ನಗರದ ಉಲ್ಲೂರುಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನಗರಸಭೆ ಕಾರ್ಯಾಲಯ, ಹೊಸಕೋಟೆಯ ಎಂ.ವಿ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಪ್ರತಿಯೊಂದು ಗ್ರಾಮ ಪಂಚಾಯಿತಿ ಕೇಂದ್ರಗಳ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ನಗರಸಭೆಯ ವ್ಯಾಪ್ತಿಯಲ್ಲಿ ಮೂರು ವಾರ್ಡ್ಗಳನ್ನು ಸೇರಿಸಿಕೊಂಡು ಒಂದು ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ, ನುರಿತ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿ, ಅಗತ್ಯವಿರುವ ಜನರಿಗೆ ಹೊಸಕೋಟೆ ಎಂ.ವಿ.ಜೆ.ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಿರುವುದು ಶ್ಲಾಘನೀಯ ಎಂದರು.
ಶಿಡ್ಲಘಟ್ಟ ನಗರಸಭೆಯ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ಜನರಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಎಂ.ವಿ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು ನಡೆಸಲು ಉದ್ದೇಶಿಸಿರುವುದಾಗಿ ಹೇಳಿದರು.
ರೇಷ್ಮೆ ಉದ್ಯಮವನ್ನು ನೆಚ್ಚಿಕೊಂಡಿರುವ ನಾಗರಿಕರು ಅಸ್ತಮಾ, ಚರ್ಮರೋಗ ಮೊದಲಾದ ಖಾಯಿಲೆಗಳಿಂದ ನರಳುತ್ತಿದ್ದಾರೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಸರ್ಕಾರ ಸಹ ರೇಷ್ಮೆ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.
ಹೊಸಕೋಟೆಯ ಎಂ.ವಿ.ಜೆ.ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರಮೋದ್ ಮಾತನಾಡಿ, ಎಂ.ವಿ.ಜೆ.ಆಸ್ಪತ್ರೆಯ ತಜ್ಞ ವೈದ್ಯರು ವಾರದಲ್ಲಿ ಎರಡು ದಿನಗಳ ಕಾಲ ಉಚಿತವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ನಗರಸಭೆಯ ಸದಸ್ಯರು ಮತ್ತು ಪೌರಾಯುಕ್ತರ ಮನವಿಯನ್ನು ಪುರಸ್ಕರಿಸಿ ಪ್ರತಿ ಭಾನುವಾರದಂದು ಮೂರು ವಾರ್ಡ್ಗಳನ್ನು ಸೇರಿಸಿಕೊಂಡು ಒಂದು ಪ್ರದೇಶದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸಹ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ವಾರ್ಡ್ 11 ರ ನಗರಸಭಾ ಸದಸ್ಯ ಅನೀಲ್ ಕುಮಾರ್, 23 ನೇ ವಾರ್ಡಿನ ರಾಘವೇಂದ್ರ ಮಾತನಾಡಿ ಹೊಸಕೋಟೆಯ ಎಂ.ವಿ.ಜೆ.ಆಸ್ಪತ್ರೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ನಡೆಸುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು. 430 ಮಂದಿ ಚಿಕಿತ್ಸೆ ಪಡೆದರು.
ಕಾರ್ಯಕ್ರಮದಲ್ಲಿ ರೇಷ್ಮೆ ಉದ್ಯಮಿ ಬಿ.ಲಕ್ಷ್ಮೀನಾರಾಯಣಪ್ಪ, ನಗರಸಭೆಯ ಸದಸ್ಯ ಮಂಜುನಾಥ್, ಕೃಷ್ಣಮೂರ್ತಿ, ಮನೋಹರ್, ಪೌರಾಯುಕ್ತ ಎಚ್.ವಿ.ಹರೀಶ್, ರಿಯಾಝ್ ಪಾಷ ಹಾಜರಿದ್ದರು.
- Advertisement -
- Advertisement -
- Advertisement -