ಯಾವುದೇ ಸಮುದಾಯಗಳು ಸಮಾಜದಲ್ಲಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕಾದರೆ, ಒಡಕುಗಳನ್ನು ಬದಿಗೊತ್ತಿ ಸಂಘಟಿತರಾಗಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮದ ಈರಣ್ಣಸ್ವಾಮಿ, ಕೆಂಪಣ್ಣಸ್ವಾಮಿ ದೇವಾಲಯದ ಭವನದಲ್ಲಿ ಒಕ್ಕಲಿಗ ಸಮುದಾಯದ ಈರಣ್ಣದೇವರ ದೇವಾಲಯದ ಟ್ರಸ್ಟ್ನ ವತಿಯಿಂದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿ ಒಕ್ಕಲುತನವನ್ನೆ ನಂಬಿಕೊಂಡು ಬೇರೆ ಎಲ್ಲಾ ಸಮುದಾಯಗಳನ್ನು ತನ್ನ ಜೊತೆ ಜೊತೆಯಲ್ಲೆ ಕರೆದೊಯ್ಯುತ್ತಾ ಸಮಾಜದ ಏಳಿಗೆಗೆ ಸಹಕಾರವನ್ನು ನೀಡುತ್ತಿರುವ ಸಮುದಾಯವು ಮುಂದಿನ ದಿನಗಳಲ್ಲಿ ಏಳಿಗೆಯ ದೃಷ್ಟಿಯಿಂದ ತನ್ನಲ್ಲಿರುವ ಒಡಕುಗಳನ್ನು ಬದಿಗೊತ್ತಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಸಮುದಾಯದ ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸುವ ದೃಷ್ಟಿಯಿಂದ ಸಂಘಟಿತರಾಗಬೇಕು, ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೊಡಬೇಕು, ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ ಇತರೆ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾದ ಸಾಧನೆ ಮಾಡುತ್ತಿರುವ ಮಕ್ಕಳನ್ನು ಗುರ್ತಿಸಿ ಅವರನ್ನು ಪುರಸ್ಕರಿಸುವಂತಹ ಕಾರ್ಯವನ್ನು ಒಗ್ಗಟ್ಟಿನಿಂದ ಮಾಡಬೇಕು ಎಂದರು.
ನಿವೃತ್ತಿ ಪೊಲೀಸ್ ವರಿಷ್ಟಾಧಿಕಾರಿ ನಾಗರಾಜ್ ಮಾತನಾಡಿ, ಸಮಾಜದಲ್ಲಿ ಬದಲಾವಣೆಯನ್ನು ಕಾಣಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ, ಇಂತಹ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿದಾಗ ಮಾತ್ರ ಸಮುದಾಯದ ಮಕ್ಕಳು ಎಲ್ಲಾ ರಂಗಗಳಲ್ಲೂ ಉತ್ತಮವಾದ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ. ಅನೇಕ ಕುಟುಂಬಗಳಲ್ಲಿನ ಮಕ್ಕಳಲ್ಲಿ ಅಪಾರವಾದ ಜ್ಞಾನವಿದ್ದರೂ ಕೂಡಾ ಆರ್ಥಿಕವಾದ ಬಿಕ್ಕಟ್ಟುಗಳಿಂದಾಗಿ ಶಿಕ್ಷಣವನ್ನು ಮೊಟಕುಗೊಳಿಸಿಕೊಳ್ಳುತ್ತಿದ್ದಾರೆ. ಇಂತಹ ಮಕ್ಕಳನ್ನು ಗುರ್ತಿಸಿ ಪ್ರೋತ್ಸಾಹ ಮಾಡುವಂತಹ ಕಾರ್ಯವನ್ನು ಕಳೆದ ಎರಡು ವರ್ಷಗಳಿಂದ ಮಾಡಿಕೊಂಡು ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಉದ್ದೇಶಿಸಲಾಗಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮುಂತಾದ ಜಿಲ್ಲೆಗಳಲ್ಲಿನ ಸಮುದಾಯದ ಹೆಣ್ಣು ಮಕ್ಕಳ ಮಕ್ಕಳಿಗೆ ಪೋಷಕರೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ನಿವೃತ್ತ ಡಿ.ಡಿ.ಪಿ.ಐ. ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ರವಿ, ವೆಂಕಟಗಿರಿಕೋಟೆ ಕ್ಷೇತ್ರದ ತಾಲ್ಲೂಕು ಪಂಚಾಯತಿ ಸದಸ್ಯ ಭೀಮರಾಜ್, ಪಿ.ವಿ.ನಾಗರಾಜ್, ಕೆಂಪಣ್ಣ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -