ಎ.ಎಸ್.ಐ ಗಳಾದ ನಾರಾಯಣಸ್ವಾಮಿ ಮತ್ತು ಕೃಷ್ಣಪ್ಪ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ನಗರದ ಶಾಲಾ ಕಾಲೇಜುಗಳ ಹತ್ತಿರದ ಅಂಗಡಿ, ಹೋಟೆಲುಗಳಿಗೆ, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವವರಿಗೆ ತಂಬಾಕು ನಿಯಂತ್ರಣ ಕಾನೂನಿನನ್ವಯ ಗುರುವಾರ ದಂಡ ವಿಧಿಸಿದರು.
ಆರೋಗ್ಯ ಇಲಾಖೆಯ ಲೋಕೇಶ್ ಹಾಗೂ ತಂಡ ಪೊಲೀಸರ ಜೊತೆಯಲ್ಲಿದ್ದು, ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ವಿವಿಧ ಶಾಲೆಗಳ ಹತ್ತಿರದ ಅಂಗಡಿಗಳು, ತಳ್ಳುವ ಗಾಡಿಗಳು, ಕಾಫಿ ಟೀ ಶಾಪ್ಗಳಿಗೆ ಹೋಗಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಂಡು ತಿಳುವಳಿಕೆ ನೀಡಿದ್ದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದರು.
ಆರೋಗ್ಯ ಇಲಾಖೆಯ ಲೋಕೇಶ್ ಮಾತನಾಡಿ, “ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ಕಾಯ್ದೆಯ ಬಗ್ಗೆ ಜನರಿಗೆ ತಿಳಿವಳಿಕೆ ನೀಡುತ್ತಾ ಸಾರ್ವಜನಿಕವಾಗಿ ಬೀಡಿ ಸಿಗರೇಟ್ ಸೇದುವವರಿಗೆ ಸಣ್ಣ ಪ್ರಮಾಣದ ದಂಡ ವಿಧಿಸಿದೆವು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಿದೆ. ಈ ಬಗ್ಗೆ ನಾಮಫಲಕವನ್ನೂ ಕಡ್ಡಾಯವಾಗಿ ಶಾಲಾ ಕಾಲೇಜಿನ ಆವರಣ ಗೋಡೆಯ ಮುಂಭಾಗದಲ್ಲಿ ಪ್ರದರ್ಶಿಸಬೇಕಾಗುತ್ತದೆ. ಇಂದು ಸುಮಾರು ಹತ್ತು ಮಂದಿಗೆ ದಂಡ ವಿಧಿಸಿದ್ದೇವೆ’ ಎಂದು ತಿಳಿಸಿದರು.
- Advertisement -
- Advertisement -
- Advertisement -
- Advertisement -