21.3 C
Sidlaghatta
Wednesday, July 16, 2025

ಪೌರಾಣಿಕ ಹಿನ್ನೆಲೆಯ ಸುಂದರ ತಾಣ ರಾಮಲಿಂಗೇಶ್ವರ ಬೆಟ್ಟ

- Advertisement -
- Advertisement -

ರಾಮ ಮತ್ತು ಈಶ್ವರ ಒಂದೆಡೆ ನೆಲೆಸಿರುವುದು ಅಪರೂಪ. ದೇಶದ ದಕ್ಷಿಣದ ತುತ್ತ ತುದಿಯಲ್ಲಿ ರಾವಣನೊಂದಿಗೆ ಯುದ್ಧಕ್ಕೆ ತೆರಳುವ ಮುಂಚೆ ರಾಮನು ಶಿವನನ್ನು ಪೂಜಿಸಿದ ಕ್ಷೇತ್ರ ರಾಮೇಶ್ವರವಾಗಿದ್ದರೆ, ತಾಲ್ಲೂಕಿನಲ್ಲಿ ಶ್ರೀರಾಮ ವನವಾಸದ ಕಾಲದಲ್ಲಿ ಪೂಜಿಸಲೆಂದು ಸ್ಥಾಪಿಸಿದ್ದ ಇಷ್ಟಲಿಂಗವಿರುವ ಕ್ಷೇತ್ರ ರಾಮಲಿಂಗೇಶ್ವರವೆಂದೇ ಪ್ರಸಿದ್ಧವಾಗಿದೆ.

ರಾಮ ನಿರ್ಮಿಸಿದ್ದನೆಂಬ ಪ್ರತೀತಿಯಿರುವ ಸದಾ ನೀರು ತುಂಬಿರುವ ರಾಮದೊಣೆ
ರಾಮ ನಿರ್ಮಿಸಿದ್ದನೆಂಬ ಪ್ರತೀತಿಯಿರುವ ಸದಾ ನೀರು ತುಂಬಿರುವ ರಾಮದೊಣೆ

ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿಯಿರುವ ರಾಮಲಿಂಗೇಶ್ವರ ಬೆಟ್ಟ ಪುರಾತನವಾದ ಹಾಗೂ ಪ್ರಸಿದ್ಧಿಪಡೆದ ಕ್ಷೇತ್ರವಾಗಿದೆ. ಬೆಟ್ಟದ ಮೇಲಿನ ದೇವಾಲಯ ಹಾಗೂ ಪರಿಸರ ಹಲವು ವಿಶೇಷತೆಗಳನ್ನು ಹೊಂದಿದ್ದು, ಪ್ರತಿ ವರ್ಷ ಶುಕ್ಲ ಪಕ್ಷದ ಚತುರ್ದಶಿಯಂದು ನಡೆಯುವ ಬ್ರಹ್ಮರಥೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿವಿಧ ತಾಲ್ಲೂಕು ಹಾಗೂ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.
ಕಣ್ಣು ಹಾಯಿಸಿದಷ್ಟೂ ಕಾಣುವ ಸುಂದರ ಪ್ರಕೃತಿ, ಭಕ್ತಿ ಭಾವವನ್ನು ಸೃಜಿಸುವ ದೇಗುಲ, ಪ್ರಶಾಂತ ವಾತಾವರಣಕ್ಕೆ ಮಾರು ಹೋಗಿ ನಗರದ ಗೌಜು ಗದ್ದಲದಿಂದ ಬೇಸತ್ತವರು ರಜೆ ಸಿಕ್ಕಾಗೆಲ್ಲಾ ರಾಮಲಿಂಗೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುತ್ತಾರೆ.
ರಾಮಾಯಣದ ಹಿನ್ನೆಲೆ, ಚೋಳರ ಕಾಲದ ಕೆತ್ತನೆಗಳುಳ್ಳ ದೇಗುಲ, ನೂರಾರು ವರ್ಷಗಳ ಇತಿಹಾಸ ಸಾರುವ ಶಿಲ್ಪಗಳು, ಸಾವಿರಾರು ವರ್ಷದಿಂದ ಕದಲದೇ ಇರುವ ಬೆಟ್ಟ, ಬಂಡೆ ಕಲ್ಲುಗಳು, ಸ್ಥಳೀಯರಿಂದ ನಿರ್ಮಾಣಗೊಂಡಿರುವ ಮೆಟ್ಟಿಲು ಮತ್ತು ಕಮಾನು, ಎಲ್ಲವೂ ಬೆಟ್ಟದ ಕೆಳಗಿನಿಂದ ನೋಡಿದಾಗ ಸೊಗಸಾಗಿ ಕಂಡುಬರುತ್ತದೆ.
ದೇವಾಲಯ ಮುಜರಾಯಿಯದ್ದಾದರೂ, ಪ್ರತಿವರ್ಷ ಜನವರಿ ತಿಂಗಳ ಶುಕ್ಲ ಪಕ್ಷದ ಚತುರ್ದಶಿಯಂದು ನಡೆಯುವ ಬ್ರಹ್ಮರಥೋತ್ಸವದ ನಿರ್ವಹಣೆಯನ್ನು ದೇವಾಲಯ ಸಂಚಾಲಕರಾದ ಡಿ.ಎಂ.ಶ್ರೀನಿವಾಸರೆಡ್ಡಿ ಮತ್ತು ಕುಟುಂಬದವರು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ.
ಅತಿ ಎತ್ತರವಾದ ಧ್ವಜಸ್ತಂಭ
ಅತಿ ಎತ್ತರವಾದ ಧ್ವಜಸ್ತಂಭ

