Home News ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಬೌದ್ಧಿಕ ವಿಕಸನ

ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಬೌದ್ಧಿಕ ವಿಕಸನ

0

ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಬಹಳ ಉಪಯುಕ್ತವಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ತಿಳಿಸಿದರು.
ತಾಲ್ಲೂಕಿನ ರಾಮೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಬಶೆಟ್ಟಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಬೌದ್ಧಿಕ ವಿಕಸನವಾಗುತ್ತಿದ್ದು ಈ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಶೈಕ್ಷಣಿಕ ವಿಚಾರಗಳನ್ನು ಹೊರತು ಪಡಿಸಿ ಕೂಡ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಇತರೆ ಪ್ರತಿಭೆ ಅಡಗಿರುತ್ತದೆ. ಅಂಕಗಳ ಕಡಿಮೆ ಬಂದಾಗ ಪೋಷಕರು ಮಕ್ಕಳನ್ನು ದಂಡಿಸುತ್ತಾರೆ, ಇದು ಸರಿಯಲ್ಲ. ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ, ಪ್ರತಿಭಾ ಕಾರಂಜಿಯಂತಹ ವೇದಿಕೆಯಲ್ಲಿ ಪ್ರದರ್ಶಿಸಲು ಪೋಷಕರು ಸಹಕರಿಸಬೇಕು ಮತ್ತು ಗ್ರಾಮೀಣ ಭಾಗದ ಶಿಕ್ಷಕರು ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ವೇಷಭೂಷಣಗಳೊಂದಿಗೆ, ಹಲವಾರು ಗೀತ ಗಾಯನಗಳೊಂದಿಗೆ, ಜಾನಪದ ನೃತ್ಯ ರೂಪಕಗಳೊಂದಿಗೆ ಹಬ್ಬದ ವಾತವರಣವನ್ನು ಸೃಷ್ಟಿಸಿದ್ದರು. ಸುಮಾರು 500 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿಪತ್ರವನ್ನು ನೀಡಲಾಯಿತು.
ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚನ್ನರಾಯಸ್ವಾಮಿ, ಶಾಲಾ ಮುಖ್ಯ ಶಿಕ್ಷಕಿ ಸಿ.ಆರ್.ಭಾರತಿ, ಶಿಕ್ಷಕರಾದ ರಮೇಶ್ಬಾಬು, ಮಮತಾ, ರಾಧಾ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.