ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಈ ಬೇಸಿಗೆಯಲ್ಲಿ ನೀರಿನ ಅಭಾವವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಮಳೆಕೊಯ್ಲನ್ನು ನಾವು ಈಗಿನಿಂದಲೇ ಪ್ರಾರಂಭಿಸಬೇಕು ಎಂದು ಅವರು ಹೇಳಿದರು.
ಕಳೆದ ಇಪ್ಪತ್ತೈದು ವರ್ಷಗಳಿಂದ ಸರಿಯಾದ ಮಳೆಗಳಿಲ್ಲದೇ ಈ ಭಾಗದ ಜನತೆ ಪರದಾಡುವಂತಾಗಿದ್ದಾರೆ. ಜಿಲ್ಲೆಯಾಧ್ಯಂತ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು ಜನತೆಗೆ ನೀರು ಪೂರೈಸಲು ಅನಿವಾರ್ಯವಾಗಿ ಕೊಳವೆಬಾವಿಗಳ ಮೊರೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ಸಮರ್ಪಕ ನೀರು ಪೂರೈಸಲು ಆಗುತ್ತಿಲ್ಲ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದಷ್ಟು ಸರ್ಕಾರಿ ಜಾಗವಿದೆ ಎಂದು ಗೊತ್ತಾದರೆ ಸಾಕು ಅಧಿಕಾರಿಗಳನ್ನು ಹಿಡಿದು ಕಬಳಿಸಲು ಮುಂದಾಗುವ ಸ್ಥಿತಿಯಿರುವಾಗ, ಇಂದಿಗೂ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದ ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಲು ಸುಮಾರು 4.5 ಎಕರೆ ಸ್ಥಳ ಉಳಿಸಿಕೊಂಡಿರುವ ಪಂಚಾಯಿತಿಯ ಕಾರ್ಯ ಶ್ಲಾಘನೀಯ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು ಮಾತನಾಡಿ, ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳು ಬರಗಾಲ ಪೀಡಿತ ಜಿಲ್ಲೆಗಳಾಗಿದ್ದು ಶಿಡ್ಲಘಟ್ಟ ತಾಲ್ಲೂಕನ್ನು ಸಹ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಲು ಮಾನ್ಯ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬರಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದ್ದೇ ಆದಲ್ಲಿ ಕ್ಷೇತ್ರದ ಮತ್ತಷ್ಟು ಜನರಿಗೆ ಕೊಳವೆ ಬಾವಿ ಕೊರೆಸಲು ಅವಕಾಶವಾಗುತ್ತದೆ, ಸರ್ಕಾರದ ಸಹಾಯಹಸ್ತ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಿಪ್ಪೇನಹಳ್ಳಿ ಗ್ರಾಮದ ಸುಮಾರು 30 ಮಂದಿಗೆ ನಿವೇಶನ ಹಕ್ಕು ಪತ್ರ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಿಇಓ ಫೌಜಿಯಾ ತರನ್ನುಮ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ, ಉಪಾಧ್ಯಕ್ಷ ಸುರೇಂದ್ರ, ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್, ಕೆ.ಗುಡಿಯಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ಹಾಜರಿದ್ದರು.
- Advertisement -
- Advertisement -
- Advertisement -