ಕಣ್ಣಿನ ಬಗ್ಗೆ ಜನರಲ್ಲಿ ಮಾಹಿತಿ ಕೊರತೆಯಿದೆ. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಬಹಳಷ್ಟು ಮಂದಿ ವೃದ್ಧರು ಕಣ್ಣಿನ ಪೊರೆಯಿಂದ ಬಳಲುತ್ತಿರುತ್ತಾರೆ. ಅವರಿಗೆ ಚಿಕಿತ್ಸೆ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಸರ್.ಎಂ.ವಿ.ಕಾರ್ಮಿಕರ ಸೇವಾ ಸಂಘದ ರಾಜ್ಯಾಧ್ಯಕ್ಷ ಜಿ.ಪ್ರಕಾಶ್ ತಿಳಿಸಿದರು.
ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ಈಚೆಗೆ ಅಭಿಷೇಕ್ ನೇತ್ರಧಾಮ ಕಣ್ಣಿನ ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ಸರ್.ಎಂ.ವಿ.ಕಾರ್ಮಿಕರ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯದ ವಿಚಾರದಲ್ಲಿ ಜನಜಾಗೃತಿ ಮೂಡಿಸಲು ನೇತ್ರ ಚಿಕಿತ್ಸಾ ಶಿಬಿರಗಳು ಸಹಕಾರಿ. ಸೇವಾ ಮನೋಭಾವದಿಂದ ವೈದ್ಯರು ಹಾಗೂ ಕಣ್ಣಿನ ಆಸ್ಪತ್ರೆಯವರ ಸಹಕಾರದಿಂದ ಗ್ರಾಮಗಳಲ್ಲಿ ಈ ರೀತಿಯ ಉಚಿತ ಶಿಬಿರಗಳು ನಡೆಸುವಂತಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಗತ್ಯವಿರುವವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು. ಶಸ್ತ್ರಚಿಕಿತ್ಸೆ ಅಗತ್ಯವಿರುವವರನ್ನು ಗುರುತಿಸಿ ಅವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಯಲ್ಲಿ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಯಿತು.
ಕಾರ್ಮಿಕ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಗೋಪಿ, ರಾಜ್ಯ ಗೌರವಾಧ್ಯಕ್ಷ ಬಿ.ಶ್ರೀನಿವಾಸ್, ಜಿಲ್ಲಾ ಅಧ್ಯಕ್ಷ ಕಾರ್ತಿಕ್, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಕಾಳಿಂಗಾಚಾರಿ, ಮೇಲೂರು ಶಾಖೆಯ ಅಧ್ಯಕ್ಷ ವೆಂಕಟೇಶ್, ನರಸಿಂಹಮೂರ್ತಿ, ರಾಮಕೃಷ್ಣ ಹಾಜರಿದ್ದರು.
- Advertisement -
- Advertisement -
- Advertisement -