ತಾಲೂಕಿನ ಚಿಕ್ಕದಾಸರಹಳ್ಳಿ ಬಳಿಯ ಬ್ಯಾಟರಾಯಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಮುಖಂಡರ ಹಾಗು ಕಾರ್ಯಕರ್ತರ ಆತ್ಮಾವಲೋಕನ ಸಭೆಯಲ್ಲಿ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಮಾತನಾಡಿದರು.
ಕ್ಷೇತ್ರದ ಶಾಸಕನಾಗಬೇಕು ಎಂದು ನಾನು ಯೋಚಿಸಿರಲಿಲ್ಲ. ಬದಲಿಗೆ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎನ್ನುವ ದೃಷ್ಠಿಯಿಂದ ಸಾಮಾನ್ಯ ಕಾರ್ಯಕರ್ತನಂತೆ ಕಳೆದ ಹನ್ನೆರಡು ವರ್ಷಗಳ ಕಾಲ ದುಡಿದಿದ್ದೇನೆ. ಪಕ್ಷದ ಎಲ್ಲಾ ಅಧಿಕಾರಗಳು ಬಳಸಿಕೊಂಡು ಕ್ಷೇತ್ರದ ಮುಖಂಡರೂ ಸೇರಿದಂತೆ ಕಾರ್ಯಕರ್ತರನ್ನು ಬದಿಗಿಟ್ಟು ಕೇವಲ ತಮ್ಮ ಸ್ವಾರ್ಥಕ್ಕಾಗಿ ಅಧಿಕಾರ ಬಳಸಿಕೊಂಡ ಮಾಜಿ ಸಾಸಕ ಎಂ.ರಾಜಣ್ಣರನ್ನು ಪಕ್ಷದಿಂದ ಹೊರ ಹಾಕಬೇಕು ಎನ್ನುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಓರ್ವ ಸಾಮಾನ್ಯ ಕಾರ್ಯಕರ್ತನಾದ ನನಗೆ ಸುಮಾರು ೬೬೫೩೧ ಮತಗಳನ್ನು ನೀಡುವ ಮೂಲಕ ಕ್ಷೇತ್ರದ ಜನತೆ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜೆಡಿಎಸ್ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ರಾಜ್ಯಾದ್ಯಂತ ಈ ಭಾರಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಭಿ ಆಜಾದ್ ಹಾಗು ಜಮೀರ್ ಅಹಮ್ಮದ್ ಅವರು ಅಲ್ಪಸಂಖ್ಯಾತರಿಗೆ ಇಲ್ಲ ಸಲ್ಲದ ವದಂತಿಗಳನ್ನು ಹಬ್ಬಿಸುವ ಮೂಲಕ ಅಲ್ಪ ಸಂಖ್ಯಾತ ಬಂಧುಗಳು ಗೊಂದಲಕ್ಕೀಡಾಗಿ ಕ್ಷೇತ್ರ ಸೇರಿದಂತೆ ರಾಜ್ಯದ ಸುಮಾರು ೨೧ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಸೋಲನುಭವಿಸಬೇಕಾಯಿತು. ಫಲಿತಾಂಶದ ನಂತರ ಇದೀಗ ಅಲ್ಪಸಂಖ್ಯಾತ ಬಂಧುಗಳಿಗೆ ತಮ್ಮ ತಪ್ಪಿನ ಅರಿವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು ಮುಂದಿನ ಐದು ವರ್ಷಗಳ ಕಾಲ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದರು.
