Home News ಪರಿಶಿಷ್ಟ ಜಾತಿ ಹಾಗು ಪಂಗಡದ ಜನಾಂಗದವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಬದ್ಧ

ಪರಿಶಿಷ್ಟ ಜಾತಿ ಹಾಗು ಪಂಗಡದ ಜನಾಂಗದವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಬದ್ಧ

0

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ. ೨೪.೦೧ ರಷ್ಟಿರುವ ಪರಿಶಿಷ್ಟ ಜಾತಿ ಹಾಗು ಪಂಗಡದ ಜನಾಂಗದವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಸರ್ಕಾರ ಸುಮಾರು ೧೯ ಸಾವಿರ ಕೋಟಿ ರೂ ಮೀಸಲಿಟ್ಟಿದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಸುಂಡ್ರಹಳ್ಳಿ ಗ್ರಾಮದಲ್ಲಿ ಸೋಮವಾರ ಪರಿಶಿಷ್ಟ ವರ್ಗದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಯಲುಸೀಮೆ ಭಾಗದಲ್ಲಿ ನೀರಿನ ಬವಣೆ ಹೆಚ್ಚಾಗಿರುವುದರಿಂದ ದೊಡ್ಡ ರೈತರ ಮಕ್ಕಳು ಸಹ ಕಾನ್ವೆಂಟ್ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹಾಗಾಗಿ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಮೊರಾರ್ಜಿ ದೇಸಾಯಿ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದ್ದು ಎಲ್ಲರಿಗೂ ಉತ್ತಮ ಶಿಕ್ಷಣ ಸಿಗುವಂತಾಗುತ್ತದೆ.
ಈ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲಿಯೂ ಉತ್ತಮ ವಸತಿನಿಲಯಗಳನ್ನು ನಿರ್ಮಿಸಬೇಕು ಎಂಬ ಈ ಭಾಗದ ಜನರ ಬೇಡಿಕೆಯಂತೆ ಎಲ್ಲಾ ಹೋಬಳಿಗಳಲ್ಲಿಯೂ ವಸತಿಶಾಲೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲು ಸೂಚಿಸಲಾಗಿದೆ ಎಂದರು.
ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಾದರೆ ನಾವು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು. ಈ ನಿಟ್ಟಿನಲ್ಲಿ ಕೋಲಾರ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿಯೂ ಒಂದೊಂದು ಸುಸಜ್ಜಿತ ವಸತಿಶಾಲೆಗಳನ್ನು ನಿರ್ಮಿಸಲಾಗುವುದು ಎಂದರು.
ಈಗಾಗಲೇ ಎರಡೂ ಜಿಲ್ಲೆಗಳಲ್ಲಿ ಸುಮಾರು ೧೪ ವಸತಿಶಾಲೆಗಳು ಪೂರ್ಣಗೊಂಡಿದ್ದು ಕೆಲವು ಕಡೆ ಸ್ಥಳಾವಕಾಶ ಸಿಗದ ಕಾರಣ ಇನ್ನೂ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ ಹಾಗಾಗಿ ತ್ವರಿತವಾಗಿ ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ಸ್ಥಳ ಗುರುತಿಸಿ ಕೊಟ್ಟಲ್ಲಿ ಜಿಲ್ಲೆಯಾದ್ಯಂತ ಇರುವ ಎಲ್ಲಾ ಹೋಬಳಿಗಳಲ್ಲಿಯೂ ಸುಸಜ್ಜಿತ ವಸತಿಶಾಲೆ ನಿರ್ಮಿಸಲಾಗುವುದು ಎಂದರು.
ಶಾಸಕ ಎಂ ರಾಜಣ್ಣ ಮಾತನಾಡಿ, ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಅನೇಕ ಉತ್ತಮ ಯೋಜನೆಗಳನ್ನು ರೂಪಿಸಿದೆ. ಈ ಭಾಗದ ಬಹುತೇಕ ನಾಗರಿಕರು ಕೂಲಿ ನಾಲಿ ಮಾಡಿ ಬದುಕವವರಾಗಿದ್ದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಆಗುವುದಿಲ್ಲ. ಹಾಗಾಗಿ ಅಂತಹ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ತಾಲೂಕಿನ ಸುಂಡ್ರಹಳ್ಳಿ ಗ್ರಾಮದ ಬಳಿ ಸುಮಾರು ೧೦ ಎಕರೆ ಜಾಗದಲ್ಲಿ ೧೩ ಕೋಟಿ ರೂ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ನಿರ್ಮಿಸಲಾಗುತ್ತಿದೆ ಎಂದರು.
ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಕ್ಕಾಗ ಮಾತ್ರ ಸಮಾಜ ಏಳಿಗೆಯಾಗುತ್ತದೆ. ಸಾರ್ವಜನಿಕ ಕಾಮಗಾರಿಗಳು ನಡೆಯುವಾಗ ಪ್ರತಿಯೊಬ್ಬರೂ ಕಾಮಗಾರಿಯ ಗುಣಮಟ್ಟದ ಬಗ್ಗೆ ನಿಗಾವಹಿಸುವ ಮೂಲಕ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಸದಸ್ಯರಾದ ಬಂಕ್ ಮುನಿಯಪ್ಪ, ಸತೀಶ್, ತನುಜಾರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಸದಸ್ಯರಾದ ರಾಜಶೇಖರ್, ಶೋಭಾ ಶಶಿಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!