ದೇಶದ ನಿರ್ಮಾಣದಲ್ಲಿ ಯುವ ಜನಾಂಗದ ಪಾತ್ರ ಮಹತ್ತರವಾಗಿದೆ. ಇಂದಿನ ಯುವಕರೇ ನಾಳೆಯ ನಾಯಕರು ಎಂದ ಅವರು, ಸಮಯ ಅಮೂಲ್ಯವಾದುದು. ವ್ಯರ್ಥ ಸಮಯ ಕಳೆಯುವುದು ಬಹುದೊಡ್ಡ ನಷ್ಟ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
ನಾಡನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರತಿಯೊಬ್ಬ ನಾಗರಿಕರೂ ಕಂಕಣಬದ್ಧರಾಗಬೇಕು. ನಮ್ಮ ಕುಟುಂಬ, ನಮ್ಮ ಮನೆ ಎಂದು ಸಂಕುಚಿತಗೊಳ್ಳದೆ ನಮ್ಮ ನಾಡು ಎಂಬ ವಿಶಾಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು.
ನಾಡಿನ ಜ್ವಲಂತ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಅದನ್ನು ಪರಿಹರಿಸಲು ಆತ್ಮಾವಲೋಕನ ಮಾಡಿಕೊಳ್ಳುವ ವಿಶೇಷ ದಿನವಿದು. ಹಲವಾರು ಬಲಿದಾನಗಳಿಂದ ಸಿಕ್ಕ ಸ್ವಾತಂತ್ರ್ಯವನ್ನು ದೇಶದ ಅಭ್ಯುದಯಕ್ಕಾಗಿ ಶ್ರಮಿಸುವ ಮೂಲಕ ಆಚರಿಸಬೇಕು. ಸ್ವತಂತ್ರ್ಯ ಚಳುವಳಿಯಲ್ಲಿ ಆತ್ಮಾರ್ಪಣೆ ಮಾಡಿಕೊಂಡ ಸರ್ವ ಮಹಾನುಭಾವರನ್ನು ನಾವು ದಿನ ನಿತ್ಯ ನೆನಯಬೇಕು ಎಂದರು.
ತಹಶೀಲ್ದಾರ್ ಅಜಿತ್ಕುಮಾರ್ ರೈ ಮಾತನಾಡಿ, ಬ್ರಿಟೀಷರನ್ನು ನಮ್ಮ ದೇಶದಿಂದ ಹೊರಗಟ್ಟಲು ಲಕ್ಷಾಂತರ ಜನ ಪ್ರಾಣಾರ್ಪಣೆ ಮಾಡಬೇಕಾಯಿತು. ನಾವೆಲ್ಲರೂ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರ ಪಡೆದುಕೊಂಡಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಇನ್ನೂ ಪಡೆಯಬೇಕಾಗಿದೆ ಎಂದು ನುಡಿದರು.
ಪೊಲೀಸ್ ಹಾಗೂ ವಿವಿಧ ಶಾಲೆಗಳ ವಾದ್ಯವೃಂದದ ಪಥ ಸಂಚಲನ ನಡೆಯಿತು. ನಗರಸಭೆಯಿಂದ ತಂದಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದ ತೇರಿಗೆ ಪೂಜೆ ಸಲ್ಲಿಸಲಾಯಿತು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಯೂನಿಟಿ ಸಿಲ್ಸಿಲಾ ಫೌಂಡೇಶನ್ ಸದಸ್ಯರು ಪಥಸಂಚಲನದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ನೀರು, ಬಿಸ್ಕತ್ತನ್ನು ವಿತರಿಸಿ, ನೆಹರೂ ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾರ್ಯವನ್ನು ಕೈಗೊಂಡರು. ಬಿಲಾಲ್ ಯೂತ್ ಕಮಿಟಿ ಮತ್ತು ಎಂ ಸಿ ಸಿ ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಪೆರೇಡ್ಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ನೀರು ಮತ್ತು ಸಿಹಿ ವಿತರಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಆನೆಮಡುಗು ಭವಾನಿ, ಚೀಮಂಗಲ ಅನೂಷಾ, ತುಮ್ಮನಹಳ್ಳಿ ನರಸಿಂಹಮೂರ್ತಿ, ತುಮ್ಮನಹಳ್ಳಿ ಚಂದ್ರಶೇಖರ್, ಸಾದಲಿ ಆನಂದ್ ಅವರಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.
ಗಂಜಿಗುಂಟೆ ಗ್ರಾಮ ಪಂಚಾಯ್ತಿ ಲಕ್ಕೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆಗೆ ರಾಜ್ಯಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆಯ ಪ್ರಶಸ್ತಿ ಮತ್ತು ಐದು ಸಾವಿರ ರೂ ಚೆಕ್ ನೀಡಲಾಯಿತು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾ ರಘು, ನಗರಸಭೆ ಆಯುಕ್ತ ಚಲಪತಿ, ಅಧ್ಯಕ್ಷ ಅಫ್ಸರ್ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಜೆ.ಎಸ್.ವೆಂಕಟಸ್ವಾಮಿ, ರವಿಪ್ರಕಾಶ್ ದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -