ಕಳೆದ ಭಾರಿಯ ಚುನಾವಣೆಯಲ್ಲಿ ತಾಲ್ಲೂಕಿನ ಜಂಗಮಕೋಟೆ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಸದಸ್ಯರ ಕಾರ್ಯವೈಖರಿ ಕಂಡಿರುವ ಈ ಭಾಗದ ಜನತೆ ಈ ಭಾರಿ ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಹೇಳಿದರು.
ತಾಲ್ಲೂಕಿನ ತೊಟ್ಟಗಾನಹಳ್ಳಿ ಗ್ರಾಮದಲ್ಲಿ ಜಂಗಮಕೋಟೆ ಜಿಲ್ಲಾ ಪಂಚಾಯತಿ ಕ್ಷೇತ್ರದ ಅಭ್ಯರ್ಥಿ ನಳಿನಾ ಮಂಜುನಾಥ್ ಹಾಗೂ ಭಕ್ತರಹಳ್ಳಿ ತಾಲ್ಲೂಕು ಪಂಚಾಯತಿ ಅಭ್ಯರ್ಥಿ ಚಂದ್ರಕಲಾ ಬೈರೇಗೌಡ ಪರ ಮತಯಾಚಿಸಿ ಅವರು ಮಾತನಾಡಿದರು.
ಕಳೆದ ಭಾರಿಯ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಜಂಗಮಕೋಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಂಬದಹಳ್ಳಿ ಸತೀಶ್ ಸಂಸದ ಕೆ.ಎಚ್.ಮುನಿಯಪ್ಪರ ಅಣ್ಣನ ಮಗನಾಗಿದ್ದು ಜಂಗಮಕೋಟೆ ಕ್ಷೇತ್ರವನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡಬಹುದಿತ್ತು. ಆದರೆ ಚುನಾವಣೆಯಲ್ಲಿ ಗೆದ್ದು ಹೋದಂತಹ ಅಭ್ಯರ್ಥಿ ಸತೀಶ್ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದಿರಲಿ, ಕನಿಷ್ಠ ಕ್ಷೇತ್ರಕ್ಕೆ ಭೇಟಿಯೂ ನೀಡಿಲ್ಲ ಎಂದರು.
ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಎಸ್.ಮುನಿಶಾಮಪ್ಪ ನವರ ಅಧಿಕಾರಾವಧಿಯಲ್ಲಿ ಆಗಿರುವಂತಹ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಹಾಲಿ ಶಾಸಕ ಎಂ.ರಾಜಣ್ಣ ನವರು ಗೆದ್ದ ಮೇಲೆ ಮಾಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಮೂಲಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮತ ಯಾಚಿಸುತ್ತಿದ್ದು ಈ ಭಾರಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲಗೌಡ, ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೋಟೆ ಚನ್ನೇಗೌಡ, ಮುಖಂಡರಾದ ಎಸ್.ಎನ್.ವೆಂಕಟೇಶಪ್ಪ, ತೊಟ್ಲಗಾನಹಳ್ಳಿ ತ್ಯಾಗರಾಜ್, ಟಿ.ವಿ.ಕೃಷ್ಣಪ್ಪ, ನಾರಾಯಣಸ್ವಾಮಿ, ಬೈರೇಗೌಡ, ಕೆಂಪೇಗೌಡ, ಮಂಜುನಾಥ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -