ತಮ್ಮ ಅಧಿಕಾರಾವಧಿಯಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಸರ್ಕಾರಿ ನೌಕರರ ಸಂಘದ ನೂತನ ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ ಹೇಳಿದರು.
ನಗರದ ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಹಿಂದಿನ ಅಧ್ಯಕ್ಷ ಎನ್.ಕೆ.ಗುರುರಾಜರಾವ್ರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಕಳೆದ ೨೦೦೪ ರಿಂದ ಸತತವಾಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎನ್.ಕೆ.ಗುರುರಾಜರಾವ್ ಅವಿರೋಧವಾಗಿ ಆಯ್ಕೆಯಾಗುತ್ತಿದ್ದು, ಕಳೆದ ಸೆಪ್ಟೆಂಬರ್ ೩೦ ರಂದು ಕರ್ತವ್ಯದಿಂದ ನಿವೃತ್ತಿಯಾದ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರನ್ನಾಗಿ ತನ್ನನ್ನು ಪದಾಧಿಕಾರಿಗಳು ಆಯ್ಕೆ ಮಾಡಿದ್ದಾರೆ. ತಾಲ್ಲೂಕಿನ ಯಾವುದೇ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆ ಬಾರದ ಹಾಗೆ ಹಾಗೂ ಎಲ್ಲರ ವಿಶ್ವಾಸದೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಮಾಜಿ ಅಧ್ಯಕ್ಷ ಎನ್.ಕೆ.ಗುರುರಾಜರಾವ್ ಮಾತನಾಡಿ ೨೦೦೪ ರಿಂದ ಇದುವರೆಗೂ ಸತತವಾಗಿ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದ ಪದಾಧಿಕಾರಿಗಳ ಸಹಕಾರದಿಂದ ನಗರದಲ್ಲಿ ಸರ್ಕಾರಿ ನೌಕರರ ಸಂಘ ನಿರ್ಮಿಸಲು ನಿವೇಶನ ಮಂಜೂರು ಮಾಡಿಸಿದ್ದೇವೆ. ಮುಂದಿನ ದಿನಗಳಲ್ಲಿ ನಿವೇಶನದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲು ನೂತನ ಅಧ್ಯಕ್ಷರು ಹಾಗು ಪದಾಧಿಕಾರಿಗಳಿಗೆ ನಿರಂತರ ಸಹಕಾರ ನೀಡುವುದಾಗಿ ಹೇಳಿದರು.
ರಾಜ್ಯ ಪರಿಷತ್ ಸದಸ್ಯ ಸುಬ್ಬರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅಕ್ಕಲರೆಡ್ಡಿ, ಉಪಾಧ್ಯಕ್ಷರಾದ ರಾಮಚಂದ್ರಪ್ಪ, ಶಶಿಕುಮಾರ್, ಖಜಾಂಚಿ ಲಲಿತಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.