ಕಣ್ಣಿನ ಶಸ್ತ್ರ ಚಿಕಿತ್ಸೆ, ನರ ರೋಗ ಸಂಬಂಧೀ ಚಿಕಿತ್ಸೆ, ಹೃದಯ ಚಿಕಿತ್ಸೆ ಹಾಗೂ ಗರ್ಭಕೋಶ ಸಂಬಂಧ ಚಿಕಿತ್ಸೆಗಾಗಿ ತಾಲ್ಲೂಕಿನ ದಿಬ್ಬೂರಹಳ್ಳಿ ಹಾಗೂ ಸುತ್ತಮುತ್ತಲಿನ ಸುಮಾರು 200 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಹೊಸಕೋಟೆ ಎಂ.ವಿ.ಜೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಮೋದ್ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಕಳೆದ ಶನಿವಾರ ಹೊಸಕೋಟೆ ಎಂ.ವಿ.ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಎಸ್.ಎನ್.ಕ್ರಿಯಾ ಟ್ರಸ್ಟ್ ನಡೆಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿರುವವರನ್ನು ಗುರುತಿಸಿದ್ದು, ಸೋಮವಾರ ಮೂರು ಬಸ್ಗಳಲ್ಲಿ ಕರೆದೊಯ್ದ ಸಂದರ್ಭದಲ್ಲಿ ಅವರು ಮಾತನಾಡಿದರು.
ಶಸ್ತ್ರಚಿಕಿತ್ಸೆ ಹಾಗೂ ಔಷಧದ ವೆಚ್ಚವನ್ನು ಎಸ್.ಎನ್.ಕ್ರಿಯಾ ಟ್ರಸ್ಟ್ ಭರಿಸುತ್ತಿದ್ದು, ಹೊಸಕೋಟೆ ಎಂ.ವಿ.ಜೆ ಆಸ್ಪತ್ರೆಯ ತಜ್ಞ ವೈದ್ಯರು ಕಡಿಮೆ ವೆಚ್ಚದಲ್ಲಿ ಸೇವೆಯನ್ನು ಒದಗಿಸುತ್ತಿದ್ದಾರೆ. ರೋಗಿಗಳನ್ನು ಅವರ ಗ್ರಾಮಕ್ಕೆ ಚಿಕಿತ್ಸೆಯ ನಂತರ ಕರೆದೊಯ್ದು ಬಿಡುವುದಾಗಿ ಹೇಳಿದರು.