ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗಧಿ ಪಡಿಸಿರುವ ಶುಲ್ಕಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುವ ಮೂಲಕ ರೈತಾಪಿ ವರ್ಗದವರಿಗೆ ಅನ್ಯಾಯ ಮಾಡಲಾಗುತ್ತಿದೆ.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಾಬು ಅವರಿಗೆ ಮನವಿ ಸಲ್ಲಿಸಿದರು.
ನಗರದ ಕೋಟೆ ವೃತ್ತದಲ್ಲಿರುವ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿರುವ ಅವರು, ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡಿಸಲೆಂದು ರೈತಾಪಿ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲು ಮಾಡಲು ಹೋದರೆ, ಯಾವುದೇ ಖಾಸಗಿ ಶಾಲೆಗಳಲ್ಲಿ ಶಾಲಾ ಶುಲ್ಕದ ಕುರಿತು ಮಾಹಿತಿ ಫಲಕಗಳನ್ನು ಹಾಕಿಲ್ಲ. ಒಬ್ಬೊಬ್ಬ ವಿದ್ಯಾರ್ಥಿಯಿಂದ 25 ಸಾವಿರದಿಂದ 50 ಸಾವಿರದವರೆಗೂ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಕೆಲವು ಖಾಸಗಿ ಶಾಲೆಗಳಲ್ಲಿ ಮೂಲ ಸೌಕರ್ಯವಿಲ್ಲದಿದ್ದರೂ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು.
ತಾಲ್ಲೂಕಿನಾಧ್ಯಂತ ಇರುವ ಎಲ್ಲಾ ಖಾಸಗಿ ಕಾಲೇಜುಗಳಿಗೆ ಭೇಟಿ ನೀಡಿ, ಅಲ್ಲಿನ ಎಲ್ಲಾ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ರೈತರ ಮಕ್ಕಳಿಗೆ ಅನ್ಯಾಯವಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಕಾರ್ಯದರ್ಶಿ ಪ್ರತೀಶ್, ಕೋಟೆ ಚನ್ನೇಗೌಡ, ಶಂಕರನಾರಾಯಣ, ಸಿ.ಕೃಷ್ಣಪ್ಪ, ಎಸ್.ದೇವರಾಜ್, ಮಹಬೂಬ್, ವೆಂಕಟೇಶ್, ಭಕಾಷ್, ಎನ್.ನಾಗರಾಜ್, ಹಸೀನಾ ಹಾಜರಿದ್ದರು.