ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮಪಂಚಾಯಿತಿಯ ಕಾಕಚೊಕ್ಕಂಡಹಳ್ಳಿ ಗ್ರಾಮಸ್ಥರು ಲೋಕಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಶನಿವಾರ ಗ್ರಾಮಕ್ಕೆ ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿದರು.
ನಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ರಸ್ತೆ ಸೌಲಭ್ಯಗಳನ್ನು ಒದಗಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಹಾಗಾಗಿ ಏಪ್ರಿಲ್ ೧೮ ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಗ್ರಾಮಸ್ಥರೆಲ್ಲ ಸೇರಿ ಬಹಿಷ್ಕರಿಸುತ್ತಿದ್ದೇವೆ ಎಂದು ಇತ್ತೀಚೆಗೆ ತಹಸೀಲ್ದಾರ್ರಿಗೆ ಗ್ರಾಮಸ್ಥರು ಪತ್ರವನ್ನು ನೀಡಿದ್ದರು.
ಗ್ರಾಮದ ಬಹಳಷ್ಟು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗುವ ಹಾಗೂ ಸುತ್ತಮುತ್ತಲ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಾಕಚೊಕ್ಕಂಡಹಳ್ಳಿ ಮತ್ತು ಅಂಕತಟ್ಟಿ ನಡುವಿನ ರಸ್ತೆ ತೀರಾ ಹಾಳಾಗಿದೆ. ಕೂಡಲೇ ಸರಿಪಡಿಸಬೇಕು. ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೂ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದ್ದರು.
ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಹಾಗೂ ಅಧಿಕಾರಿಗಳ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಚುನಾವಣೆ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಳ್ಳಬೇಡಿ. ಪ್ರತಿಯೊಬ್ಬರೂ ಮತ ಚಲಾಯಿಸಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಲಾಗುವುದು. ರಸ್ತೆ ಕಾಮಗಾರಿಯನ್ನು ಚುನಾವಣೆಯ ನಂತರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಹಾಯಕ ಚುನಾವಣಾಧಿಕಾರಿ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ತಹಶೀಲ್ದಾರ್ ಎಸ್.ಅಜಿತ್ಕುಮಾರ್ ರೈ, ಗ್ರಾಮಾಂತರ ಠಾಣೆ ಪಿಎಸ್ಸೈ ಹರೀಶ್, ಕಾಕಚೊಕ್ಕಂಡಹಳ್ಳಿ ಗ್ರಾಮಸ್ಥರಾದ ರಾಮಯ್ಯ, ಮುನಿಯಪ್ಪ, ಪ್ರಕಾಶ್, ಮುರಳೀಧರ್, ವೆಂಕಟಮೂರ್ತಿ, ಮುನಿಯಪ್ಪ, ಪಿಳ್ಳಸೊಣ್ಣಪ್ಪ, ಪ್ರವೀಣ್ಕುಮಾರ್, ನಾರಾಯಣಗೌಡ, ಬಿ.ಎನ್.ನಾರಾಯಣಸ್ವಾಮಿ ಹಾಜರಿದ್ದರು.