ತಾಲ್ಲೂಕಿನ 22 ಗ್ರಾಮ ಪಂಚಾಯತಿಗಳ ಚುನಾವಣೆಯು ಮಂಗಳವಾರ ನಡೆಯಿತು. ಕೆಲವು ಗ್ರಾಮಗಳಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ, 144 ಸೆಕ್ಷನ್ ಜಾರಿ, ಲಾಠಿ ಪ್ರಹಾರ ನಡೆದಿದ್ದು, ಉಳಿದೆಡೆ ಚುನಾವಣೆಯು ಶಾಂತವಾಗಿ ನಡೆದಿದೆ. ಮತಪಟ್ಟಿ ಪರಿಷ್ಕರಣೆಯಲ್ಲಿನ ಗೊಂದಲಗಳು ಹಲವೆಡೆ ಘರ್ಷಣೆಗೆ ಕಾರಣವೆನ್ನಲಾಗಿದೆ.

ತಾಲ್ಲೂಕಿನ ಸದ್ದಹಳ್ಳಿಯಲ್ಲಿ ಗುಂಪು ಘರ್ಷಣೆ ನಡೆದು ನರಸಿಂಹಪ್ಪ(45) ಎಂಬುವರು ಗಾಯಗೊಂಡಿದ್ದಾರೆ. ಚೀಮಂಗಲದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಪೊಲೀಸ್ ಜೀಪು ಜಖಂಗೊಂಡಿದೆ.
ಉಳಿದಂತೆ ತಾಲ್ಲೂಕಿನೆಲ್ಲೆಡೆ ಶಾಂತಿಯುತವಾಗಿ ಮತದಾನ ನಡೆಯಿತು. ವೀಳೆದೆಲೆ ಸುಣ್ಣ ಅಡಿಕೆ ಬಾಳೆಹಣ್ಣು ಕೊಟ್ಟು ವಿವಿಧ ಪಕ್ಷಗಳ ಬೆಂಬಲಿತರು ಮತದಾರರನ್ನು ಓಲೈಸುತ್ತಿದ್ದುದು ಕಂಡುಬಂದಿತು. ಶಾಸಕ ಎಂ.ರಾಜಣ್ಣ ತಮ್ಮ ಸ್ವಗ್ರಾಮ ಎಲ್.ಮುತ್ತುಗದಹಳ್ಳಿಯಲ್ಲಿ ಸರದಿಯಲ್ಲಿ ಬಂದು ಮತ ಚಲಾಯಿಸಿದರು.