ಬಯಲುಸೀಮೆ ಪ್ರದೇಶವಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ತ್ವರಿತಗತಿಯಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ಮೇಲೆ ಎರಡೂ ಜಿಲ್ಲೆಗಳ ಶಾಸಕರು ಒಟ್ಟಾಗಿ ಒತ್ತಾಯ ಮಾಡುವುದಾಗಿ ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಲೂಡು, ಚಾಗೆ, ಶೆಟ್ಟಿಹಳ್ಳಿ ಹಾಗು ಜಯಂತಿಗ್ರಾಮಗಳಲ್ಲಿ ಸುಮಾರು 72 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಓವರ್ ಹೆಡ್ ನೀರಿನ ಟ್ಯಾಂಕುಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರದ ಅನುಧಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಡೆಸಿ ಜನತೆಗೆ ಶುಧ್ದ ಕುಡಿಯುವ ನೀರನ್ನು ಸರಬರಾಜು ಮಾಡುವಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಆಸಕ್ತಿವಹಿಸಿ ಕೆಲಸ ಮಾಡಬೇಕು ಎಂದರು.
ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ನಾರಾಯಣಸ್ವಾಮಿ, ಸದಸ್ಯ ರಮೇಶ್, ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್, ಮುಖಂಡರಾದ ಮುನಿವೆಂಕಟಸ್ವಾಮಿ, ಶೆಟ್ಟಿಹಳ್ಳಿಮಂಜುನಾಥ್, ಗುಡಿಹಳ್ಳಿ ಬಚ್ಚರಾಯಪ್ಪ, ಜಯಂತಿಗ್ರಾಮದ ಬೈರೇಗೌಡ, ಕೆಂಪನಹಳ್ಳಿ ಮುನಿರೆಡ್ಡಿ, ಕೆ.ಎಸ್.ದ್ಯಾವಕೃಷ್ಣ, ತಾತಹಳ್ಳಿ ಚಲಪತಿ, ಕೊಂಡಪ್ಪ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಜಯಶ್ರೀ, ಶಶಿಕುಮಾರ್, ಮತ್ತಿತರರು ಹಾಜರಿದ್ದರು.