Home News ಗುಣಮಟ್ಟದ ಹಾಲು ಉತ್ಪಾದನೆಗೆ ಆಧ್ಯತೆ ನೀಡಿ

ಗುಣಮಟ್ಟದ ಹಾಲು ಉತ್ಪಾದನೆಗೆ ಆಧ್ಯತೆ ನೀಡಿ

0

ಗುಣಮಟ್ಟದ ಹಾಲಿಗೆ ಮಾತ್ರವೇ ಸರ್ಕಾರವು ಪ್ರೋತ್ಸಾಹ ಧನವನ್ನು ವಿತರಿಸಲಿದ್ದು ಕಳಪೆ ಗುಣಮಟ್ಟದ ಹಾಲಿಗೆ ಸಿಗುವುದಿಲ್ಲ. ಹಾಗಾಗಿ ಹೈನುಗಾರರು ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಆಧ್ಯತೆ ನೀಡುವಂತೆ ಸಹಕಾರ ಸಂಘದ ಅಧ್ಯಕ್ಷರೂ ಸೇರಿದಂತೆ ಕಾರ್ಯದರ್ಶಿಗಳು ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಿಗಾಗಿ ಹಮ್ಮಿಕೊಂಡಿದ್ದ ಅಧ್ಯಯನ ಪ್ರವಾಸಕ್ಕೆ ನಗರದ ಬಸವೇಶ್ವರ ದೇವಾಲಯದ ಆವರಣದಲ್ಲಿ ಶನಿವಾರ ರಾತ್ರಿ ಚಾಲನೆ ನೀಡಿ ಮಾತನಾಡಿದರು.
ಗುಣಮಟ್ಟದ ಹಾಲು ಉತ್ಪಾದನೆ ಮಾಡದಿದ್ದಲ್ಲಿ ಹಾಲು ಉತ್ಪಾದಕರು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೂ ಭವಿಷ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಲಿವೆ. ಹಾಗಾಗಿಯೆ ಕಾಲ ಕಾಲಕ್ಕೆ ಹೈನುಗಾರರು ಸೇರಿದಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಬೇರೆ ಬೇರೆ ರಾಜ್ಯದ ಹಾಗೂ ನಮ್ಮದೇ ರಾಜ್ಯದ ಇತರೆ ಅಭಿವೃದ್ಧಿ ಶೀಲ ಡೇರಿಗಳಿಗೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಅಲ್ಲಿ ಅಧ್ಯಯನ ನಡೆಸಿ ಅಲ್ಲಿನ ಒಳ್ಳೆಯ ಅಂಶಗಳನ್ನು ಇಲ್ಲಿ ಅನುಷ್ಟಾನಗೊಳಿಸಿಕೊಳ್ಳಬೇಕು. ಆದ್ದರಿಂದ ಎಲ್ಲ ಕಾರ್ಯದರ್ಶಿಗಳು ಪ್ರವಾಸ ಕಾಲದಲ್ಲಿ ಎಲ್ಲವನ್ನು ತಿಳಿದುಕೊಂಡು ಬರಬೇಕೆಂದು ಮನವಿ ಮಾಡಿದರು.
ಕೋಚಿಮುಲ್ನ ಶಿಡ್ಲಘಟ್ಟ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್ ಮಾತನಾಡಿ ಹೈನುಗಾರಿಕೆಯಲ್ಲಿ ಪ್ರಗತಿ ಸಾಧಿಸಿರುವ ಗುಜರಾತಿನ ಆನಂದ್ ಡೈರಿಯಲ್ಲಿ ಹೈನುಗಾರಿಕೆಯ ವಿವಿಧ ಕ್ರಮಗಳನ್ನು ವೀಕ್ಷಿಸಿ ಅಲ್ಲಿ ಹೈನುಗಾರಿಕೆಯನ್ನು ಯಾವ ರೀತಿ ಮಾಡಲಾಗುತ್ತಿದೆ. ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಹೇಗೆ ಮಾಡಬೇಕು, ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭಗಳಿಸುವ ಹೈನುಗಾರಿಕೆ ಮಾಡುವುದು ಹೇಗೆಂಬುದು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿಕೊಡಲಾಗುವುದು. ನಿಮ್ಮ ಜತೆ ನಮ್ಮ ಇಲಾಖೆಯ ಅಧಿಕಾರಿಗಳು ಆಗಮಿಸಲಿದ್ದು ಅವರೊಂದಿಗೆ ಅಲ್ಲಿನ ಡೇರಿಯ ಅಧಿಕಾರಿ, ಸಿಬ್ಬಂದಿಯೂ ನಿಮಗೆ ಅಗತ್ಯ ಮಾಹಿತಿ ಮಾರ್ಗದರ್ಶನ ನೀಡಲಿದ್ದಾರೆ. ಎಲ್ಲರೂ ಅಣ್ಣ ತಮ್ಮಂದಿರಂತೆ ಒಂದಾಗಿ ಅಧ್ಯಯನ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿಕೊಂಡು ಬನ್ನಿ ಎಂದರು.
ಕೋಚಿಮುಲ್ನ ಸ್ಥಳೀಯ ಶಿಬಿರ ಕಚೇರಿಯ ವಿಸ್ತರಣಾಧಿಕಾರಿಗಳಾದ ಎಚ್.ಎಸ್.ಉಮೇಶ್ರೆಡ್ಡಿ, ಎಂ.ಮಂಜುನಾಥ್, ಟಿ.ಶ್ರೀನಿವಾಸ್, ಟಿ.ಎಂ.ಮುನೇಗೌಡ, ಸಂತೋಷ್ಕುಮಾರ್, ಹಾಲು ಉತ್ಪಾಧಕರ ಸಹಕಾರ ಸಂಘಗಳ ನೌಕರರ ಅಧ್ಯಕ್ಷ ಬೋದಗೂರು ಚಂದ್ರೇಗೌಡ, ನಂದಿನಿ ವಿವಿದೋದ್ದೇಶ ಸಹಕಾರ ಸಂಘದ ಗೋವಿಂದರಾಜು ಹಾಜರಿದ್ದರು.