ಈಗಾಗಲೇ ದೇಶಾಧ್ಯಂತ ಎಲ್ಲಾ ರಾಜ್ಯಗಳಲ್ಲಿಯೂ ಸೋಲನುಭವಿಸಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಮುಂಬರುವ 2019 ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರಮೋದಿ ವಿರುದ್ದ ರಾಜಕಾರಣ ಮಾಡುವುದು ಕಷ್ಟವಾಗಬಹುದು ಎಂಬುದನ್ನರಿತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆ ಎದುರಿಸುವ ಉದ್ದೇಶದಿಂದ ಜೆಡಿಎಸ್ ಗೆ ಬೆಂಬಲಿಸಿದ್ದಾರೆ, ದೇಶಾದ್ಯಂತ ಇರುವ ಪ್ರದೇಶಿಕ ಪಕ್ಷಗಳ ನಾಯಕರೂ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಹಾಲಿ ಹಾಗು ಮಾಜಿ ಮುಖ್ಯಮಂತ್ರಿಗಳೆಲ್ಲಾ ಸೇರಿ ಹೆಚ್.ಡಿ.ಕುಮಾರಸ್ವಾಮಿ ಯವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ನಾವೆಲ್ಲರೂ ಕೋಮುವಾದಿ ಪಕ್ಷದ ವಿರೋಧಿಗಳು ಎಂಬುದನ್ನು ಸಾರಿದ್ದಾರೆ ಎಂದು ಹೇಳಿದರು.
ಜಿ.ಪಂ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲಬೇಕಾದರೆ ಚುನಾವಣೆ ಪೂರ್ವ ಬಿ.ಫಾರಂ ಹಂಚಿಕೆಯಲ್ಲಿ ಉಂಟಾದ ಗೊಂದಲ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಅಪಪ್ರಚಾರದಿಂದ ಅಲ್ಪಸಂಖ್ಯಾತರು ಕಾಂಗ್ರೆಸ್ ಬೆಂಬಲಿಸಿದ್ದರಿಂದ ಸೋಲನುಭವಿಸಬೇಕಾಯಿತು. ಮುಂಬರುವ ದಿನಗಳಲ್ಲಿಕ್ಷದ ಮುಖಂಡರೂ ಸೇರಿದಂತೆ ಕಾರ್ಯಕರ್ತರು ರವಿಕುಮಾರ್ರಿಗೆ ಬೆನ್ನೆಲುಬಾಗಿ ನಿಂತು ಪಕ್ಷವನ್ನು ಬಲಪಡಿಸಬೇಕು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ ಮಾತನಾಡಿ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಎನ್.ರವಿಕುಮಾರ್ ಮೂಲತ: ಕೃಷಿಕರಾಗಿದ್ದು ಅವರ ತೋಟದಲ್ಲಿ ಎತ್ತು, ಹಸು, ಎಮ್ಮೆ, ಕುರಿ ಮೇಕೆ ಇತ್ಯಾದಿ ಸಾಕುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಇದರ ಜೊತೆಗೆ ನಾಲ್ಕು ನಾಯಿಗಳೂ ಇರಲಿ ಎಂಬ ಉದ್ದೇಶದಿಂದ ನಾಯಗಳನ್ನು ಸಾಕಿದರು. ಆದರೆ ಆ ನಾಯಿಗಳು ಚುನಾವಣೆ ಸಮಯದಲ್ಲಿ ಮೋಸ ಮಾಡಿದ್ದರಿಂದ ರವಿಕುಮಾರ್ ಸೋಲನುಭವಿಸಬೇಕಾಯಿತು ಎಂದು ಹೇಳಿದರು.
ವಿವಿಧ ಮುಖಂಡರು ಈ ಹಿಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣವಾದ ಅಂಶಗಳು ಹಾಗು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಏನೆಲ್ಲಾ ಕ್ರಮ ಜರುಗಿಸಬೇಕು ಎಂಬುದನ್ನು ಕಾರ್ಯಕ್ರಮದಲ್ಲಿ ಚರ್ಚಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಡಿ.ಬಿ.ವೆಂಕಟೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿ.ನಾಗರಾಜ್, ಮಾಜಿ ಜಿ.ಪಂ ಸದಸ್ಯ ನಂದನವನಂ ಶ್ರೀರಾಮರೆಡ್ಡಿ, ಮುಖಂಡರಾದ ಹುಜಗೂರು ರಾಮಣ್ಣ, ಮುನಿವೆಂಕಟಸ್ವಾಮಿ, ಪೂಲಕುಂಟ್ಲಹಳ್ಳಿ ರಘುನಾಥರೆಡ್ಡಿ, ದೊಣ್ಣಹಳ್ಳಿ ರಾಮಣ್ಣ, ಮುಗಿಲಡಿಪಿ ನಂಜಪ್ಪ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -