ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು, ಅಧಿಕಾರಿ ಹಾಗೂ ಸಿಬ್ಬಂದಿ ನಿಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡಬೇಕು. ಮಕ್ಕಳೊಂದಿಗೆ ಬಿಸಿ ಊಟ ಮಾಡಿ, ಅವರ ಸಮಸ್ಯೆಗಳನ್ನು ಕೇಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿ ಅವರು ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿಯೊಂದಿಗೆ ಮಾತನಾಡಿದರು.
ನರೇಗಾ ಯೋಜನೆಯಲ್ಲಿ ಹೆಚ್ಚೆಚ್ಚು ಕೆಲಸಗಳನ್ನು ಮಾಡಿಸಿ. ಗ್ರಾಮದ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವನ್ನು ಮೂಡಿಸಿ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಅಳವಡಿಸಿದ ಮಳೆ ಕೊಯ್ಲು, ಶುದ್ಧ ನೀರಿನ ಘಟಕವನ್ನು ಪರಿಶಿಲಿಸಿ, ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಮಾಹಿತಿ ಪಡೆದರು. ಹತ್ತಿರದ ಕೇಶವಪುರದಲ್ಲಿ ನಿರ್ಮಿಸುತ್ತಿರುವ ಹೊಸ ಅಂಗನವಾಡಿ ಕಟ್ಟಡದ ಕಾಮಗಾರಿಯನ್ನು ಪರಿವೀಕ್ಷಿಸಿ, ಬಾಡಿಗೆ ಕಟ್ಟಡದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳನ್ನು ಮಾತನಾಡಿಸಿದರು. ಬಾಣಂತಿಯರ ಮತ್ತು ಗರ್ಭಿಣಿಯರ ಆಹಾರವನ್ನು ಪರೀಕ್ಷಿಸಿದರು. ಚೀಮನಹಳ್ಳಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾದ ನೀರಿನ ಹೊಂಡವನ್ನು ವೀಕ್ಷಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ನರೇಗಾ ಸಹಾಯಕ ನಿರ್ದೇಶಕ ತನ್ವೀರ್ ಅಹಮದ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ, ಸದಸ್ಯ ಎ.ಎಂ.ತ್ಯಾಗರಾಜ್, ಪಿಡಿಒ ಅಂಜನ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ಕರವಸೂಲಿಗಾರ ಶ್ರೀನಿವಾಸ್, ಅಂಬರೀಶ್, ವೆಂಕಟೇಶಪ್ಪ ಹಾಜರಿದ್ದರು.