ನಗರದ ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಕರವೇ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಕನ್ನಡ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ಕುಮಾರ್ ಶೆಟ್ಟಿ ಮಾತನಾಡಿದರು.
ಮಾತೃ ಭಾಷೆಯಾದ ಕನ್ನಡದ ಬಗ್ಗೆ ಅಭಿಮಾನ ಶೂನ್ಯರಾಗಿ, ಅನ್ಯ ಭಾಷೆಗಳನ್ನು ಪ್ರೀತಿಸುವ ಧೋರಣೆಯನ್ನು ಬದಿಗಿರಿಸಿ. ಕನ್ನಡ ಭಾಷೆಗೆ ನೀಡಬೇಕಾದ ಗೌರವ ನೀಡುವುದನ್ನು ಎಲ್ಲಿಯವರೆಗೆ ನಾವು ಕೊಡುವುದಿಲ್ಲವೋ ಅಲ್ಲಿಯವರೆಗೆ ನಮ್ಮ ಭಾಷೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ದೇಶಕ್ಕೆ ಅನೇಕ ಮಂದಿ ದಿಗ್ಗಜರನ್ನು ನೀಡಿರುವಂತಹ ನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿ ಎಂದು ಹೇಳುವ ನಾವೇ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕಡೆಗಣಿಸುತ್ತಿದ್ದೇವೆ. ಆಂಗ್ಲ ಭಾಷೆಯನ್ನು ಕಲಿಯಿರಿ, ಆದರೆ ಮಾತೃಭಾಷೆಯಾದ ಕನ್ನಡವನ್ನು ಗೌರವಿಸಿ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವವರ ವಿರುದ್ದ ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಅವರ ವಿರುದ್ದವಾಗಿ ಐಟಿ ಇಲಾಖೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸುತ್ತಾರೆ. ಭ್ರಷ್ಟರನ್ನು ಹಿಡಿಯಲು ಲೋಕಾಯುಕ್ತ ಅಥವಾ ಎಸಿಬಿ ಅಧಿಕಾರಿಗಳು ಮುಂದಾದರೆ ಅವರ ವಿರುದ್ಧ ಸರ್ಕಾರ ಪಿತೂರಿ ನಡೆಸುವುದು ಎಷ್ಟು ಸರಿ. ಒಟ್ಟಾರೆ ಎಲ್ಲಾ ರಾಜಕೀಯ ಪಕ್ಷಗಳು ಸಹ ಜನತೆಯನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಕೋಟೆ ವೃತ್ತದಲ್ಲಿರುವ ಶಾಲಾ ಆವರಣದಲ್ಲಿ ಮೇಲೂರಿನ ಕೆ.ಮಂಜುನಾಥ್ ಅವರಿಂದ ಸಸಿ ನೆಡಿಸಲಾಯಿತು.
ಕಾರ್ಯಕ್ರಮದಲ್ಲಿ ಕರವೇ ಉಪಾಧ್ಯಕ್ಷ ಶಿವರಾಜ್ಗೌಡ್ರು, ಜಿಲ್ಲಾಧ್ಯಕ್ಷ ಶ್ರೀಧರ್ಬಾಬು, ಜಿಲ್ಲಾ ಸಂಚಾಲಕ ಆರ್.ಎಂ.ಶ್ರೀಧರ್, ತಾಲ್ಲೂಕು ಘಟಕದ ಅಧ್ಯಕ್ಷ ವಸಂತ್ಕುಮಾರ್, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಎಸ್.ಎಂ.ರವಿಪ್ರಕಾಶ್, ತಾದೂರು ಮಂಜುನಾಥ್, ಬಿಜೆಪಿ ಮುಖಂಡರಾದ ಡಿ.ಆರ್.ಶಿವಕುಮಾರಗೌಡ, ಸುರೇಶ್, ಸುರೇಂದ್ರಗೌಡ ಹಾಜರಿದ್ದರು.
- Advertisement -
- Advertisement -
- Advertisement -