ಕೇವಲ ಕೆಲವೇ ಕೆಲ ಪ್ರಭಾವಿಗಳ ಹಿಡಿತದಲ್ಲಿದ್ದ ಅಧಿಕಾರವನ್ನು ಗ್ರಾಮೀಣ ಮಟ್ಟದ ಕಟ್ಟ ಕಡೆಯ ವ್ಯಕ್ತಿಗೂ ಸಿಗವಂತೆ ಮಾಡಿದ ಪಂಚಾಯತ್ ರಾಜ್ ಮಸೂದೆಯ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಹೇಳಿದರು.
ಪಂಚಾಯತ್ ರಾಜ್ ಮಸೂದೆ ಜಾರಿಯಾಗಿ 25 ವರ್ಷಗಳು ಕಳೆದಿರುವ ಹಿನ್ನಲೆಯಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ ಗ್ರಾಮಸ್ವರಾಜ್ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿಯವರ ದೂರದೃಷ್ಟಿಯ ಫಲವಾಗಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಾಗಿದ್ದು ಅಧಿಕಾರ ವಿಕೇಂದ್ರಿಕರಣದಿಂದ ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಸಿಗುವಂತಾಗಿದೆ. ದೇಶದ ಬಹುತೇಕ ಗ್ರಾಮಗಳು ಗುಡಿಸಲು ಮುಕ್ತವಾಗಿದ್ದು, ಹಳ್ಳಿಗಳಲ್ಲಿ ಉತ್ತಮ ರಸ್ತೆ, ಬೀದಿದ್ವೀಪ, ಚರಂಡಿಗಳ ನಿರ್ಮಾಣವಾಗಿದೆ.
ಪಂಚಾಯತ್ ರಾಜ್ ಮಸೂದೆಯ ಬೆಳ್ಳಿ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ನೇರವಾಗಿ ಜನರೆಡೆಗೆ ಹೋಗಿ ಪಕ್ಷದ ಚಿಂತನೆ ಮತ್ತು ಕಲ್ಪನೆಯನ್ನು ತಲುಪಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಕೆಲಸ ಮಾಡಬೇಕು. ಗ್ರಾಮ ಮಟ್ಟದಲ್ಲಿ ಪಕ್ಷದ ಬೇರನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಲು ಕಾರ್ಯಕರ್ತರು ಮುಂದಾಗಬೇಕು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮೂಲ ಉದ್ದೇಶವಾದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದು. ಜನಪ್ರತಿನಿಧಿಗಳನ್ನು ಸಂಘಟಿಸಿ ಚುನಾಯಿತ ಪ್ರತಿನಿಧಿಗಳಲ್ಲಿ ಹೊಸ ಹುರುಪು, ಜಾಗೃತಿ ಮತ್ತು ರಾಷ್ಟ್ರಪ್ರಜ್ಞೆಯನ್ನು ಬಲಪಡಿಸಿ, ನಮ್ಮ ಪ್ರಜಾಪ್ರಭುತ್ವದ ತಳಹದಿಯಾದ ಗ್ರಾಮ ಸ್ವರಾಜ್ಯ, ಜನರ ಸಬಲೀಕರಣ, ಅಧಿಕಾರ ವಿಕೇಂದ್ರಿಕರಣಗಳತ್ತ ಹೆಚ್ಚು ಒತ್ತು ನೀಡಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕೆಂದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಮನೋಭಾವದ ನಾಗರಿಕರನ್ನು ಒಗ್ಗೂಡಿಸಿ, ಪಂಚಾಯತ್ರಾಜ್ನ ಜನಪ್ರತಿನಿಧಿಗಳಿಗೆ ಜಾಗೃತಿ ಮೂಡಿಸಬೇಕಿದೆ. ಗ್ರಾಮದ ಸಮಸ್ಯೆಗಳ ಬಗ್ಗೆ ದನಿ ಎತ್ತುವ ಪ್ರಯತ್ನ ನಡೆಯಬೇಕು. ಗ್ರಾಮ ಮಟ್ಟದಲ್ಲಿ ಹೊಸ ನಾಯಕರನ್ನು ಗುರುತಿಸಿ, ಬೆಳೆಸಿ, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಮಹತ್ವಪೂರ್ಣ ಪಾತ್ರ ನಿರ್ವಹಿಸಲು ಪ್ರೋತ್ಸಾಹಿಸಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ವಿವರಿಸುವ ಕೆಲಸ ಕಾರ್ಯಕರ್ತರಿಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಪಂಚಾಯತ್ ರಾಜ್ ಮಸೂದೆಯಿಂದ ಮೀಸಲಾತಿಯಡಿ ವಿವಿಧ ಗ್ರಾ.ಪಂ ಗಳ ಅಧ್ಯಕ್ಷರಾಗಿ, ಸದಸ್ಯರಾಗಿ ಅಧಿಕಾರ ನಡೆಸಿದ ಹಾಲಿ ಹಾಗು ಮಾಜಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುನಿಕೃಷ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎನ್.ಮುನಿಯಪ್ಪ, ಆರ್.ಶ್ರೀನಿವಾಸ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ಎನ್.ಆರ್. ನಿರಂಜನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಲ್.ಮಧುಸೂದನ್, ನಗರಸಭೆ ಸದಸ್ಯ ಬಾಲಕೃಷ್ಣ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಶಂಕರ್, ನಾಗರಾಜ್, ಕ್ಯಾತಪ್ಪ, ಶ್ರೀನಾಥ್, ಬೆಳ್ಳೂಟಿ ವೆಂಕಟೇಶ್, ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







