರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಾರ್ವಜನಿಕರು ಪೊಲೀಸರಿಗೆ ನೆರವಾಗಬೇಕು. ಮಸೀದಿ, ದೇವಾಲಯ ಮತ್ತು ಚರ್ಚ್ ಗಳಲ್ಲಿ ಸಿಸಿ ಟೀವಿ ಕ್ಯಾಮೆರಾ ಅಳವಡಿಸಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಸಹಕರಿಸಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಟೀವಿ ಕ್ಯಾಮೆರಾ ಅಳವಡಿಸಲೆಂದು ಜಿಲ್ಲಾಧಿಕಾರಿಗಳು ನಗರಸಭೆ ಮೂಲಕ ೨೦ ಲಕ್ಷ ಮಂಜೂರು ಮಾಡಿದ್ದಾರೆ. ಅತಿ ಶೀಘ್ರದಲ್ಲಿ ಅಳವಡಿಸಲಾಗುವುದು ಎಂದರು.
ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಬೈಕ್ ಮತ್ತು ಆಟೋ ಚಾಲಕರು ಲೈಸೆನ್ಸ್ ಮತ್ತು ವಾಹನಗಳ ದಾಖಲೆಯನ್ನು ಖಡ್ಡಾಯವಾಗಿಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆಯಿಂದ ೫೦ ಮಂದಿ ಆಟೋ ಚಾಲಕರಿಗೆ ಉಚಿತವಾಗಿ ವಾಹನ ಪರವಾನಗಿಯನ್ನು ಮಾಡಿಸಿಕೊಡಲಾಗುವುದು. ಜೀವ ಭದ್ರತೆಗಾಗಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಖಡ್ಡಾಯ. ಗ್ರಾಮಗಳಲ್ಲಿ ದೇವಾಲಯಗಳಲ್ಲಿ ಕಳ್ಳತನ ನಡೆಯುತ್ತಿರುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಜನಸ್ನೇಹಿಗಳಾಗಿರುವುದರಿಂದ ನಾಗರಿಕರು ಸಹಕರಿಸಬೇಕು ಎಂದು ಹೇಳಿದರು.
ನಗರ ಪೊಲೀಸ್ ಠಾಣೆ ಪಿಎಸೈ ಅವಿನಾಶ್, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಪಿಎಸೈ ರಂಜಿತ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ, ದೇವಾಲಯ, ಮಸೀದಿ, ಚರ್ಚ್ ಮುಖ್ಯಸ್ಥರು ಹಾಜರಿದ್ದರು.
- Advertisement -
- Advertisement -
- Advertisement -







