ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಯೋಜನೆಗಳನ್ನು ಜಾರಿಗೆ ತಂದು ಜನರ ಮನ ಗೆದ್ದಿದ್ದಾರೆ. ಜನಪರ, ರೈತಪರ, ದೀನದಲಿತರ ಪರ ನಿರಂತರ ಚಿಂತನೆ ನಡೆಸುವ ಮೂಲಕ ಜನರ ಧ್ವನಿಯಾಗಿದ್ದಾರೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಶುಕ್ರವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ 57 ನೇ ಹುಟ್ಟುಹಬ್ಬದ ಪ್ರಯುಕ್ತ ಅಂಧ ಮಕ್ಕಳ ಜೊತೆ ಕೇಕ್ ಕತ್ತರಿಸಿ, ನಂತರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ, ಹಣ್ಣು, ಹಾಲು ಮತ್ತು ಬ್ರೆಡ್ ವಿತರಿಸಿ ಅವರು ಮಾತನಾಡಿದರು.
ಸ್ವಚ್ಛ ಹಾಗೂ ಜನಪರ ಆಡಳಿತದ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರು ಮನೆಮಾತಾದವರು. ಅವರ ಸೇವೆ ರಾಜ್ಯದ ಜನಕ್ಕೆ ಇನ್ನಷ್ಟು ಮತ್ತಷ್ಟು ಸಿಗಬೇಕು ಎಂಬ ಸದುದ್ದೇಶದಿಂದ ಅಂಧ ಮಕ್ಕಳೊಂದಿಗೆ ಮತ್ತು ಬಡರೋಗಿಗಳೊಂದಿಗೆ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಾಗಲು ಕಾರಣಕರ್ತರು ನಮ್ಮ ಕುಮಾರಸ್ವಾಮಿಯವರು. ಜಿಲ್ಲೆಯಾದರೂ ಹಲವಾರು ಸೌಲಭ್ಯ ವಂಚಿತಗೊಂಡಿರುವ ನಮ್ಮ ಜಿಲ್ಲೆ ಹಾಗೂ ಬರಪೀಡಿತ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರು ಬರಲೇಬೇಕು. ಬಯಲು ಸೀಮೆಗೆ ನೀರು ತರಲು ಕುಮಾರಸ್ವಾಮಿಯವರು ಬದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರ ಜನಪರ ಧ್ಯೇಯಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಹೇಳಿದರು.
ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮಕ್ಕಳಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಜೆಡಿಎಸ್ ಕಾರ್ಯಕರ್ತರಿಂದ ಏರ್ಪಡಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಸದಸ್ಯರಾದ ರಾಜಶೇಖರ್, ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ ಮುನಿಯಪ್ಪ, ಡಾ.ಜಯರಾಮರೆಡ್ಡಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಿವಾರೆಡ್ಡಿ, ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಎಸ್.ಮಂಜುನಾಥ್, ಆರ್.ಎ.ಉಮೇಶ್, ಮುಖಂಡರಾದ ಗೋಪಾಲಗೌಡ, ಶ್ರೀನಿವಾಸಗೌಡ, ತಾದೂರು ರಘು, ಸಾದಲಿ ವೆಂಕಟಠಚಲಪತಿ, ಜಂಗಮಕೋಟೆ ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







