ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಕೋಚಿಮುಲ್)ದ ಉಪ ವ್ಯವಸ್ಥಾಪಕರ ಕಚೇರಿಗೆ ಸ್ವಂತ ಕಟ್ಟಡಕ್ಕೆ ನಿವೇಶನ ಗುರ್ತಿಸಿದ್ದು ೬೦ ಲಕ್ಷ ರೂ.ವೆಚ್ಚದಲ್ಲಿ ಭವ್ಯವಾದ ಕಟ್ಟಡವನ್ನು ನಿರ್ಮಿಲಾಗುವುದು ಎಂದು ಕೋಚಿಮುಲ್ ನಿರ್ದೆಶಕ ಬಂಕ್ ಮುನಿಯಪ್ಪ ತಿಳಿಸಿದರು.
ನಗರದ ಕೋಚಿಮುಲ್ ಉಪ ವ್ಯವಸ್ಥಾಪಕರ ಕಚೇರಿಯಲ್ಲಿ ಈಚೆಗೆ ಹೈನುಗಾರರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿ, ಉಪ ವ್ಯವಸ್ಥಾಪಕರ ಕಚೇರಿಯು ಇದೀಗ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಶೀಘ್ರದಲ್ಲೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು.
ನಗರದ ದಿಬ್ಬೂರಹಳ್ಳಿ ಬೈಪಾಸ್ನಲ್ಲಿ ೪ ಗುಂಟೆಯಷ್ಟು ನಿವೇಶನದಲ್ಲಿ ೬೦ ಲಕ್ಷ ರೂಗಳ ವೆಚ್ಚದಲ್ಲಿ ಭವ್ಯವಾದ ಕಟ್ಟಡವನ್ನು ನಿರ್ಮಿಸಲಾಗುವುದು, ಅಲ್ಲಿ ಶಿಬಿರ ಕಚೇರಿಯ ಎಲ್ಲ ಕಾರ್ಯ ಚಟುವಟಿಕೆಗಳಿಗೂ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿ ಗಂಬೀರನಹಳ್ಳಿ ಬಳಿ ಜಮೀನನ್ನು ಗುರ್ತಿಸಿದ್ದು ಅಲ್ಲಿ ಪಶು ಆಹಾರ ಘಟಕ ಸೇರಿದಂತೆ ಹಾಲಿನ ಉಪ ಉತ್ಪನ್ನಗಳ ತಯಾರಿಕೆ ಘಟಕವನ್ನು ಆರಂಭಿಸಲು ಉದ್ದೇಶಿಸಿದ್ದು ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಹಂತದಲ್ಲಿ ಪ್ರಸ್ತಾಪ ಇದೆ.
ಡಿಸಿಯವರು ಅನುಮತಿ ನೀಡಿದರೆ ಈ ಭಾಗದ ಹೈನುಗಾರರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ವಿವರಿಸಿದರು.
ಇದೀಗ ಬರಗಾಲ ಇದ್ದರೂ ತಾಲ್ಲೂಕಿನಲ್ಲಿ ಪ್ರತಿ ದಿನ ೧ ಲಕ್ಷ ೧೪ ಸಾವಿರ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು ಉತ್ಪಾದನೆ ಹಾಗೂ ಗುಣಮಟ್ಟದಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಮ್ಮ ತಾಲ್ಲೂಕು ಎರಡನೇ ಸ್ಥಾನದಲ್ಲಿ ಇದೆ ಎಂದು ಹರ್ಷ ವ್ಯಕ್ತಪಡಿಸಿದರು.
ಗುಣಮಟ್ಟದ ಹಾಲು ಉತ್ಪಾಸಿ ಇಲಾಖೆಯಿಂದ ಸಿಗುವ ಎಲ್ಲ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಅವರು ಹೈನುಗಾರರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೃತ ರಾಸುಗಳ ವಾರಸುದಾರ ರೈತರಿಗೆ ವಿಮೆ ಹಣದ ಚೆಕ್ ಸೇರಿದಂತೆ ಹೈನುಗಾರರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಉಪ ವ್ಯವಸ್ಥಾಪಕ ಹನುಮಂತರಾವ್, ಡೇರಿ ನೌಕರರ ಸಂಘದ ಕಾರ್ಯದರ್ಶಿ ಚಂದ್ರೇಗೌಡ, ಕುಮ್ಮಣ್ಣ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -