ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ

0
285

ನಗರದ ಕಂದಾಯಭವನದ ಮುಂಭಾಗದಲ್ಲಿ ಶನಿವಾರ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಮಹಾಭಾರತದಲ್ಲಿ ಶ್ರೀ ಕೃಷ್ಣ ತೋರಿಸಿಕೊಟ್ಟ ಮಾರ್ಗದರ್ಶನಗಳು ಸರ್ವಕಾಲಿಕವಾಗಿದ್ದು ಎಲ್ಲರೂ ಅದನ್ನು ಅನುಸರಿಸಬೇಕು. ಯಾದವ ಸಮಾಜದ ಏಳಿಗೆಯ ಹಿತದೃಷ್ಠಿಯಿಂದ ನಗರದಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಹಂಚಿಕೆ ಮಾಡಲು ಸೂಕ್ತ ಜಾಗವನ್ನು ಗುರ್ತಿಸಿ ಮಂಜೂರು ಮಾಡಿಕೊಡುವುದಾಗಿ ಭರವಸೆ ನೀಡಿದರು.
ಯಾವುದೇ ಸಮುದಾಯಗಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.
ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಅರಿಕೆರೆ ಮುನಿರಾಜು ಮಾತನಾಡಿ, ಯಾವುದೇ ಸರ್ಕಾರಗಳು ಬಂದರೂ ಹಿಂದುಳಿದ ವರ್ಗದ ಜನಾಂಗಕ್ಕೆ ಈವರೆಗೂ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ, ಹಿಂದುಳಿದ ವರ್ಗಗಳ ಆಯೋಗಕ್ಕೆ ಇದುವರೆಗೂ ಸಂವಿಧಾನಿಕ ಮಾನ್ಯತೆ ಸಿಕ್ಕಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಬಂದು ೭೨ ವರ್ಷಗಳು ಕಳೆದರೂ ಇಂದಿಗೂ ಸಮಾಜದಲ್ಲಿ ಹಿಂದುಳಿದವರು, ಅಲ್ಪ ಸಂಖ್ಯಾತರು, ದಲಿತರಿಗೆ ಶಿಕ್ಷಣ ಸಿಗಬಾರದೆನ್ನುವ ವಿಕೃತ ಮನಸ್ಸಿನ ಜನರು ಇದ್ದಾರೆಂದರೆ ನಮ್ಮ ಸಮಾಜ ಎಲ್ಲಿಗೆ ಸಾಗುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ.
ಯಾವುದೇ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಜನಾಂಗ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಸಂಘಟಿತರಾಗಿ ಸಂವಿಧಾನ ಬದ್ಧವಾಗಿ ನಮಗೆ ಸಿಗಬೇಕಾಗಿರುವ ಸೌಲತ್ತುಗಳನ್ನು ಪಡೆದುಕೊಳ್ಳಲು ಹೋರಾಟ ಮಾಡುವ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಗುಜರಾತ್‌ನಂತಹ ರಾಜ್ಯದಲ್ಲಿ ಒಂದು ಸಮುದಾಯ ಒಗ್ಗಟ್ಟಿನಿಂದ ಸರ್ಕಾರಗಳನ್ನು ನಿರ್ಧರಿಸುವುದಾದರೆ ನಮ್ಮಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ? ಎಂದರು.
ಈ ಸಂದರ್ಭದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ತಹಶೀಲ್ದಾರ್ ಅಜಿತ್ ಕುಮಾರ್ ರೈ, ನಗರಸಭೆ ಆಯುಕ್ತ ಚಲಪತಿ, ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದರಾಜು, ಯಾದವ ಸಂಘದ ಅಧ್ಯಕ್ಷ ಕೇಶವಮೂರ್ತಿ, ನಗರಸಭೆ ಅಧ್ಯಕ್ಷ ಅಫ್ಸರ್ ಪಾಷ, ರಾಮಕೃಷ್ಣಪ್ಪ, ನಗರಸಭಾ ಸದಸ್ಯ ಚಿಕ್ಕಮುನಿಯಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!