ತ್ಯಾಗ ಬಲಿದಾನಗಳ ಸಂಕೇತವಾಗಿರುವಂತಹ ಬಕ್ರೀದ್ ಹಬ್ಬವನ್ನು ತಾಲ್ಲೂಕಿನಾದ್ಯಂತ ಮುಸ್ಲೀಮರು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ಪ್ರಮುಖ ರಸ್ತೆಯಲ್ಲಿ ಮುಸ್ಲೀಮರು ಮೆರವಣಿಗೆ ನಡೆಸಿ ಬೈಪಾಸ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸೇರಿ ಸಕಲ ಮಾನವ ಕುಲದ ಒಳಿತಿಗಾಗಿ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದರು.
ಪರಸ್ಪರ ಅಪ್ಪಿಕೊಳ್ಳುವ ಮೂಲಕ ಹಬ್ಬದ ಶಭಾಶಯಗಳನ್ನು ಈ ಸಂದರ್ಭದಲ್ಲಿ ವಿನಿಮಯಿಸಿಕೊಂಡ ಮುಸ್ಲೀಂ ಬಾಂಧವರು ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ಈದ್ಗಾ ಮೈದಾನದಲ್ಲಿ ದುವಾ ನೆರವೇರಿಸಿದರು.
ಬಲಿಗೊಳ್ಳುವ ಪಶುವಿನ ಮಾಂಸವನ್ನು ಬಳಸಿಕೊಳ್ಳುವುದರ ಕುರಿತು ಇಸ್ಲಾಂ ನಲ್ಲಿ ಕೆಲವು ಮಾರ್ಗದರ್ಶೀ ಸೂತ್ರಗಳಿವೆ. ಬಲಿಪಶುವಿನ ಮಾಂಸವನ್ನು ಮೂರು ಭಾಗಗಳಾಗಿ ವಿಭಾಗಿಸಿ, ದೊಡ್ಡಭಾಗವನ್ನು, ಅಶಕ್ತರಾದ ಅಥವಾ ಆ ದಿನದ ಊಟವನ್ನು ಗಳಿಸಲಾಗದ ಬಡವರಲ್ಲಿ ಹಂಚಬೇಕು. ಮಿಕ್ಕುಳಿದ ಎರಡು ಚಿಕ್ಕ ತುಂಡುಗಳನ್ನು ಗೆಳೆಯರು, ಬಂಧುಗಳು ಮತ್ತು ಕುಟುಂಬದ ಸದಸ್ಯರ ನಡುವೆ ಹಂಚಬೇಕು. ಇದು ಸಂಭ್ರಮದ ಹಾಗೂ ಭೂರಿಭೋಜನದ ಸಂದರ್ಭವಾಗಿದೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ, ಈ ಹಬ್ಬವು ಏಕತೆ ಹಾಗೂ ಭ್ರಾತೃತ್ವದ ಆಚರಣೆಯಾಗಿದೆ.
ಶಾಸಕ ಎಂ.ರಾಜಣ್ಣ ಸೇರಿದಂತೆ ರಾಜಕೀಯ ಮುಖಂಡರು, ವಿವಿಧ ಜನಾಂಗದವರೂ ಕೂಡಾ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಮರಿಗೆ ಶುಭಕೋರಿದರು.