ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಹೆಣ್ಣು ಮಕ್ಕಳಿಗಾಗಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗು ಸೇವೆಗಳನ್ನು ಒದಗಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗೆಳತಿ ವಿಶೇಷ ಚಿಕಿತ್ಸಾ ಘಟಕದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲಾಸ್ಪತ್ರೆಗಳಲ್ಲಿ ಗೆಳತಿ ಘಟಕ ಸ್ಥಾಪನೆಯಾಗಿದ್ದು ಸಂತ್ರಸ್ಥ ಮಹಿಳೆ ಜಿಲ್ಲಾ ಕೇಂದ್ರದ ಘಟಕಕ್ಕೆ ಬರುವುದು ಕಷ್ಟವಾಗುತ್ತದೆ ಎಂಬ ಉದ್ದೇಶದಿಂದ ಇದೀಗ ಪ್ರತಿ ತಾಲ್ಲೂಕಿನಲ್ಲಿಯೂ ಗೆಳತಿ ಘಟಕಗಳನ್ನು ಸ್ಥಾಪಿಸಲಾಗಿದೆ.
ವಿಶೇಷ ಚಿಕಿತ್ಸಾ ಘಟಕದಲ್ಲಿ ಸಂತ್ರಸ್ಥ ಮಹಿಳೆಯ ಜೊತೆ ಸಮಾಲೋಚನೆ ನಡೆಸುವುದರ ಜೊತೆಗೆ ತಾತ್ಕಾಲಿಕ ಆಶ್ರಯ, ಪೊಲೀಸ್ ಹಾಗೂ ಕಾನೂನು ನೆರವು ಮತ್ತು ಅಗತ್ಯ ಚಿಕಿತ್ಸೆ ಇಲ್ಲಿ ಸಿಗಲಿದೆ. ನೋವಿನಲ್ಲಿರುವ ಪ್ರತಿ ಹೆಣ್ಣು ಮಗುವೂ ಸ್ನೇಹಭಾವದಿಂದ ಸಂತೈಸಬೇಕು ಎಂಬ ಉದ್ದೇಶದಿಂದ ಈ ಯೋಜನೆಗೆ ಗೆಳತಿ ಹೆಸರನ್ನಿಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ವಾಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮೀದೇವಮ್ಮ, ಡಾ.ಪ್ರತಿಭಾ, ಬ್ಲಾಕ್ ಸೊಸೈಟಿ ಅಧ್ಯಕ್ಷೆ ಬಾರತಿ, ಮಹಿಳಾ ಸಾಂತ್ವಾನ ಕೇಂದ್ರದ ಡಾ.ವಿಜಯಾ ಹಾಜರಿದ್ದರು.