Home News ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ

0

ನಗರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಶಿಬಿರ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ವಿತರಿಸುವ 2019-20 ನೇ ಸಾಲಿನ ಸುಜ್ಞಾನನಿಧಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಯೋಜನೆಯ ಪಾತ್ರ ಅತ್ಯಂತ ಮಹತ್ವವಾದದ್ದು. ಒಂದು ಸರ್ಕಾರ ಮಾಡುವ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ನೂರಾರು ಜನಪರ ಕಾರ್ಯಕ್ರಮಗಳ ಮೂಲಕ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಓದುವ ಮಕ್ಕಳಿಗೆ ನೆರವು, ಅಶಕ್ತ ವೃದ್ಧರಿಗೆ ಸಹಾಯಹಸ್ತ, ಕುಡಿತ ಬಿಡಿಸುವುದು, ಕೃಷಿಗೆ ಉಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆಗೆ ನೀಡುವುದು, ಸೋಲಾರ್ ದೀಪ, ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ವಿವಿಧ ಯೋಜನೆಗಳನ್ನು ಮಾಡುವ ಮೂಲಕ ಪ್ರತಿಭಾ ಪಲಾಯನ ಮತ್ತು ನಗರಕ್ಕೆ ವಲಸೆ ಹೋಗುವುದನ್ನು ತಪ್ಪಿಸುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳು ಸಮಾಜವನ್ನು ಬೆಳಗುತ್ತಿವೆ ಎಂದರು.
ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಿ.ವಸಂತ್ ಮಾತನಾಡಿ, ವಿದ್ಯಾರ್ಥಿಗಳು ಶಿಷ್ಯವೇತನವನ್ನು ಪಡೆದುಕೊಂಡು ಮುಂದಿನ ಜೀವನದಲ್ಲಿ ಶೈಕ್ಷಣಿಕ ಪ್ರಗತಿಯ ಜೊತೆಗೆ ಸಮಾಜಕ್ಕೆ ಮಾದರಿಯಾಗಬೇಕು. ಧರ್ಮಸ್ಥಳ ಯೋಜನೆಯ ಮೂಲಕ ಇದುವರೆಗೆ ರಾಜ್ಯದಲ್ಲಿ 36,000 ವಿದ್ಯಾರ್ಥಿಗಳಿಗೆ 45 ಕೋಟಿ ಶಿಷ್ಯವೇತನ ನೀಡುವುದರ ಮೂಲಕ ಅರ್ಥಿಕ ಸಹಾಯ ಮಾಡಲಾಗಿದೆ. ಇದುವರೆಗೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 181 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ್ಯಾಗರಾಜ್ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಧರ್ಮಸ್ಠಳ ಯೋಜನೆ ಮಾಡದ ಕಾರ್ಯಕ್ರಮಗಳಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯ ನಾಗೇಂದ್ರ ಕೃಷಿ ಮೇಲ್ವಿಚಾರಕ ಹರೀಶ್ ಹಾಜರಿದ್ದರು.

error: Content is protected !!