ಮಹಾನ್ ವ್ಯಕ್ತಿಗಳ ಆಚರಣೆಗಳು ಕೇವಲ ಸಾಂಪ್ರದಾಯಿಕವಾಗಿರದೇ ಅವರ ತತ್ವ ಆದರ್ಶ ಮತ್ತು ಜೀವನ ಶೈಲಿಗಳನ್ನು ಅಳವಡಿಸಿಕೊಂಡು ಪಾಲಿಸುವ ಜೊತೆಗೆ ಇತರರಿಗೂ ಅಳವಡಿಸಿಕೊಳ್ಳುವಲ್ಲಿ ನೆರವಾದರೆ ಮಾತ್ರ ಆಚರಣೆಗಳಿಗೊಂದು ಅರ್ಥ ಬರುತ್ತದೆ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಿದ್ದು ತಾಲ್ಲೂಕು ಆಡಳಿತದಿಂದ ನಡೆಸಲು ಹೆಮ್ಮೆಯಾಗಿದೆ ಎಂದರು.
ನೇಕಾರ ವೃತ್ತಿ ಹೊಂದಿರುವ ದೇವಾಂಗ ಸಮಾಜ ಬಾಂಧವರಲ್ಲಿ ದಾಸಿಮಯ್ಯನವರ ಕುರಿತಂತೆ ಜಾಗೃತಿ ಮೂಡಿಸಬೇಕು. ಬಸವಣ್ಣನವರಿಗಿಂತಲೂ ಹಿಂದೆಯೇ ನೇಕಾರ ವೃತ್ತಿಯ ಜೊತೆಯಲ್ಲಿ ವಚನಗಳನ್ನು ಬರೆಯುವ ಮೂಲಕ ವೃತ್ತಿಯಲ್ಲಿ ಭಕ್ತಿಯ ಪ್ರಾಮುಖ್ಯತೆ ತೋರಿಸಿಕೊಟ್ಟ ಮಹಾನ್ ಚೈತನ್ಯವನ್ನು ರಾಜ್ಯಾದ್ಯಂತ ನೆನಪು ಮಾಡಿಕೊಳ್ಳಲು ಸಿಕ್ಕ ಅವಕಾಶದಲ್ಲಿ ಅವರ ವಚನಗಳನ್ನು ಎಲ್ಲರಿಗೂ ತಿಳಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಜೆ.ಗಣೇಶ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ನಾಗರಾಜ್, ಸಿ.ಡಿ.ಪಿ.ಒ ಅಧಿಕಾರಿ ಲಕ್ಷ್ಮೀದೇವಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -