ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನಸಾಮಾನ್ಯರಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪಾರದರ್ಶಕ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ಪ್ರಧಾನಿ ನರೇಂದ್ರಮೋದಿ ಅವರ 67 ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದರು.
ನಾಯಕರ ಹುಟ್ಟುಹಬ್ಬಗಳ ಆಚರಣೆ ಮಾದರಿಯಾಗಿರಬೇಕು ಎನ್ನುವ ನಿಟ್ಟಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವುದು ಸೇರಿದಂತೆ ಆಸ್ಪತ್ರೆಯ ಆವರಣ ಸ್ವಚ್ಚಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಬಿಜೆಪಿ ಮುಖಂಡ ಡಿ.ಆರ್. ಶಿವಕುಮಾರಗೌಡ ಮಾತನಾಡಿ ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಆಡಳಿತ ನಡೆಸುತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಮುಖಂಡರಾದ ಶ್ರೀರಾಮರೆಡ್ಡಿ, ದಾಮೋದರ್, ಮುನಿಕೃಷ್ಣಪ್ಪ, ಮಂಜುನಾಥ್, ಶ್ರೀರಾಮ್, ಸುಜಾತಮ್ಮ, ರತ್ನಮ್ಮ, ಶಿವಮ್ಮ, ರಾಜಣ್ಣ, ಪ್ರತಾಪ್, ಮತ್ತಿತರರು ಹಾಜರಿದ್ದರು.