ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕಲಾಶ್ರೀ ಶಿಬಿರವನ್ನು ಆಯೋಜಿಸಲಾಗಿದ್ದು ಗ್ರಾಮೀಣ ಮಕ್ಕಳ ಪ್ರತಿಭೆಗಳ ವಿಕಸನಕ್ಕೆ ಶಿಬಿರ ಸಹಕಾರಿಯಾಗಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಜಿ.ಗೋಪಾಲ್ ತಿಳಿಸಿದರು.
ನಗರದ ಸ್ತ್ರೀ ಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ೯ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ ತಾಲ್ಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಇದನ್ನು ಗುರುತಿಸುವ ಕೆಲಸವಾಗಬೇಕು. ಶಾಲೆಗಳಲ್ಲಿ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡುವ ಅಗತ್ಯವಿದೆ. ಯಾವುದೇ ಸ್ಪರ್ಧೆಯಲ್ಲಿ ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು ಮಾತನಾಡಿ, ಗ್ರಾಮೀಣ ಮಕ್ಕಳಲ್ಲಿ ಹಿಂಜರಿಕೆ ಹೆಚ್ಚಿರುತ್ತದೆ. ಆದರೆ ಕ್ರಿಯಾಶೀಲತೆ ಹೆಚ್ಚಿರುತ್ತದೆ. ಆತ್ಮವಿಶ್ವಾಸದಿಂದ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹಿಂಜರಿಕೆ ಬಿಟ್ಟು ಪ್ರದರ್ಶಿಸಿ. ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ನುಡಿದರು.
ಸೃಜನಾತ್ಮಕ ಕಲೆಯಲ್ಲಿ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸೃಜನಾತ್ಮಕ ಬರವಣಿಗೆಯಲ್ಲಿ ಕಥೆ, ಕವನ, ಪ್ರಬಂಧ, ಸುಗಮ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರದಲ್ಲಿ ನಡೆದ ಮಾದರಿ ಪ್ರದರ್ಶನದಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಗಮನ ಸೆಳೆದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಧಮ್ಮ, ಶಿಕ್ಷಕರಾದ ರವಿಕುಮಾರ್, ದೇವರಾಜ್, ನಾಗರಾಜ್, ಐನಾ ಟ್ರಸ್ಟ್ನ ಮೇಲ್ವಿಚಾರಕಿ ವೆರೋನಿಕ ಡೇವಿಡ್, ಸುನಂದ, ಸೌರಾನ್ ಹಾಜರಿದ್ದರು.
- Advertisement -
- Advertisement -
- Advertisement -