ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಹಾಗೂ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ನಗರಸಭೆ ಅಧ್ಯಕ್ಷ ಅಫ್ಸರ್ಪಾಷಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನಯ್ಯ ಮಾತನಾಡಿ, ನಗರಸಭೆಯಲ್ಲಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಸುಮಾರು ಆರೇಳು ತಿಂಗಳಿನಿಂದ ವೇತನ ನೀಡದೇ ಇರುವುದರಿಂದ ಪೌರಕಾರ್ಮಿಕರ ಕುಟುಂಬ ಪೋಷಣೆ ಸೇರಿದಂತೆ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಭಾರಿ ನಗರಸಭೆ ಕಾರ್ಯಾಲಯದ ಮುಂದೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ತಾಲ್ಲೂಕು ದಲಿತ ಸಂಗರ್ಷ ಸಮಿತಿ ಪೌರ ಕಾರ್ಮಿಕರ ಪರವಾಗಿ ಇಂದು ಮನವಿ ಪತ್ರ ಸಲ್ಲಿಸಿದ್ದು ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆ ಕಾರ್ಯಾಲಯದ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ನಗರಸಭೆ ಅಧ್ಯಕ್ಷ ಅಫ್ಸರ್ಪಾಷ ಮಾತನಾಡಿ ಕಳೆದ ಆರೇಳು ತಿಂಗಳುಗಳಿಂದ ನಗರಸಭೆಯ ಪೌರ ಕಾರ್ಮಿಕರಿಗೆ ಸಂಬಳ ನೀಡದೇ ಇರುವ ಗಮನಕ್ಕೆ ಬಂದಿದೆ. ಮುಂದಿನ ಹತ್ತು ದಿನಗಳೊಳಗೆ ನಗರಸಭೆ ಸಾಮಾನ್ಯ ಸಭೆ ಕರೆಯಲಾಗಿದ್ದು ಪೌರ ಕಾರ್ಮಿಕರ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಜಿ.ನಾರಾಯಣಸ್ವಾಮಿ, ತಾಲ್ಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಡಿ.ಎಂ.ವೆಂಕಟೇಶ್, ಸದಸ್ಯರಾದ ದೊಡ್ಡತಿರುಮಳಯ್ಯ, ಮುನಿಕೃಷ್ಣಪ್ಪ ಹಾಜರಿದ್ದರು.
- Advertisement -
- Advertisement -
- Advertisement -
- Advertisement -