ದಲಿತರ ವ್ಯಾಜ್ಯಗಳನ್ನು ಬಗೆಹರಿಸಿ ಮತ್ತು ಅವರಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವುದಾಗಿ ಡಿ.ವೈ.ಎಸ್.ಪಿ ಕೃಷ್ಣಮೂರ್ತಿ ತಿಳಿಸಿದರು.
ನಗರದ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು. ದಲಿತರ ಸಮಸ್ಯೆಗಳನ್ನು ನೇರವಾಗಿ ಈ ಸಭೆಯಲ್ಲಿ ಹೇಳಿದರೆ ಅದನ್ನು ಬಗೆಹರಿಸಿ ಮುಂದಿನ ಕುಂದು ಕೊರತೆ ಸಭೆಯಲ್ಲಿ ನಿಮಗೆ ಲಿಖಿತ ರೂಪದಲ್ಲಿ ಯಾವ ಕ್ರಮ ಕೈಗೊಂಡಿದ್ದೇವೆ ಎಂಬ ಮಾಹಿತಿಯನ್ನು ನೀಡುವುದಾಗಿ ತಿಳಿಸಿದರು.
ದಲಿತ ಮುಖಂಡ ಮೇಲೂರು ಮಂಜುನಾಥ್ ಮಾತನಾಡಿ, ರಾಜಕೀಯ ಪಕ್ಷಗಳು ದಲಿತರನ್ನು ಓಟ್ಗಾಗಿ ದುರ್ಬಳಕೆ ಮಾಡುಕೊಳ್ಳುತ್ತಿದ್ದಾರೆ. ನಮ್ಮ ತಾಲ್ಲೂಕಿನಲ್ಲಿ ಶೇಕಡ ೯೦ ರಷ್ಟು ದಲಿತರು ಕೂಲಿ ಮಾಡಿ ಜೀವನ ಮಾಡುತ್ತಿದ್ದು, ದಲಿತರಿಗೆ ಅನ್ಯಾಯವಾದಾಗ ನ್ಯಾಯಕ್ಕಾಗಿ ಪೋಲಿಸ್ ಠಾಣೆಗೆ ಬಂದಾಗ ಅವರನ್ನು ಗೌರವದಿಂದ ಕಾಣಬೇಕು. ಅಟ್ರಾಸಿಟಿ ಪ್ರಕರಣ ದಾಖಲು ಮಾಡುವಾಗ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸತ್ಯಾಸತ್ಯತೆಯನ್ನು ತಿಳಿದುಕೊಂಡು ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.
ಪ್ರತಿ ಹಳ್ಳಿಗಳಲ್ಲೂ ಮದ್ಯ ಮಾರಾಟ ಅಕ್ರಮವಾಗಿ ನಡೆಯುತ್ತಿದೆ. ದಲಿತರು ಕುಡಿತದ ಚಟಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಬೀದಿಪಾಲಾಗಿದೆ. ಹೆಣ್ಣು ಮಕ್ಕಳು ಕೂಡ ಕುಡಿತದ ಚಟಕ್ಕೆ ಬಿದ್ದಿದ್ದಾರೆ. ಕೆಲವು ಕಡೆ ದಲಿತ ಕುಟುಂಬಗಳು ಮದ್ಯ ಮಾರಾಟ ಕೂಡ ಮಾಡುತ್ತಿದ್ದಾರೆ. ದಯವಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಭೆಯಲ್ಲಿ ದಲಿತ ಮುಂಖಡರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.
ಪೋಲಿಸ್ ಸರ್ಕಲ್ ಇನ್ಸ್ಪೆಕ್ಟರ್ ವೆಂಕಟೇಶ್, ಸಬ್ಇನ್ಸ್ಪೆಕ್ಟರ್ಗಳಾದ ಪ್ರದೀಪ್ ಪೂಜಾರಿ, ವಿಜಯ್, ರಾಘವೇಂದ್ರ, ದಲಿತ ಮುಖಂಡರಾದ ದ್ಯಾವಪ್ಪ, ನಾಗನರಸಿಂಹ, ಅರುಣ್ ಕುಮಾರ್, ಲಕ್ಷ್ಮಿನಾರಾಯಣ, ತಿರುಮಲೇಶ್ ಮತ್ತಿತರು ಸಭೆಯಲ್ಲಿ ಭಾಗವಹಿಸಿದ್ದರು.