ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ನೀಡಿ ರಾಷ್ಟ್ರದ ಪ್ರಗತಿಗೆ ಪ್ರತಿಯೊಬ್ಬ ಪೋಷಕರು ಸಹಕಾರ ನೀಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಎಂಟನೇ ತರಗತಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ನೀಡುವ ಸೈಕಲ್ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಕೋಟ್ಯಾಂತರ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿ ಕಲಿಕೆಗೆ ಪೂರಕವಾಗಿರುವ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದು ಮಕ್ಕಳು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ದೂರದ ಊರುಗಳಿಂದ ಶಾಲೆಗೆ ಬರುವಂತಹ ಮಕ್ಕಳಿಗೆ ಅನುಕೂಲವಾಗಲೆಂದು ವಿತರಣೆ ಮಾಡುವಂತಹ ಸೈಕಲ್ಗಳನ್ನು ಪೋಷಕರು ದುರುಪಯೋಗ ಪಡಿಸಿಕೊಳ್ಳದೆ ಅವುಗಳನ್ನು ಸುಸ್ಥಿತಿಯಲ್ಲಿಡಲು ಪ್ರಯತ್ನ ಮಾಡಬೇಕು. ೧೪ ವರ್ಷದೊಳಗಿನ ಪ್ರತಿಯೊಂದು ಮಗುವನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ವಿವಿಧ ಸೌಲಭ್ಯಗಳ ಜೊತೆಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬರಬೇಕು ಎಂದರು.
ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿ ಮಾತನಾಡಿದ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಹಾಲು ಉತ್ಪಾದಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಕೋಚಿಮುಲ್ ಕೂಡಾ ಹೆಚ್ಚಿನ ಪ್ರಯತ್ನ ಮಾಡುತ್ತಿದ್ದು, ಉತ್ಪಾದಕರು ಇದಕ್ಕೆ ಪೂರಕವಾಗಿ ಸ್ಪಂದಿಸಬೇಕು. ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಮೂಲಕ ಒಕ್ಕೂಟಕ್ಕೆ ಹೆಚ್ಚಿನ ಲಾಭ ಬರುವಂತೆ ಮಾಡಿದರೆ ತಾಲ್ಲೂಕಿನ ಮತ್ತಷ್ಟು ಶಾಲೆಗಳ ಮಕ್ಕಳಿಗೆ ವಿಶೇಷ ಸೌಲಭ್ಯಗಳನ್ನು ವಿತರಣೆ ಮಾಡಲು ಅನುಕೂಲವಾಗಲಿದೆ ಎಂದರು.
ಕೋಚಿಮುಲ್ನ ಹಾಲು ಉತ್ಪಾದಕರ ದತ್ತಿ ವತಿಯಂದ ೮ ನೇ ತರಗತಿ ಮಕ್ಕಳಿಗೆ ೧೮೦ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಉಪಾದ್ಯಕ್ಷ ಎಚ್. ನರಸಿಂಹಯ್ಯ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ತಾಲ್ಲೂಕು ಹಾಲು ಒಕ್ಕೂಟದ ವ್ಯವಸ್ಥಾಪಕ ಹನುಮಂತರಾವ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಂಜುಳ ಹಾಜರಿದ್ದರು.
- Advertisement -
- Advertisement -
- Advertisement -
- Advertisement -