Home News ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

0

ಶಿಡ್ಲಘಟ್ಟದ ಊರದೇವರೆಂದೇ ಖ್ಯಾತವಾದ ನಗರದ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರವೇ ನಗರದಲ್ಲಿ ಶುಭಕಾರ್ಯಗಳು ಪ್ರಾರಂಭವಾಗುವ ಸಂಪ್ರದಾಯವಿದೆ. ‘ಊರದೇವರು’ ಎಂದೇ ಪ್ರಸಿದ್ಧ­ವಾದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿ­ಯಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇಗು­ಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ರಜಸ್ವ ನಿರೀಕ್ಷಕ ವಿಶ್ವನಾಥ್ ರಥೋತ್ಸವಕ್ಕೆ ಚಾಲನೆ ನೀಡಿ­ದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡ­­ಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಮಯೂರ ವೃತ್ತ­ದಲ್ಲಿ ಪಾನಕ ಮತ್ತು ಹೆಸರುಬೇಳೆ ಕೋಸಂಬರಿ ಹಂಚಲಾಯಿತು.
‘ಶಿಡ್ಲಘಟ್ಟ ದೇವರು ಹಿಂದು ಮುಂದು’ ಎಂಬ ಪ್ರಸಿದ್ಧ ನಾಣ್ಣುಡಿಗೆ ಕಾರಣ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವ. ಹಿಂದೆ ನಗರದ ಅಶೋಕರಸ್ತೆಯು ಕಿರಿದಾಗಿತ್ತು. ಆ ಕಾರಣಕ್ಕೆ ದೊಡ್ಡದಾದ ದೇವರ ರಥವನ್ನು ರಸ್ತೆ ಕೊನೆಯಲ್ಲಿ ತಿರುಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ದೇವರನ್ನೇ ಹಿಂದು ಮುಂದಾಗಿ ತಿರುಗಿಸಿ ರಥವನ್ನು ಹಿಂಬದಿಯಿಂದ ಎಳೆದು ತರಲಾಗುತ್ತಿತ್ತು. ಹೀಗಾಗಿ ‘ಶಿಡ್ಲಘಟ್ಟದ ದೇವರು ಹಿಂದು ಮುಂದು’ ಎಂಬ ಮಾತು ಚಾಲ್ತಿಗೆ ಬಂತು.
ಶ್ರೀಕೃಷ್ಣದೇವರಾಯ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತೆರಳುವಾಗ ಮಾರ್ಗ ಮಧ್ಯೆ ತಂಗಿದ್ದು, ತನ್ನ ಆರಾಧ್ಯ ದೈವ ಶ್ರೀ ವೇಣುಗೋಪಾಲಸ್ವಾಮಿಯನ್ನು ಪ್ರತಿಷ್ಠಾಪಿಸಿದನೆಂಬ ಪ್ರತೀತಿಯಿದೆ. ಕ್ರಿ.ಶ. 1526 ರಲ್ಲಿ ಶಿಡ್ಲಘಟ್ಟ ಸ್ಥಾಪಿಸಿದ ಅಲಸೂರಮ್ಮ ಕೂಡ ಈ ದೇವಾಲಯವನ್ನು ಅಭಿವೃದ್ಧಿಗೊಳಿಸಿರುವುದಾಗಿ ಇತಿಹಾಸ ಹೇಳುತ್ತದೆ. ತದನಂತರ ನೂರು ವರ್ಷಗಳ ತರುವಾಯ ಛತ್ರಪತಿ ಶಿವಾಜಿ ಕಾಲದಲ್ಲಿ ದೇವಾಲಯದ ಜೀರ್ಣೋದ್ಧಾರವಾಯಿತೆಂದು ಹೇಳಲಾಗುತ್ತದೆ. ಸುಮಾರು ಐದು ನೂರು ವರ್ಷಗಳಿಗೂ ಹೆಚ್ಚು ಇತಿಹಾಸವನ್ನು ಹೊಂದಿರುವ ಈ ದೇವಾಲಯದಲ್ಲಿ ಪ್ರತಿಷ್ಠಾಪನೆಯಾಗಿರುವ ಶ್ರೀ ವೇಣುಗೋಪಾಲಸ್ವಾಮಿ ಮೂರ್ತಿಯ ಎಡಭಾಗದಲ್ಲಿ ರುಕ್ಮಿಣಿ ಹಾಗೂ ಬಲಭಾಗದಲ್ಲಿ ಸತ್ಯಭಾಮೆಯ ಸುಂದರ ಮೂರ್ತಿಗಳಿವೆ.
ವೇಣುಗೋಪಾಲಸ್ವಾಮಿ ದೇಗುಲ­ದಲ್ಲಿ ಪೂಜಾ ಕಾರ್ಯಕ್ರಮಗಳು ಒಂದು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಜಾತಿಯವರೂ ವಿವಿಧ ಕೈಂಕರ್ಯ­ಗಳಲ್ಲಿ ಭಾಗಿಯಾಗುವುದು ವಿಶೇಷ­ವಾಗಿದೆ.
ಅರ್ಚಕ ವೈ.ಎನ್‌.ದಾಶರಥಿಭಟ್ಟಾಚಾರ್ಯ, ದೇಗುಲ ಸಮಿತಿ ಸದಸ್ಯರು, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್‌ ಸದಸ್ಯರು ಹಾಜರಿದ್ದರು.

error: Content is protected !!