Home News ಗಣತಿದಾರರಿಗೆ ಮಾಹಿತಿ ಸಂಗ್ರಹಿಸಲು ಸಹಕಾರ ನೀಡಿ – ಎಂ.ರಾಜಣ್ಣ

ಗಣತಿದಾರರಿಗೆ ಮಾಹಿತಿ ಸಂಗ್ರಹಿಸಲು ಸಹಕಾರ ನೀಡಿ – ಎಂ.ರಾಜಣ್ಣ

0

ಎಲ್ಲಾ ಜನಾಂಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗಾಗಿ ಜಾತಿವಾರು ಜನಗಣತಿಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ನಾಗರಿಕರು ನೈಜ ಮಾಹಿತಿಯನ್ನು ಗಣತಿದಾರರಿಗೆ ನೀಡಿ ಸಹಕಾರ ನೀಡುವಂತೆ ಶಾಸಕ ಎಂ.ರಾಜಣ್ಣ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಆಯೋಜನೆ ಮಾಡಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ತರಬೇತಿ ಕಾರ್ಯಾಗಾರದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲಾ ಜಾತಿಗಳ ಸ್ಥಿತಿಗತಿಯನ್ನು ತಿಳಿಯಲು ಸಮೀಕ್ಷೆಯಲ್ಲಿ ನೀಡುವಂತಹ ಮಾಹಿತಿ ಸಹಕಾರಿಯಾಗಲಿದೆ. ರಾಜ್ಯದ ಜನತೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಲು ಅದು ಸಹಕಾರಿಯಾಗಲಿದೆ ಎಂದರು.
ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿ ಪ್ರಾಮುಖ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಮನೆಯ ಬಾಗಿಲಿಗೆ ಹೋಗಿ ಅಧಿಕಾರಿಗಳು ಅಂಕಿ ಅಂಶಗಳ ಕ್ರೋಡಿಕರಣ ಮಾಡುತ್ತಾರೆ. ಸಂಪೂರ್ಣ ಮಾಹಿತಿಯನ್ನು ಗಣತಿದಾರರಿಗೆ ಒದಗಿಸುವಂತೆ ಹೇಳಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ತಾಲ್ಲೂಕಿನಾದ್ಯಂತ ಎಲ್ಲಾ ಹೋಬಳಿಗಳಲ್ಲಿ ಗಣತಿದಾರರು ಕಾರ್ಯನಿರ್ವಹಿಸಲಿದ್ದಾರೆ, ತಾಲ್ಲೂಕಿನಲ್ಲಿ ಒಟ್ಟು ೪೦೮ ಬ್ಲಾಕ್ಗಳು ಇದ್ದು, ಪಟ್ಟಣ ಪ್ರದೇಶದಲ್ಲಿ ೭೮ ಬ್ಲಾಕ್ಗಳನ್ನು ತೆರೆಯಲಾಗಿದೆ. ಪ್ರತಿ ೬ ಬ್ಲಾಕ್ಗಳಿಗೊಬ್ಬರಂತೆ ಮೇಲ್ವಿಚಾರಕರು ಕಾರ್ಯನಿರ್ವಹಿಸಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ಗಣತಿಕಾರ್ಯದಲ್ಲಿ ಕೆಲಸ ಮಾಡಲಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಹೆಚ್.ಅಮರೇಶ್, ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಕೆ.ಗುರುರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಸಾಂಖಿಕ ನಿರೀಕ್ಷಕ ಜಿ.ಅನಿಲ್ಕುಮಾರ್, ತಾಲ್ಲೂಕು ಕುರುಬರ ಸಂಘದ ಪ್ರಧಾನಕಾರ್ಯದರ್ಶಿ ಎಂ.ರಾಮಾಂಜಿನಪ್ಪ, ಮಾದಿಗ ದಂಡೋರ ಸಂಚಾಲಕ ದೇವರಮಳ್ಳೂರು ಕೃಷ್ಣಪ್ಪ, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಸುಭ್ರಮಣ್ಯಂ, ಗ್ರಾಮಲೆಕ್ಕಾಧಿಕಾರಿಗಳಾದ ಲಾರೆನ್ಸ್, ಆನಂದ್ ಮುಂತಾದವರು ಹಾಜರಿದ್ದರು.