ಗ್ರಾಹಕರ ಕುಂದುಕೊರತೆಗಳನ್ನು ದಾಖಲಿಸಿಕೊಂಡು ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡು ಗ್ರಾಹಕ ಸ್ನೇಹಿಯಾಗಿ ಬೆಸ್ಕಾಂ ಕಾರ್ಯನಿರ್ವಹಿಸುವುದಾಗಿ ಚಿಂತಾಮಣಿ ವಿಭಾಗದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ದತ್ತಾತ್ರೇಯ ಪಾಟೀಲ್ ತಿಳಿಸಿದರು.
ನಗರದ ಬೆಸ್ಕಾಂ ಕಚೇರಿಯಲ್ಲಿ ಶನಿವಾರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಗ್ರಾಹಕರ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್ ಕಂಬಗಳು ಶಿಥಿಲಗೊಂಡಿದ್ದು ಅವುಗಳನ್ನು ಬದಲಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕು. ಕೆಲವರಿಗೆ ವಿದ್ಯುತ್ ಬಿಲ್ ಹೆಚ್ಚಳ ಬಂದಿದ್ದು ಅದನ್ನು ಸರಿಪಡಿಸಬೇಕು. ನಿರಂತರಜ್ಯೋತಿಗಾಗಿ ಹಲವೆಡೆ ತಂತಿಗಳನ್ನು ಎಳೆದಿದ್ದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಅದನ್ನು ಶೀಘ್ರವಾಗಿ ಮಾಡಬೇಕು. ಅಕ್ರಮ ಸಕ್ರಮ ಯೋಜನೆಯಲ್ಲಿ ಕೊಳವೆಬಾವಿ ಕೊರೆಸಿರುವವರು 24 ಸಾವಿರ ರೂಗಳನ್ನು ಕಟ್ಟಿ ವರ್ಷವಾಗುತ್ತಾ ಬಂದರೂ ಇನ್ನೂ ವಿದ್ಯುತ್ ಸಂಪರ್ಕ ಒದಗಿಸಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಗ್ರಾಮಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿ ಮಾಡದೇ ವಿದ್ಯುತ್ ಪೋಲಾಗುತ್ತಿದೆ, ಮುಂತಾದ ಸಮಸ್ಯೆಗಳನ್ನು ರೈತರು ಹಾಗೂ ಗ್ರಾಮಗಳಿಂದ ಬಂದ ಮುಖಂಡರು ವಿವರಿಸಿದರು.
ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಹೇಳಿದರು.
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಅನ್ಸರ್ಬಾಷ , ಸಹಾಯಕ ಲೆಕ್ಕಾಧಿಕಾರಿ ಶಿವಣ್ಣ, ರೈತ ಮುಖಂಡರಾದ ಟಿ.ಕೃಷ್ಣಪ್ಪ, ಶ್ರೀರಾಮಯ್ಯ, ಮುನಿನಂಜಪ್ಪ, ತಾದೂರು ಮಂಜುನಾಥ್, ಬೂದಾಳ ರಾಮಾಂಜಿ ಹಾಜರಿದ್ದರು.
- Advertisement -
- Advertisement -
- Advertisement -