ಸಾಕಷ್ಟು ದೂರಕ್ಕೇ ಕಾಣಬಲ್ಲ ಅತಿ ಎತ್ತರವಾದ ಧ್ವಜಸ್ತಂಭ, ದೊಡ್ಡದಾದ ಏಕಶಿಲಾ ಬಸವಣ್ಣ ಈ ದೇವಾಲಯದ ವೈಶಿಷ್ಟ್ಯ. ಬೇರೆಲ್ಲಿಯೂ ಕಾಣಸಿಗದ ಹನುಮಲಿಂಗ ದೇವಾಲಯ ಕೂಡ ಇಲ್ಲಿದೆ. ರಾಮದೊಣೆ, ಲಕ್ಷ್ಮಣದೊಣೆ ಮತ್ತು ಸೀತಾದೊಣೆಗಳೆಂಬ ನೀರಿನ ಸೆಲೆಗಳಾದ ದೊಣೆಗಳಿಲ್ಲಿವೆ. ಇವುಗಳಲ್ಲಿ ಸದಾ ನೀರು ತುಂಬಿರುತ್ತವೆ. ಅವುಗಳನ್ನು ರಾಮ ನಿರ್ಮಿಸಿದ್ದನೆಂಬ ಪ್ರತೀತಿಯಿದೆ.
ಈ ಬಾರಿ ಜನವರಿ 24 ರ ಭಾನುವಾರದಂದು ನಡೆಯುವ ಬ್ರಹ್ಮರಥೋತ್ಸವದ ಸಂದರ್ಭದಲ್ಲಿ ಭಾರೀ ದನಗಳ ಜಾತ್ರೆಯನ್ನು ಆಯೋಜಿಸಲಾಗಿದೆ. ಜನವರಿ 23 ರಿಂದ 28 ರವರೆಗೂ ಆರು ದಿನಗಳ ಕಾಲ ದನಗಳ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ಆಗಮಿಸುವ ದನಗಳಿಗೆಲ್ಲಾ ಮೇವು ಮತ್ತು ನೀರಿನ ಸೌಕರ್ಯವನ್ನು ಒದಗಿಸಲಾಗುತ್ತಿದೆ. ದೂರದ ಊರುಗಳಾದ ಹಾಸನ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು, ಅನಂತಪುರಂ, ರಾಯಚೂಟಿ, ಪುಟ್ಟಪರ್ತಿ, ಪೆನುಗೊಂಡ, ಕದಿರಿ, ಹಿಂದೂಪುರ, ಲೇಪಾಕ್ಷಿ, ಪಾವಗಡ ಮುಂತಾದ ಊರುಗಳಿಂದ ರಾಸುಗಳನ್ನು ಕೊಳ್ಳಲು ಮತ್ತು ಮಾರಾಟಮಾಡಲು ಆಗಮಿಸುತ್ತಾರೆ.
‘ಪವಿತ್ರ ದೇವಾಲಯವಿರುವ ರಾಮಲಿಂಗೇಶ್ವರ ಬೆಟ್ಟ ನಮ್ಮ ಜಿಲ್ಲೆಯಲ್ಲಿಯೇ ಅತ್ಯಂತ ವಿಶಿಷ್ಟವಾದುದು. ಕೇವಲ ರಥೋತ್ಸವದಂದು ಮಾತ್ರ ತಾಲ್ಲೂಕು ಆಡಳಿತ ಬಂದು ಹೋದರೆ ಸಾಲದು. ಈ ಸ್ಥಳವು ಉತ್ತಮ ಪ್ರವಾಸಿ ತಾಣವಾಗುವಂತೆ ಅಭಿವೃದ್ಧಿಪಡಿಸಬೇಕು. ಹಿಂದೆ ಈ ಬೆಟ್ಟದಲ್ಲಿ ಗಣಿಗಾರಿಕೆಯನ್ನು ನಡೆಸಲು ಪ್ರಾರಮಭಿಸಿದ್ದರು. ಆದರೆ ಸ್ಥಳೀಯರ ವಿರೋಧದಿಂದ ನಿಂತಿತು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ತಾಲ್ಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಪ್ರವಾಸಿ ಸೌಲಭ್ಯ, ಮಾಹಿತಿ ಒದಗಿಸುವ ಮೂಲಕ ರಾಮಲಿಂಗೇಶ್ವರ ಬೆಟ್ಟವನ್ನು ಅಭಿವೃದ್ಧಿಪಡಿಸಬೇಕು’ ಎಂದು ಅಮ್ಮಗಾರಹಳ್ಳಿ ಬೈರಾರೆಡ್ಡಿ ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!